ಎರಗಿ ಬಿನ್ನಾ ಮಾಡದ್ಹೋದರು

-ಶಿಶುನಾಳ ಶರೀಫ್

ಎರಗಿ ಬಿನ್ನಾ ಮಾಡದ್ಹೋದರು
ಗುರುವರನ ಗಣರಿಗೆರಗಿ             
ಬಿನ್ನಾವ್ವ ಮಾಡದ್ಹೋದರು
ನರಗುರಿಗಳು ಪರಿಹಾಸ್ಯದಿ
ಜರಿದರು ಎನ್ನ ಕರೆಸಿದರೈ
ಹರನ ಶಾಸ್ತ್ರಕೆ ವರಪ್ರಸ್ತಕೆ
ಮರಿತರು ನಿಮಗರಿಕಿರಲೈ                  ||ಪ||


ಹಿಂದಕೊಮ್ಮೆ ಪ್ರಥಮರೊಡನೆ
ದ್ವಂದ್ವ ಬಯಸಿ ರೇಚಿತಂದೆ
ಒಂದು ಕರಿಯ ಎಲಿಯ ಕೊಟ್ಟ
ಇಂದು ಪಥಕೆ ಮುಟ್ಟಲಿಲ್ಲಾ
ಆಂದಿನ ಕಥೆ ಇಂದರಿಯದೆ
ಬಂಧನಕ್ಕೊಳಗಾಗುವರೆ
ಕುಂದಿಟ್ಟರು ನಿಂದಿಸುತಲಿ
ಮಂದಾತಮರು ಮಹಾಗರ್ವದಿ               ||೧||

ನಿಷ್ಟಿ ಹಿಡಿದು ನಿಜಗ ನಿಲ್ಲದೆ
ಇಷ್ಟಲಿಂಗದ ಆರವು ಇಲ್ಲದೆ
ಶ್ರೇಷ್ಟ ಭಲಾ ಶಿವ ಜಂಗಮ-
ರಿಷ್ಟು ಬಳಲಿಸಿರುವರಿವರು
ಕೆಟ್ಟರು ಕುಚೇಷ್ಟರು
ಬ್ರಷ್ಟರು ಮಹಾಗರ್ವಿಷ್ಟರು
ತಟ್ಟಲೀ ಪಾಪ ಆವರಿಗೆ
ಕುಟ್ಟಲೀ ಶಿವಾ ಕುಟ್ಟಲೀಗ                      ||೨||

ಪೃಥ್ವಿಪಾಲ ಶಿಶುವಿನಾಳ
ಸತ್ಯಶರಣ ಸಖನ
ಕೃತ್ಯ ಕಪತ ಬಯಸಿದವರು
ಕತ್ತಿ ಜನ್ಮಕೆ ಹೋಗುತಿಹರು ಚಿತ್ತೈಸಿರಿ
ಅರ್ತಿಯಲಿ ಚಿತ್ತೈಸಿರಿ ಇದನರಿತು
ಮತೆ ಕಳಸ ಗ್ರಾಮಕೆ
ಪ್ರಸ್ತವಾಯಿತೋ ಭಕ್ತಿಯಲಿ                    ||೩||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಬಾರದಿರುವೆರೇನೇ ಭಾಮಿನಿ

-ಶಿಶುನಾಳ ಶರೀಫ್

ಬಾರದಿರುವರೇನೇ ಭಾಮಿನಿ
ಬಾರದಿರುವರೇನೇ                                 ||ಪ||

ಬಾರದಿರುವ ಕಾರಣವೇನಲೆ ಸಖಿ
ದೂರದಿಂದ ಮುಖ ತೋರಿ ಸಮಯದಿ       ||ಅ.ಪ. ||

ನಂಬದವನ ಕೂಡ ಭಾಮಿನಿ
ಸಂಭ್ರಮಿಸುವದು ಬ್ಯಾಡ ನೋಡ
ಆಂಬುಜಾಕ್ಷಿಯೇ ಕಂಬುಕಂದರಿಯೇ
ಹಂಬಲಿಸುತ ನಿನ್ನ ಬೆಂಬತ್ತಿ ನಾ                ||೧||

ಕುಸುಮಲೋಚನೆ ಕೇಳೇ ವಿಷಯದ
ಕಸವನು ಕಳದವಳೆ ಭಾಮಿನಿ
ವಸುಧಿಯೊಳಂ ಶಿಶುನಾಳಧೀಶನ
ಆಸಮಸದ್ಗುರು ಗೋವಿಂದನಾಲಯ          ||೨||

                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಬಾರೇ ನೀರೆ ತೋರೇ ಮುಖ

-ಶಿಶುನಾಳ ಶರೀಫ್

ಬಾರೇ ನೀರೆ ತೋರೇ ಮುಖ ವಾರಿಗ್ಯಾಕೆ ನಿಂತೆ
ದೂರ ಹೋದಳೆಂದು ನಾ ದಾರಿ ನೋಡುತ ಕುಂತೆ        ||ಪ||

ಆರಮುಂದೆ ಹೇಳಿದರೆ ತೀರದೀ ಮಾತು
ಊರಮಂದಿ ಅರಿಯರು ನಮ್ಮ ನಿಮ್ಮ ಗೊತ್ತು
ಬರತೀನಂತಾ ಹೇಳಿಹೋದೆಲ್ಲೆ ಮರೆತು ಮನ
ಕಲ್ಲು ಮಾಡಿದರೇನು ಬಂತು                                     || ಆ. ಪ.||

ಸಣ್ಣಾಕಿ ಇರುತಾ ನಾವು ನೀವು ಜತ್ತು
ಕಣ್ಣಿಟ್ಟು ಕಾಡುವುದೇನಿದು ಮಾತು
ಹುಣ್ಣವಿ ದಿವಸ ಆಮವಾಸಿ ಬಂತು
ಹಣ್ಣಾಗಿ ಉದರುವ ಬಳ್ಳಿ ಹಬ್ಬಿತ್ತು
ಇನ್ನ್ಯಾಕ ಕರುಣಾಗುಣವು ಇರಲಿ ಸ್ಥೂಲದ
ಹರವಿ ಸುಖದಲಿ ಹೊತ್ತು                                              ||೧||

ವಸುಧಿಯೊಳು ಶಿಶುನಾಳಧೀಶನ ಹೊರತು
ಮುಸುಕು ತೆಗೆದು ನೋಡೆ ಮಾಯೆ ಬಲವಾಯ್ತು
ಹಸನಾದ ಹಾಲಿನ ಕೆನಿಯು ನೀರಾಯ್ತು
ವ್ಯಸನವೆಂಬೊ ಮಜ್ಜಿಗಿ ಹುಳಿಯಾಯ್ತು
ದೆಸೆ ದೆಸೆಗಳಗೆ ಆಕ್ಷತೆ ಇಟ್ಟು ಮೋಹವ
ತೊಟ್ಟು ಬಂದೆ ನಾ ಸೋತು                                         ||೨||                  

                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಇದು ಏನು ಸೋಜಿಗವೇ ಮಾನಿನಿಯಾಗಿ


-ಶಿಶುನಾಳ ಶರೀಫ್

ಇದು ಏನು ಸೋಜಿಗವೇ ಮಾನಿನಿಯಾಗಿ
ಇದು ಏನು ಸೋಜಿಗವೇ                            ||ಪ.||

ಕಲ್ಲಿನೊಳಗೆ ಮುಳ್ಳು
ಮುಳ್ಳಿನೊಳಗೆ ಜೊಳ್ಳು
ಎಳ್ಳು ಕೋಲಿಯ ಕದ್ದು
ಕಳ್ಳ ಕಾಡಿನೊಳೋದ್ದ್ದೇನು ಸೋಜಿಗವೇ       ||೧||

ಹಕ್ಕರಕಿಯ ಗಿಡವನೇರಿ ಹಾವಿನ ಹುತ್ತಾ
ಹೊಕ್ಕಾ ಮುಂದಕ್ಕೆ ಸಾರಿ
ಮುಕ್ಕರಿಸುತಾ ಬಿದ್ದು
ಅಕ್ಕನ ಸೋಬತೊ ಮಾಡಿ ಮೂರು
ಮಕ್ಕಳ್ಹಡದು ಮೈನೆರದ್ದೇನು ಸೋಜಿಗವೇ     ||೨||

ಹೇಸಿ ಮನಿಗೆ ಹೋಗಿ ನಿನಗೆ ಬಹು-
ಲೇಸಾಗೆಂದು ಕೂಡಿ
ಕಾಸಿನ ತೂಕದ ಕಡಲಿ ತಂದು
ಭಾಸುರ ಶಿಶುನಾಳಧೀಶನೊಲಿಸಿ
ನಾಗವಿಲ್ಲದ ಮುಕ್ತಿ ಪಡದದ್ದೇನು ಸೋಜಿಗವೇ  ||೩||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಬಯಸಿದಕೆ ಮೋಹಿಸದಿರುವಂಥಾದ್ದೇನೇ ಭಾಮಿನಿ

-ಶಿಶುನಾಳ ಶರೀಫ್

ಬಯಸಿದಕೆ ಮೋಹಿಸದಿರುವಂಥಾದ್ದೇನೇ ಭಾಮಿನಿ
ಹೇ ಸಾಮಜಗಾಮಿನಿ ಇರುವಂಥಾದ್ದೇನೇ ಭಾಮಿನಿ                            || ಪ ||

ಬಾಳ ದಿವಸಾಯ್ತು ನಿಮ್ಮ್ನ್ನು ಕೇಳಿ ಕೀಳಿ ದಣಿದೆ ನೊಂದೆ
ಗಾಳಿ ವಂಂಟಪದೊಳಗೆ ಕೂಡಿ ಹೇಳಿದ ನುಡಿ ಆಳಾಪವಾಯ್ತು             || ೧ ||

ಚಲುವೆ ಅನಿಮಿಷಾಗ್ರ ಕೊನಿಗೆ ಸುಳಿದರೊಂದು ಘಳಿಗೆಯೊಳಗೆ
ತಿಳಿದು ನೋಡಿದೆ ಲಲನಾಮಣಿಯೇ ಹೋಳಿದು ಹೋದರೋಳಿತೇ ನೀರ  || ೨ ||

ಶಿಶುವಿನಾಳಧೀಶನೊಸಗೆಯೊಳಿರುವ ಕುಶಲವಂತೆ
ಹೊಸತು ಮಾಯಾ ಹರಿಸಿ ನಿಂದು ನಿಶಿತಾತ್ಮಕಿರಣಬಿಂದು                    || ೩ ||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಮರುಳಾದೆ ಮಾನಿನಿ

-ಶಿಶುನಾಳ ಶರೀಫ್

ಮರುಳಾದೆ ಮಾನಿನಿ ಮರುಳಾದೆ
ಮಾರನಾಟದಿ ಮನಸ್ಸುಗೊಂಡೆನೇ                                || ಪ ||

ತರುಳರನ್ನು ನೀನು ಕಾಣುತ ಸ್ಮರನ
ಸರಳ ನಟ್ಟು ವರದಿ ಮರಗಿಸುವದು ರೀತಿಯೇನೇ
ಸರಸಿಜಾಕ್ಷಿ ಕರುಣಿಸು                                                 || ೧ ||

ಸುಂದರಾಂಗಿ ಚಂದ್ರವದನೆ
ಮಂದಗಮನೆ ಹೊಂದಿ ಸುಖಿಸೆ
ಎಂದಿಗಾದರು ಆಗಲದಂಥ ಒಂದು ವಚನ ಲಾಲಿಸೈ           || ೨ ||

ಇಳೆಯೊಳಧಿಕ ಶಿಶುನಾಳ ಭಲರೆ ಗುರುಗೋವಿದನೊಡನೆ
ಕಲಶ ಕುಚವು ಕೈಯೊಳು ಪಿಡಿದು
ತಿಳಿಸಿ ಬೋಧಿಸೇ ಲಲನೆ                                              || ೩ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಏನಾಯ್ತೇ ಮಾನಿನಿ

-ಶಿಶುನಾಳ ಶರೀಫ್

ಏನಾಯ್ತೇ ಮಾನಿನಿ
ಏನಾಯ್ತೇ ಮಾನಿನಿ                               || ಪ. ||

ಭಾನು ಕಿರಣ ಕಾಣಿಸುವ ಪ್ರಕಾಶವು
ಜ್ಞನದೋಳಗೆ ಶುಭ ತಾನೇ ತಾನೆ            || ಅ. ಪ. ||

ನಿನ್ನ ಮಾರಿ ನೋಡಿದರೆ
ಘನ ಸರಿ ಕೂಡಿದೆ
ಹೀನ ವಿಷಯ ಸಂಹರಿಸುವದಕೆ
ಅನುಮಾನವ್ಯಾಕೆ ವನಜಾಕ್ಷಿಮಣಿಯೇ       || ೧ ||

ಶಿಶುನಾಳಧಿಶನು
ಅಸಮಾಕ್ಷನೀತನು
ಕುಸುಮಗಾತ್ರೆಯನ್ನಸುವ ತೋರದೆ
ಹಸನವಲ್ಲ ಕೋಸರಾಡುವದಿದು               || ೨ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ದಯಮಾಡಬೇಕೇ ಮಾನಿನಿಯೆ

-ಶಿಶುನಾಳ ಶರೀಫ್

ದಯಮಾಡಬೇಕೇ ಮಾನಿನಿಯೆ
ಮೋಹದ ಮನಗೋನಿಯೇ                                             ||ಪ.||

ವನಜಾನನೆ ಬಾಳ ದಿನ ಮನಸೋತೆನು
ಕನಕರಿಸುತಲಿರುವೆನು ಕನಕದ ಗಿರಿಜಾನಿಯೆ                      ||೧||

ಚಂದ್ರವದನೇ ಬಾ ಇಂದ್ರಲೋಕದ ರಂಭೆ
ಎಂದಿಗಾದರೂ ಇಂಥಾ ಗುಣವೇನಂದಪುರುಪನ ಖಣಿಯೇ     ||೨||

ವಸುಧಿಯೋಳ್ ಶಿಶುನಾಳಧೀಶನ ಸೇವಕನೋಳು ಮನ
ತುಸು ಕರುಣವಿರಲಿ ಕಾಮಿನಿಯೇ ಕುಸುಮಾಸ್ತ್ರನ ಖಣಿಯೇ    ||೩||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಎಲ್ಲರಂಥವನಲ್ಲ ನನ ಗಂಡ

-ಶಿಶುನಾಳ ಶರೀಫ್

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ                   || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ                  || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ                 || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ                    || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ                || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ                || ೫ ||
        ***


ಕೀಲಿಕರಣ: ಕಿಶೋರ್‍ ಚಂದ್ರ

ನಿನಗೇನಾತ ಸಖಿ

-ಶಿಶುನಾಳ ಶರೀಫ್

ನಿನ್ನವನು ನಾ
ನಿನಗೇನಾತ ಸಖಿ                  ||ಪ||

ಆನುಮಾನವಿಲ್ಲದೆ
ಆತ್ಮನ ಸವಿಸುಖ
ಚಿನುಮಯನಾಶ್ರಯಕೆ
ಆನುಮೋದಿಸು ವಿಭಾ
ನಿನಗೇನಾತ ಸಖಿ                  ||೧||

ಮೃಡಿಯಡರುತ
ಪೊಡವಿಏಗೆ ಬಿದ್ದು ಮಿಡಕುವಿ
ಕದುಚಿಂತೆಯನು ಕಂಡು
ನಿನಗೇನಾತ ಸಖಿ                  ||೨||

ಕಾಮಿನಿ ಕಲಹದ
ನಲೆ ತಿಳಿದ ಹಮ್ಮಿನೊಳು
ಶ್ರೀ ಮುನಿರಾಯ ನಿನ್ನ್ಹ್ಯಾಂಗ
ಸೈರಿಪನು ವಿಭಾ
ನಿನಗೇನಾತ ಸಖಿ                   ||೩||

ಉಟ್ಟ ಪಿತಾಂಬರ
ಗಟ್ಟ್ಯಾಗಿ ಕಟ್ಟಿಕೋ
ಮುಟ್ಟರೆ ಸಡಿಲದೆ
ಉಟ್ಟು ಮೋದಿಸು ವಿಭಾ
ನಿನಗೇನಾತ ಸಖಿ                   ||೪||

ಇಂದುಮುಖಿಯೆ ಕೇಳೇ
ಕುಂದನಿಡುವರುಂಟೆ
ಸುಂದರ ಶಿಶುನಾಳ-
ದೀಶ ನಿನ್ನವನು ನಾ
ನಿನಗೇನಾತ ಸಖಿ                   ||೫||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ನಮ್ಮನಿಮ್ಮಗಾಗದು

-ಶಿಶುನಾಳ ಶರೀಫ್

ನಮ್ಮನಿಮ್ಮಗಾಗದು
ಸುಮ್ಮನೆ ಹೊತ್ತು ಹೋಗದು                       ||ಪ.||

ಕ್ರಮವಗೆಡಿಸಿ ಮಮತೆವಿಡಿಸಿ
ರಮಿಸಿ ರಮಿಸಿದಲ್ಲೆ ಸಖೀ                          ||ಅ.ಪ.||

ಕರುಣವಿಲ್ಲದೇ ಹಿರಿಯರ ದಣಿಸಿ
ಕಿರಿಯರ ಕುಣಿಸಿದಿ ಸೇರಲಾರದೆ
ಕಿರಿಯರಿ ತಮ್ಮಗೆ ಮಾರಿದೋರದೆ
ಹರಿದು ಹೋದಿಯಲ್ಲೇ ಸಖಿ                        ||೧||

ಬಲ್ಲಿದ ಬಿಡಿಸಿದಿ ಒಳ್ಳೇರ ಕೆಡಸಿದಿ
ಕಳ್ಳರ ಹೋಡೆಸಿದಿ ಸುಳ್ಳರ ಬಡಿಸಿದಿ
ಮಳ್ಳಿಯ ತೆರದಿ ಮಾತನಾಡಿ
ತಳ್ಳಿಯ ದೂರನಾಡಿದೆ ಸಖಿ                      ||೨||

ಪೊಡವಿಪ ಶಿಶುನಾಳ
ಒಡೆಯನ ಮಗನಿಗೆ
ಕಡುಮೋಹಗೊಳ್ಳಲು ನುಡಿಯುವುದೇ ನಿನ್ನಾಟ
ಬಿಡು ಬಿಡು ಸಲ್ಲದು ಕಡುಕೇಡು ತಪ್ಪದು     || ೩ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಸಕ್ರನೆಂಬುವನ ಬಂಡಾಯದ ವೃತ್ತಾಂತವು

-ಅಬ್ಬಾಸ್ ಮೇಲಿನಮನಿ

ಡಾಂಬರಿನ ಆ ದೊಡ್ಡ ರಸ್ತೆ ಕವಲೊಡೆಯುವುದು ರೈಲು ಗೇಟಿನ ಹತ್ತಿರ.  ಒಂದು ರಸ್ತೆ ನೇರ ಊರೊಳಕ್ಕೆ ಹೋದರೆ ಮತ್ತೊಂದು ಬೈಪಾಸ್ ರಸ್ತೆ.  ಅದರ ಮಗ್ಗಲಲ್ಲಿರುವುದೇ ಗಾಂಧಿ ಕಾಲನಿ.  ನೂರಾರು ಗುಡಿಸಲು ಅಲ್ಲಿ ಒತ್ತೊತ್ತಾಗಿ ಉಸಿರುಗಟ್ಟವಂತೆ ಹಬ್ಬಿಕೊಂಡಿವೆ.  ಅದರಾಚೆಗೆ ತುಸು ದೂರದಲ್ಲಿ ನಗರದ ಕೊಳೆ, ಕಸ ಗುಡ್ಡೆಗುಡ್ಡೆಯಾಗಿ ಬಿದ್ದಿದೆ.  ಹೆಗ್ಗಣಗಳು ಒಳಗೊಳಗೆ ಸುರಂಗ ತೋಡುತ್ತವೆ.  ಮಲಿನ ನೀರು ಬಚ್ಚಲುಗುಂಡಿ, ಇಕ್ಕಟ್ಟಾದ ರಸ್ತೆಗಳಲ್ಲಿ ಖಾಯಂ ನಿಂತು ಭಯಂಕರ ಸೊಳ್ಳೆಗಳ ಸಂತಾನ ವೃದ್ಧಿಸಿದೆ.  ಸೂರಿನ ನೆಲ ಶಿಥಿಲವಾದರೂ, ಸೊಳ್ಳೆಗಳು ರಕ್ತ ಹೀರಿದರೂ ಕಂಗೆಡದೆ ಬದುಕಿರುವ ಇಲ್ಲಿನ ಬಡನಿವಾಸಿಗಳ ಜೀವನಪ್ರೀತಿ ಅಗಾಧ.  ಅಂಥ ಪ್ರೀತಿಗಾಗಿ ಹೋರಾಟ ಮಾಡುತ್ತಿರುವವರಲ್ಲಿ ಸಕ್ರಪ್ಪನೂ ಒಬ್ಬ.  ಎಲ್ಲರಿಗೂ ಅವನು ಸಕ್ರನೆಂದೇ ಚಿರಪರಿಚಿತ.

ನಲವತ್ತು-ನಲವತ್ತೈದರ ವಯೋಮಾನ ಅವನದು.  ದೇಹ ಶಕ್ತವಾಗಿಲ್ಲ.  ಕೂಲಿಗಾಗಿ ಸಂತೆ, ಮಾರ್ಕೆಟ್ ಎಂದು ಅಂಡಲೆಯುತ್ತಾನೆ.  ಚಿಕ್ಕ ಚಿಕ್ಕ ನಾಲ್ಕು ಮಕ್ಕಳಿವೆ.  ಬಡತನಕ್ಕೆ ಉಂಬುವ ಚಿಂತೆ ಎನ್ನವಂತೆ ಮಕ್ಕಳು ಯಾವಾಗಲೂ ಹಸಿದುಕೊಂಡಂತೆ ತಿನ್ನಲು ಏನಾದರೂ ಬೇಡುತ್ತಲೋ, ರೊಟ್ಟಿ ರೊಟ್ಟಿ ಎನ್ನುತ್ತಲೋ ಪ್ರಲಾಪಿಸುತ್ತಲೇ ಇರುತ್ತವೆ.  ಮಕ್ಕಳ ಹಸಿವು ಹಿಂಗಿಸುವ ಪರಿಗಾಗಿ ಸಕ್ರ ಚಿಂತಿಸುತ್ತಲೇ ಇರುತ್ತಾನೆ.  ಅವನ ಹೆಂಡತಿ ರುಕ್ಕಿ.  ಅವಳಿಗೂ ರಕ್ತಹೀನತೆ, ಆದರೂ ನಾಲ್ಕಾರು ಶ್ರೀಮಂತ ಮನೆಗಳ ಕಸ-ಮುಸುರೆಗೆ ಹೋಗುತ್ತಾಳೆ.  ಅವರು ಎತ್ತಿಕೊಟ್ಟ ತಿನಿಸನ್ನು, ಬಟ್ಟೆಗಳನ್ನು ಮಕ್ಕಳಿಗೆ ಒದಗಿಸಿ ಸಂಭ್ರಮಿಸುತ್ತಾಳೆ.

ಸಕ್ರ ಮೈಗಳ್ಳನಲ್ಲ, ಸೂರ್ಯನೊಂದಿಗೆ ಎದ್ದು ಕೂಲಿ ಹುಡುಕಿಕೊಂಡು ಹೋಗುತ್ತಾನೆ.  ರೈಲು, ಬಸ್ಸು ನಿಲ್ದಾಣಗಳಲ್ಲಿ ಅವನಿಗೆ ಪ್ರವೇಶ ನಿಷಿದ್ಧ.  ಸಂತೆ, ಮಾರ್ಕೆಟಿನಲ್ಲಿ ಕೂಲಿಯ ಅವಕಾಶವಿದ್ದರೂ ಸರಕು, ಸರಂಜಾಮುಗಳಿಗೆ ತಡಕಾಡಬೇಕು.  ಅಲ್ಲಿ ಕೂಲಿ ಮನುಷ್ಯರಿಗೇನೂ ಕಮ್ಮಿಯಿಲ್ಲ.  ಒಂದು ವಸ್ತು ಕಣ್ಣಿಗೆ ಬಿದ್ದರೆ ಇರುವೆ ಮುಕ್ಕುರುವಂತೆ ಕೂಲಿಗಳು ಧಾಂಗುಡಿಯಿಡುವರು.  ದೊಡ್ಡ ಬಾಯಿಯ, ಗಟ್ಟಿ ದೇಹದವರು ಸಕ್ರನ ಪಾಲಿನ ಅದೃಷ್ಟನ್ನು ಕಬಳಿಸಿ ಬಿಡುವರು.  ಇದರ ನಡುವೆಯೂ ಅವನು ಇಪ್ಪತ್ತು ಮೂವತ್ತು ರೂಪಾಯಿಗಳನ್ನು ಆರಾಮವಾಗಿ ಗಳಿಸಬಲ್ಲ.  ಮನಸು ಮಾಡಿದರೆ ಇದಕ್ಕೂ ಹೆಚ್ಚಿನ ಹಣ ಸಿಗಬಲ್ಲದು ಅವನಿಗೆ.  ತಕರಾರಿನ ಜಾಯಮಾನವಲ್ಲ ಸಕ್ರನದು.  ನಡವಳಿಕೆ ವಕ್ರವಲ್ಲ.  ಎಷ್ಟೋ ಜನ ಕೂಲಿಗಳು ಅಹಂಕಾರಿಗಳು.  ಅವರು ಮನುಷ್ಯರಂತೆ ವರ್ತಿಸುವುದಿಲ್ಲ ಎಂದು ಆರೋಪಿಸುವ ಮಂದಿ ಸಕ್ರನನ್ನು ಪ್ರೀತಿಸುತ್ತಾರೆ.  ಅವನು ಹಣಕ್ಕಾಗಿ ಪೀಡಿಸುವುದಿಲ್ಲ.  ಕೊಟ್ಟಷ್ಟು ಸ್ವೀಕರಿಸುತ್ತಾನೆಂದು ನಂಬುಗೆ ಅವರದು.  ಆದರೆ ಅದು ಸಕ್ರನ ಸಂಸಾರವನ್ನು ಸುಖವಾಗಿ ಇಟ್ಟಿಲ್ಲ.

ಸಕ್ರ ಮನೆಗೆ ಬಂದಾಗ ಮಧ್ಯಾಹ್ನದ ಹೊತ್ತು ರುಕ್ಕಿ ಕಣ್ಣಂಚಿನಲ್ಲಿ ನೀರು ತುಂಬಿಕೊಂಡು ಕುಳಿತಿದ್ದಳು.  ನರಳುತ್ತ ಮಲಗಿದ ಮಗಳ ಮೈ ಕೆಂಡವಾಗಿತ್ತು.  ಅಡುಗೆ ಒಲೆ ತಣ್ಣಗಿತ್ತು.  ನೆಲದ ಮೇಲೆ ಹೊಟ್ಟೆ ಹೊಸೆಯುತ್ತ ಹಸಿವಿನ ತಹತಹಿಕೆಯಲ್ಲಿ ಮೂರು ಗಂಡು ಮಕ್ಕಳು ಸಣ್ಣಗೆ ಆಕ್ರಂದಿಸುತ್ತಿದ್ದವು.  ಸಕ್ರನ ಅಂಗಿಯ ಜೇಬಿನಲ್ಲಿದ್ದುದು ಹತ್ತು ರೂಪಾಯಿ ಮಾತ್ರ, ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೋ?  ಮಕ್ಕಳಿಗೆ ತಿನ್ನಲು ಏನಾದರೂ ತಂದುಕೊಡಬೇಕೋ?  ಚಿಂತೆ ಕಾಡತೊಗಿತ್ತು ಅವನಿಗೆ.

ಇಂಥ ಸಂದಿಗ್ಧ ಹೊತ್ತಲ್ಲಿ ನಾಜೂಕಪ್ಪ ಅವತರಿಸಿದ.  ರಾಜಕೀಯ ಪಕ್ಷವೊಂದರ ಸಂಘಟನಾ ಕಾರ್ಯದರ್ಶಿಯಾದ ನಾಜೂಕಪ್ಪ ಬೆರಗಿನ ಮಾತುಗಾರ.  ಪಕ್ಷದ ಕಾರ್ಯಕ್ರಮಗಳಿಗೆ ಜನರನ್ನು ಸೇರಿಸುವ ತಂತ್ರಗಾರಿಕೆಯಲ್ಲಿ ನಿಪುಣ.  ಗಣ್ಯಾತಿಗಣ್ಯರು ತಮ್ಮ ಭಾಷಣದ ಯಶಸ್ಸಿಗೆ ಅವನನ್ನೇ ಅವಲಂಬಿಸುವರು.  ಈಗಂತೂ ಚುನಾವಣಾ ಸಮಯ ರಾಜಕಾರಣಿಗಳಿಗೆ ಅವನೇ ಉಸಿರು.  ಅವರಿಗೆ ನಾಜೂಕಪ್ಪ ಹೇಗೆ ಅನಿವಾರ್ಯವೋ, ಸಕ್ರನಂಥವರು ನಾಜೂಕಪ್ಪನಿಗೆ ಅನಿವಾರ್ಯ.  ಅದಕ್ಕೇ ಅವನು ಸಕ್ರನನ್ನು ಹುಡುಕಿಕೊಂಡು ಬಂದದ್ದು.  ಸಕ್ರನಿಗೂ ಅವನಿಗೂ ಹಳೆಯ ಪರಿಚಯ.

ನಾಜೂಕಪ್ಪನ ಮುಖ ನೋಡಿದ್ದೆ ಸಕ್ರನ ಕಣ್ಣು ಅರಳಿಕೊಂಡವು.  "ಬರ್‍ರಿ, ನಾಜೂಕಪ್ಪ ಎಷ್ಟು ದಿನ ಆತು ನಿಮ್ಮನ್ನೋಡಿ" ಎಂದು ಚಾಪೆ ಹರಡಿದ.  ಕುಳಿತ ನಾಜೂಕಪ್ಪ ತೆಳ್ಳಗೆ ನಗುತ್ತ "ಪಕ್ಷದ ಕೆಲಸ, ಸಮಾಜದ ಕೆಲಸ ಪುರುಸೊತ್ತಿಲ್ಲೋ ಮಹಾರಾಯ" ಎಂದ.

"ಪ್ರತ್ಯಕ್ಷ ಭಗವಂತನ ದರುಶನ ಮಾಡಿದ್ಹಂಗ ಆತ್ರಿ ನನ್ಗ!"  ಉಲ್ಲಾಸದಿಂದ ಉದ್ಗರಿಸಿದ ಸಕ್ರ.

"ಖರೆ ದೇವರಂದ್ರ ನೀನೊ ಸಕ್ರಣ್ಣ.  ನಿನ್ನಂಥವರ ಸೇವೆಗೆ ಇರೋರು ನಾವು" ವಿನಮ್ರವಾಗಿ ಹೇಳಿದ ನಾಜೂಕಪ್ಪ ಅದನ್ನು ಒಪ್ಪಿಕೊಳ್ಳದ ಸಕ್ರ.

"ಹಂಗ್ಯಾಕಂತೀರಿ ನಾಜೂಕಪ್ಪ?  ನಮ್ಮಂಥ ಬಡೂರ ಪಾಲಿಗೆ ನೀವಽಽ, ಅಲ್ಲೇನು ಆಧಾರ?" ಎಂದ.

"ಬಡತನ-ಸಿರಿತನ ಮುಖ್ಯ ಅಲ್ಲೊ ಸಕ್ರಣ್ಣ.  ಮನುಷ್ಯತ್ವ ದೊಡ್ಡದು" ಎನ್ನುತ್ತ ಗುಡಿಸಲಿನ ವಿದ್ಯಮಾನವನ್ನು ಸೂಕ್ಷ್ಮವಾಗಿ ಅವಲೋಕಿಸಿದ ನಾಜೂಕಪ್ಪ.

"ಯಾಕ, ಗಂಡ-ಹೆಂಡ್ತಿ ಮುಖ ಒಣಗಿಸ್ಕೊಂಡು ಕುಂತೀರಿ?" ಎಂದ.

"ಹುಡುಗಿಗೆ ಜ್ವರಾ ಬಂದಾವರಿ.  ಹುಡುಗರು ಹಸ್ಗೊಂಡು ಅಳಾಕ ಹತ್ತ್ಯವು ಇವತ್ತ ನೋಡಿದ್ರ ಕೂಲೀನಽ, ಸಿಗಲಿಲ್ಲ.  ಕಿಸೆದಾಗ ಹತ್ತು ರೂಪಾಯಿ ಇಟ್ಕೊಂಡು ದಿಕ್ಕು ತಿಳಿಲಾರ್‍ದ ಕುಂತಿನಿ" ನಿಟ್ಟುಸಿರಿಟ್ಟ ಸಕ್ರ.

"ನಾನಿರಾಕಲೇ ನಿನಗ್ಯಾಕ ಚಿಂತಿ?" ಕಾಳಜಿ ಅಭಿವ್ಯಕ್ತಿಸಿದ ನಾಜೂಕಪ್ಪ.

"ಚಿಂತಿ ಬಿಟ್ಟರ ಮತ್ತೇನದರಿ ನಮ್ಗ?" ಹತಾಶೆ ವ್ಯಕ್ತಪಡಿಸಿದ ಸಕ್ರ.

"ಸುಖದ ಕಾಲ ಬರತೈತಿ ತಡ್ಕೋ ಈ ಸಲ ಎಲೆಕ್ಷನದಾಗ ನಮ್ಮ ಪಕ್ಷ ಗೆಲ್ಲೋದು ಗ್ಯಾರಂಟಿಯೇನಪಾ, ನಾವು ಸರಕಾರ ರಚನಾ ಮಾಡಿದ ಮ್ಯಾಲೆ ಈ ನಾಡಿನ್ಯಾಗ ಬಡೂರಽಽ ಇರಬಾರದ್ದು ಹಾಂಗ ಮಾಡ್ತೀವಿ.  ಶ್ರೀಮಂತರು, ಬಡೂರಾಗ, ನಾವು ಸಮಾನತೆ ತರ್ತೀವಿ" ಆಶ್ವಾಸನೆ ಕೊಟ್ಟ ನಾಜೂಕಪ್ಪ.

"ಯಾರಽಽ ರಾಜ್ಯಾ ಆಳಿದ್ರೂ ಬಡೂರ ಬದುಕು ಪತ್ರೋಳಿನಽಽ ಬಿಡ್ರಿ" ಸಕ್ರ ಬೇಸರದ ಧ್ವನಿ ಹೊರಡಿಸಿದ.

"ಇದಽಽ ನೋಡಪ ನಿರಾಶಾ ಅನ್ನುದು.  ಶುಕ್ರ-ವಕ್ರ ಎಲ್ಲಾನೂ ಒಂದಽ ಥರಾ ಇರೂದಿಲ್ಲ ಸಕ್ರಣ್ಣ"

"ಬಡೂರು ಸಾಯೋದ್ರೊಳಗಽಽ ಶುಕ್ರ ಬಂದ್ರ ಚಲೋರಿ" ಎಂದ ಸಕ್ರ.

"ಕತ್ತಲಿನ್ಯಾಗ ಕುಂತವಂಗ ಹೊಸ ಸೂರ್ಯ ಕಾಣಿಸುದಿಲ್ಲ ಸಕ್ರಣ್ಣ.  ಮೊದಲ ನಿನ್ನ ಎದ್ಯಾನ ಚಿಂತಿ ತಗದು ಹಾಕು.  ಬೆಳಕಿನ ದಾರಿ ಹುಡುಕು.  ತಗೋ ಈ ನೂರು ರೂಪಾಯಿ ತಂಗಿಗೆ ಕೊಡು.  ಹುಡುಗರಿಗೆ ಏನಾರ ತಂದು ತಿನಿಸಲಿ.  ಹಸಿವನ್ನು ಹತ್ತಿಕ್ಕಬಾರ್‍ದು.  ಹಸಿದ ಹೊಟ್ಟೆ ಮರಮರ ಅಂದ್ರ ಜಗತ್ತು ಚೂರು ಚೂರು ಆಗತ್ತ.  ರುಕ್ಕವ್ವ ನಾನು ಡಾಕ್ಟರಿಗೆ ಒಂದು ಚೀಟಿ ಬರ್‍ದು ಕೊಡ್ತಿನಿ.  ಸರಕಾರಿ ದವಾಖಾನಿಗೆ ಮಗಳನ್ನು ಕರ್‍ಕೊಂಡು ಹೋಗಿ ತೋರ್‍ಸು.  ಈಗ ನಿನ್ನ ಗಂಡನ್ನ ನನ್ನ ಕೂಡ ಕರ್‍ಕೊಂಡು ಹೋಗ್ತಿನಿ" ನಾಜೂಕಪ್ಪ ಮನ ಕರಗುವಂತೆ ಹೇಳಿದ.

"ಎಲ್ಲಿಗರಿಯಣ್ಣಾ?" ರುಕ್ಕಿ ಕೇಳಿದಳು.

"ಇವತ್ನಿಂದ ಇಲೆಕ್ಷನ್ ಪ್ರಚಾರ ಜೋರಾಗಬೇಕಾಗೇತಿ.  ನಮ್ಮ ಪಾರ್ಟಿ ಲೀಡರು ಬರ್‍ತಾರ.  ಈ ನಗರದಾಗ ಮತ್ತ ಸುತ್ತ ಮುತ್ತಲಿನ ಊರಾಗ ಹಗಲು-ರಾತ್ರಿ ಕಾರ್ಯಕ್ರಮ ನಡಿತಾವು.  ಒಂದು ಟ್ರಕ್ ಮಂದಿನ್ನ ಕರ್‍ಕೊಂಡು ಹೋಗುವ ಜವಾಬ್ದಾರಿ ನನ್ನ ಮ್ಯಾಲೆ ಐತಿ.  ಒಬ್ಬೊಬ್ಬ ಮನಿಷ್ಯಾಗ ದಿವಸಕ್ಕ ನೂರು ರೂಪಾಯಿ ಅಷ್ಟಲ್ಲದಽಽ ಊಟ, ಚಹ, ನಾಷ್ಟಾ ಬ್ಯಾರೇನೂ ಐತಿ".

"ಅಲ್ಲಿ ಕೂಲಿ ಎನು ಮಾಡಬೇಕ್ರಿಯಣ್ಣ?"  ಕೇಳಿದಳು ರುಕ್ಕಿ.

"ಕೂಲಿ-ನಾಲಿ ಏನೂ ಇಲ್ಲ.  ಸುಮ್ಮನ ಕುಂತು ಭಾಷಣ ಕೇಳುದು.  ನಡುನಡುಕ ಚಪ್ಪಾಳಗಿ ಹೊಡೆಯೂದು.   ಆಮ್ಯಾಲೆ ಘೋಷಣಾ ಕೂಗುದು ಅಷ್ಟ....."  ಸಕ್ರ ಹಿಂದಿನ ಚುನಾವಣೆಗಳಲ್ಲಿನ ಅನುಭವವನ್ನು ನೆನಪು ಮಾಡಿಕೊಂಡು ಹೇಳಿದ.

"ಇಷ್ಟು ಹಗರು ಕೆಲಸಕ್ಕ ಅಷ್ಟು ರೊಕ್ಕ ಕೊಡ್ತಾರ ಅವರು?"  ಕೌತುಕದಿಂದ ಕೇಳಿದಳು ರುಕ್ಕು.

"ರೊಕ್ಕಕ್ಕ ಕಿಮ್ಮತ್ತಿಲ್ಲಬೆ ತಂಗಿ.  ಈಗ ನೀರಿನಂಗ ಚೆಲ್ಲತಾರ.  ಆಮ್ಯಾಲೆ ಸಲಿಕಿಯಿಂದ ಬಳ್ಕೋತಾರ.  ಇದೆಲ್ಲ ನಿಮ್ಗ ಅರ್ಥಾಗುದಿಲ್ಲ ಬಿಡ್ರಿ" ಎನ್ನುತ್ತ ಸಕ್ರನನ್ನು ಕರೆದುಕೊಂಡು ಅವಸರದಿಂದ ಹೊರಟ ನಾಜೂಕಪ್ಪ.

ಜನರನ್ನು ತುಂಬಿಕೊಂಡು ಟ್ರಕ್ಕು ಊರಿಂದೂರಿಗೆ ಚಲಿಸುತ್ತಲೇ ಇತ್ತು.  ಬೆಳಗು ಮಧ್ಯಾಹ್ನವೊ, ಸಂಜೆ-ರಾತ್ರಿಯೊ ವೇದಿಕೆಯ ಮುಂದೆ ನೇತಾರರಿಗಾಗಿ ಕಾಯುತ್ತ ಜಯಕಾರ ಹಾಕುತ್ತ ಕುಳಿತಿರುತ್ತಿದ್ದ ಜನರಿಗೆ ತಿನ್ನಲು ತುಸು ಉಪ್ಪಿಟ್ಟು, ವಗ್ಗರಣೆಖಾರಾ ಸಿಕ್ಕುತ್ತಿತ್ತು.  ಊಟವಂತೂ ಇಲ್ಲ.  ಓಡುವ ಕುದುರೆಯ ಮುಂದೆ ಕೋಲು ಹಿಡಿದು, ಅದರ ತುದಿಗೆ ಹುಲ್ಲು ಕಟ್ಟಿದಂತೆ ಹಸಿದ ಜನಕ್ಕೆ ಮುಂದಿನೂರಿನಲ್ಲಿ ಊಟವೆಂದು ಹೇಳಿ ಕಾರ್ಯಕರ್ತರು ಅವರನ್ನು ಭಾಷಣ ಮುಗಿದ ಕೂಡಲೇ ಟ್ರಕ್ಕಿನಲ್ಲಿ ಕುರಿಗಳಂತೆ ತುಂಬಿ ಸಾಗಹಾಕುತ್ತಿದ್ದರು.  ರಸ್ತೆಯ ಮಧ್ಯೆ ನೀರು ಕಂಡಲ್ಲಿ ಜಳಕ.  ಎಲ್ಲೋ ಒಂದು ಕಡೆಗೆ ಉಪ್ಪಿಟ್ಟಿನ ಸಮಾರಾಧನೆ.  ಕುಡಿಯಲು ಒಂದು ಕಪ್ಪು ಚಹ.  ಎಲೆಯಡಿಕೆ ಜಗಿಯಲಾದರೆ, ಸೇದಲು ಬೀಡಿ.  ಸಭೆಯಲ್ಲಿ ಗದ್ದಲವೆಬ್ಬಿಸಿ ಮಿಸುಕಾಡಿದರೆ ಕೈಗಳಿಗೆ ಬ್ರೆಡ್ಡಿನ ತುಂಡೋ, ನಾಲ್ಕಾರು ಬಿಸ್ಕೀಟು ಇಡಲಾಗುತ್ತಿತ್ತು.  ಎರಡು ದಿನ ಅನ್ನ, ರೊಟ್ಟಿಯ ದರ್ಶನವೇ ಇಲ್ಲ.  ಒಡಲ ಬ್ರಹ್ಮಾಂಡದ ಹಸಿವನ್ನು ಹತ್ತಿಕ್ಕಿಕೊಂಡ ಜನ ಕೈಗೆ ದೊರಕಬಹುದಾದ ಹಣದ ಲೆಕ್ಕಾಚಾರದಲ್ಲಿ ನೇತಾರರ ಭಾಷಣವನ್ನು ಆಲಿಸುತ್ತಿದ್ದರು.

ಧುರೀಣರ ಮಾತೆಂದರೆ ಮಾತು.  ಸಭೆಗೆ ಸಭೆಯೇ ಬೆರಗಾಗುತ್ತಿತ್ತು.  ಚಂದದ ಶಬ್ದಗಳು, ಪರಿಣಾಮಕಾರಿ ದೃಷ್ಟಾಂತಗಳು, ರೋಚಕಗೊಳಿಸುವ ಅಡ್ಡಕಥೆಗಳು, ನವರಸಗಳೆ ಹಾವಭಾವದಲ್ಲಿ ಪುಟಿಯುತ್ತಿದ್ದರೆ ಚಪ್ಪಾಳೆಯ ಮೇಲೆ ಚಪ್ಪಾಳೆ, ಕಗ್ಗತ್ತಲಿನಲ್ಲಿ ತಡಕಾಡುವರ ಎದುರು ಸೂರ್ಯನನ್ನು ಬೆಳಗಿಸುತ್ತೇವೆ ಎಂದರು.  ಚಂದ್ರನ ಬೆಳದಿಂಗಳನ್ನು, ನಕ್ಷತ್ರಗಳ ನಗೆಯನ್ನು ಚೆಲ್ಲುತ್ತೇವೆ ಎಂದರು.  ಹಸಿದ ಒಡಲಿಗೆ ಅಮೃತ ಹನಿಸುತ್ತೇವೆ.  ಸ್ವರ್ಗದಲ್ಲಿ ತೇಲಿಸುತ್ತೇವೆ ಎಂದರು.  ಅವರ ಭರವಸೆಯ ವರಸೆಗಳಿಂದ ಜನರು ಭ್ರಮಾಧೀನರಾಗಿ ಬಲೂನು ಉಬ್ಬಿದಂತೆ ಹಿಗ್ಗುತ್ತ ಚಪ್ಪಾಳೆ ತಟ್ಟುತ್ತ ಜಯವಾಗಲಿ ನಾಯಕರಿಗೆ.... ಎಂದು ಏರುಧ್ವನಿಯಲ್ಲಿ ಕೂಗುತ್ತಲೇ ಇದ್ದರು.

"ರೊಟ್ಟಿಯಿಂದ ನಮ್ಮ ಬದುಕು.  ರೊಟ್ಟಿಯಿಂದ ಈ ದೇಶ.  ಈ ಪ್ರಪಂಚ ಉಸಿರಾಡಿಸುವುದಽಽ ಈ ರೊಟ್ಟಿಯಿಂದ....!"  ಧುರೀಣನೊಬ್ಬನ ಈ ಉದ್ಗಾರ ಸಭಿಕರನ್ನು ರೋಮಾಂಚನಗೊಳಿಸಿತು.  ಎಲ್ಲೋ ಕಳೆದುಹೋದವನಂತೆ ಕುಳಿತಿದ್ದ ಸಕ್ರನ ಎದುರು ರೊಟ್ಟಿಯೇ ಕುಣಿಯತೊಡಗಿತ್ತು.  ಅವನ ಎಡಕ್ಕೂ-ಬಲಕ್ಕೂ, ಮೇಲಕ್ಕೂ, ಕೆಳಕ್ಕೂ ರಾಶಿರಾಶಿ ರೊಟ್ಟಿ.  ಜೋಳ, ಸಜ್ಜೆಯ ರೊಟ್ಟಿ, ಅಚ್ಚ ಬಿಳಿಯದು, ಅರಿಷಿಣ ಬಣ್ಣದ್ದು, ಎಳ್ಳು ಹಚ್ಚಿದ್ದು, ತೆಳ್ಳಗಿನದು, ದಪ್ಪನೆಯದು, ಚಿಕ್ಕ-ದೊಡ್ಡಗಾತ್ರದ್ದು.  ಹಿಂಡು ಹಿಂಡಾಗಿ ಬಂದರು ಅಸಂಖ್ಯಾತ ಹಸಿದ ಮಂದಿ.  ನೂಕಿ, ನುಗ್ಗಿ ರೊಟ್ಟಿಯನ್ನು ಕೈಗೆತ್ತಿಕೊಂಡರು.  ಮುರಿದು ಬಾಯಿಗಿಟ್ಟು ಗಬಗಬನೆ ತಿನ್ನತೊಡಗಿದರು.  ಸಕ್ರನ ಮಕ್ಕಳಂತೂ ಎರಡೂ ಕೈಗಳಲ್ಲಿ ರೊಟ್ಟಿ ಹಿಡಿದು ಕುಣಿದಾಡತೊಡಗಿದರು.  ರೊಟ್ಟಿಯ ಹಬ್ಬದ ಸಡಗರ ರುಕ್ಕಿಯ ಮುಖವನ್ನು ಅರಳಿಸಿತ್ತು.

"ಧುರೀಣರಿಗೆ ಜಯವಾಗಲಿ, ಆಳುವ ಪ್ರಭುಗಳಿಗೆ ಜಯವಾಗಲಿ, ಭೋಲೋ ಭಾರತ ಮಾತಾಕೀ ಜಯ್...."  ಆಕಾಶ ಭೇದಿಸುವಂತೆ ಕೂಗಿದ್ದರು ಜನ.  ಸಕ್ರ ವಾಸ್ತವಕ್ಕೆ ಬಂದಿದ್ದ.  ಐದು ದಿನಗಳ ಚುನಾವಣಾ ಪ್ರಚಾರ ಸಮಾರೋಪ ಕಂಡಿತು.  ಊರು, ಹೆಂಡತಿ, ಮಕ್ಕಳನ್ನು ನೆನಪು ಮಾಡಿಕೊಂಡ ಜನ ಟ್ರಕ್ಕಿನ ಹತ್ತಿರ ಬಂದು ಸೇರಿದರು.  ರಣಗುಡುವ ಸೂರ್ಯ ಅವರ ನೆತ್ತಿಯನ್ನು ಉರಿಸುತ್ತ, ಹಟ್ಟೆಗಿಳಿದು ಹಸಿವನ್ನು ಕೆರಳಿಸಿದ.  ಅವರ ಕಣ್ಣು ನಾಜೂಕಪ್ಪನಿಗಾಗಿ ಹುಡುಕಾಡಿದವು.  ಅವನು ಗೆಸ್ಟ್‌ಹೌಸಿನಲ್ಲಿ ಇದ್ದಾನೆಂದು ಯಾರೋ ಪಿಸುಗುಟ್ಟಿದರು.  ಸಕ್ರನ ಹೆಜ್ಜೆಗಳು ಅತ್ತಕಡೆಗೆ ಚಲಿಸಿದವು.  ಉಳಿದವರು ಅವನನ್ನು ಹಿಂಬಾಲಿಸಿಕೊಂಡು ಹೋದರು.

ಗೆಸ್ಟ್‌ಹೌಸಿನ ಹಿಂಬದಿಯಲ್ಲಿ ಹಾಕಿದ್ದ ಶಾಮಿಯಾನದಲ್ಲಿ ಹತ್ತಿಪ್ಪತ್ತು ಜನ ಕುಳಿತು ಮೆತ್ತಗೆ ಮಾತಾಡುತ್ತ ನಗುತ್ತ ವಿಸ್ಕಿ, ರಮ್ಮು ಹೀರುತ್ತ ಖುಷಿಯಾಗಿದ್ದರು.  ನಾಜೂಕಪ್ಪ ಅವರೊಂದಿಗೆ ಬೆರೆತು ಹೋಗಿದ್ದ.  ಒಂದು ಬದಿಗೆ ಬಿಳಿಬಟ್ಟೆ ಹೊದಿಸಿದ ದೊಡ್ಡ ಟೇಬಲ್ ಮೇಲೆ ಕಡಕ್ ರೊಟ್ಟಿ, ಪರೋಟಾ, ಚಿಕನ್, ಮಟನ್, ಫಿಶ್‌ಫ್ರಾಯ್, ಆಮ್ಲೇಟ್, ಮಸಾಲೆ ರೈಸ್ ಘಮಘಮಿಸುತ್ತಿದ್ದವು.

ಅದರ ಜಾಡು ಹಿಡಿದು ಒಳ ನುಗ್ಗಿ ಬಂದರು ಜನ.  ಅವರ ಮುಂದೆ ಸಕ್ರ ಇದ್ದ.  ಅರೆಬರೆ ನಶೆಯಲ್ಲಿದ್ದ ಶಾಮಿಯಾನ ಅವರನ್ನು ನೋಡಿ ತತ್ತರಿಸಿತು.  ನಾಜೂಕಪ್ಪ ದಿಢೀರೆಂದು ಎದ್ದು ಬಂದು ಸಕ್ರನನ್ನು ದಬಾಯಿಸಿದ.  ಮಹಾನ್ ನಾಯಕರ ಎದುರು ಅಗೌರವದಿಂದ ನಡೆದುಕೊಳ್ಳಬಾರದೆಂದು ಎಚ್ಚರಿಸಿದ.  ಅವನ ತಗಡು ಮಾತುಗಳನ್ನು ಧಿಕ್ಕರಿಸಿ "ನಮ್ಗ ಊಟ ಬೇಕು, ರೊಕ್ಕ ಬೇಕು" ಎಂದು ಕೂಗಿದ ಸಕ್ರ.  ಉಳಿದವರ ಅವಾಜು ಅದರೊಂದಿಗೆ ಸೇರಿಕೊಂಡಿತು.  ಜನರನ್ನು ಅಲ್ಲಿಂದ ಪಲ್ಲಟಿಸಲು ನಾಜೂಕಪ್ಪನಿಂದ ಸಾಧ್ಯವಾಗಲಿಲ್ಲ.  ಗೆಸ್ಟ್‌ಹೌಸಿನ ಕೆಲಸಗಾರರೊಂದಿಗೆ ಒಂದಿಬ್ಬರು ದಢೂತಿ ಕಾರ್ಯಕರ್ತರು ಜನರನ್ನು ಚದುರಿಸಲು ತಮ್ಮ ಬಲ ಪ್ರಯೋಗಿಸಿದ್ದು ನಿರ್ವೀರ್‍ಯವೆನಿಸಿತು.  ಜಿಗುಟತನ ನರನಾಡಿ ತುಂಬಿಕೊಂಡಿತೋ ಎನ್ನುವಂತೆ ಸಕ್ರ ಅವರನ್ನು ಸೀಳಿಕೊಂಡು ಹೋಗಿ ರೊಟ್ಟಿಗೆ ಕೈಹಾಕಿದ.  ಉಳಿದವರೂ ಅವನನ್ನು ಅನುಸರಿಸಿದರು.

ದಿಗಿಲುಗೊಂಡ ರಾಜಕೀಯ ಮಂದಿ ಆಕ್ರೋಶದಿಂದ "ಪೋಲಿಸರಿಗೆ ಫೋನ್ ಮಾಡ್ರಿ" ಎಂದರು.  ಒಂದಿಬ್ಬರು ಜನರ ಕೈಯಲ್ಲಿದ್ದ ರೊಟ್ಟಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು.  ಸಕ್ರ ಅವರನ್ನು ದೂರಕ್ಕೆ ನೂಕಿ "ಹೊಟ್ತುಂಬ ಉಣ್ಣೂನು ಬರ್‍ರಿ" ಎಂದು ಆಹ್ವಾನಿಸಿದ.  ರೊಟ್ಟಿ, ಪರೋಟಗಳ ಮೇಲೆ ಚಿಕನ್, ಮಟನ್, ಕೈಗೆ ಸಿಕ್ಕಿದ್ದನ್ನು ಬಡಿಸಿಕೊಂಡು ತಿನ್ನಲು ಶುರುವಿಟ್ಟುಕೊಂಡರು ಜನ.  "ನಾಚಿಕಿ ಇಲ್ದವರ, ಭಿಕಾರಿ ಹಾಂಗ ಹಿಂಗ್ಯಾಕ ಮಾಡಾಕ ಹತ್ತೀರಿ" ನಾಜೂಕಪ್ಪ ಕೆಟ್ಟ ಸ್ವರದಲ್ಲಿ ಕೂಗಿಕೊಂಡ.  ಅವನ ಬೈಗಳು ತಮಗೆ ಸಂಬಂಧಿಸಿದ್ದು ಅಲ್ಲವೆಂಬಂತೆ, ಅಂತ ಆಹಾರವನ್ನು ಎಂದಿಗೂ ಕಂಡಿಲ್ಲವೋ ಎಂಬಂತೆ, ತಮ್ಮದು ಅನಂತಕಾಲದ ಹಸಿವು ಎನ್ನುವಂತೆ ಊಟದಲ್ಲಿ ಮೈಮರೆತಿದ್ದರು ಜನ.  ನಾಜೂಕಪ್ಪನ ಹತ್ತಿರ ಬಂದ ಸಕ್ರ `ಅವರು ಬಾಳಾ ಹಸದಾರ ನಾಜೂಕಪ್ಪ.  ಇಲ್ಲೀತನಕ ತಡಕೊಂಡಿದ್ದಽಽ ಹೆಚ್ಚನ್ನು...." ಎಂದ.

ಪೋಲೀಸ್ ವ್ಯಾನ್ ಬಂದು ನಿಂತಿತು.  ಹತ್ತಾರು ಜನ ಪೋಲಿಸರು ಮುಖ ಧುಮುಗುಡಿಸುತ್ತ ವ್ಯಾನ್ ಇಳಿದರು.  ಜೀಪಿನಿಂದಿಳಿದ ಡಿವೈಎಸ್ಪಿ ತ್ವರಿತವಾಗಿ ಶಾಮಿಯಾನದೊಳಗೆ ನುಗ್ಗಿಬಂದ.  ನಿರ್ಭೀತರಾಗಿಯೇ ಇದ್ದರು ಜನ.  "ಒದ್ದು ಎಳಕೊಂಡು ನಡೀರಿ ಈ ಹರಾಮ್‌ಖೋರ ಮಕ್ಕಳನ್ನ" ಮಾಜಿ ಮಂತ್ರಿಯೊಬ್ಬರು ವಿಕಾರವಾಗಿ ಕೂಗಿದರು.  "ನಡೀಲೆ ಬದ್ಮಾಶ್, ಹಲ್ಕಾನನ್ಮಗನೆ....." ಎಂದು ತನ್ನ ಸಂಸ್ಕಾರ ನಾಲಗೆಯಿಂದ ಅನಾಗರಿಕರ ಭಾಷೆ ಬಳಸುತ್ತ ರಾಕ್ಷಸಿ ಕೈಗಳಿಂದ ಒಬ್ಬೊಬ್ಬನ ಚಂಡಿಗೆ ಕೈಹಾಕಿ ವೀರಾವೇಶ ಪ್ರದರ್ಶಿಸಿದ ಡಿವೈಎಸ್ಪಿ.  "ಹಸಿದೋರು ಯಾರಿಗೂ ಅಂಜುದಿಲ್ಲ ಸಾಹೇಬರ" ಸಕ್ರ ಧೈರ್ಯದಿಂದ ಹೇಳಿದ.

"ದಂಗಾ ನಡಸ್ತಿಯೇನಲೆ ಮಿಂಡರಿಗುಟ್ಟಿದವನೆ.  ಓಂದಽಽ ಒದ್ರ ನೆಲಾ ಬಿಟ್ಟು ಏಳಂಗಿಲ್ಲ ನೀನು" ಡಿವೈಎಸ್ಪಿ ಕೆಂಡದ ಕಣ್ಣಿಂದ ಸಕ್ರನನ್ನು ದಿಟ್ಟಿಸಿದ.

"ನಾವು ಬದ್ಮಾಶರು, ಪುಂಡರು, ಮಿಂಡರಿಗುಟ್ಟಿದವರು ಅಲ್ರಿ ಸಾಹೇಬರ.  ಬಡೂರು.  ಕೂಲಿಜನ.  ನಿಮ್ಹಂಗ ಮನಿಷ್ಯಾರು.  ಈ ರಾಜಕೀಯ ಮಂದಿ ನಮ್ಮನ್ನ ದೇವರಂತ ಕರೀತಾರ.  ದೊರೆಗಳು ಅಂತಾರ.  ನಮ್ಮ ಸೇವಾ ಮಾಡ್ತಿವಂತಾರ;  ಈಗ ನೋಡಿದ್ರ ಉಪವಾಸ ಕೊಲ್ಲಾಕ ಹತ್ತ್ಯಾರ" ಕಠೋರ ಸತ್ಯವನ್ನು ಹೇಳಿದ ಸಕ್ರ.

"ಇಂವಾ ಸುಳ್ಳು ಹೇಳಾಕ ಹತ್ತ್ಯಾನ.  ಇವರ್‍ಯಾರೋ ನಮ್ಗ ಗೊತ್ತಿಲ್ಲ, ಒಮ್ಮೇಲೆ ನುಗ್ಗಿ ಬಂದು ಇಲ್ಲಿ ದಾಂಧಲೆ ನಡಿಸ್ಯಾರ" ಅಪ್ಪಟ ಸುಳ್ಳು ಹೇಳದ ಒಬ್ಬ.  ಆ ಮಾತು ಕೇಳಿಯೂ ಕೇಳದಂತೆ ನಿಂತಿದ್ದ ನಾಜೂಕಪ್ಪ.  ಸಹನೆಯ ಕಟ್ಟೆಯೊಡೆದವನಂತೆ ಡಿವೈಎಸ್ಪಿ ಸಕ್ರನ ಎದೆಯ ಮೇಲೆನ ಅಂಗಿ ಹಿಡಿದು ಜೋರಾಗಿ ಎಳೆದ.  ಸಕ್ರ ಗಟ್ಟಿಯಾಗಿ "ಸಾಹೇಬರ ಈ ರೊಟ್ಟಿ, ಅನ್ನದ ಮ್ಯಾಲೆ ನಮ್ಮ ಹಕ್ಕು ಐತಿ" ಎಂದ.  ಅವನನ್ನು ವ್ಯಾನಿನತ್ತ ದೂಡಿದ ಡಿವೈಎಸ್ಪಿ "ಜೈಲಿನ್ಯಾಗ ಚಲೋತಂಗ ತಿನಸ್ತೀನಿ ನಡಿ ಮಗನ" ಎಂದ.

ಜನರ ರಕ್ತ ಕಳಕಳ ಅಂದಿತು.  "ಪೋಲಿಸರ ದಬ್ಬಾಳಿಕೆಗೆ ಧಿಕ್ಕಾರ.... ಬಡವರ ಹೊಟ್ಟೆ ಮ್ಯಾಲೆ ಹೊಡೆವ ಪುಢಾರಿ ರಾಜಕಾರಣಿಗಳಿಗೆ ಧಿಕ್ಕಾರ" ಒಕ್ಕೊರಲಿದರು ಅವರು.  ಸಕ್ರ "ಹೋರಾಟ..... ಹೋರಾಟ....." ಎಂದು ಪ್ರತಿಕ್ರಿಯೆಯ ಧ್ವನಿ ಮೊಳಗಿಸುತ್ತ ಎಲ್ಲರೂ ವ್ಯಾನೊಳಗೆ ತೂರಿಕೊಂಡರು.  ಕೂಗು ಅಬ್ಬರಗೊಳ್ಳುತ್ತಲೇ ಇತ್ತು.  ಅದು ಸಾಮಾನ್ಯವಲ್ಲ ಅನಿಸತೊಡಗಿತ್ತು ನಾಜೂಕಪ್ಪನಿಗೆ.  ಭೂಮಿ ಬಾಯಿ ಬಿಡುವುದೋ ಆಕಾಶ ಛಿದ್ರಗೊಳ್ಳುವುದೋ, ವ್ಯಾನ್ ಸ್ಪೋಟಗೊಳ್ಳುವುದೋ ಎಂದು ದಿಗಿಲುಗೊಳಗಾದ ಅವನಿಗೆ ಸಕ್ರನ ವರ್ತನೆ ವಿಚಿತ್ರವಾಗಿ ತೋರಿತ್ತು.  ಏಕಾಏಕಿ ಸಕ್ರ ಹೀಗೇಕೆ ಬದಲಾದನೆಂದು ತಲೆಕೆದರಿಕೊಂಡ ನಾಜೂಕಪ್ಪ.

ಸಕ್ರ ದೊಡ್ಡ ಧ್ವನಿಯಲ್ಲಿ "ರೊಟ್ಟಿಗಾಗಿ ಜೇಲಾಗ್ಲಿ, ಬೂಟಿನ ಒದೆತ, ಲಾಟಿಯ ಹೊಡೆತ ಬೀಳ್ಲಿ.  ಬಂದೂಕಿನ ಗುಂಡು ಎದಿಯಾಗ ಹೋಗ್ಲಿ" ಎನ್ನುತ್ತಿದ್ದ.  ಜನರು ತತ್‌ಕ್ಷಣ ಅವನ ಮಾತುಗಳನ್ನು ಪ್ರತಿಧ್ವನಿಸುತ್ತಿದ್ದರು.

ಸಕ್ರ ನುರಿತ ಬಂಡಾಯಗಾರನಂತೆ ಗೋಚರಿಸಿದ ನಾಜೂಕಪ್ಪನಿಗೆ.  ತಂಗಾಳಿ ಬಿರುಗಾಳಿಯಾಗುವುದೆಂದರೇನು?  ಮಂಜುಗಡ್ಡೆ ಉರಿದ ಕೆಂಡದಂತೆ ಪ್ರಜ್ವಲಿಸುವುದೆಂದರೇನು?  ಅವನ ತಾಕತ್ತಿನ ಹಿಂದೆ ವಿರೋಧ ಪಕ್ಷದವರ ಕೈವಾಡವೇನಾದರೂ ಇದ್ದಿರಬಹುದೆ?  ಗುಮಾನಿ ನಾಜೂಕಪ್ಪನನ್ನು ತೀವ್ರವಾಗಿ ಆವರಿಸಿಕೊಂಡಿತು.  ಸಕ್ರನದು ಹಸಿವಿನ ಸಿಟ್ಟು ಎಂದು ಅವನಿಗಾಗಲಿ, ರಾಜಕೀಯ ಮುತ್ಸದ್ದಿಗಳಿಗಾಗಲಿ ಹೊಳೆಯಲೇ ಇಲ್ಲ.

ಪ್ರತಿಭಟನೆಗಾರರ ಕೆಚ್ಚು ಪ್ರತಿಕ್ಷಣಗಳ ಮೈತುಂಬಿಕೊಳ್ಳತೊಡಗಿತ್ತು.  ನಾಜೂಕಪ್ಪನ ಸೂಕ್ಷ್ಮಗಳ ಜೀವಿದ್ರವ್ಯ ಬತ್ತಿದಂತಾಗಿದ್ದರೆ, ರಾಜಕಾರಣಿಗಳ ತಂತ್ರಗಳು ನಪುಂಸಕವೆನಿಸಿದವು.  ಕೂಲಿಗಳನ್ನು ಕುರಿಗಳೆಂದು ತಿಳಿದಿದ್ದೆ ತಪ್ಪಾಯಿತೆಂದುಕೊಂಡ ನಾಜೂಕಪ್ಪ.

ವ್ಯಾನಿನ ಒಳಗೂ ಹೊರಗೂ ತುಂಬಿ ತುಳುಕಾಡತೊಡಗಿದ ಜನ ಅಪಾಯಕಾರಿಗಳಂತೆ ಕಂಡು ಬಂದರು.  ಅವರಿಗೆ ಬುದ್ಧಿ ಕಲಿಸಲು ಯೋಚಿಸಿದ ಡಿವೈಎಸ್ಪಿ ಸೊಂಟದಲ್ಲಿನ ಪಿಸ್ತೂಲು ತೆಗೆದು, ಆಕಾಶಕ್ಕೆ ಕೈಯೆತ್ತಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿದ.  ನಾಜೂಕಪ್ಪನ ಎದೆಗುಂಡಿಗೆ ಝಲ್ಲೆಂದಿತು.  ರಾಜಕೀಯ ಮಂದಿಯ ನಶೆ ಜರ್‍ರನೆ ಪಾದಕ್ಕಿಳಿಯಿತು.

"ಗುಂಡು ಹೊಡೆವ ಪುಂಡರಿಗೆ ಮುರ್ದಾಬಾದ್......." ಜನರ ಸಮೂಹದಿಂದ ಸಿಡಿದು ಬಂದಿತು ಒಂದು ಧ್ವನಿ.  "ಒಬ್ಬೊಬ್ಬರ ಎದಿಗುಂಡಿಗಿ ಒಡೆದು ಹಾಕ್ತೀನಿ" ತಲೆಕೆಟ್ಟವರಂತೆ ಚೀತ್ಕರಿಸಿದ ಡಿವೈಎಸ್ಪಿ.  ಚುನಾವಣೆ ಹೊಸ್ತಿಲಲ್ಲಿ ಅಮಾಯಕರ ಹೆಣ ಉರುಳಿದರೆ ಮತದಾರರು ತಮ್ಮ ಪಕ್ಷದ ಗೋರಿ ಕಟ್ಟುತ್ತಾರೆ.  ಅಧಿಕಾರ ದಕ್ಕಿಸಿಕೊಳ್ಳಲು ತುದಿಗಾಲ ಮೇಲೆ ನಿಂತಿರುವ ವಿರೋಧ ಪಕ್ಷದವರಿಗೆ ತಾವೇ ಈ ಮೂಲಕ ರತ್ನಗಂಬಳಿಯನ್ನು ಹಾಸಿಕೊಟ್ಟಂತಾಗುತ್ತದೆ ಎಂದು ಮಾಜಿ ಶಾಸಕರೊಬ್ಬರು ಕಳವಳಿಸಿದರು.  ಜಾಗೃತರಾದ ಮಾಜಿ ಸಚಿವರು ಈ ಜನರನ್ನು ನಾವು ಸಂಭಾಳಸ್ತೀವಿ.  ನೀವು ವಾಪಸ್ ಹೋಗಿ ಬಿಡ್ರಿ" ಎಂದು ಡಿವೈಎಸ್ಪಿಗೆ ಹೇಳಿ, ವ್ಯಾನಿನಿಂದ ಸಕ್ರನನ್ನು ಕೆಳಗಿಳಿಸಿ "ನಮ್ಮಿಂದ ಸ್ವಲ್ಪ ಎಡವಟ್ಟಾತು ಸಕ್ರಣ್ಣ" ಎನ್ನುತ್ತ ಅವನ ಹೆಗಲ ಮೇಲೆ ಕೈಹಾಕಿಕೊಂಡು ಶಾಮಿಯಾನದತ್ತ ನಡೆದರು.

"ಈ ಪಕ್ಷ ನಿಮ್ಮದು.  ನಾವೂ ನಿಮ್ಮವರು ಸಕ್ರಣ್ಣ."  ಪಕ್ಷದ ಕಾರ್ಯದರ್ಶಿ ದೇಶಾವರಿ ನಗೆಯಾಡುತ್ತ ಹೇಳಿದರು.

"ಇದು ಸತ್ಯ ಅಹಿಂಸೆಯ ಪಕ್ಷ.  ಗಾಂಧೀಜಿ ಸಿದ್ಧಾಂತವನ್ನು ಒಪ್ಕೊಂಡೋರು ನಾವು.  ನಿಮ್ಮಂಥ ಬಡವರು, ಕೂಲಿಕಾರರು ನಮ್ಮ ಪಕ್ಷದ ಜೀವಾಳ.  ನೀವಿಲ್ಲ ಅಂದ್ರ ನಾವ್ಯಾವ ಗಿಡದ ತಪ್ಪಲೊ ಸಕ್ರಣ್ಣ.  ಭಗವಂತ ಈ ಭೂಮಿ ಸೃಷ್ಟಿ ಮಾಡದಾ ನಿಮ್ಮಂಥ ಒಳ್ಳೆ ಮನುಷ್ಯಾರನ ಸೃಷ್ಟಿ ಮಾಡದಾ.  ನೀವು ನಮ್ಗ ಸ್ಥಾನ-ಮಾನ ಕೊಟ್ರಿ.  ನಿಮ್ಮ ಋಣದಾಗ ಇದ್ದೋರು ನಾವು ನಮ್ಮ ತಪ್ಪು ಒಪ್ಕೊಂತೀವಿ.  ಎಲ್ಲಾರ್‍ನೂ ಶಾಮಿಯಾನದೊಳಗೆ ಕರ್‍ಕೊಂಡು ಬಾ ನೀನು, ಹೊಟ್ಟೆ ತುಂಬ ಊಟ ಮಾಡ್ರಿ.  ನಿಮ್ಗ ಕೈ ತುಂಬ ರೊಕ್ಕಾ ಕೊಟ್ಟು, ಸುರಕ್ಷಿತ ನಿಮ್ಮೂರಿಗೆ ಕಳಿಸಿ ಕೊಡ್ತೀವಿ" ಹೊಟ್ಟೆಯಲ್ಲಿನ ಹರಳು ಕರಗುಂತೆ ಮಾತಾಡಿದ ಮತ್ತೊಬ್ಬ ಧುರೀಣ.

ಊರಸವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುವ ರಾಜಕಾರಣಿಗಳ ರೀತಿಗೆ ತತ್ತರಗೊಂಡ ಡಿವೈಎಸ್ಪಿ ಕೂಡಲೇ ಜೀಪೇರಿಕೊಂಡು ಹೋದ.  ಅವನ ಹಿಂದೆಯೇ ಪೋಲೀಸ್ ವ್ಯಾನು ತೆವಳುತ್ತ ಸಾಗಿತು.  ನಾಜೂಕಪ್ಪನಂತೂ ತನ್ನೆರಡೂ ಹಸ್ತಗಳನ್ನು ಫೆವಿಕಾಲಿನಿಂದ ಭದ್ರಪಡಿಸಿಕೊಂಡಂತೆ ಸಕ್ರನ ಎದುರಲ್ಲಿ ಮುಗಿದುಕೊಂಡೆ ನಿಂತಿದ್ದ.

ನೆರೆದ ಜನರಲ್ಲಿ ಒಂದಿಬ್ಬರು ಸಕ್ರನನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡರು.  `ಸಕ್ರಣ್ಣನಿಗೆ ಜಯವಾಗಲಿ' ಹರ್ಷೋದ್ಗಾರ ಮುಗಿಲು ಮುಟ್ಟಿತು.  ವಿವಶರಾಗಿ ನಿಂತಿದ್ದ ಶಾಸನಾಧೀಶರಿಗೆ ಶಾಮಿಯಾನದ ಎತ್ತರಕ್ಕೇರಿದ ಸಕ್ರನ ಕಾಲುಗಳು ವಾಮನನ ಪಾದಗಳಂತೆ ಕಂಡವು.

               ***

ಕೀಲಿಕರಣ: ಕಿಶೋರ್‍ ಚಂದ್ರ

ಎಂಥಾ ನಗಿ ಬಂತೋ ಎನಗೆ

-ಶಿಶುನಾಳ ಶರೀಫ್

ಎಂಥಾ ನಗಿ ಬಂತೋ ಎನಗೆ          
ಗಡ ಮುದುಕಿಯ ಕಂಡು                       ||ಪ||

ನಿಂತು ನೋಡಲಾಗವ್ಲ್ಲದು ಕಣ್ಣಿಲೆ     
ಸಂತ್ಯಾಗ ಮಂದಿ ಕಾಣದವಳೋ           ||ಅ.ಪ.||

ಆರು ಮೂರು ಗೆಳತೇರ ಸ್ನೇಹವನು
ದೂರ ಮಾಡದೆ ಸುಮ್ಮ್ನದಿ ತಾನು
ದಾರಿಹಿಡಿದು ಸಾರುವಳಿದು ಏನು
ದಾರಿ ನಡೆದ ಮುದುಕಿಯ ಕಂಡು           || ೧ ||

ಎಂಟು ಮಂದಿ ನೆಂಟರು ಮನಸೋತು
ಗಂಟುಬೀಳಲವರನು ಕೂಡಿಕೊಂಡು
ಪಂಟುಹಚ್ಚಿ ಪರವಶದಿ ಪೊಗುತಿಹ
ಸೊಂಟಮುದುಕಿಯನು ಕಂಡು              || ೨ ||

ಸಂದಿಗೊಂದಿಯೊಳು ಹುಡಕುತ ಬರಲು
ತಂದೆ ಗುರುಗೋವಿಂದನ ಚರಣವ
ಹೊಂದಿಕೋ ಎಂದರೆ ನಿಂದೆಯನಾಡುತ
ಮುಂದಕೆ ನಡಿವಳು ಮಂದಗಮನದಿ       || ೩ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ನಡಿ ನಡಿಯುತ ಗಂಡ ನಡಮುರಿದೊದೆನ್ನ

-ಶಿಶುನಾಳ ಶರೀಫ್

ನಡಿ ನಡಿಯುತ ಗಂಡ ನಡಮುರಿದೊದೆನ್ನ
ಹುಡುಗಾಟ ಬಿಡಿಸಿ ಹೌದೆನಿಸಿದನೇ                ||ಪ||

ಮದನಗಿತ್ತ್ಯಾಗಿ ಬಂದು ಮನೆಯೊಳಗಿರುತಿರೆ
ಬೆದಗಡಿಕಿಯೆಂದು ಹೆಸರಿಡಿಸಿದನೇ
ನದರಿನಮ್ಯಾಲ ತಾ ನದರಿಟ್ಟಿ ಎನಗೆ
ಮುದದಿ ಚುಂಬನಕೊಟ್ಟು ರಮಿಸಿದನೇ          ||೧||

ಹೊಸದಾದ ಸೊಸಿಯಾದ ಆಕ್ಕನಮಗಳಿಗೆ
ಮುಸರಿ ಬಳಸಿ ಕಸ ಹೊಡಿಸಿದನೇ
ವಸುಧಿಯೊಳು ಶಿಶುನಾಳಧೀಶನ ದಯದಿಂದ
ಕಸೂತಿಯ ಕುಪ್ಪಸ ತೋಡಿಸಿದನೇ               ||೨||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಮುದಿಕ್ಯಾಗಿ ಮುರುಕ ಇನ್ನ್ಯಾಕ

-ಶಿಶುನಾಳ ಶರೀಫ್

ಮುದಿಕ್ಯಾಗಿ ಮುರುಕ ಇನ್ನ್ಯಾಕ
ಎದುರಿಗೆ ನೀರಗಿಗಳ್ ಒದೆಯುವದು ಸಾಕೆ                    ||ಪ||

ಮೊದಲಿಗೆ ಮೂವರು ಕೂಡಿ ಮಾಯ
ಮದನ ಮಂದಿರದೊಳು ಮುದದಿ ಮಾತಾಡಿ
ಹದಗೆಟ್ಟು ಹಾದರ ಮಾಡಿ ಮುಂದೆ
ಬದುಕಿನ ಎಚ್ಚರ ನಿನಗಿಲ್ಲ ಖೋಡಿ                                ||೧||

ಏಳೆಂಟು ಗೆಳತೇರು ಜತ್ತು  ಹಳ್ಳಿ ಹಳ್ಳಿ
ಸೂಳೇರ ತೆರದಲ್ಲಿ ತಿರುಗುತಿ ಎತ್ತ
ಕಾಳ ಕತ್ತಲದೊಳು ಗೊತ್ತು
ಹಾಳು ಗುಡಿಯೊಳು ಬಂದು ಬೀಳುದು ಕತ್ತೆ                    ||೨||


ನೆರ ಹಾಯ್ತು ತೆಲಿ ಬೆಳ್ಳಗಾಯ್ತು ಬುದ್ಧಿ
ಬರಲಿಲ್ಲ ಹಿರಿ ಕಿರಿಯರು ಹೇಳಲಾಗಿ ಜನ
ಹರಲಿಗೆ ಗುರಿಯಾಗಿ ನೀನು
ಶಿಶುನಾಳೇಶಗ ಜೋಡು ಕಾಯಿ ವಡಿಸವ್ವಾ ಮುದಿಕಿ        ||೩||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುವಿಗೆ ಮರುಳು ಮಾಡುವರೇನೆ ಮಾನಿನಿ

-ಶಿಶುನಾಳ ಶರೀಫ್

ಗುರುವಿಗೆ ಮರುಳು ಮಾಡುವರೇನೆ ಮಾನಿನಿ ?
ಧರೆಯೊಳು ಪ್ರಭುವರ ದೊರಕುವನೆ ?             ||ಪ.||

ಸರಸಿಜಮುಖಿವರ ಪರಮಮಧುಕೇಶ್ವರ
ನರನಲ್ಲ ತಿಳಿ ನಿನ್ನ ಸರಕೇನೆ ?
ಧರಿಗೆ ಪಾರ್ವತಿ ತನ್ನ ತಾಮಸರೂಪದಿ
ನೆರೆ ಬಂದರೇನಾತ ಬೆರೆಯುವನೇ ?               ||೧||

ಚನ್ನ ಚಲ್ವಿಕೆ ಕಂಡು ಸೋಲದೆ ತಾ ನಿಂದು
ಆನ್ಯರು ಕೇಳಿದರ್‍ಹೇಳುವನೆ ?
ತನ್ನ ನಿಜದಿ ತಾನೆ ಲೀಲೆಯಿಂದಿರುವನು
ಶೂನ್ಯಕ್ಕೆ ಶೂನ್ಯ ತಾನಿರುತಿಹನು                    ||೨||

ಮೊದಲು ಶಿಶುವಿನಾಳ ಸದ್ಗುರು ನಿರ್ಮಳಸ್ಥಳ-
ಕ್ಕೊದಗಿ ಮೃದಂಗವ ಬಾರಿಸಿದ
ಆದನು ತಿಳಿದು ಸುಮನಿರು ನಡಿ ಹಿಂದಕ್ಕೆ
ಇದಕೇನು ಬಯಸುವದು ಬ್ಯಾಡಿನ್ನು                ||೩||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

ಎಂಥಿಂಥಾದೆಲ್ಲಾನು ಬರಲಿ

-ಶಿಶುನಾಳ ಶರೀಫ್

ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ            ||ಪ||

ಪರಾತ್ಪರನಾದ ಗುರುವಿನ
ಅಂತಃಕರುಣ ಒಂದು ಬಿಡದಿರಲಿ               ||ಅ.ಪ.||

ಬಡತಾನೆಂಬುದು ಕಡತನಕಿರಲಿ
ವಡವಿ ವಸ್ತ ಹಾಳಾಗಿಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ                 ||೧|| 

ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದಿಯಲಿ
ಬಂಡುಮಾಡಿ ಜನರು ನಗಲಿ                     ||೨||

ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಆಂಬಲಿ ಎನಗ ಸಿಗದೆಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮೇಲೆ ಬೀಳಲಿ  ||೩||

ವ್ಯಾಪಾರುದ್ಯೋಗ ಇಲ್ಲದಾಂತಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದುಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ               ||೪||

ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ     ||೫||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುನಾಥಾ ರಕ್ಷಿಸೋ

-ಶಿಶುನಾಳ ಶರೀಫ್

ಗುರುನಾಥಾ ರಕ್ಷಿಸೋ ಹೇ
ಕರುಣಾಸಾಗರಾ                                             ||ಪ||

ನರಜೀವಿಗೆ ಈ ದುರಿತ ಭವದ ಭಯ
ಪರಿಹರಿಸೆನುತಲಿ ಮರೆಹೊಕ್ಕೆನು                        ||೧||

ಪಾಪಾಂಬುಧಿಯನು ಪಾರುಮಾಡೆನುತಲಿ
ಶ್ರೀಪಾದಾಂಬುಜ ನಂಬಿಕೊಂಡೆ ಪರಮಾತ್ಮಾ        ||೨||

ವಸುಧಿಯೊಳು ಶಿಶುನಾಳಧೀಶನ ಸೇವಕನ
ವ್ಯಸನಗಳಿದು ಸಂತೋಷದಿ ಸಲಹೋ                  ||೩||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

ನನ್ನೊಳಗ ನಾ ತಿಳಕೊಂಡೆ

-ಶಿಶುನಾಳ ಶರೀಫ್


ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ ||ಪ||

ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ   ||ಅ.ಪ.||

ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ  ||೧||

ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ        ||೨||

ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ   ||೩||
                ****



ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುಧ್ಯಾನವ ಮಾಡಿದಿ

ಗುರುಧ್ಯಾನವ ಮಾಡಿದಿ
ಭಕ್ತಿಯ ನೀಡಿದಿ
ಮುಕ್ತಿಯ ಬೇಡಿದಿ
ಗುರುವಿನ ಕೂಡಿದಿ
ಕುಣಿಕುಣಿದಾಡಿದಿ
ಕೂಸು ನೀನಾಡಿದಿ ಈಶಾಡಿದಿ   || ೧ ||

ಬೆಳ್ಳನ್ನ ಬೆಳದಿಂಗಳಾ
ಹಾಲೂರಿದಂಗಳಾ
ಬೆಳ್ಳಿಯ ಗಂಗಾಳಾ ಬೆಳ್ಳನ್ನಂಗಳಾ
ಜಯ ಜಯ ಮಂಗಳಾ
ಸದಾ ಶಿಶುನಾಳ ಸಾಧುಸಂತ ಮೇಳಾ
ಗುರುಗೋವಿಂದ್ಹೌದೇಳಾ         || ೨ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಹಾಕಿದ ಜನಿವಾರವಾ ಸದ್ಗುರುನಾಥಾ

ಹಾಕಿದ ಜನಿವಾರವಾ ಸದ್ಗುರುನಾಥಾ
ಹಾಕಿದ ಜನಿವಾರವಾ                                      || ಪ ||

ಹಾಕಿದ ಜನಿವಾರ ನೂಕಿದ ಭವಭಾರ
ಬೇಕೆನುತಲಿ ಬ್ರಹ್ಮಜ್ಞಾನ ಉಚ್ಚರಿಸೆಂದು             || ಅ. ಪ.||

ಸಂದ್ಯಾವಂದನೆ ಕಲಿಸಿ ಆ-
ನಂದದೀವ ಬಿಂದು ವರ್ಗದಿ ನಿಲಿಸಿ
ಹೊಂದಿಸಿ ಯಮುನಾತೀರದ ಮಧ್ಯದಲಿನಿಂದು
ಎಂದೆಂದಿಗೂ ಯಮದಂದುಗನವಳಿಯೆಂದು       || ೧ ||

ಶಿಶುನಾಳಧೀಶನಲ್ಲೇ ಹುಣ್ಣಿವಿನೂಲು
ಹೊಸತಾಗಿ ಹೊಸಿಯುತಲಿ
ಮುಸುಕಿರ್ದವ್ಯಸನದ ಕಸರನು ಕಳಿಯೆಂದು
ಹಸನಾಗಿ ಮೂಲಮಂತ್ರದ ಮನಿಯೊಳುನಿಂದು || ೨ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ನೋಡುನು ಬಾ ಗುರುನಾಥನ

ನೋಡುನು ಬಾ ಗುರುನಾಥನ ಸಖಿ
ನೋಡುನು ಬಾ ಮುಕ್ತಿ ಬೇಡುನು ಬಾರೆ                       || ಪ ||

ಕಾಮಿತ ಫಲವಾ ಪ್ರೇಮದಿ ಕೊಡುವಾ
ನಮ ರೂಪವ ಸಂಜೀವನ ಸಖಿ ನೋಡುನು ಬಾ             || ೧ ||

ಪರಮ ಪ್ರಕಾಶ ಪಾವನಕರ ಜಗದಿಶನೇ ಸಖಿ
ಹೃತಭವತಾಪಾ ಸಂಹೃತ ಕೋಪಾ ಗುಡಿಪುರ
ಕಲ್ಮಠ ಸ್ವರೂಪನ ಸಖಿ ನೋಡುನು ಬಾ                        || ೨ ||

ವಸುಧೆಗೆ ಶಿಶುನಾಳಧೀಶನೆನಸಿದ
ಎಸೆವೆನ್ನಿ ನೇತ್ರನ ವಂದಿಸಿಯಾತನ ಸಖಿ ನೋಡುನು ಬಾ || ೩ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುವೆ ಬಿನ್ನಪವುದ್ಧರಿಸೋ

ಗುರುವೆ ಬಿನ್ನಪವುದ್ಧರಿಸೋ ಎನ್ನ
ಪರಮ ಸಖನ ಜ್ಜರದುರಿ ಪರಿಹರಿಸೋ              || ಪ ||

ಇರುತಿರೆ ಆತನ ಘಟಕೆ ರೋಗಬರುವುದಿನ್ನ್ಯಾಕೆ
ಮರಗುವ ಸಂಕಟವ್ಯಾಕೆ
ಮರೆಹೊಕ್ಕೆ ನಿನ್ನಯ ಪದಕೆ
ನಿಮ್ಮ ಸ್ಮರಿಸಲು ಈ ಕರ್ಮ ಸಂಕಟವ್ಯಾಕೆ         || ೧ ||

ದೇಹವೆರಡಾತ್ಮ ಒಂದಾಗಿ
ನಾವು ತಾವು ಗುರುಸೇವೆಗೆ ಆನುಕೂಲವಾಗಿ
ಭವದ ಲಂಪಟ ಕರ್ಮನೀಗಿ
ನಿತ್ಯ ಶಿವಧ್ಯಾನದೊಳು ನಾವು ಇರುತಿರಲಾಗಿ     || ೨ ||

ಬೇಡಿಕೊಂಬುವೆ ಭಕ್ತಿಗಾಗಿ
ದಯಮಾಡಿ ರಕ್ಷಿಸಬೇಕು ಕಲ್ಮಷ ನೀಗಿ
ನೋಡಿ ಕಡಿಯೋ ಭವಬಂದಾ
ರೂಡಿಪ ಶಿಶುನಾಳಧೀಶನ ಕಂದಾ                   || ೩ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಅಬ್ಬಾಸ್ ಮೇಲಿನಮನಿ

ಸಮಕಾಲೀನ ಪೀಳಿಗೆಯ ಕತೆಗಾರರಲ್ಲಿ ಅಬ್ಬಾಸ್ ಮೇಲಿನಮನಿ ಹೆಸರು ಬಹು ಮುಖ್ಯವಾದುದು.  ಶರಣರು ಮೆಟ್ಟಿದ ನೆಲದಲ್ಲಿರುವ ಅಬ್ಬಾಸ್ ಮೌಲ್ಯಗಳ ಬಿತ್ತು ಕಾಯಕವನ್ನು ತಮ್ಮ ಸಂವೇದನಶೀಲ ಕತೆಗಳ ಮೂಲಕ ಮಾಡುತ್ತ ಬಂದಿದ್ದಾರೆ.  ಆಡು-ನುಡಿ ಸೊಗಡಿನ ಭಾಷೆ; ಕಾವ್ಯದ ಲಯದಲ್ಲಿ ಓದುಗನಿಗೆ ನವನವೀನ ಪ್ರತಿಮೆ, ಆಕೃತಿಗಳನ್ನು ಕಟ್ಟಿಕೊಡುವುದನ್ನು ಇವರು ಕತೆಗಳ ಮೂಲಕ ಮಡಿರುತ್ತಾರೆ.

ಹಿಂದೂ ಮುಸ್ಲಿಂ ಸಮುದಾಯಗಳ ಸಾಮಾಜಿಕ ಸಂಬಂಧಗಳನ್ನು, ಅದರ ಸಂವೇದನೆಗಳನ್ನು ಅಬ್ಬಾಸ್‌ರ ಕತೆಗಳು ಕಟ್ಟಿಕೊಡುತ್ತವೆ.  ಒಂದು ಸಮಾಂತರದ ನೆಲೆಯಲ್ಲಿ ನಿಮತು ಧ್ಯಾನಸ್ಥನಾಗಿ ಕಾಣುವ ಪರಿ ಅನನ್ಯ.  ಸಮಾಜದ ಆ ಬಗೆಯ ವಿವಿಧ ಮುಖಗಳ ಅನುಭೂತಿ ಇವರ ಕತೆಗಳಲ್ಲಿದೆ.

ಕವನ ಸಂಕಲನ:

೧. ಕಥೆಯಾದಳು ಹುಡುಗಿ
೨. ಭಾವೈಕ್ಯ ಬಂಧ
೩. ಪ್ರೀತಿ ಬದುಕಿನ ಹಾಡು

ಕಥಾ ಸಂಕಲನ:

೧. ಪ್ರೀತಿಸಿದವರು
೨. ಕಣ್ಣ ಮುಂದಿನ ಕಥೆ
೩. ಅರ್ಧ ಸತ್ಯಗಳು (ಬನಹಟ್ಟಿಯ ಚಿಕ್ಕೋಡಿ ತಮ್ಮಣ್ಣಪ್ಪ ಸಾಹಿತ್ಯ ಪುರಸ್ಕಾರ)
೪. ಮತ್ತೊಂದು ಕರ್ಬಲಾ (ಮಂಗಳೂರಿನ ಮುಹ್ಯುದ್ದೀನ್ ಸಾಹಿತ್ಯ ಪ್ರಶಸ್ತಿ)
೫. ಅಬ್ಬಾಸರ ಐವತ್ತು ಕಥೆಗಳು (ಡಾ. ಗೊರೂರು ಸಾಹಿತ್ಯ ಪ್ರಶಸ್ತಿ)
೬. ಹುಡುಕಾಟ (ಪಿ.ಲಂಕೇಶ ಕಥಾ ಪ್ರಶಸ್ತಿ ಹಾಗೂ ಶಿವಾನಂದ ಪಾಟೀಲ ಕಥಾ ಪ್ರಶಸ್ತಿ)
೭. ಅರ್ಥ (ಕನ್ನಡ ಸಾಹಿತ್ಯ ಪರಿಷತ್ತಿನ ಸಮೀರವಾಡಿ ದತ್ತಿ ಪ್ರಶಸ್ತಿ)

ಲೇಖನ ಸಂಕಲನ:

ಸೌಹಾರ್ದ ಸಂಸ್ಕೃತಿ

ಸಂಪಾದನೆ:

೧. ಸಣ್ಣ ಕಥೆಗಳು - ೨೦೦೪ (ಕರ್ನಾಟಕ ಸಾಹಿತ್ಯ ಅಕಾಡೆಮಿ)
೨. ಬಾಗಲಕೋಟೆಯ ಮುಳುಗದ ಕಥೆಗಳು (ಜಿಲ್ಲಾ ಪ್ರಾತಿನಿಧಿಕ ಕಥಾ ಸಂಕಲನ, ಉಡುಪಿ ಸಾಹಿತ್ಯ ಸಮ್ಮೇಳನ)
೩. ಏನೆಲ್ಲಾ ಚಿತ್ರಗಳು ತಾಯಿ (ಅವ್ವನ ಕುರಿತಾದ ಪ್ರಾತಿನಿಧಿಕ ಕವನ ಸಂಕಲನ)
೪. ಪ್ರಜ್ಞೆ (ಆಕರ ಗ್ರಂಥ, ಕನ್ನಡ ಪುಸ್ತಕ ಪರಿಷತ್ತು ಬಾಗಲಕೋಟ)

ಈ ದಿನಾಂಕದವರೆಗೆ ಲಭ್ಯವಾದ ಮಾಹಿತಿ:  ೨೦೦೮

ಬದುಕು ಎಂದರೆ ಇಷ್ಟ

-ಅಬ್ಬಾಸ್ ಮೇಲಿನಮನಿ

ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ.  ಎದುರಿಗೆ ಅಪರಂಪಾರ ಕಡಲು.  ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು.  ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ್ಯ.  ಆ ಮನೋಹರ ದೃಶ್ಯ ನೋಡಲು ತೀರದಲ್ಲಿ ಗಿಜಿ ಗಿಜಿಯೆನ್ನತೊಡಗಿದ್ದ ಜನ.  ಜಾತ್ರೆಯ ಬೆರಗು ಹುಟ್ಟಿಸಿದ ತಿನಿಸಿನ ತಳ್ಳು ಗಾಡಿಗಳು.  ತುಂಬಿ ತುಳುಕಾಡತೊಡಗಿದ್ದ ಜೀವನೋತ್ಸಾಹ.  ಅದೆಲ್ಲವನ್ನು ಅಲಕ್ಷಿಸಿ, ಪ್ರಪಂಚದ ಹಂಗು ಹರಿದುಕೊಂಡಂತೆ ಕುಳಿತಿದ್ದ ಜಮೀರುಲ್ಲಾ.



ಆರು ತಿಂಗಳಿನ ಹಿಂದೆ ಇದೇ ಕಡಲ ತೀರದಲ್ಲಿ ಅದಮ್ಯ ಉತ್ಸಾಹದೊಂದಿಗೆ ಓಡಾಡಿದ್ದ ಅವನು.  ಪಕ್ಕದಲ್ಲಿ ಆಗ ಶಬನಮ್ ಇದ್ದಳು.  ಜನರ ಗದ್ದಲದಿಂದ ದೂರ ಸರಿದು, ಅವಳ ಕೈಹಿಡಿದು, ಮೈಗೆ ಮೈ ಹಚ್ಚಿ, ಹಸಿ ಮರಳಿನಲ್ಲಿ ಹೆಜ್ಜೆಯೂರಿ ಆನಂದಿಸಿದ್ದ.  ನೀರಾಟದಲ್ಲಿ ಖುಷಿ ಅನುಭವಿಸಿದ್ದ.  ಹಳ್ಳಿಯ ಹುಡುಗಿ ಶಬನಮ್ ಮೈಚಳಿ ಬಿಟ್ಟು ಗಂಡನೊಂದಿಗೆ ನಲಿದಿದ್ದಳು.

ಅಲೆಯೊಂದು ಅವನು ಕುಳಿತ ಬಂಡೆಗಲ್ಲಿಗೆ ಅಪ್ಪಳಿಸಿ ಬಂದಂತೆ ಹಿಂತಿರುಗಿತು.  ಮಾಯೆ ತೋರಿದ ಹಾಗೆ.  ಅಲೆಯಲ್ಲ ಅದು ಶಬನಮ್ ಎಂದುಕೊಂಡಿತು ಅವನ ಮನಸ್ಸು.  ಹೀಗೆ ಅಲೆಯಂತೆ ಉತ್ಸಾಹದ ನೊರೆ ತುಳುಕಿಸುತ್ತ ಬಂದವಳು, ಪ್ರೀತಿಯ ಹನಿಯಿಂದ ತನ್ನ ಜಿಂದಗಿಯನ್ನು ಮುತ್ತಾಗಿಸುವಳು ಅಂದುಕೊಳ್ಳುತ್ತಿರುವಂತೆ ಮೋಸ ಮಾಡಿ ಹೋದಳು.  ಬದ್ಮಾಶ್ ಹೆಂಗಸು!  ಜಮೀರುಲ್ಲಾ ಒಳಗೇ ಬೈದಾಡಿಕೊಂಡ.

ಸ್ವಂತ ಊರಲ್ಲಿ ಬದುಕು ದುಸ್ತರ ಎಂದ ಮೌಲಾಲಿಯ ಮಾತಿನ ಪ್ರೇರಣೆಗೊಳಗಾಗಿ ಜಮೀರುಲ್ಲಾ ಗೋವಾಕ್ಕೆ ಹೊರಟು ಬಂದಿದ್ದ.  ಅವನ ನಿಕಾಹ್ ಆಗಿ ಪೂರ್ತಿ ತಿಂಗಳು ಗತಿಸಿರಲಿಲ್ಲ.  ಶಬನಮ್‌ಳ ಹಸ್ತಗಳಲ್ಲಿನ ಮೆಹಂದಿಯ ರಂಗು ಮಾಸಿರಲಿಲ್ಲ.  ಹೊಸ ಬದುಕಿಗಾಗಿ ಅವನ ಕಾತರ ಹೆಚ್ಚಿತು.  "ಮೈಮ್ಯಾಲೆ ಬಿದ್ದ ಹಲದಿಪಾನಿ (ಅರಿಷಿಣ ನೀರು) ಇನ್ನು ಆರಿಲ್ಲ.  ಹೋಗಬ್ಯಾಡ ಬೇಟಾ" ಎಂದಿದ್ದಳು ಅವನ ಅಮ್ಮಾ.  ಮಗ ತನ್ನ ಕಣ್ಣೆದುರಿಗೆ ಇರಬೇಕೆನ್ನುವುದು ಅವಳ ಹಂಬಲ.  ಅದರಲ್ಲಿ ಕರುಳಿನ ವಾತ್ಸಲ್ಯವಿದ್ದಿತಾದರೂ ಗಲ್ಲಿಯ ಜನರಿಗೆ ಅದು ಕುರುಡು ಅನಿಸದೇ ಇರಲಿಲ್ಲ.  ಕಾಜಾಬಿ ಮಗನನ್ನು ವಿಪರೀತ ಅಚ್ಛೆ ಮಾಡುವಳೆಂದು ಅವರು ಆರೋಪಿಸುತ್ತಿದ್ದರು.

ಜಮೀರುಲ್ಲಾ ಇನ್ನೂ ಗರ್ಭದಲ್ಲಿರುವಾಗಲೇ ಅವನ ಅಬ್ಬಾ (ತಂದೆ)ನ ಸಾವು ಸಂಭವಿಸಿತ್ತು.  ತನ್ನ ಕರುಳಿನ ಕೊನೆಯ ಕುಡಿಯೆಂದು ಖಾಜಾಬಿ ಮಗನನ್ನು ಎದೆಗಾನಿಸಿಕೊಂಡೆ ಇರುವಳು.  ತೊಡೆಯ ಮೇಲೆ ಕುಳ್ಳಿರಿಸಿ ಅವನ ಬಾಯಿಗೆ ತಿನಿಸನ್ನು ತುರುಕುವಳು.  ಮುದ್ದು ಅಂದರೆ ಅಷ್ಟು ಮುದ್ದು.  "ಮಗನ ಮುಖದಾಗ ಮೀಸೆ, ಚಿಗಿಯಾಕ ಹತ್ತಿದ್ರೂ ಮೊಲಿ ಚೀಪ್ಸೂದು ಬಿಡವಲ್ಲಿ.  ಇದೆಂಥ ಪ್ರೀತೀನ ನಿಂದು.  ನಾಳೆ ಅವನ ಬಗಲಾಗ ಜೋರು (ಹೆಂಡತಿ) ಇರೂದು ಮುಸ್ಕಿಲ್ (ತೊಂದರೆ) ಆದೀತು ನೋಡು" ಎಂದು ಪಕ್ಕದ ಮನೆಯ ತಾಜಬಿ ಮಷ್ಕಿರಿ (ತಮಾಷೆ) ಮಾಡಿದ್ದಳು.  "ಇಂವಾ ನನ್ನ ರಾಜಾಬೇಟಾ.  ಜೋರುಕಾ ಕುಲಾಮ ಆಗಬಾರ್ದು" ಎಂದು ಮಗನ ಹಣೆಗೆ ಮುತ್ತಿಕ್ಕಿ ತನ್ನೆರಡೂ ತೋಳುಗಳಲ್ಲಿ ಬಂಧಿಸಿಟ್ಟು ಕೊಂಡಿದ್ದಳು ಖಾಜಾಬಿ.  ಮಗ ಮಾಮಲೇದಾರ ಆಗಬೇಕೆನ್ನುವುದು ಅವಳ ಆಸೆಯಾಗಿತ್ತು.  ಜಮೀರುಲ್ಲಾ ಏಳನೆಯ ತರಗತಿಯವರೆಗೆ ಶಾಲೆಯ ಪಾವಟಿಗೆ ಹತ್ತಿದ್ದೆ ಖರೆಯಾಯಿತು.  ಖಾಜಾಬಿಯ ಕನಸಿನ ಬೀಜಗಳು ಮಾತ್ರ ಮೊಳಕೆಯೊಡೆಯಲಿಲ್ಲ.  ಅವಳ ವ್ಯಾಮೋಹದ ಪರಿಣಾಮದಿಂದ ಜಮೀರುಲ್ಲಾಕೆಟ್ಟ ಗೆಳೆಯರ ಸಂಗದಲ್ಲಿ ಓ.ಸಿ., ಇಸ್ಪೇಟ್ ನಚ್ಚಿಕೊಂಡು ಮನೆಯ ವ್ಯವಸ್ಥೆಯನ್ನು ತಾರುಮಾರುಗೀಡು ಮಾಡಿದ್ದ.  ಆದರೆ ಯಾವ ಫರಕೂ ಕಾಣಿಸಲಿಲ್ಲ.  ಅವನು ಶುದ್ಧ ಕೊರಡು ಎಂದು ತೀರ್ಮಾನಿಸಿದ ಹಸೀನ ತವರು ಮನೆ ಸೇರಿಕೊಂಡಿದ್ದಳು.  ವರ್ಷೊಪ್ಪತ್ತಿನಲ್ಲಿ ಖಾಜಾಬಿ ಜಿದ್ದಿಗೆ ಬಿದ್ದವಳಂತೆ ತನ್ನ ದೂರದ ಸಂಬಂಧಿಗಳಲ್ಲಿ ಹೆಣ್ಣು ಹುಡುಕಿ ತಂದು, ಹಿರಿಯ ಮಗನ ತಲೆಯ ಮೇಲೆ ಸಾಲದ ಹೊರೆ ಹೇರಿ ಜಮೀರುಲ್ಲಾನ ನಿಕಾಹ್ ನೆರವೇರಿಸಿದ್ದಳು.  ಹಸಿ ಹಸಿ ತುಡಿತದ ಹೊಂಗನಸ್ಸಿನಲ್ಲಿದ್ದಳು ಬೇಗಂ.  ಒಣ ಮನಸ್ಸಿನ ಜಮೀರುಲ್ಲಾನಿಗೋ ಬರೀ ಇಸ್ಪೇಟಿನ ಧ್ಯಾನ.  ಒಮ್ಮೊಮ್ಮೆ ನಿದ್ದೆ, ನೀರಡಿಕೆ, ಮನೆ-ಹೆಂಡತಿ ನೆನಪಿಲ್ಲದಂತೆ ಆಡುತ್ತಿದ್ದ.  ಪದೇ ಪದೇ ಸೋತು ಬಂದು ಮನೆಯವರನ್ನು ಬೈದಾಡುತ್ತಿದ್ದ.  ಅವನ ಚಟಕ್ಕೆ ಬೇಗಂಳ ಲಚ್ಚಾ (ತಾಳಿ), ಕಿವಿಯಲ್ಲಿನ ಆಲಿಖತ್ತು (ಆಭರಣ), ಆಕೆ ಮದುವೆಯಲ್ಲಿ ತಂದಿದ್ದ ಜೇಜಿನ ಸಾಮಾನು ಎಲ್ಲ ಬಿಕರಿಯಾಗಿದ್ದವು.  ಬೇಗಂ ಸಂಕಟ ಅನುಭವಿಸಿದ್ದಳು.  "ನಿನ್ನ ಚಟಕ್ಕೆ ನನ್ನೂ ಒಯ್ದು ಮಾರಾಟ ಮಾಡತ್ತಿಯೇನು ನೋಡು" ಎಂದಿದ್ದಳು ಒಂದು ದಿನ.  ಅವನ ತಲೆಯೊಳಗಿನ ಹುಳು ಕೆರಳಿದ್ದವು.  ಹೆಂಡತಿಯನ್ನು ಬಡಿದು ಹಾಡುಗಲೇ ಅವಳನ್ನು ಲಂಗದ ಮೇಲೆ ಮನೆಯಿಂದ ಓಡಿಸಿದ್ದ.

ಮನೆಯನ್ನು ಕ್ಷುದ್ರವಾಗಿಸುವ ಅವನ ಸ್ವಭಾವಕ್ಕೆ ಬೇಸತ್ತು ಹುಸೇನಮಿಯ್ಯಾ ಬೇರೆ ಮನೆಮಾಡಿಕೊಂಡು ಹೋಗಿದ್ದ.  ಖಾಜಾಬಿ ಮಗನೊಂದಿಗೆ ಉಳಿದಿದ್ದಳು.  ಒಂದೆರಡು ಮನೆಗಳ ಚಾಕರಿ ಮಾಡಿ ಜೀವನ ನಿರ್ವಹಿಸುತ್ತ ತನ್ನ ಬಗ್ಗೆ ಕಾಳಜಿ ಅಭಿವ್ಯಕ್ತಿಸುವ ಅಮ್ಮಾನನ್ನೆ ಹಣಕ್ಕಾಗಿ ಪೀಡಿಸುತ್ತ ಗೋಳು ಹೊಯ್ದುಕೊಳ್ಳುತ್ತಿದ್ದ.  ಹಿರಿಯ ಮಗನ ಪಾಲಿಗೆ ನಿಷ್ಕರುಣವಾಗಿದ್ದ ಅವಳ ಅಂತರಾಳ ಜಮೀರುಲ್ಲಾನ ಉದ್ಧಟತನಗಳನ್ನು ಸಹಿಸಿಕೊಳ್ಳುವುದು ಗಲ್ಲಿಗೆ ಸೋಜಿಗವೆನಿಸಿತ್ತು.

ಅವನಿಗೊಂದು ಜಿಂದಗಿ ಕಲ್ಪಿಸಿಕೊಡುವ ಇರದೆಯೋ, ಮೊಂಡು ಹಠವೋ ಮತ್ತೆ ಆಕೆ ಹೊಸ ಸೊಸೆಗಾಗಿ ಹುಡುಕಾಟ ನಡೆಸಿದ್ದಳು.  "ನಿನ್ನ ಬೇಟಾನ ನಸೀಬು ಮಟಮಟ ಮಧ್ಯಾಹ್ನ ಇದ್ದಂಗೈತಿ.  ಮತ್ತೊಂದು ಶಾದಿ ಮಾಡಿ ಹುಡುಗಿ ಜಿಂದಗಿ ಯಾಕ್ ಬರ್ಬಾದು ಮಾಡ್ತಿ?" ಎಂದು ನೇರವಾಗಿಯೇ ಹೇಳಿದ್ದಳು ತಾಜಬಿ.  ಆಕೆ ಮಾಡುತ್ತಿರುವುದು ಮಷ್ಕರಿಯಲ್ಲ;  ಅಪಮಾನ ಎಂದು, ಅವಳಿಗೆ ಸವಾಲು ಎನ್ನುವಂತೆ ಖಾಜಾಬಿ ನಿಕಾಹ್ ಮಾಡಿದ್ದಳು.  ಸೊಸೆ ಶಬನಮ್ ಅವರೆಯ ಹೂವಿನಂತಿದ್ದಳು.  ಕಾರಂಜಿಯಂತೆ ಪುಟಿಯುತ್ತಿದ್ದ ಅವಳ ಯೌವನ ಜಮೀರುಲ್ಲಾನ ಕಣ್ಣು ಕುಕ್ಕಿತ್ತು.

ಅವಳಿಗೂ ಇದು ಎರಡನೆಯ ಮದುವೆ.  ಅವಳ ದುರಾದೃಷ್ಟವೆಂದರೆ ನಿಕಾಹ್ ಜರುಗಿದ ಒಂದೇ ತಿಂಗಳಲ್ಲಿ ಆಕೆಯ ಗಂಡ ಲಿವರ್‍ ಒಡೆದು ಸತ್ತಿದ್ದ.  ಅತ್ತೆ-ಮಾವ ತಮ್ಮ ಪ್ರಮಾದವನ್ನು ಮರೆಮಾಚಿ, ಸೊಸೆಯ ಕಾಲ್ಗುಣವನ್ನು ದೂಷಿಸಿ ತಿರಸ್ಕರಿಸಿದ್ದರು.  ಕತ್ತಲ ಗೂಡಲ್ಲಿ ಬಂಧಿಯಾಗಿ ವಿಲಿವಿಲಿಸಿದ್ದಳು ಶಬನಮ್.  ಯಾವಾಗ ಜಮೀರುಲ್ಲಾ ಬಂದು ಒಂದೇ ನೋಟದಲ್ಲಿ ತನ್ನನ್ನು ಒಪ್ಪಿಕೊಂಡನೋ ಅವಳಿಗೆ ಬದುಕು ಇಷ್ಟವೆನಿಸಿತ್ತು.

                *        *        *

ಗೋವಾದಲ್ಲಿ ಬಾರ್‍ ಬಿಲ್ಡಿಂಗ್, ಸೆಂಟರಿಂಗ್ ಕಾಂಟ್ರಾಕ್ಟ್ ಮಾಡಿಕೊಂಡಿದ್ದ ಮೌಲಾಲಿ.  ಊರಿಗೆ ಬಂದನೋ ಸೋಮಾರಿಯಾಗಿ ತಿರುಗುತ್ತಿದ್ದ ಹುಡುಗರನ್ನು ಕರೆದುಕೊಂಡು ಹೋಗಿ ಕೆಲಸಕ್ಕೆ ತೊಡಗಿಸುತ್ತಿದ್ದ.  ಹೆಂಡತಿಯೊಂದಿಗೆ ಬಂದ ಜಮೀರುಲ್ಲಾನಿಗೆ ಶೆಡ್ಡಿನ ವ್ಯವಸ್ಥೆ ಮಾಡಿಕೊಟ್ಟು ಕಾಳಜಿಯಿಂದ ಗಮನಿಸಿಕೊಂಡಿದ್ದ.  ಬಾರ್‍ ಬಿಲ್ಡಿಂಗ್ ಕೆಲಸ ಜಮೀರುಲ್ಲಾನಿಗೆ ಹೊಸದು.  ಕಲಿತರೆ ಬರುವಂತಹದ್ದೆ.  ಆದರೆ ಮೈಗಳ್ಳ ಜಮೀರುಲ್ಲಾನಿಗೆ ಕೆಲಸವೆಂದರೆ ಒಗ್ಗದು.  ದುಡಿಯುವವರನ್ನು ಕಂಡರೆ ಮೌಲಾಲಿಗೆ ಪ್ರೀತಿ.  ಅಲ್ಲದೆ ಕಾರಾರುವಾಕ್ ಮನುಷ್ಯ ಅವನು.  ಕೊಡುವ ಸಂಬಳಕ್ಕೆ ಸರಿದೂಗುವ ಶ್ರಮ ಕಲಸಗಾರರಿಮದ ಅಪೇಕ್ಷಿಸುವನು.  ಅವರ ಮೈಯ ಬೆವರು ಆರುವ ಮೊದಲೇ ಹಣ ಕೊಡುವುದು ಅವನ ಪದ್ಧತಿ.  ದುಡಿಯುವವರು ಹಗಲೆಂದರೆ ಹಗಲು, ರಾತ್ರಿಯೆಂದರೆ ರಾತ್ರಿ ಕೆಲಸ ಮಾಡಲೇಬೇಕು.  ಜಮೀರುಲ್ಲಾನಿಗೆ ಹದಿನೈದು ದಿನಗಳಲ್ಲಿ ಜಹೆನ್ನಮ್ (ನರಕ)ದ ಕಠೋರ ಶಿಕ್ಷೆಯನ್ನು ಅನುಭವಿಸಿದಂತಾಗಿತ್ತು.  ತಿರುಗಿ ಊರಿಗೆ ಹೋಗೋಣವೆಂದು ಮನೆ ಹಿಡಿದು ಕುಳಿತಿದ್ದ.  ಗಂಡನ ನಿರ್ಧಾರವನ್ನು ಶಬನಮ್ ಬಿಲ್‌ಕುಲ್ ನಿರಾಕರಿಸಿ, ಬೇರೆ ಕೆಲಸ ಹುಡುಕಲು ಹಚ್ಚಿದ್ದಳು.  ನಾಲ್ಕು ದಿನ ಊರು ತಿರುಗಾಡಿ ಬಂದು ಕಾಲು ಚಾಚಿ, ತಲೆಯ ಮೇಲೆ ಕೈಹೊತ್ತು ಕುಳಿತ ಗಂಡ ಶತ ದಡ್ಡನೆಂದು ತಿಳಿದುಕೊಂಡಿದ್ದಳು ಶಬನಮ್.  ತನ್ನ ಹೊಸ ಜಿಂದಗಿ ಕನಸು ಮತ್ತೆ ಕಫನ್ ಹೊದ್ದುಕೊಳ್ಳುವುದೆ?  ಅವಳ ಒಳಮನಸ್ಸು ತೀವ್ರ ಚಡಪಡಿಸಿತ್ತು.  ಅದರ ಹಸಿಹಸಿಯಲ್ಲಿ ಮೌಲಾಲಿಯ ಹತ್ತಿರ ಹೋಗಿ ಗಂಡನಿಗೆ ಬುದ್ಧಿ ಹೇಳಲು ನಿವೇದಿಸಿಕೊಂಡಿದ್ದಳು.  "ನಾಯಿ ಬಾಲ ನೆಟ್ಟಗ ಮಾಡಾಕ ಬರೂದಿಲ್ಲ.  ಅವನನ್ನು ಕರ್‍ಕೊಂಡು ನೀನು ಊರಿಗೆ ಹೋಗುದು ಚಲೋ" ಎಂದು ಸಾಫ್ ಸಾಫ್ ಹೇಳಿದ್ದ ಮೌಲಾಲಿ.  ಗಂಡನಿಗೆ ತಾನೇ ದುಡಿದು ಹಾಕಿದರೂ ಚಿಂತೆಯಿಲ್ಲ, ಊರಿಗೆ ಮಾತ್ರ ಹೋಗಬಾರದೆಂದು ನಿರ್ಧರಿಸಿಕೊಂಡ ಶಬನಮ್ ಒಂದೆರಡು ದಿನಗಳಲ್ಲಿ ಬೃಹತ್ ಕಟ್ಟಡದ ಕೆಲಸ ನಡೆಯುತ್ತಿರುವಲ್ಲಿ ಹೋಗಿ ನಿಂತಿದ್ದಳು.  ಕಟ್ಟಡದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದವನು ಚಂದ್ರಕಾಂತರೆಡ್ಡಿ.  ಅವನ ಔದಾರ್ಯದಿಂದ ಆಕೆಗೆ ಕೂಡಲೇ ಕೆಲಸ ಸಿಕ್ಕಿತ್ತು.  ಅವನ ಸಹಾಯವನ್ನು ಶಬನಮ್ ಗಂಡನೆದುರು ಬಣ್ಣಿಸಿ ಹೇಳಿದ್ದಳು.  ಊರಿಗೆ ಹೋಗಿ ಗಲ್ಲಿಯ ಜನರೆದುರು ಮುಖಭಂಗ ಅನುಭವಿಸುವುದನ್ನು ತಪ್ಪಿಸಿದ ಹೆಂಡತಿಯ ಬಗ್ಗೆ ಜಮೀರುಲ್ಲಾನಿಗೆ ಅಭಿಮಾನ ಮೂಡಿತ್ತು.

ಮಧ್ಯ ವಯಸ್ಸಿನ ಮನುಷ್ಯ ಚಂದ್ರಕಾಂತರೆಡ್ಡಿ ಶಬನಮ್‌ಳ ಮೇಲೆ ವಿಶೇಷ ಒಲವು ಅಭಿವ್ಯಕ್ತಿಸುತ್ತಿದ್ದ.  ಅದರ ಪರಿಣಾಮದಿಂದ ಜಮೀರುಲ್ಲಾನ ಸಂಸಾರ ಶೆಡ್ಡಿನಿಂದ ಹೆಂಚಿನಮನೆಗೆ ಸ್ಥಳಾಂತರಗೊಂಡಿತ್ತು.  ಅವನಿಗೆ ವಾಚ್‌ಮನ್ ಕೆಲಸ ದೊರಕಿತ್ತು.  ದೇಹ ದಂಡಿಸುವ ಕೆಲಸವೇ ಅದು?  ಆರಾಮೆನಿಸಿತ್ತು ಜಮೀರುಲ್ಲಾನಿಗೆ.  ರೆಡ್ಡಿ ತನ್ನ ಉಲನ್ ಸ್ವೇಟರ್‍, ತಲೆಗೆ ಮಂಕಿ ಕ್ಯಾಪ್ ಕೊಟ್ಟಿದ್ದ.  ಕೈಯಲ್ಲಿ ಬ್ಯಾಟರಿ ಹಿಡಿದು, ಖುರ್ಚಿಯ ಮೇಲೆ ಕುಳಿತನೆಂದರೆ ಜಮೀರುಲ್ಲಾನ ಕೆಲಸ ಮುಗಿಯಿತು.  ಅಲ್ಲಿಯೇ ಸಖತ್ ನಿದ್ದೆ.  ಬೆಳಿಗ್ಗೆ ಕೆಲಸಗಾರರು ಬರಲಾರಂಭಿಸಿದರೆ ಮನೆಗೆ ಬಂದು ಸ್ನಾನ ಮಾಡುತ್ತಿದ್ದ.  ಊಟಕ್ಕೆ ಫಿಶ್‌ಫ್ರಾಯ್, ಅಂಡಾಕರಿ ಒಂದಿಲ್ಲೊಂದು ಇರುತ್ತಿತ್ತು.  ಗಂಡನಿಗೆ ಪ್ರೀತಿಯಿಂದ ಊಟ ಮಾಡಿಸಿ ಕೆಲಸಕ್ಕೆ ಹೊರಡುತ್ತಿದ್ದಳು ಶಬನಮ್.  ಗಂಡಹೆಂಡರು ಸುಖವಾಗಿರಬೇಕೆಂದು ಚಂದ್ರಕಾಂತರೆಡ್ಡಿ ಹೇಳುತ್ತಿದ್ದ.  ಸತ್ತ ಮೇಲೆ ಮನುಷ್ಯನಿಗೆ ಸ್ವರ್ಗ ಸಿಗುವುದೆಂದು ಷೇಕ್ ಇಮಾಮರು ಮಸೀದಿಯಲ್ಲಿ ಖುತ್ಬಾ (ಪ್ರವಚನ) ಓದುವಾಗ ಹೇಳಿದ್ದು ಕೇಳಿದ್ದ ಜಮೀರುಲ್ಲಾ.  ಆದರೆ ಈಗದು ತನಗೆ ಇರುವಾಗಲೇ ದಕ್ಕಿತಲ್ಲ ಎಂಬ ಅದಮ್ಯ ಖುಷಿಯಲ್ಲಿ ಅವನು ಬೀಗಿಕೊಂಡಿದ್ದ.

ಹಣ ಕೈಯಲ್ಲಿ ಓಡಾಡಲಾರಂಭಿಸಿತ್ತು.  ಇಸ್ಪೇಟ್ ಎಲೆಗಳು ಕಣ್ಣೆದುರು ಕುಣಿಯತೊಡಗಿದ್ದವು.  ಶಬನಮ್ ಕೆಲಸಕ್ಕೆ ಹೋದ ಮೇಲೆ, ಬಾಗಿಲಿಗೆ ಕೀಲಿ ಜಡಿದು ಇಸ್ಪೇಟ್ ಆಟದ ಜಾಗ ಹುಡುಕುತ್ತ ಹೊರಡುತ್ತಿದ್ದ ಜಮೀರುಲ್ಲಾ.  ಅವನ ಬದುಕು ತರಗೆಲೆಯಾದದ್ದೆ ಈ ಆಟದಿಂದ.  ಜನರು ಅವನನ್ನು ರಾಜಾ, ರಾಣಿ, ಜೋಕರ್‍... ಎಂದು ಅಡ್ಡಹೆಸರಿನಿಂದ ಕೂಗುತ್ತಿದ್ದರು.  ಅಂದರ್‌ಬಾಹರ್‍ ಆಟವೆಂದರೆ ಅವನಿಗೆ ಇಷ್ಟ ಒಮ್ಮೆಲೆ ಅದೃಷ್ಟ ಖುಲಾಯಿಸಿಕೊಳ್ಳುವ ತವಕ.  ಅವನಿಗೆ ಇಸ್ಪೇಟ್ ಗೆಳೆಯರು ಕೂಡಲೇ ಸಿಕ್ಕಿದರು.  ಚಟದ ಸಂಬಂಧವೆ ಹಾಗೆಯೆನ್ನುವಂತೆ ಆ ದೋಸ್ತರು ಅವನನ್ನು ಹುಡುಕಿಕೊಂಡು ಬರುವರು.  ಸ್ಟೋರ್‍ ರೂಮಿನ ಎದುರು ರಾತ್ರಿಯಿಡೀ ಆಟ.  ಜಮೀರುಲ್ಲಾನ ವಾಚಮನ್ ಕೆಲಸಕ್ಕೆ ರಂಗೋ ರಂಗು.  ಇಸ್ಪೇಟ್ ಎಲೆಗಳನ್ನು ಕಲಿಸುವಲ್ಲಿನ ಅವನ ಆಸ್ಥೆ ಬೆರಗು ಹುಟ್ಟಿಸುತ್ತಿತ್ತು.  ಆದರೆ ಗೆಲ್ಲುತ್ತಿದ್ದುದು ಅಪರೂಪಕ್ಕೊಮ್ಮೆ ಮಾತ್ರ.  ಹಗಲಿನಲ್ಲಿ ಅವನು ಜನ್ಮಾಂತರದ ನಿದ್ದೆ ಮಾಡುವ ಬಗೆಯಿಂದ ಶಬನಮ್‌ಳಿಗೆ ಬೇಸರ ಅನಿಸುತ್ತಿತ್ತು.  ಕೂಡಿಸಿಟ್ಟ ಹಣ ಕರಗುತ್ತಿರುವ ಬಗ್ಗೆ ಕಂಗೆಡತೊಡಗಿದ್ದ ಆಕೆ ಅವನ ಚಟದ ಬಗ್ಗೆಯೂ ಎಚ್ಚರಿಸಿದ್ದಳು.

ಅವತ್ತು ಮಧ್ಯರಾತ್ರಿಯವರೆಗೂ ಇಸ್ಪೇಟ್ ಎಲೆಗಳನ್ನು ತಿರುವಿ, ಸೋತು ಬೇಸರ ಮಾಡಿಕೊಂಡು ಮಲಗಿದ್ದ ಜಮೀರುಲ್ಲಾನ ನಸೀಬು ಕೆಟ್ಟದ್ದಾಗಿತ್ತು.  ಬೆಳಗಾಗುವಷ್ಟರಲ್ಲಿ ಸ್ಟೋರ್‍ ರೂಮಿನ ಬಾಗಿಲು ಮುರಿದು ಅಲ್ಲಿನ ಸಿಮೆಂಟು ಚೀಲಗಳನ್ನು ಕದ್ದೊಯ್ಯಲಾಗಿತ್ತು.  ಬಯಲಲ್ಲಿ ಇದ್ದ ಒಂದಿಷ್ಟು ಕಬ್ಬಿಣವೂ ಮಾಯವಾಗಿತ್ತು.  ಜಮೀರುಲ್ಲಾನನ್ನು ವಾಚಮನ್ ಕೆಲಸದಿಂದ ತೆಗೆದುಹಾಕಿದ್ದ ಚಂದ್ರಕಾಂತ ರೆಡ್ಡಿ.  ಗಂಡನ ಬೇಜವಾಬ್ದಾರಿ ನಡವಳಿಕೆ ಬಗ್ಗೆ ಸಿಟ್ಟು ಮಾಡಿಕೊಂಡ ಶಬನಮ್ ಅವನನ್ನು ನಾಲಾಯಕ್ ಎನ್ನುವ ಧಾಟಿಯಲ್ಲಿ ಖಂಡಿಸಿದ್ದಳು.  ಮನಸು ಮುದುಡಿಸಿಕೊಂಡು ಹೊರಟು ಹೋಗಿದ್ದ ಜಮೀರುಲ್ಲಾ.  ಸಮಾಧಾನವೆನ್ನಿಸಿ ತಿರುಗಿ ಬಂದವನಿಗೆ ಅದು ತನ್ನ ಮನೆ, ಶಬನಮ್ ತನ್ನ ಹೆಂಡತಿ ಎಂದು ತಿಳಿಯಲಾರದ ಸನ್ನಿವೇಶ.  ಆಕೆ ಚಂದ್ರಕಾಂತರೆಡ್ಡಿಯ ಎದೆಯೊಳಗೆ ಹುದುಗಿರುವುದನ್ನು ಕಣ್ಣುಜ್ಜಿಕೊಂಡು ನೋಡಿದ್ದವನ ಒಡಲಲ್ಲಿ ಲಾವಾ ಕುದ್ದಿತ್ತು.  ಮನೆಯ ಮೇಲಿನ ಹಂಚು ಹಾರಿಬೀಳುವಂತೆ ಹಾರಾಡಿದ್ದ ಅವನು.  "ಜಿಂದಗಿ ಮಾಡಾಕ ಬರದಿ‌ದ್ರೂ ಚೀರಾಟಕ್ಕೇನೂ ಕಮ್ಮಿಯಿಲ್ಲ" ಎಂದು ಶಬನಮ್ ಉರಿಯ ಮೇಲೆ ಉಪ್ಪೆರಚಿದ್ದಳು.  "ಈ ನಸಲಿ ಹರಾಮ್ ನಿನ್ನ ತಲಿ ಖರಾಬ್ ಮಾಡ್ಯಾನ" ಎಂದು ಜಮೀರುಲ್ಲಾ ಚಂದ್ರಕಾಂತರೆಡ್ಡಿಯ ಮೈಮೇಲೇ ಬಿದ್ದಿದ್ದ.  ಅವನ ಕಪಾಳಕ್ಕೆ ರೆಡ್ಡಿ ಬಿಗಿದಿದ್ದು ಒಂದು ಏಟು.  ಕಣ್ಣಿಗೆ ಕತ್ತಲು ಆವರಿಸಿ ಜಮೀರುಲ್ಲಾ ನೆಲಕ್ಕೆ ಕುಸಿದಿದ್ದ.  ಅವನ ಅವಸ್ಥೆ ನೋಡಿ ರೆಡ್ಡಿ ಬಿದ್ದು ಬಿದ್ದು ನಕ್ಕಿದ್ದ.  ಶಬನಮ್ ಅವನ ನಗೆಗೆ ಚಪ್ಪಾಳೆ ತಟ್ಟಿದಂತಿತ್ತು.

ಕುದಿದ ಲಾವಾಕ್ಕೆ ಸ್ಫೋಟಗೊಳ್ಳುವ ಧಾವಂತ ಎನ್ನುವಂತೆ ಮರುದಿನ ಜಮೀರುಲ್ಲಾ ಒಂದಿಬ್ಬರು ಇಸ್ಪೇಟ್ ಗೆಳೆಯರನ್ನು ಕರೆದುಕೊಂಡು ಹಾಡುಹಗಲೇ ಚಂದ್ರಕಾಂತರೆಡ್ಡಿಯ ಎದುರು ಚಾಕು ಹಿಡಿದು ನಿಂತಿದ್ದ.  ತಕ್ಷಣ ಅಲ್ಲಿದ್ದ ಕೆಲಸಗಾರರು ಅವನ ಕೈಯಲ್ಲಿನ ಚಾಕು ಕಿತ್ತುಕೊಂಡು ಮುರಿದು ಬೀಸಾಡಿ ಅವನ ಮೂಳೆ ಸಡಿಲಾಗುವಂತೆ ತದುಕಿದ್ದರು.  ಶಬನಮ್ ಈ ಪ್ರಸಂಗವನ್ನು ದಿವ್ಯ ನಿರ್ಲಕ್ಷದಿಂದಲೇ ಗಮನಿಸಿದ್ದಳು.  ಅವಳ ಬಗ್ಗೆ ರೋಷ, ಬೇಸರ ಒಟ್ಟಿಗೆ ಹುಟ್ಟಿಕೊಂಡಿದ್ದವು ಜಮೀರುಲ್ಲಾನಿಗೆ.  ಅವಳು ತನಗೆ ಸಂಬಂಧಿಸಿದವಳಲ್ಲ ಎಂಬ ತಿಳಿವಳಿಕೆ ದಟ್ಟಗೊಳ್ಳುತ್ತಿರುವಂತೆ ಅವನು ಅಲ್ಲಿಂದ ತೆವಳುತ್ತ ನಡೆದು ಹೋಗಿದ್ದ.  ನೆಲ, ತಲೆಯ ಮೇಲಿನ ಆಕಾಶ, ಮುಖಾಮುಖಿ ಯಾಗುತ್ತಿರುವ ಜನರ ನಡುವೆ ತಾನು ಒಬ್ಬಂಟಿ ಅನಿಸತೊಡಗಿತ್ತು.

        *        *        *

ಆರ್ಭಟದ ಅಲೆಯೊಂದು ಬಂಡೆಗಲ್ಲಿಗೆ ಬಡಿದು, ಹಿಂತಿರುಗುವಾಗ ತನ್ನ ಕಾಲನ್ನು ಹಿಡಿದು ಎಳೆಯುತ್ತಿರುವಂತೆ ಅನಿಸಿ ನೆನಪಿನಾಳದಿಂದ ಫಕ್ಕನೆ ಎಚ್ಚತ್ತುಕೊಂಡಿದ್ದ ಜಮೀರುಲ್ಲಾ.  ಅಗಲೇ ಸೂರ್ಯ ಅಸ್ತಮಿಸಿ ಕತ್ತಲು ಆವರಿಸತೊಡಗಿತ್ತು.  ಜನರು ಒಬ್ಬರೂ ಕಾಣಿಸಲಿಲ್ಲ.  ತಳ್ಳುಗಾಡಿಗಳೂ ಇಲ್ಲ.  ಬರಿದು ಬರಿದಾಗಿ ತೋರಿದ ಕಡಲತೀರ ಅವನ ಮನಸ್ಸನ್ನು ಇನ್ನಷ್ಟು ಶೂನ್ಯಗೊಳಿಸಿತು.  ನಿರ್ಜನ ಪ್ರದೇಶವನ್ನು ಭೀತಿಗೊಳಪಡಿಸುವಂತಿತ್ತು ಕಡಲಿನ ಮೊರೆತ.  ಅದರೊಂದಿಗೆ ಬೆರೆತುಕೊಂಡಂತೆ ಚಂದ್ರಕಾಂತರೆಡ್ಡಿಯ ಅಟ್ಟಹಾಸದ ನಗು ಜಮೀರುಲ್ಲಾನ ಎದೆಯಲ್ಲಿ ಅಗ್ನಿಯನ್ನು ಹೊತ್ತಿಸತೊಡಗಿತ್ತು.  ತನ್ನ ಬದುಕನ್ನು ನುಂಗಿದ ತಿಮಿಂಗಿಲು ಅವನು.  "ಏ, ಹರಾಮ್ ಜಾದೆಽಽ..."  ಜಮೀರುಲ್ಲಾ ಎದ್ದು ನಿಂತು ಕೂಗಾಡಿದ.  ರೆಡ್ಡಿಯ ಅಟ್ಟಹಾಸ ಇನ್ನೂ ವರ್ಧಿಸಿತ್ತು ಶಬನಮ್ ಅದರಿಂದ ಪುಳಕಗೊಂಡಂತೆ ಕಿಲಕಿಲ ನಗತೊಡಗಿದ್ದಳು.  "ದೋಖಾ (ಮೋಸ) ಹೆಂಗಸ್ಸೆ.... ಚಿನಾಲ್ ರಾಂಡ್ಽಽ..." ಜಮೀರುಲ್ಲಾ ಆವೇಶಕ್ಕೊಳಗಾದವನಂತೆ ಜೋರಾಗಿ ಕೂಗುತ್ತ ನೀರಿಗಿಳಿದ.  ಸೊಂಟ ದಾಟಿತ್ತು ನೀರು.  ಮೈಮೇಲೆ ಖಬರು ಇಲ್ಲದವನಂತೆ ಅವನ ಹೆಜ್ಜೆಗಳು ಕೀಳುತ್ತಲೇ ಇದ್ದವು.  ಅಷ್ಟು ದೂರದಲ್ಲಿ ಕಡಲಗರ್ಭದಿಂದ ಮೈದುಂಬಿಕೊಂಡು ಅಲೆಯೊಂದು ಬರತೊಡಗಿತ್ತು.

"ಏ.... ಯಾರು ನೀನು?  ಸಾಯಬೇಕು ಅಂದಿದ್ದಿಯೇನು?"  ಅವನ ರಟ್ಟೆಯನ್ನು ಬಲವಾಗಿ ಹಿಡಿದು ಅವಸರವಸರವಾಗಿ ಎಳೆದು ತಂದು ದಂಡೆಯ ಮೇಲೆ ನಿಲ್ಲಿಸಿದ್ದ ಆ ಮನುಷ್ಯ.  ಆ ಹೊತ್ತಿಗೆ ಅವರ ಮೇಲೆ ಎರಗಿದ ಅಲೆ ಬಂದಂತೆ ಹಿಂದೆ ಸರಿದಿತ್ತು.  ಕುಸಿದು ಕುಳಿತ ಜಮೀರುಲ್ಲಾ ರೊಂಯ್ಽಽ ಎಂದು ಅಳತೊಡಗಿದ.

"ಏನಾಗಿದೆ ನಿನಗೆ?  ಹೀಗೇಕೆ ಅಳುತ್ತಿ ಹೆಂಗಸರ ಹಾಗೆ?"  ಆ ಮನುಷ್ಯ ಜಮೀರುಲ್ಲಾನ ಮೈ ತಿವಿದು ಕೇಳಿದ.  "ನನ್ನ ಜಿಂದಗಿ ಸಮುದ್ರ ಪಾಲಾತು"  ಜಮೀರುಲ್ಲಾ ಮತ್ತೆ ಬಿಕ್ಕಿದ್ದ.

"ಅದಕ್ಕೆ ಸಮುದ್ರಕ್ಕೆ ಬಿದ್ದು ಸಾಯಲು ಹೊರಟಿದ್ದಿಯೇನು"?

"ನನ್ನ ಶಬನಮ್ ಮೋಸಾ ಮಾಡಿದ್ಲು"  ಜಮೀರುಲ್ಲಾ ನಡೆದ ಘಟನೆಯನ್ನು ವಿವರಿಸಿದ.  ಅವನೆದುರು ಕುಳಿತ ಆ ಮನುಷ್ಯ "ಹೆಂಡತೀನ ಆಳಲಿಕ್ಕೆ ಬರಲಾರದವನಿಗೆ ಅಳುವೇ ಗತಿ ನೋಡು" ಎಂದು ಪಕಪಕನೆ ನಕ್ಕ.

"ನಾನು ಆಕಿಮ್ಯಾಲೆ ಭರೋಸಾ ಇಟ್ಟು ಈ ಊರಿಗೆ ಬಂದೆ"

"ಹೆಂಗಸರು ಅಂದರೆ ಈ ಸಮುದ್ರ ಇದ್ದ ಹಾಗೆ.  ನೋಡಲು ಸುಂದರ, ಒಳಗೆ ಭಯಂಕರ! ಅಪಾಯಕಾರಿ!!"  ಉದ್ಗರಿಸಿದ ಆ ಮನುಷ್ಯ.  ಅವನು ಹೇಳುವುದರಲ್ಲಿ ವಾಸ್ತವ ಇದೆಯೆನ್ನಿಸಿತು.  ಶಬನಮ್‌ಳ ಸೋಗಲಾಡಿತನ ಜಮೀರುಲ್ಲಾನ ಕಣ್ಮುಂದೆ ಸುಳಿದಾಡಿತು.

"ಹೆಂಗಸರ ಪುಕ್ಕ ಬೆಳೆಯಲು ಅವಕಾಶ ಕೊಡಬಾರದು.  ಪುಕ್ಕ ಬೆಳೆದರೆ ಅವರ ಹಾರಾಟ ಜೋರಾಗುವುದು.  ಹಾರಿ, ಆಕಾಶಕ್ಕೆ ನೆಗೆದು, ನಮ್ಮ ನೆತ್ತಿ ಕುಕ್ಕುವರು".  ಹೆಂಗಸರ ಬಗೆಗಿನ ಆ ಮನುಷ್ಯನ ಅಭಿಪ್ರಯ ಕಠೋರವಾಗಿತ್ತು.  ಜಮೀರುಲ್ಲಾ ಅವನ ಮುಖ ದಿಟ್ಟಿಸುತ್ತ ಕೇಳಿದ "ನನ್ನ ಹೆಂಡ್ತಿ ಹಾಂಗ ನಿನ್ನ ಹೆಂಡ್ತೀನೂ...?"

ಅವನ ಪ್ರಶ್ನೆ ಪೂರ್ತಿಯಾಗುವ ಮೊದಲೇ ಆ ಮನುಷ್ಯನ ಧ್ವನಿ ಗಡುಸಾಗಿತ್ತು.

"ಏಽಽ ಪಾಗಲ್ ಬುದ್ಧಿಯವನೆ.  ನನ್ನ ನೋಡಿದರೆ ನಿನಗೆ ಅಂಥ ಗುಮಾನಿ ಬರುವುದೇನು?  ಮರ್ದ್ ಇದ್ದೇನೆ ನಾನು.  ನನ್ನಾಕೆಯ ಪುಕ್ಕಗಳನ್ನು ಬೇರು ಸಹಿತ ಕತ್ತರಿಸಿ ಹಾಕಿದ್ದೇನೆ.  ನನ್ನ ಆವಾಜು ಕೇಳಿದರೆ ಪ್ರಾಣ ಹೋದವರಂತೆ ಒದ್ದಾಡುತ್ತಾಳೆ ಆಕೆ"  ಹೆಮ್ಮೆ ವ್ಯಕ್ತಪಡಿಸಿದ ಅವನು.

ಈ ಮನುಷ್ಯನ ಗಡಸುತನ ತನ್ನಲ್ಲಿಯೂ ಇದ್ದಿದ್ದರೆ ಶಬನಮ್‌ಳನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ತಾನೂ ಜಬರಾಗಿ ಇರಬಹುದಾಗಿತ್ತು ಎಂದುಕೊಂಡ ಜಮೀರುಲ್ಲಾ.

ಆಕಾಶದಲ್ಲಿ ನಕ್ಷತ್ರಗಳು ಹೊಳೆದಿದ್ದವು.

"ನಿನ್ನ ಹೆಸರೇನು?" ಕೇಳಿದ್ದ ಆ ಮನುಷ್ಯ.

"ಜಮೀರುಲ್ಲಾ"

"ನನ್ನ ಹೆಸರು ಮುನೀರ್‍.  ನಿನ್ನ ಮುಖದಲ್ಲಿ ಕಣ್ಣೀರು ಬತ್ತಿದೆ.  ಹೋಗಿ ತೊಳೆದುಕೊಂಡು ಬಾ.  ನಿನಗೆ ಪೆನ್ನಿ ಕೊಡುತ್ತೇನೆ"

"ಪೆನ್ನಿ...!  ಏನದು?"

"ನೀನು ಸಾರಾಯಿ ಕುಡಿಯುದಿಲ್ಲವೆ?"

"ಇಲ್ಲ"

"ಅದಕ್ಕೆ ನೀನು ಜಡವಾಗಿದ್ದಿ.  ಹೆಂಗಸರ ಹಾಗೆ ಅಳುತ್ತಿ.  ಈ ಪೆನ್ನಿ ಕುಡಿದರೆ ನೋವು ಅನ್ನುವುದೇ ಇರೋದಿಲ್ಲ.  ಇದು ಎಲ್ಲ ದುಃಖಕ್ಕೆ ರಾಮಬಾಣ."

"ನಿನ್ಗ ದುಃಖ ಐತೇನು?"

"ಇದೆಯೆಂದರೆ ಇದೆ,  ಇಲ್ಲವೆಂದರೆ ಇಲ್ಲ.  ಅದರ ಕಡೆಗೆ ನಾನು ಲಕ್ಷ್ಯ ಕೊಡುದಿಲ್ಲ.  ನನಗೆ ಜಿಂದಗಿ ಬೇಕು.  ಪೆನ್ನಿ ನನ್ನ ಜಿಂದಗಿ ಕಾಪಾಡುವುದು.  ನಿನಗೆ ಯಾವ ಚಟವೂ ಇಲ್ಲವೆ?"

"ಊರಲ್ಲಿ ಓ.ಸಿ. .... ಆಡ್ತಿದ್ದ್ಯಾ.  ಇಸ್ಪೇಟು ಅಂದ್ರ ನನಗ ಪಂಚಪ್ರಾಣ".

"ಹಾಗಾದರೆ ನೀನು ನನ್ನ ದೋಸ್ತ್.  ಈಗ ಇನ್ನೊಂದಿಷ್ಟು ಪೆನ್ನಿ ಕುಡಿ.  ಮನೆಗೆ ಹೋಗೋಣ.  ಜರೀನಾ ಮೀನಿನ ಸಾರು ಮಸ್ತಮಾಡ್ತಾಳೆ.  ಊಟ ಮಾಡಿ ಮಲಗು.  ನೀನು ನಾಳೆಗೆ ಹೊಸ ಮನುಷ್ಯ ಆಗಬೇಕು.  ನಿನ್ನ ರಾಂಡ್ ಶಬನಮ್‌ಳನ್ನು ಆ ದಗಾಖೋರ ರೆಡ್ಡಿಯನ್ನು ಮರೆಯಬೇಕು.  ಮನುಷ್ಯನಿಗೆ ಜಿಂದಗಿ ಒಂದೇ ಸಲ ಇರುವುದು" ದಾರ್ಶನಿಕನಂತೆ ಮಾತಾಡಿದ ಮುನೀರ.  ಜಮೀರುಲ್ಲಾ ಎದ್ದು ಹೋಗಿ ಕಡಲ ನೀರಲ್ಲಿ ಮುಖ ತೊಳೆದುಕೊಂಡು ಬಂದ.  ತಣ್ಣಗೆ ಬೀಸುತ್ತಿದ್ದ ಗಾಳಿ ಅವನ ಮೈಗೆ ಹಿತವನ್ನುಂಟು ಮಾಡಿತ್ತು.  ಗಾಜಿನ ಸೀಸೆಯೊಂದರ ಮುಚ್ಚಳಿಕೆ ತೆಗೆದು "ಕುಡಿ" ಎಂದು ಮುನೀರ."

"ಇದು ಪೆನ್ನಿ ಏನು?"

"ಹೂಂ"

"ನನಗೆ ರೂಢಿ ಇಲ್ಲ"

"ರೂಢಿ ಮಾಡಿಕೊ.  ಜಿಂದಗಿ ಬೇಕು ಅಂದರೆ" ಆಸೆ ಹುಟ್ಟಿಸಿದ ಮುನೀರ.

ಜಮೀರುಲ್ಲಾ ಸೀಸೆಯೆತ್ತಿ ಒಂದು ಗುಟುಕು ಗಂಟಲಿಗೆ ಸುರವಿಕೊಂಡ.  ಹೊಟ್ಟೆಯೊಳಗೆ ಕೆಂಡ ಸುರಿದ ಅನುಭವವಾಗಿ ಸಂಕಟದಿಂದ ಮುಖ ಕಿವುಚಿದ ಜಮೀರುಲ್ಲಾನನ್ನು ಕಂಡು ಮತ್ತೆ ಫಕ ಫಕ ನಕ್ಕ ಮುನೀರ ಸಾವಧಾನವಾಗಿ ಉಲಿದ "ಗುಟುಕಿನ ಮೇಲೆ ಗುಟುಕು ಇಳಿದರೆ ಪೆನ್ನಿ ಅಮೃತ ಅನ್ನಿಸುವುದು"

"ನನ್ಗ ಇದಽ ಒಂದು ಗುಟುಕು ಸಾಕು" ಎಂದ ಜಮೀರುಲ್ಲಾ.

"ನಾನು ನಿನಗೆ ಒಮ್ಮೆಲೆ ಒತ್ತಾಯ ಮಾಡೋದಿಲ್ಲ" ಎಂದು ಮುನೀರ ಸೀಸೆಯನ್ನು ಇಸಿದುಕೊಂಡು ತನ್ನ ಗಂಟಲಿಗೆ ಗಟಗಟನೇ ಸುರುವಿಕೊಂಡ.  ಜಮೀರುಲ್ಲಾಗೆ ಅವನ ಸಾಮರ್ಥ್ಯ ಅಗಾಧವೆನ್ನಿಸಿತು.

            *    *    *

ಜರೀನಾ ಚಂದದ ಹೆಂಗಸು.  ಫಳ ಫಳ ಹೊಳೆವ ಕಣ್ಣು.  ಚಂದ್ರನ ಮುಖಕ್ಕೆ ಒಪ್ಪುವ ಮಾಟವಾದ ಮೂಗು, ಕೆಂಪು ತುಟಿ.  ತಲೆಯನ್ನು ಸಿಂಗರಿಸಿದ ದಟ್ಟ ಕಪ್ಪು ಕೂದಲು, ಲವಲವಿಕೆಯನ್ನು ಪುಟಿಸುವೆ ದೇಹಸಿರಿ.  ಮುನೀರ ಆ ಚೆಲುವೆಗೆ ಗುಂಜಿಯಷ್ಟು ಸರಿದೂಗುವವನಲ್ಲ ಎಂದುಕೊಂಡ ಜಮೀರುಲ್ಲಾ.

"ಇವನು ಜಮೀರುಲ್ಲಾ.  ನನ್ನ ಹೊಸ ದೋಸ್ತ್.  ಪಾಪ, ಜೀವನದಲ್ಲಿ ನೊಂದಿದ್ದಾನೆ.  ಸಮುದ್ರಕ್ಕೆ ಬೀಳಲು ಹೋಗಿದ್ದ.  ನಾನೇ ರಕ್ಷಿಸಿದೆ.  ಮೀನಿನ ಸಾರು ಮಾಡು.  ಅದನ್ನು ಕುಡಿದರೆ ಇವನಿಗೆ ಜಿಂದಗಿ ಮೇಲೆ ಆಸೆ ಹುಟ್ಟಿರಬೇಕು.  ತಿಳಿತೋ..." ಜಬರು ಧ್ವನಿಯಲ್ಲಿ ಹೇಳಿದ ಮುನೀರ.  ಬಾಗಿಲಲ್ಲಿಯೆ ನಿಂತಿದ್ದ ಜರೀನಾ ತೆಳ್ಳಗಿನ ಸ್ವರದಲ್ಲಿ ಹೂಂಗುಟ್ಟಿ ಒಳಗೆ ಸರಿದು ಹೋದಳು.

ಗುಡಿಸಲಿನ ಹೊರಗೆ ಹಾಕಿದ ಹಗ್ಗದ ಮಂಚದ ಮೇಲೆ ಜಮೀರುಲ್ಲಾನೊಂದಿಗೆ ಕುಳಿತುಕೊಂಡ ಮುನೀರ ಮತ್ತೊಂದು ಸೀಸೆಯ ಮುಚ್ಚಳಿಕೆ ತೆರೆದ.  ಪಕ್ಕದ ಮಂಚದಲ್ಲಿ ಕುಳಿತಿದ್ದ ಮುದುಕ "ನಿನಗೆ ಮನೆಯ ಖಬರು ಇಲ್ಲಾ.  ಮುಸಾಫಿರ್‍ (ಪ್ರವಾಸಿಗ) ಬಂಗ್ಲೆ ಮಾಡಿದ್ದಿ ನೀನು" ಎಂದು ಗೊಣಗಿಕೊಂಡು ಕೆಮ್ಮತೊಡಗಿದ.

ಎರಡು ಗುಟುಕು ಪೆನ್ನಿಯನ್ನು ಬಾಯಿಗೆ ಹಾಕಿಕೊಂಡು "ಈ ಗೂರಲು ಮುದುಕನ ಕಿರಿಕಿರಿ ದಿನಾಲೂ ಇದ್ದದ್ದೆ" ಎಂದು ಉದಾಸೀನದ ಮಾತಾಡಿ ಸೀಸೆಯನ್ನು ಮುದುಕನ ಎದುರು ಹಿಡಿದು "ಗೋರಿಗೆ ಹೋಗಲು ಬಂದಿ, ಗೂರುವುದು ನಿಲ್ಲಿಸಲಿಲ್ಲ.  ಈಗಲಾದ್ರೂ ಈ ಪೆನ್ನಿ ಕುಡಿ.  ಜನ್ನತ್(ಸ್ವರ್ಗ) ಆದ್ರೂ ಸಿಕ್ಕೀತು" ಎಂದು ನಕ್ಕ.  ಅವನ ತಮಾಷೆಯಲ್ಲಿನ ವ್ಯಂಗ್ಯವನ್ನು ಗ್ರಹಿಸಿಕೊಂಡ ಮುದುಕನ ಮೂಗಿನ ಹೊರಳೆ ಹಿಗ್ಗಿತ್ತು.  "ಬೇಶರ್ಮ್‌ನಿಗೆ ಮಾತೊಂದು ಕೇಡು" ಎಂದು ಜೋರಾಗಿ ಹೇಳಿ ಅಸಾಧ್ಯವಾಗಿ ಕೆಮ್ಮತೊಡಗಿದ.

"ಯಾರವರು?" ಜಮೀರುಲ್ಲಾ ಕೇಳಿದ.

"ಅವನು ನನ್ನ ಸಸುರಾ (ಮಾವ) ನನ್ನ ಅಮ್ಮನ ಭೈ ಇವನು.  ಜರೀನಾ ಇವನ ಮಗಳು.  ನನ್ನ ಅಮ್ಮಾನಿಂದ ಜರೀನಾಳ ಅಮ್ಮಾ ಸಾಯುವಾಗ ಮಾತು ತೆಗೆದುಕೊಂಡಿದ್ದಳಂತೆ.  ಜರೀನಾಳೊಂದಿಗೆ ನನ್ನ ಶಾದಿ ಆಯಿತು.  ಈ ಮುದುಕನಿಗೆ ನಾನು ಮನೆಯ ಅಳಿಯನಾಗುವುದು ಬೇಕಾಗಿರಲಿಲ್ಲ.  ಈಗಲೂ ನನ್ನನ್ನು ಕಂಡರೆ ಮುಖ ಉಬ್ಬಿಸುತ್ತಾನೆ.  ನಾನು ಸೊಪ್ಪು ಹಾಕೋದಿಲ್ಲ" ಎನ್ನುತ್ತ ಮತ್ತೆ ಸೀಸೆಯನ್ನು ಬಾಯಿಗಿಟ್ಟುಕೊಂಡ ಮುನೀರ.

ಮುನೀರನ ವ್ಯಕ್ತಿತ್ವದ ಪರಿಚಯ ಜಮೀರುಲ್ಲಾನಿಗೆ ನಾಲ್ಕು ದಿನದಲ್ಲೇ ಆಯಿತು.  ಅವನು ಯಾವ ಕೆಲಸವನ್ನು ಮಾಡುತ್ತಿರಲಿಲ್ಲ.  ಮಾತು ಸೊಗಸಿದಾದರೆ, ನಡವಳಿಕೆ ದಬ್ಬಾಳಿಕೆಯದು.  ಮಾವ ಒಣ ಮೀನುಗಳ ವ್ಯಾಪಾರ ಮಾರುತ್ತಿದ್ದ ಮಾರ್ಕೆಟಿನಲ್ಲಿ ಅವನದೊಂದು ದುಖಾನ್ ಇತ್ತು ಶಾದಿಯಾದ ಹೊಸದರಲ್ಲಿ.  ದುಖಾನ್‌ದ ಜವಾಬ್ದಾರಿ ಮುನೀರನದಾಗಿತ್ತು.  ಮಾವನ ಕಣ್ಣು ತಪ್ಪಿಸಿ ಅವನು ಪೆಟ್ಟಿಗೆಯಿಂದ ಹಣ ಕದಿಯುತ್ತಿದ್ದ.  ಇಸ್ಪೆಟಿನ ಮೂರೆಲೆಯ ಆಟವಾಡುತ್ತಿದ್ದ.  ಹಾಗೆಯೇ ಪೆನ್ನಿಯ ಚಟವೂ ಅಂಟಿಕೊಂಡಿತ್ತು.  ಮಾವನಿಗೆ ಅದು ಇಷ್ಟವಾಗಿರಲಿಲ್ಲ.  ಅವನು ದುಖಾನನ್ನು ದಿವಾಳಿ ಮಾಡುತ್ತಾನೆಂದು, ಅಲ್ಲಿಗೆ ಬರುವುದಕ್ಕೆ ನಿರ್ದಾಕ್ಷಿಣ್ಯವಾಗಿ ನಿಷೇಧಿಸಿದ್ದ.  ತಂದೆಗೆ ಆರಾಮ ಇಲ್ಲ ಅನಿಸಿದಾಗ ಜರೀನಾ ದುಖಾನಲ್ಲಿ ಕುಳಿತು ಬೇಪಾರ ಮಾಡುತ್ತಿದ್ದಳು.  ಹಣ ಬೇಕೆಂದಾಗ ದುಖಾನ್ ಮುಂದೆ ಬಂದು ರಾದ್ಧಾಂತ ಮಾಡುತ್ತಿದ್ದ ಮುನೀರ.  ಮಾವ ರೇಗಿ, ಬೈದಾಡುವನು.  ಮುನೀರ ಅವನ ಮೇಲೆ ಬೀಳುವನು.  ತಂದೆಯನ್ನು ರಕ್ಷಿಸಲು ಹೋಗಿ ಜರೀನಾ ಗಂಡನಿಂದ ಹೊಡೆತ ತಿನ್ನುವಳು.  ತಂದೆ, ಮಗಳನ್ನು ವಾಚಮಗೋಚರವಾಗಿ ಬೈದು, ಹಿಂಸಿಸಿ "ದುಖಾನಿಗೆ ಬೆಂಕಿ ಹಚ್ಚಿ ನಿಮ್ಮನ್ನು ಸುಟ್ಟು, ನಾನು ಮೀನು ಬೇಯಿಸಿಕೊಂಡು ತಿನ್ನುತ್ತೇನೆ" ಎಂದು ಹೆದರಿಸುತ್ತಿದ್ದ ಮುನೀರ.

ಜರೀನಾ ಗಂಡನ ಅಬ್ಬರಕ್ಕೆ ಥರಗುಟ್ಟುತ್ತಿದ್ದಳಾದರೂ ಆವೇಶದ ರಭಸದಲ್ಲಿ "ನೀನು ಕಡಲಿಗೆ ಬಿದ್ದು ಸಾಯಿ" ಎನ್ನುತ್ತಿದ್ದಳು.  "ನಾನು ಸತ್ತರೆ ನಿನಗೆ ಹೊಸ ಮಿಂಡ ಸಿಗುತ್ತಾನೇನು?" ಎಂದು ಅವನು ಗಟ್ಟಿ ಗಟ್ಟಿಯಾಗಿ ಚೀರಿ ಜನರನ್ನು ಸೇರಿಸುವನು.  ಅವರೆದುರಿಗೆ ಆಕೆ ಹಾದರದವಳೆಂದು ದೂಷಿಸುವನು.  ತನಗೆ ತಿನ್ನಲು ಅನ್ನ ಕೊಡುವುದಿಲ್ಲ.  ಕುಡಿಯಲು ಮೀನಿನ ಸಾರು ಕೊಡುವುದಿಲ್ಲ.  ಪೆನ್ನಿ ಕುಡಿಯಲು ದುಡ್ಡು ಕೊಡುವುದಿಲ್ಲ ಎಂದು ಆರೋಪಿಸುವನು.  ಜರೀನಾಳ ಕೂದಲು ಹಿಡಿದು, ನೆಲಕ್ಕೆ ಕುಕ್ಕಿ, ಪೆಕಪೆಕನೆ ಒದೆಯುವನು.

ಜಮೀರುಲ್ಲಾ ಅವನ ನಡತೆಯನ್ನು ಅಸಹನೆಯಿಂದ ನೋಡುತ್ತಿದ್ದ.

ಒಳಗೊಳಗೆ ನೋವು ಅನುಭವಿಸುತ್ತ ಮುಖದಲ್ಲಿ ಯಾವಾಗಲೂ ನಗೆ ಅರಳಿಸಿ ಕೊಂಡಿರುತ್ತಿದ್ದ ಜರೀನಾ ದಿಟ್ಟೆಯೆನಿಸಿತ್ತು ಅವನಿಗೆ.  ಗಂಡನ ಆಕ್ರಮಣವನ್ನು, ಹಿಂಸೆಯನ್ನು ತನ್ನ ತಂದೆಯ ಸಲುವಾಗಿ ಆಕೆ ಸಹಿಸಿಕೊಂಡಿದ್ದಾಳೆಂದು ಅವನು ಗ್ರಹಿಸಿಕೊಂಡಿದ್ದ.

ಆ ದಿನ ಮೀನಿನ ಸಾರು ಮಾಡಲಿಲ್ಲವೆಂಬ ಕಾರಣಕ್ಕೆ ಜರೀನಾಳ ಮೈ, ಮುಖ ಎನ್ನದೆ ಥಳಿಸಿತೊಡಗಿದ ಮುನೀರ.  ಆಕೆ ಸಂಕಟದಿಂದ ಚೀತ್ಕರಿಸಲಾರಂಭಿಸಿದಳು.  ಜಮೀರುಲ್ಲಾ ಮುನೀರನಿಗೆ ಸಮಾಧಾನ ಮಾಡಲು ಯತ್ನಿಸಿದ್ದು ವ್ಯರ್ಥವೆನಿಸಿತು.  ಹೊಟ್ಟೆಗೆ ಬಿದ್ದ ಪೆಟ್ಟಿನಿಂದ ಜರೀನಾ ನೆಲದ ಮೇಲೆ ಬಿದ್ದು ಒದ್ದಾಡ ತೊಡಿಗಿದ್ದಳು.  ಮಗಳ ಹಿಂಸೆಯನ್ನು ನೋಡಲಾರದೆ ಅವಳ ಅಬ್ಬಾಜಾನ್ ಅಳಿಯನನ್ನು ಹೊಡೆಯಲು ಕೈಯೆತ್ತಿದ.  ಮುನೀರ ಮಾವನ ಎದೆಗೆ ಬಿಗಿದ ಮುಷ್ಟಿಯಿಂದ ಬಿರುಸಾಗಿ ಗುದ್ದಿದ.  ಕುಸಿದು ಬಿದ್ದ ಮುದುಕನ ಉಸಿರು ನಿಶ್ಚಲವಾಗಿತ್ತು.  ಜರೀನಾ ಕಡಲು ಭೋರ್ಗರೆಯುವಂತೆ ಭಯಂಕರವಾಗಿ ಆಕ್ರಂದಿಸಿದಳು.  ಈ ಸುದ್ದಿ ಪೊಲೀಸರಿಗೆ ತಿಳಿದು, ಇಬ್ಬರು ಪೇದೆಗಳು ಬಂದು ಮುನೀರನನ್ನು ಸ್ಟೇಶನ್ನಿಗೆ ಕರೆದುಕೊಂಡು ಹೋದರು.

ಪೊಲೀಸರು ಮತ್ತು ಮುನೀರನ ನಡುವೆ ಅದೇನು ಸಂಬಂಧವಿತ್ತೊ ಕೊಲೆಯ ಕೇಸನ್ನು ದಾಖಲಿಸಿಕೊಳ್ಳದೆ ಅವನನ್ನು ನಾಲ್ಕು ದಿನ ಲಾಕಪ್‌ನಲ್ಲಿಟ್ಟಂತೆ ನಾಟಕ ಮಾಡಿ ಹೊರಗೆ ಬಿಟ್ಟಿದ್ದರು.

ಮಾವ ಸತ್ತಿದ್ದರ ದರದು ಇಲ್ಲದಂತೆ ಅವನು ಹೆಂಡತಿಯೆದುರು ಬಂದು ನಿಂತು "ನಾನು ಪೆನ್ನಿ ಕುಡಿಯಬೇಕು ಹಣ ಕೊಡು" ಎಂದು ಕಾಡಿದ.

ಜರೀನಾ ಅವನ ಕಪಾಳಕ್ಕೆ ಬಿರುಸಾಗಿ ಹೊಡೆದು "ನನ್ನ ಉಚ್ಚೆ ಕುಡಿ" ಎಂದಳು.

ಒಡಲಿಗೆ ಬೆಂಕಿ ಬಿತ್ತೊ, ಮುನೀರ ಅವಳ ತುರುಬು ಹಿಡಿದು ಎಳೆದಾಡುತ್ತ "ನನ್ನ ಪೊಲೀಸರಿಗೆ ಹಿಡಿದುಕೊಡಲು ಮಸಲತ್ತು ಮಾಡಿದಿಯಲ್ಲ ಸೊಕ್ಕಿನ ಹೆಂಗಸ್ಸೆ.  ನಿನ್ನಪ್ಪನ ಕೊಂದಂತೆ ನಿನ್ನ ಕೊಂದು ನಾನು ಜೇಲು ಸೇರುತ್ತೇನೆ" ಎಂದು ಹೊಡೆಯಲು ಧಾವಿಸಿದಾಗ ಅವನ ಕಿಬ್ಬೊಟ್ಟೆಗೆ ಜರೀನಾ ತನ್ನ ಮೊಣಕಾಲಿಂದ ತಿವಿದಿದ್ದಳು.  ಹಾಂ ಎಂದವನು ಅಂಗಾತಾಗಿ ನೆಲದ ಮೇಲೆ ಉರುಳಿದ.  ಪೆಟ್ಟು ತಾಗಿದ್ದು ಅವನ ಕಿಬ್ಬೊಟ್ಟೆಗಲ್ಲ, ವೃಷಣಕ್ಕೆ, ಜರೀನಾ ಗಾಬರಿಯಿಂದ ನಡುಗತೊಡಗಿದಳು.  ಜಮೀರುಲ್ಲಾ ಭೀತನಾಗಿ "ಮುನೀರ ಭೈ" ಎಂದು ಮೈದಡವಿದ.  ಅದು ತಣ್ಣಗಾಗತೊಡಗಿತ್ತು.

ಜಮೀರುಲ್ಲಾ ಜರೀನಾಳಿಗೆ ಧೈರ್ಯ ಹೇಳಿದ.  ಅಂಗಳದಲ್ಲಿ ಬಿದ್ದಿದ್ದ ಮುನೀರನ ದೇಹವನ್ನು ಒಳಗೆ ತಂದು ಹಾಕಿದ.  ಮಧ್ಯರಾತ್ರಿ ಹೊತ್ತಿಗೆ ಆ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಕಡಲ ದಂಡೆಯಲ್ಲಿ ಮಲಗಿಸಿ, ಪಕ್ಕದಲ್ಲಿ ಎರಡು ಪೆನ್ನಿ ತುಂಬಿದ ಸೀಸೆಗಳನ್ನು ಇರಿಸಿ ಬಂದ ಜಮೀರುಲ್ಲಾ.

ಸೂರ್ಯನ ಉದಯದೊಂದಿಗೆ ಮುನೀರನ ಸಾವಿನ ಸುದ್ದಿ ಹರಡಿತ್ತು.  ಅವನು ವಿಪರೀತ ಪೆನ್ನಿ ಕುಡಿದು ಸತ್ತಿದ್ದಾನೆಂದು ಜನರು ತಿಳಿದರು.  ಮುನೀರ ತಣ್ಣಗೆ ಕಬರಸ್ತಾನದಲ್ಲಿ ಮಲಗಿಕೊಂಡ.  ಅವನೊಂದಿಗೆ ನಿಜ ಸಂಗತಿ ಕೂಡ.

            *    *    *

ಜಮೀರುಲ್ಲಾ ಈಗ ಶಬನಮ್‌ಳನ್ನು, ದಗಾಖೋರ ಚಂದ್ರಕಾಂತ ರೆಡ್ಡಿಯನ್ನು ಪೂರ್ತಿಯಾಗಿ ಮರೆತಿದ್ದಾನೆ.  ಮುನೀರ ಹೇಳಿದ ಹಾಗೆ ಅವನೀಗ ಹೊಸ ಮನುಷ್ಯನಾಗಿದ್ದಾನೆ.  ಜೀವನ ಪ್ರೀತಿಯಲ್ಲಿ ಧ್ಯಾನಸ್ಥನಾಗಿದ್ದಾನೆ.  ಜರೀನಾ ಅವನಿಗೆ ವ್ಯವಹಾರದ ಕೌಶಲ್ಯವನ್ನು ಕಲಿಸಿದ್ದಾಳೆ.  ಒಣ ಮೀನುಗಳ ವ್ಯಾಪಾರದೊಂದಿಗೆ ಹಸಿ ಮೀನುಗಳ ವ್ಯಾಪಾರವೂ ಭರ್ಜರಿಯಾಗಿ ನಡೆಯುತ್ತಿದೆ, ಜರೀನಾ ಅವನ ಪಾಲಿಗೆ ಮೇಮ್‌ಸಾಬ ಅನಿಸಿದ್ದಾಳೆ.  ಊರಿಂದ ತನ್ನ ಅಮ್ಮಾನನ್ನು ಕರೆಯಿಸಿಕೊಂಡ ಅವನು ಚಂದದ ಮನೆ ಕಟ್ಟಿಕೊಂಡಿದ್ದಾನೆ.  ಬಂಗಾರದಂಥ ಇಬ್ಬರು ಗಂಡು ಮಕ್ಕಳಿಗೆ ಅವನು ತಂದೆಯೆನಿಸಿದ್ದಾನೆ.  ಆ ಮಕ್ಕಳ ಅಮ್ಮಾ ಜರೀನಾಳೆ ಆಗಿದ್ದಾಳೆ.  ಮೀನು ಖರೀದಿಸಲು ಬರುವಾಗ ಜಮೀರುಲ್ಲಾ ದಿನಾಲೂ ಹೊಸ ಸೂರ್ಯನನ್ನು ನೋಡಿ ಪುಳಕಗೊಳ್ಳುತ್ತಾನೆ.  ಅವನಿಗೆ ಇಷ್ಟವಾಗುವುದು ಹೊಸ ಸೂರ್ಯ ಮಾತ್ರ.

               ***

ಕೀಲಿಕರಣ: ಕಿಶೋರ್‍ ಚಂದ್ರ

ಶ್ರೀಗುರುನಾಥನ ಆಲಯದೊಳು

ಶ್ರೀಗುರುನಾಥನ ಆಲಯದೊಳು ನಾವ್-
ಈರ್ವರು ನಲಿದಾಡುನು ಬಾ ಬಾ                   ||ಪ||

ಬಾರದಿದ್ದರೆ ನಿನ್ನ ಮಾರಿಗೆ ಹೊಡೆವೆನು
ಸಾರಿ ಈರ್ವರು ನಲಿದಾಡುನು ಬಾ ಬಾ           ||೧||

ಯೋಗದ ಕುದುರೆಯ ಬ್ಯಾಗನೆ ಏರುತ
ಮ್ಯಾಗೇರಿಯವಮಠಕ್ಹೋಗುನು ಬಾ ಬಾ         ||೨||

ನಡಿ ನಡಿ ಶಿಶುನಾಳಧೀಶನ ಗುಡಿಯೊಳು
ಅಡಗಿದ ಪ್ರಣಮವ ನೋಡುನು ಬಾ ಬಾ          ||೩||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಸದಗುರುರಾಥ‍ನ್ಹೊರತು ಗತಿ ಬ್ಯಾರಿಹುದೆ?

ಸದಗುರುರಾಥ‍ನ್ಹೊರತು ಗತಿ ಬ್ಯಾರಿಹುದೆ?
ಮುಕ್ತಿದಾತನೆನ್ನುತಾ ಶ್ರುತಿ ಸಾರುತಿದೆ                 ||ಪ.||

ಕೌತಕದಿ ಕಲಿಯೊಳು ಕೂಡಿಸಿದಾ
ರೇತು ರಕ್ತದೊಳು ಮನಿ ಮಾಡಿಸಿದಾ
ಮಾತೆ ಕುಚದೊಳು ಆಮೃತರಸ ನೀಡಿಸಿದಾ          ||೧||

ಏನು ಹೇಳಲಿ ಆತನ ದಯದಿಂದಾ
ದೇವ ಶಿಶುನಾಳೇಶನ ವರದಿಂದಾ
ತಾನು ತಾನೇ ಆದನು ಗುರುಗೋವಿಂದಾ             ||೨||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ನಂಬಿದೆನಯ್ಯಾ ನಿನ್ನ ಸದಗುರುರಾಯಾ

ನಂಬಿದೆನಯ್ಯಾ ನಿನ್ನ ಸದಗುರುರಾಯಾ
ರಕ್ಷಿಸು ಎನ್ನ ಪ್ರೀಯಾ                                   ||ಪ||

ನ೦ಬಿದೆ ನಾ ನಿನ್ನ ಶಂಬು ರಕ್ಷಿಸು ಎನ್ನಾ
ಕುಂಭಿನಿಯಾಳು ಬಿಡದೆ ತುಳುಕುತಿರುವೆ         ||ಅ.ಪ.||

ಹರನಾಮ ಧ್ಯಾನದಲಿ ಫ್ರೇಮದಲಿ
ಕರಿಗೊಂಡು ಮನಸಿನಲಿ ವರವ್ಯಸನವನು ಹರಿದು
ನಿರುತ ಪಾಲಿಸು ದೇವಾ
ಧರಿಯೊಳು ಸತ್ಯಶಂಕರ ರೂಪ ನಿನ್ನ               ||೧||

ಜಡದೇಹಿ ಜಗದಿ ನಾನು ಪರಂಜ್ಯೋತಿ
ಮೃಡರೂಪ ಮೂರ್ತಿ ನೀನು
ಪೊಡವಿಪ ಶಿಶುನಾಳ ಒಡಿಯನ ಕರುಣಿಸೊ
ಕಡುಮತಿ ಸದ್ಗುರು ಗೋವಿಂದನಾಥನೆ             ||೨||  
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ      ||ಪ||

ಕರಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರಬೋಧಿಸಿ ಕರವಿಟ್ಟು ಶಿರದೊಳು      ||೧||

ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ                 ||೨||

ಗುರುವರ ಗೋವಿಂದ ಪರಮಗಾರುಡಿಗ ನಿ-
ನಿರುತಿಹೆ ತಿಳಿಯದು ನರರಿಗೆ ಪರಿಯಿದು        ||೩||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಶ್ರೀಗುರು ನಿತ್ಯನಿರಾಲಂಬ

ಶ್ರೀಗುರು ನಿತ್ಯನಿರಾಲಂಬ ನಿಜಪದ ಸೇವಕ
ಈ ಆತ್ಮಾ ಶಿವಯೋಗಿ                                    ||ಪ||

ಮರಳಿ ತೆರಳದಂತೆ ಭವದೊಳು ಬಾರದೆ
ಮರಣರಹಿತ ನಿಮ್ಮ ಚರಣಕ್ಕೆ ಎರಗುವೆ              ||ಅ.ಪ.||

ಆರನಳಿದು ಮುನ್ನ ಮೂರು ಮೀರಿತು ಆತ್ಮಾ ಏರಿ
ಪಾರಮರ್ಥದೊಳಿರುವಾ ನಾಲಿ ನಿಲ್ಲಿಸಿ
ಗುರುಸಾಧ್ಯನಾಗುತ ತಾನು
ಬ್ಯಾರೆ ಬೈಲು ಬ್ರಹ್ಮಜ್ಞಾನದೊಳಿರುವನಯ್ಯ         ||೧||

ವಸುಧಿಯೊಳು ಶಿಶುನಾಳಧೀಶನ ಸೇವಕ
ಉಸುರಿದ ನುಡಿಕೇಳಿ ಪಸರಿಸುವಾ
ಶಶಿಕಿರಣದೋಳ್ ಗುರುಗೋವಿಂದನಾಥನ
ಶಿಶುವೆಂದಿನಿಸಿದಂಥಾ ಕುಶಲ ಶರೀಫನು            ||೨||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಧರೆ ಹೊತ್ತಿ ಉರಿದೊಡೆ


- ಬಸವರಾಜ್ ಡಬ್ಲ್ಯು

ಲೇ... ಬರ್‍ರೋ.. ಏನ್ ನೋಡಾಕ್ಹತ್ತೀರಿ... ಅಲ್ನೋಡು ಮಲ್ಲಣ್ಣ ತಾತ ಐದಾನ... ಲೇ ಎಲೈದನಪಾ... ಆಯಾ... ಆಗ!... ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ... ಜಂಬ, ನಾಗ, ಕೆಂಚ ಎಂದು ಕೂಗುತ್ತ ಹೋಟೆಲ್ ಒಳಗೆ ಹೋದ ಚನ್ನಪ್ಪ.

ತಾತ... ತಾತ... 'ಯಾಕಲೇ ಚನ್ನ ಅದ್ಯಾಕ್ಹಂಗ ಓಡ್ಕಂತ ಬಂದಿ'.  ಇಲ್ಲಪೋ ಮತ್ತೆ ನೀಯಲ್ಲಿ ಓಗಿಬುಡ್ತಿಯಂತ ಬಂದೆ.  ಟೇಬಲ್ ಮೇಲಿದ್ದ ನೀರನ್ನು ಕುಡಿದು ಸ್ವಲ್ಪ ದಣಿವಾರಿಸಿಕೊಂಡ.  ಏನು ತಾತ ಬೇಸೈದಿಯಾ...  ಭಾಳ ದಿವ್ಸ ಆತ್ನೋಡು ನಿನ್ನ ನೋಡ್ಲಾರ್‍ದ.  ಹೌದು ನೋಡಾ... ನೀನೇ ಬರಂಗಿಲ್ಲ ಈಕಡಿ.  ಏನ್ಮಾಡದು ತಾತ ಹೊಲ, ಮನೆ ಅನ್ಕಂಡು ಹೊರಕ ಬರಕ ಆಗಂಗಿಲ್ಲ ನೋಡು.  ಅಲ್ಲೇ ನಿಂತಿದ್ದ ಗೆಳೆಯರನ್ನು ನೋಡಿ,  ಏ... ಬರ್‍ರ್‍ಯಾ, ಅಂಗ್ಯಾಕ ನಿಂತೀರಿ.  `ಅವ್ರು ನಾನು ಬೈದು ಬುಡ್ತೀನಂತ ಎದ್ರಿಕಂಡು ನಿಂತಾರ ಕಳ್ ಸೂಳೇ ಮಕ್ಳು... ಎಂಗೈದಾರ್‍ ನೋಡು ಒಬ್ಬೊಬ್ರನ ಕಡದ್ರೆ ನಾಕ್ ತುಂಡಾಕ್ತಾರ.  ದುಡಿಯಂಗಿಲ್ಲ ದುಃಖ್ ಪಡಂಗಿಲ್ಲ.  ಅಪ್ಪಾ ಮಾಡಿದ್ದ ಆಸ್ತಿ ಕರಗ್ಸೋದ್ಹೆಂಗಂತ ನೋಡ್ತಾರ... ಅದ್ರಾಗ ಲಗ್ಣ ಬ್ಯಾರೆ ಕೇಡು ಈ ನನ್ ಮಕ್ಳಿಗೆ... ಎನ್ ಸುಮ್ನೆ ನೋಡ್ತಿರಿ ಬರ್‍ರಿ' ಎಂದ ಮಲ್ಲಣ್ಣ ತಾತ.  ಅಂಜುತ್ತ ಕಳ್ಳರಂತೆ ಬಂದು ಕುಳಿತರು ಜಂಬ, ನಾಗ, ಕೆಂಚ.

ಮಾರಕ್ಕ... ರವಟು ಚಾ ಕೊಡಂಗೆ ಈ ಉಡ್ರಿಗೆ.  ಅಲ್ಲಪೋ ತಾತ ಇದೇನು ಅಂತೀನಿ.  ಏ... ಕುಡಿರಾ ಇರ್‍ಲಿ.  ಮತ್ತೆ ನಾ ನಿಮಿಗ್ಯಾವಾಗ ಸಿಗಬೇಕು ಕುಡ್ರಿ ಕುಡಿರಿ.  `ಅದ್ರ ಜತಿಗೆ ಒಂದೊಂದು ಮಿರ್ಚಿ ಕೊಟ್ಬುಡು ಮಾರಕ್ಕ' ಎಂದ ಚನ್ನ.

ಲೇ ಚನ್ನ ಮಿಚಿð ಅಂದ್ರೆ ನಿಮ್ಮಪ್ಪ ನೆಪ್ಪಾಗ್ತಾನ ನೋಡು.  ಅವಾಗ ಮಧ್ಯಾದ್ಹೊತ್ತು ಉಂಡು ಬಂದು ವಗ್ಗಣ್ಣಿ ಮೆಣಸಿಕಾಯಿ ತಿಮ್ತಿತಿದ್ವಿ.  ಆಗಿನ ಕಾಲ ಬೇಸಿತ್ನೋಡು.  ಈಗ್ನೋಡು... ಅನೌನ ರೇಟೆಲ್ಲ ಮ್ಯಾಕೇರ್‍ಯಾವು.  ಸುಡುಗಾಡ್ ಸೂಳೇಮಗನ ಗೌರ್‍ಮೆಂಟ್.  ಏನಾನ ಗಬಕಂಥ ತಿಂಬಂಗಿಲ್ಲ ಉಂಬಂಗಿಲ್ಲ ಎಂದು ಮೀಸೆ ಮೇಲೆ ಕೈಯಾಡಿಸುತ್ತಾ ಕುಳಿತ.

ಊರಿನಲ್ಲಿ ಮಲ್ಲಣ್ಣ ತಾತ ಅಂದ್ರೆ ಎಲ್ಲರಿಗೂ ಇಷ್ಟ.  ಈತನ ಸಾಮಾಜಿಕ ಕಳಕಳಿ ಎಂಥವರಿಗೂ ಬೆಚ್ಚು ಬೀಳಿಸುತ್ತಿತ್ತು.  ಈತ ನಮ್ಮೂರಿನ ನ್ಯೂಸ್ ಪೇಪರ್‍ ಎಂದೇ ಕಂಪ್ಲಿ ಜನ ಕರೆಯುತ್ತಿದ್ದರು.  ಪ್ರಾಮಾಣಿಕ ವ್ಯಕ್ತಿಯಾಗಿದ್ದ ಈತ ಊರಿನ ನ್ಯಾಯ ಬಗೆಹರಿಸುತ್ತಿದ್ದ.  ಈತನ ಮಾತು ಯಾರೂ ತೆಗೆದು ಹಾಕುತ್ತಿರಲಿಲ್ಲ.  ಊರಿನ ಉಸಾಬರಿ ನಿನಗ್ಯಾಕಂತ ಮಕ್ಕಳು ಬೈಯುತ್ತಿರಲಿಲ್ಲ.

ತಾತ... ತಾತ... ಏನಲೇ ಚನ್ನ... ಆಗ ಮತೆ... ಏನನ ಹೊಸ ಸುದ್ದಿ ಇದ್ರೆ ಹೇಳಪೋ ರವಟು ಕೇಳ್ತೀವಿ.  ಅಂಗಾ...  ಹೇಳ್ತಿನಿ ಕೇಳು... ಮನ್ನೆ ಎಪಿಎಂಸಿ ಎಲೆಕ್ಸನ್ ಆತಲ್ಲ ಅವಗೊಂದು ಮಜಾ ಆತ್ನೋಡು.  ಊಂ... ಆ ಭೀಮ ಐದಾನಲಾ... ಯಾರ್‍ ತಾತ... ಅದೇಲೇ ನಮ್ ಮೂಲಿಮನಿ ಭೀಮ ಊಂ... ಊಂ... ಹೌದೌದು... ಎಂದು ತಲೆ ಅಲ್ಲಡಿಸಿದ ಚನ್ನ.

ಅವ್ನು ಎಂಥ ದಡ್‌ಸೂಳೇಮಗ ಅಂದ್ರೆ ಎಲೆಕ್ಸನ್ನಾಗ ನಿತ್ಗಂಡಿದ್ದ.  ಎಲ್ಲಿ ಸೋಲ್ತೀನಂತ ತಿಳ್ಕಂಡು ತನ್ ಓಟು ಆ ಪರಮೇಸಿಗೆ ಹಾಕ್ಬಿಟ್ಟ ಇಂಥನ್ರ ಕಟ್ಗಂಡು ನಾವು ಊರಕ ಐದೀವಿ ನೋಡು ಎಂದಾಗ ಹೋಟೆಲ್ನಲ್ಲಿರುವವರೆಲ್ಲ ನಗತೊಡಗಿದರು.

ಆ ಪರಮೇಸಿ ರೊಕ್ಕ ಇದ್ದಾತ.  ಮೆಂಬರ್‍ಸಿಗೆಲ್ಲ ರೊಕ್ಕ ಕೊಟ್ಟು ತಾನು ಅಧ್ಯಕ್ಷ ಆದ.  ಈ ಭಂಡ ಭೀಮ ಎಲೆಕ್ಸನ್ ಎದುಸ್ರಾಕ ಆಗ್ಲಾರ್‍ದೆ ಈ ಪರಿಸ್ಥಿತಿ ತದ್ಕಂಡಾನ ನೋಡು.  ಆಮ್ಯಾಕ ಇನ್ನೊಂದು ಸುದ್ದಿ ಕೇಳು.  ಎಂದು ಕುಂಡಿ ತುರಿಸಿಕೊಳ್ಳೂತ್ತ ಮಾತು ಶುರುಮಾಡಿದ.

ನಿನ್ನೆ ಆ ಮೇಸ್ಟ್ರು ಮಲ್ಲೇಸಿ ಸತ್ತ.  ಎಂಗ ಸತ್ತಂತ ಕೇಳು ಸ್ವಲುಪು.  ಅವ್ನು ಮೊದ್ದಲೆ ಕುಡ್ಕ.  ಬರೇ ಓಸಿ, ಇಸ್ಪೇಟು, ಸೋಳೇರಂತ ಬಂದ ಸಂಬ್ಳ ಎಲ್ಲಾ ಖರ್ಚು ಮಾಡ್ತಿದ್ದ.  ಮೈಯಾಗ ಆರಾಮಿಲ್ದಂಗಾತು ಬಳ್ಳಾರಿ ಓಪಿಡಿ ಆಸ್ಪತ್ರಿಗ್ಹೋಗಿ ತೋರಿಸ್ಕಂಡು ಬಂದ.  ಆದ್ರೆ... ಅಲ್ಲಿ ಡಾಕ್ಟ್ರು ಅವನಿಗೆ ಕ್ಯಾನ್ಸರ್‍ ಐತಂತ ಹೇಳ್ಬಿಟ್ರು.  ಎದಿನೇ ಹೊಡ್ಕಂಡ್ಹಂಗ ಮಾಡ್ದ.  ಮನ್ಯಾಗ ಏನೂ ಹೇಳ್ದೆ ನನ್ಮುಂದ ಬಂದು ಹೇಳ್ದ.  ನಾವು ಸೀದಾ ಹುಬ್ಬಳ್ಳಿ ಕ್ಯಾನ್ಸರ್‍ ಆಸ್ಪತ್ರಿಗ್ಹೋಗಿ ಸ್ವಲುಪು ದಿನ ಇದ್ವಿ.  ಅಲ್ಲಿ ಡಾಕ್ಟ್ರು ಹೇಳಿದ್ರು `ಇದು ಆಗ್ಲೆ ಬಡ್ಡಿಗೆ ಬಂದೈತಿ ನೀವು ಮನಿಗೆ ಕರ್‍ಕಂಡ್ಹೋಗ್ರಿ.  ಇರಷ್ಟದಿನ ಇರಲ್ಲಿ' ಅಂದ್ರು.  ಅಲ್ಲಿಂದ ಸೀದಾ ಊರಿಗೆ ಬಂದ್ವಿ ಎನ್ನುತ್ತ ಕಿವಿಯೊಳಗೆ ಕಡ್ಡಿ ಹಾಕಿ ಕೂಕಣಿ ತೆಗೆದುಕೊಂಡು ಮತ್ತೆ ಮಾತಿಗಿಳಿದ.

ಮನ್ನೆ ಅವ್ನ ಮನಿ ಹತ್ರ ಹೋಗಿದ್ದೆ ಪಾಪ... ಮಾತಾಡಕ ಬರ್‍ಲಾರ್‍ದಂಗಾಗಿತ್ತು.  ನನ್ನ ನೋಡಿದ್ಕೂಡ್ಲೆ ಅಳಾಕ ಸುರುಮಾಡ್ದ.  ಕೈ ಹಿಡ್ದು ನೋಡ್ದೆ ಆಗ್ಲೆ ತಣ್ಣಗ ಆಗಕ್ಹತ್ತಿದ್ವು...  ಅವ್ನ ಹೆಣ್ತಿಗ್ಹೇಳಿ ಗಂಗೆ ಕೊಡಂಗೆ ಸ್ವಲುಪು... ಅಂದ್ಕೂಡ್ಲೆ ಪಾಪ ಆ ಹುಡ್ಗಿ ಅತ್ಗಂತ ನೀರು ಕೊಟ್ಲು.  ಅಷ್ಟ್ ಜಲ್ದಿ ಸಾಯ್ಲಿಲ್ಲ.  ಅಲ್ಲೇ ಇದ್ದ ಬಗಲ್ಮನಿ ಸಾಂಬಯ್ಯ ಓಡ್ಹೋಗಿ ಸಾರಾಯಿ ಪಾಕೀಟು ತಂದು ಅವ್ನ ಬಾಯಾಗ ಸುರ್‍ದ.  ಸ್ವಲುಪಹೊತ್ತಿಗೆ ಸತ್ತ ನೋಡು ಎನ್ನುತ್ತ ಕುಂಡಿ ಮೇಲೆತ್ತಿ ಢಂ!  ಅಂತ ಹೂಸು ಬಿಟ್ಟ.  ಅಲ್ಲಿರುವವರೆಲ್ಲ ಗಹಗಹಿಸಿ ನಗ ತೊಡಗಿದರು.

ತಾತ ನೀನು ಏನೇ ಅನ್ನು ಬಲೇಟ ಮುದೇತ ನೋಡು... ಯಾಕಲೇ ಚನ್ನ ಅಂಗಮ್ತಿ.  ನಾನು ಹೇಳಿದ್ದು ಎಂಗ್‌ಕಾಮ್ತೈತಿ... ಅಂಗಲ್ಲಪೋ ತಾತ ನಾನು ಅಂಗೆ ಸುಮ್ಕೆ ಕೋಡ ಮಾಡ್ದೆ.  ಅಂದ್ಹಂಗೆ ಈ ವರ್ಸ ಎಂಗೈತಲೇ ನೆಲ್ಲಿನ(ಭತ್ತ) ರೇಟು.  ಏ... ಅಂಥ ರೇಟೇನಿಲ್ಲಪೋ... ಮಮೂಲೈತೆ.  ಎಂಗಾನ ಆಗ್ಲಿ ನೀನೊಬ್ಬತನ ಬುದ್ಧಿವಂತ ಅದೆಲ್ಲ ಸರಿ ಬಿಡು.  ಎಲ್ಲ ನಿನ್ನ ಆಸೀರ್ವಾದಪೋ ತಾತ.  ಲೇ... ನಂದೇನೈತೋ ಎಲ್ಲ ಆ ಸಿವ್ನಾಟ.

ಮಲ್ಲಣ್ಣ ತಾತ ಬೀಡಿ ಸೇದುತ್ತ ಕುಳಿತಿದ್ದ.  ಹೋಟೆಲಿನ ಮುಂದುಗಡೆಯಿಂದ ಹೆಂಗಸು ಹಾದು ಹೋಗುವುದನ್ನು ನೋಡಿದ.  ಕಣ್ಣುಸ್ವಲ್ಪ ಮಂಜಾಗಿದ್ದರೂ ನಿಖರವಾಗಿ ಇಂಥವರೇ ಎಂದು ಗುರುತಿಸುತ್ತಿದ್ದ.  `ಏನಂಗೆ ದ್ಯಾಮವ್ವ... ಅಂಗೇ ವಂಟೆಲಾ...' ಹಿಂತಿರುಗಿ ನೋಡಿದ ದ್ಯಾಮವ್ವ.  ಇಲ್ಲಪೋ ತಾತ... ನಾ ನೋಡ್ಲಿಲ್ಲ ಎಂಗೈದಿಯಪ.  ಆರಮೈದಿಗಿಲ್ಲ...  ಏನ್ ಆರಾಮಂಗೆ `ನಾಡು ಓಗಂತೈತೆ... ಸುಡುಗಾಡು ಬಾ ಅಂತೈತಿ... ನನ್ನ ಕುಣಿ ನೀನೇ ತೋಡ್ಬುಡಂಗೆ'  ಏ... ಅಂಗ್ಯಕಮ್ತಿ ತಾತ.  ನೀ ಇನ್ನೂ ಬಾಳಿ ಬದುಕ್ಬೇಕು.  ನಾಕು ಜನ್ರಿಗೆ ಉಪಕಾರ ಮಾಡಾತ ನೀನು.  ಅದಿರ್‍ಲಿ ನೀನ್ ಎಂಗೈದಿಯಂಗೆ.  ಆಯಾ... ನಂದೇನಪೋ ಅದೇ ಸುಡಗಾಡ ಬದ್ಕು.  ಅಂದ್ಹಂಗ ನಿನ್ ಮಕ್ಳು ಏನಾರ... ಥೂ ಅವ್ರೆಸ್ರು ಎತ್ಬಾಡ.  ಅವು ಇದ್ರೂ ಒಂದೇ... ಸತ್ರೂ ಒಂದೇ.  ಅಂಗ್ಯಾಕಮ್ತ್ಯವಾ.   ಮತ್ತಿನ್ನೇನು ತಾತ... ಅಲಾ ಅವ್ವ ಅಂಥ ನಾನೊಬ್ಬಕೈದೀನಿ ಅಂಬ ಗ್ಯಾನ ಬ್ಯಾಡ ಆ ಕೋಡಿಗಳಿಗೆ.  ಹೆಂಡ್ರು ಬಂದ್ಮೇಲೆ ಯಾ ಅಪ್ಪ... ಯಾ ಅವ್ವ... ನೀನ್ಹೇಳದು ಖರೆವೈತೆ ಬುಡು.  ಅಗಾ... ಎಲ್ಲಿಗ್ಹೊಂಟೆವಾ.  ಇಲ್ಲೇ ಕಿರಾಣಿ ಸಾಮಾನು ತಗಂಬರಾಕ ವಂಟೀನಿ.  ಇಲ್ನೋಡು... ಆ ಕಾಕನ ಅಂಗಡ್ಯಾಗ ತಗಂಬಾ ಮಾಲು ಬೇಸಿರ್‍ತೈತೆ.  ಅಂಗೇ ರೇಟು ಕಮ್ಮಿ ಕೊಡ್ತಾನಾ.  ಆಗ್ಲಿ ತಾತ ಎಂದು ಹೊರಟಳು.

ಲೇ... ನಾಗ, ಜಂಬ, ಕೆಂಚ ನೋಡ್ರಲೋ ಆ ಯಮ್ಮ ಎಂಗ ಕಷ್ಟಪಟ್ಟು ದುಡಿತಾಳ.  ನೀವೂ ಐದೀರಿ... ದರಿದ್ರಗತಿ ತಿಂದು ತಿರ್‍ಗದು ಆತ್ನೋಡು, ಅದು ಸಾಲ್ದಂತ ನಿಮ್ಗೆ ಹೆಂಡ್ರು ಮಕ್ಳು ಬ್ಯಾರೆ ಕೇಡು ಎಂದು ಎಗ್ಗಿಲ್ಲದೆ ಬೈದ ತಾತ.

ತಾತ... ಆಯಮ್ಮ ಸುಡುಗಾಡ್ನಗ ಕುಣಿ ತೋಡ್ತಾಳಲ ದ್ಯಾಮವ್ವ ಅಲಾ.  ಹೌದಪಾ... ಅದೊಂದು ದೊಡ್ಡ ಕತಿ ಐತಿ ಕೇಳು.  ಇಪ್ಪತ್ತೈದೊಸ್ರದ ಹಿಂದೆ ಎಮ್ಮಿಗ್ನೂರಾಗ ಇದ್ಲು.  ಅಲ್ಲಿ ಭಾಳ ಕಷ್ಟ ಅನುಭವಿಸಿದ್ಲು.  ದ್ಯಾಮವ್ವನ ಅಪ್ಪ ಇಲ್ಲೇ ಕಂಪ್ಲಿಗೆ ಗಂಡನ್ನ ಕರ್‍ಕಂಡ್ ಬಂದ್ಬುಡು.  ಇಲ್ಲಿ ಕೂಲಿ ಕೆಲ್ಸ ಸಿಗ್ತಾವು ಅಂತ್ಹೇಳಿ ಕರ್‍ಕಂಡು ಬಂದ.  ಊರೆಲ್ಲ ಸುತ್ತಾಡಿದ್ರೂ ಕೆಲ್ಸ ಸಿಗ್ಲಿಲ್ಲ.  ಕೊನಿಗೆ ನನ್ಕಡೆ ಬಂದು ಕೇಳ್ಕಂಡ್ರು.  ಹೊಸ್ದಾಗಿ ಊರಿಗೆ ಬಂದರ್‍ನ ನಮ್ಮೂರಗಿನ ಜನ ನಂಬಂಗಿಲ್ಲ ಅದ್ಕೆ ನಿಂಗ ಕೆಲ್ಸ ಸಿಕ್ಕಿಲ್ಲ.  ನಾನು ಕೊಡುಸ್ತಿನಿ ನಡಿ ಅಂತ್ಹೇಳಿ ವೀರಣ್ಣ ಗೌಡ್ರ ಮನ್ಯಾಗ ಕೆಲ್ಸಕ್ಕೆ ಸೇರ್‍ಸಿದೆ ದ್ಯಾಮವ್ವನ ಗಂಡ ಲಚಮ್ಯಾನ.

ಊರೆಂಬ ಊರು ಬರೀ ಜಗ, ದ್ವೇಷ, ಅಸೂಯೆಯಿಂದ ಕೂಡಿದ್ದು, ಅಲ್ಲಿ ಜಾತಿ ಲೆಕ್ಕಾಚಾರವೇ ಹೆಚ್ಚಾಗಿತ್ತು.  ಅದ್ರಲ್ಲೂ ಕೆಲವರು ಬುದ್ಧಿವಂತರೂ ಐದಾರಂತ ಒಮ್ಮೆ ಮಲ್ಲಣ್ಣ ತಾತನ ಹತ್ತಿರ ಹೊಸದಾಗಿ ಬಂದ ಇನ್ಸ್‌ಪೆಕ್ಟರ್‍ ಮಾತಾಡಿದ್ರು.  ಇದ್ನೆಲ್ಲ ನೆನೆಸಿಕೊಳ್ಳತ್ತ ಹೇಳತೊಡಗಿದ ತಾತ.  `ತಾತ ಆಯಮ್ಮನ ಕತೆ ಹೇಳದ್ಬಿಟ್ಟು ಏನನ ನೆಪ್ಪಮಾಡ್ಕೆಂತಿಯಲಾ.'  `ರವಟು ತಡ್ಕಳಲೇ... ವೀರಣ್ಣ ಗೌಡ್ರ ಕಣ್ಣು ದ್ಯಾಮವ್ವನ ಮ್ಯಾಲೆ ಬಿತ್ತು.  ಆಕಿನ ಕೆಡ್ಸಾಕ ಪ್ರಯತ್ನಮಾಡಿದ್ದ.  ಅಷ್ಟ್ರಾಗ ಲಚಮ್ಯಾ ಬಂದು ಬುಡುಸ್ಕಂಡು ಗೌಡ್ರಿಗೆ ನವ್ವರ್‍ಹೆಂಗ ಒದ್ದು ಕೆಲ್ಸ ಬುಟ್ಟು ಬಂದ.'

ಒಂದ್ಸಾತಿ ಊರಾಕ ಹೊಸ ರುದ್ರಭೂಮಿ ಬೇಕಂಥ ಹೇಳಿ ಕೆರಿ ಬಗಲಾಗಿನ ಸೋಮಪ್ಪನ ಗುಡ್ಯಾಗ  ಮೀಟಿಂಗ್ ಸೇರಿದ್ವಿ.  ಅವಾಗ ಹೊಸ್ದಾಗಿ ಬಂದ ಇನ್ಸ್‌ಪೆಕ್ಟ್ರು, ಮಠದ ಸ್ವಾಮೇರು, ಊರಿನ ಗೌಡ್ರು, ನಾನು ಮತ್ತೆ ದೈವ ಎಲ್ಲರೂ ಬಂದಿದ್ರು.  ಕೆರೆ ಬಗಲಾಗಿನ ಎರ್‍ಡು ಎಕ್ರಿ ಗದ್ದಿನ ನಾನೇ ದಾನವಾಗಿ ಕೊಟ್ಟೆ ಅಪ್ಷ್ರಾಗ ದ್ಯಾಮವ್ವ ಲಚಮ್ಯಾ ಮತ್ತೆ ಚಲುವಾದಿ ತಾಯಪ್ಪ ಬಂದ್ರು.  ಅಲ್ಲಿದ್ದ ದೈವ `ಏ... ನೀವ್ಯಾಕ ಬಂದ್ರಿ' ಎಂದು ಗದ್ರಿಸಿದ್ರು.  ಅದಕ್ಕೆ `ಏ... ರವಟು ತಡ್ಕಳ್ರಿ ನಾನೇ ಇಲ್ಲಿಗೆ ಬಾ ಅಂತ ಹೇಳಿದ್ದೆ'.  ಅಂದ್ಕೊಡ್ಲೆ ಎಲ್ಲಾ ಸುಮ್ಯಾದ್ರು.  ಅವ್ರು ಒಂದು ಮೂಲ್ಯಾಗ ಕುತ್ಕಣಕ ಹೋದ್ರು.  ಅವಾಗ ನಾನು ತಡುದು `ಏ... ಅಲ್ಯಾಕ ಕುತ್ಕಂತೀರಿ ಇಲ್ಲಿ ಬರ್‍ರಿ, ಮುಂದೆ' ಎಂದಾಗ ಎಲ್ಲಾ ನನ್ ಮಕ ಮಕ ನೋಡಿದ್ರು.  `ಏನ್ಹಂಗ ನೋಡ್ತೀರಿ ಸುಮ್ನಿರಿ.  ಅವ್ರು ನಮ್ಮಂಗ ಮನಸ್ಯಾರ...' ಅಂದ್ಕೂಡ್ಲೆ ಮನಸ್ನ್ಯಾಗ ಬೈಕಮತ ಸುಮ್ನಾದ್ರು.

ಹೊಸ ರುದ್ರ ಭೂಮ್ಯಾಗ ಈಶ್ವರ ಗುಡಿ ಕಟ್ಟಬೇಕಂಥ ತೀರ್‍ಮಾನ ಮಾಡಿದ್ರು ದೈವದವ್ರು.  ಈಶ್ವರ ಗುಡ್ಯಾಗ ಪೂಜಿ ಮಾಡಾಕ ಯಾರಂತ ಮಠದ ಸ್ವಾಮೇರು ಪ್ರಶ್ನೆ ಎತಿದ್ರು.  ಆಗ ಎಲ್ಲರೂ ಸುಮ್ನಾದ್ರು.  ಯಾರಾದ್ರು ಮಾಡ್ತೀರಂತ ಮತ್ತೆ ಕೇಳಿದ್ರು.  ಎಲ್ಲರೂ ಗುಸು ಗುಸಂತ ಮಾತಾಡಾಕ ಸುರುಮಾಡಿದ್ರು.  ನಾನೊಲ್ಲೆ... ನೀನೊಲ್ಲೆ... ಅನ್ನಕ್ಹತಿದ್ರು.  ಅಂಗಾರೆ ಎಂಗಪಾ ಅನ್ಕಂತ ನಾನೇ ಎದ್ದು ಕೇಳ್ದೆ.  ನಂದೊಂದು ಮನ್ವಿ ಐತೆ... ದೈವ ಕೇಳ್ಬೇಕು ಅಂದೆ.

ಇಲ್ಲಿರೋ ದೈವ ಯಾರೂ ಪೂಜಿ ಮಾಡಾಕ ಒಪ್ಪಿಗಿಲ್ಲ ಅಂದಾಗ್ಹಾತು.  ನಾನಗ ತಿಳಿದ್ಹಂಗ ಲಚಮ್ಯಾನ ಹೆಂಡ್ತಿ ದ್ಯಾಮವ್ವ ಪೂಜಿ ಮಾಡ್ತಾಳ ಅಂದ್ಕೂಡ್ಲೆ ಜನ್ರೆಲ್ಲಾ ಗಲಾಟೆ ಮಾಡಾಕ ಶುರುಮಾಡಿದ್ರು.  ದೈವದಾಗ ಒಬ್ಬ ಮುಖಂಡ ಶಿವಲಿಂಗಯ್ಯ ಎದ್ದು ನಿಂತು `ಮಲ್ಲಣ್ಣ ತಾತ ನೀನು ಹೇಳೋದು ನಮ್ಗೆ ಒಂದು ಸ್ವಲುಪನೂ ಒಪ್ಪಿಗಿ ಇಲ್ಲ.  ಅಲಾ... ಈ ಜಾತೇರು ನಮ್ಮ ಈಶ್ವರ ಗುಡ್ಯಾಗ ಪೂಜಿ ಮಾಡದಂದ್ರೆ ಏನು' ಎಂದಾಗ, ದೈವ ಹೌದು... ಹೌದು... ಎಂದು ಕುರಿಗಳು ಒದರಿದ್ಹಂಗ ಒದರಿದ್ರು.  ನಂಗೆ ಸಿಟ್ಟು ಬಂದು ಏ ಶಿವಲಿಂಗಯ್ಯ ಸ್ವಾಮಿ... ಓಗ್ಲಿ ನೀನು ಪೂಜಿ ಮಾಡ್ತೀಯಾ... ಇಲ್ಲ ನಿನ್ನ ಮಗನ್ನ ಬಿಡ್ತಿಯಾ ಎಂದು ಗದ್ರಿಸಿದೆ.  ಅದ್ಕೆ ಸುಮ್ನಗಿ ಕುತ್ಕಂಡ್ಬುಟ್ಟ.  `ಏನ್ ಶಿವಲಿಂಗಯ್ಯ ಸ್ವಾಮಿ... ಸುಮ್ಕೆ ಕುತ್ಕಂಡ್ಬುಟ್ಟಿ' ಎಂದು ಇನ್ಸ್ಪೆಕ್ಟ್ರು ಸಾಹೇಬ್ರು ಮತ್ತು ಮಠದ ಸ್ವಾಮೇರು ಕೇಳಿದ್ಕೂಡ್ಲೆ ಯಾವ ಉತ್ರ ಬರ್‍ಲಿಲ್ಲ.  ಇನ್ಸ್‌ಪೆಟ್ರು ಕೆಲ್ವು ಮುಖಂಡ್ರು ದಲಿತ ಮಹಿಳೆಗೆ ಇಂಥ ಸ್ಥಾನ ಕೊಟ್ಟ ಮಲ್ಲಣ್ಣ ತಾತನ ನಿರ್ಣಯ ಸಂತೋಸ ಆಗೈತಂಥ ಹೊಗಳಿದ್ರು.

ಮಲ್ಲಣ್ಣ ತಾತನ ಮಾತುಗಳನ್ನು ಹೋಟೆಲ್ ಮಾರಕ್ಕ ತದೇಕ ಚಿತ್ತದಿಂದ ಕೇಳುತ್ತಿದ್ದಳು.  ಅದ್ಯಾಕ್ಹಂಗ ನೋಡ್ತೆಂಗೆ ಮಾರಕ್ಕ... ಇನ್ನೊಂದಿನ್ನೊಂದು ಚಾ ಕೊಡು.  ಆತು ತಾತ... ಈಗ ಸೋಸಿ ಕೊಟ್ಬುಡ್ತೀನಿ.

ಲೇ ಚನ್ನ ಇನ್ನೊಂದು ಬೀಡಿ ಇದ್ರೆ ತಾಲೇ... ಇಗ ತಗಳಪೋ... ನೀನು ಭಾಳ ಸೇದ್ತಿ ಬುಡು.  ಏನ್ಮಾಡ್ತ್ಯಾ ಹಾಳ ಚಟ... ಹೌದಲ್ಲಾ, ಅದು ಖರೇವು ಅನ್ನು ಎಂದ ಚನ್ನ, ಎಲ್ಲರೂ ಚಹ ಕುಡಿದು ಮಲ್ಲಣ್ಣ ತಾತ ಹೇಳುವ ಕತೆ ಕೇಳಲು ಮುಂದಾದರು.

ಅಲ್ಲಿಗೆ ಮುಗಿಲಿಲ್ಲ ಕೇಳ್ರಿ.  ದ್ಯಾಮವ್ವ ಲಚಮ್ಯಾಗ ಇಬ್ರು ಗಂಡ್ಮಕ್ಳು.  ಅವರ್‍ನಾ ಸಾಲಿ ಬಿಡ್ಸಿ ಕೂಲಿ ಮಾಡಾಕ ಕಳಿಸ್ತೀನಿ ಅಂದ ಲಚಮ್ಯಾ.  ನಾನೇ ಬಯದು ಹುಡುಗ್ರು ಓದ್ಬೇಕು ಇಲ್ದಿದ್ರೆ ಅವು ನಿನ್ನಂಗ ಆಗ್ತಾವ ನೋಡು.  ನೀಸುಮ್ಕಿರು ಅವರ್‍ನಾ ಗೌರ್‍ಮೆಂಟ್ ಹಾಸ್ಟಲ್ನಾಗ ಸೇರಿಸಾಮಂತೆ.  ನಮ್ಮೂರ್‍ನಗಿರೋ ರೆಹಮಾನ್ ಸಾಬ್ ಮೇಷ್ಟ್ರು ಈಗ ಬಳ್ಳಾರ್‍ಯಾಗ ಇಒ ಮತ್ತೆ ಹೊಸಪೇಟ್ಯಾಗ ನಾಗರಾಜ ರೆಡ್ಡಿ ಮೇಷ್ಟ್ರು ಬಿಇಒ ಆಗ್ಯಾರ.  ಇವರಿಬ್ಬರ್‍ನ ಕೇಳ್ಕಂಡು ಕಂಪ್ಲ್ಯಾಗಿರೋ ಹಾಸ್ಟಲ್ನಾಗ ಸೇರ್‍ಸಮಂತೆ ಎಂದು ಗದ್ರಿಸ್ದೆ.  ಒಂದಿನ ರೆಹಮಾನ್ ಸಾಬ್ ಮತ್ತೆ ನಾಗರಾಜ ರೆಡ್ಡಿ ಮೇಷ್ಟ್ರುನ ಕಂಡು ಬಂದ್ವಿ.  ಆಗ ಅವ್ರು ಒಂದೇ ಮಾತ್ನ್ಯಗ ಒಪ್ಪಗಂಡ್ರು.  ಊರಾಕಿರೋ ಸಂತೆ ಮಾರ್ಕೇಟ್ ಬಗಲಾಗಿನ ಸಾಲ್ಯಾಗ ವೀರಣ್ಣ ಮೇಷ್ಟ್ರು ಮತ್ತೆ ಮಾಬಲಪ್ಪ ಮೇಸ್ಟ್ರಗ್ಹೇಳಿ ರವಟು ಹುಡುಗ್ರಿಗೆ ಬೇಸು ಹೇಳಿ ಕೊಡ್ರಿ ಅದ್ವಿ, ಅವ್ರು ಕಾಳ್ಜಿ ಬುಟ್ಬುಡು ತಾತ ಅಂದ್ರು.  ಆಕಳಿಕೆ ಬಂದು ಐದು ನಿಮಿಷ ಸುಮ್ಮನೆ ಕುಳಿತು ಮತ್ತೆ ಹೇಳಲು ಶುರುಮಾಡಿದ.

ಅದೇ ಟೈಂನಾಗ ರುದ್ರಭೂಮಿ ಕೆಲ್ಸ ಮುಗ್ದು ಈಶ್ವರ ಗುಡಿನೂ ತಯಾರಾಯ್ತು.  ಅದರ ಬಗಲಾಗ ಒಂದು ಸಣ್ಣಗುಡುಸ್ಲು ಹಾಕಿ ದ್ಯಾಮವ್ವ ಲಚಮ್ಯಾಗ ಇರಾಕ ಮಾಡಿದ್ವಿ.  ಈಶ್ವರ ಗುಡಿ ಪೂಜಿ ಮಾಡಾಕ ದ್ಯಾಮವ್ವಗ ತಿಂಗ್ಳಿಗೆ ಮುನ್ನೂರು ರೂಪಾಯಿ ಕೊಡಕ ದೈವ ಒಪಿಗಂತು.  ಆದರೆ ಲಚಮ್ಯಾ ಮತ್ತೆ ತಾಯಪ್ಪ ಅವರಿಷ್ಟದಂಗ ಸುಡುಗಾಡಾಗ ಕುಣಿ ತೋಡಾಕ ಕೇಳ್ಕಂಡ್ರು ಆಯ್ತಂತ ನಾವೂ ಒಪ್ಪಿಗೆಂಡ್ವಿ.  ಹೆಣದ ಕಡೆಯರ್‍ರು ಕೊಟ್ಟ ನೂರು ರೂಪಾಯಿದಾಗ ತಲಾಕ ಅರ್ಧ ತಗಮ್ತಿದ್ರು.  ತಿಂಗಳ್ದಾಗ ನಾಕೋ ಐದೋ ಹೆಣ ಬರ್‍ತಿದ್ವು.  ಬಂದ ರೊಕ್ಕದಾಗ ಸಂಸಾರ ಸಾಗುಸ್ಬೇಕಾಗಿತ್ತು.  ತಾಯಪ್ಪಗ ಅವಾಗವಾಗ ಆರಾಮಿಲ್ದಂಗಾಗಿ ಕುಣಿ ತೋಡಾಕ ಬರ್‍ತಿದ್ದಿಲ್ಲ.  ಅಂಥ ಟೈಮ್ನಾಗ ಲಚಮ್ಯಾಗ ಒಬ್ಬನೇ ಕುಣಿ ತೋಡಾಕಾಗ್ದೆ ದ್ಯಾಮವ್ವನೂ ಆಸ್ರ ಆಗ್ತಿದ್ಲು.  ಒಂದಿನ ತಾಯಪ್ಪಗ ಜಗ್ಗಿ ಜ್ವರ ಬಂದು ಸತ್ತ.  ಕುಣಿತೋಡಾ ಜವಾಬ್ದಾರಿ ಗಂಡ ಹೆಂಡ್ತಿ ಮ್ಯಾಲೆ ಬಿತ್ತು.  ಈ ಸುದ್ದಿ ತಿಳ್ದು ನಂಗೆ ಭಾಳ ಬೇಸ್ರಾತು.  ಪಾಪ... ಆ ಎಣ್ಮಗಳು ಎಂಗಪಾ ಕಷ್ಟ ಪಡ್ತಾಳ ಅಂದ್ಕಂಡು ಲಚಮ್ಯಾನ ಜೊತಿಗೆ ಕೆಲ್ಸ ಮಾಡಾಕ ಬ್ಯಾರೇರ್‍ನ ನೋಡಿದ್ವಿ ಯಾರೂ ಬರ್‍ಲಿಲ್ಲ.  ಇರ್‍ಲಿ ಬುಡಂತ ನಾನು ಸುಮ್ಕೆ ಆಗ್ಬುಟ್ಟೆ ಎನ್ನುತ್ತ ಕಣ್ಣೀರು ಒರೆಸಿಕೊಳ್ಳಲು ಪಂಚೆ ಮೇಲೆತ್ತಿದಾಗ ಮಾರಕ್ಕ ನೋಡಿ ನಾಚಿಗುಂದ ಆಚೆ ತಿರುಗಿದಳು.

ತಾತ... ತಾತ... ಎಂದು ಎಚ್ಚರಿಸಿದ ಚನ್ನ  ಆಂ... ಎನ್ನುತ್ತ... ಲೇ ಚನ್ನ ಇನ್ನೊಂದು ಬೀಡಿ ಇದ್ರೆ ತಾರಲೇ.  ಆವಾಗ ಕೊಟ್ಟೆಲಾ ಬೀಡಿ ಅದ್ಯಾವದ್ಲೆ ಸ್ವಲುಪನ ಸರಿ ಇದ್ದಿಲ್ಲ.  ಗಣೇಶ್ ಬೀಡಿ ಇದ್ರೆ ಕೊಡ್ಲೆ.  ಅನೌನ... ಅದೇ ಬೇಸು.

ಏ... ಇಲ್ಲಪೋ ತಾತ ಅದು.  ಇರ್‍ಲಿತಾ... ಇದ್ದಿದ್ರಾಗ ಸುಧಾರಿಸ್ಯಾಗಮನ ಎನ್ನುತ್ತ ಮೂಗಿನಲ್ಲಿ ಕೈ ಹಾಕಿ ಸಿಂಬಳ ತೆಗೆಯುತ್ತ ಮಾತು ಮುಂದುವರಿಸಿದ.

ಅವಾಗವಾಗ ಗಂಡ ಹೆಂಡ್ತಿ ಜಗಳ ಆಡ್ತಿದ್ರು.  ಇತ್ತಿತ್ಲಾಗ ಲಚಮ್ಯಾ ಜಗ್ಗಿ ಕುಡ್ಯಕ ಸುರುಮಾಡಿದ್ದ.  ರೊಕ್ಕ ಸಾಲ್ವಲ್ದಂತ ಒಂದ್ಸಾರಿ ದ್ಯಾಮವ್ವ ಬಂದು ಹೇಳಿ ಅತ್ತಿದ್ಲು.  ಲಚಮ್ಯಾನ ಕರ್‍ದು ಬುದ್ಧಿ ಹೇಳಿದ್ರೂ ಕೇಳ್ತಿದ್ದಿಲ್ಲ.  ಕಣ್ತಪ್ಸಿ ಕುಡಿತ್ತಿದ್ದ.  ನಿನ್ನ ಹಣೆಬರನೇ ಇಷ್ಟೇ ಓಗಂತ ಬೈದು ಕಳ್ಸಿದ್ದೆ.  ಇದ್ಕಿದ್ದಂಗ ಲಚಮ್ಯಾಗ ಪಾರ್ಸಿ (ಲಕ್ವ) ಹೊಡ್ದು ಒಂದು ಕೈ ಒಂದು ಕಾಲು ಬಿದ್ದು ಮನ್ಯಾಗ ಹಾಸ್ಗಿ ಹಿಡಿದು ಮಕ್ಕಂಬುಟ್ಟ ಸುದ್ದಿ ತಿಳ್ದು ನಾನು ಅವ್ನ ಮನಿಗ್ಹೋಗಿ ನೋಡ್ದೆ.  ಲಚಮ್ಯಾ ನನ್ನೋಡಿ ಅಳಾಕ ಸುರುಮಾಡ್ದ.  ಸುಮ್ಕಿರು ಆದಿದಾತು... ಆ ಸಿವಾ ಐದಾನ ಎಲ್ಲಾ ಕಡಿಮಿ ಮಾಡ್ತಾನ ಬುಡು ಅಂತ್ಹೇಳಿ ಸುಧಾರ್‍ಸಿದೆ.  ಆಂ... ಅಂದ್ಹಂಗ ದ್ಯಾಮವ್ವ... ಆ ನಮ್ಮ ಆದ್ವಾನಿ ಮಸೀದಿ ರುಗಿನರು ಐದಾರಲಾ ಅವ್ರಕಡೆ ಓಗಿ ಒಂದು ಅಂತ್ರ ಕಟ್ಟಿಸ್ಗಂಡು ಲಚಮ್ಯಾನ ಕೈಕಾಲಿಗೆ ಕಟ್ಟು ಕಡಿಮಿ ಆದ್ರೂ ಆಗ್ಬೋದು ಅಂತ್ಹೇಳಿದ್ದೆ.  ಆದ್ರಂಗ ಮಾಡಿದ್ಲು ಸ್ವಲುಪು ಉತ್ಮ ಅಂತ ಅಂದಿದ್ಲು... ಪಾಪ... ಆ ಹೆಣ್ಮಗ್ಳನ ನೋಡಿದ್ರೆ ಕಳ್ಳು ಚುರುಕ್ ಅಂತೈತೆ.  ಏನ್ಮಾಡದು ಬದುಕ್ಬೇಕಲಾ.  ಊಂ... ನಡಿಲಿ... ನಡಿಲಿ ಎಲ್ಲಾ ಸಿವ್ನಿಚ್ಛೆ.

ಒಂದಿನ ಲಚಮ್ಯಾ ಸತ್ತ.  ಊರಾಗೆಲ್ಲ ಸುದ್ದಿ ಗೊತ್ತಾತು.  ಅವರ ಜನಕ್ಕಂತ ಬ್ಯಾರೆ ಸುಡುಗಾಡು ಮಾಡ್ಕ್ಯಡಿದ್ರು.  ಅಲ್ಲಿ ಕುಣಿ ತೋಡಾತ ಅವತ್ತು ಊರಾಕಿದ್ದಿಲ್ಲ.  ಯಾರೂ ಕುಣಿ ತೋಡಾಕ ಮುಂದ ಬರಲ್ಲಿಲ್ಲ.  ಅಂಥವತ್ತ್ಯಗೂ ದ್ಯಾಮವ್ವ ಹಿಂದು ಮುಂದು ನೋಡ್ಹಂಗ ತಾನೇ ಸೆಲಿಕಿ ಹಾರಿ ಗುದ್ಲಿ ಇಡ್ಕಂಡು ಇಬ್ರು ಮಕ್ಳನ ಕರ್‍ಕಂಡು ಸುಡುಗಾಡಗ್ಹೋಗಿ ಕುಣಿ ತೋಡಿ ಮಣ್ಣು ಮಾಡಿ ಬಂದ್ಲು.  ಇಂಥ ವತ್ನಾಗ ಊರಿನ ಜನ ಬರ್‍ಲಿಲ್ಲ ನಾನು ಮತ್ತೆ ನನ್ನ ಫ್ರೆಂಡ್ಸು ಓಗಿ ಮಣ್ಣ ಮಾಡಿ ಬಂದ್ವಿ.  ಯಾಕ್ಲೇ... ಈ ಬೀಡಿ ಸಜ್ಜಿಲ್ಲ ಬುಡು.  ಅವು ಅಂಗೇ ನೀ ಮುಂದ್ಹೇಳಂತ ಕೈ ಅಲ್ಲಾಡಿಸಿ ಪೀಡಿಸಿ ಕೇಳತೊಡಗಿದ ಚನ್ನ.

ಆಂ... ಹೇಳ್ತಿನಿ ಕೇಳು.  ಮಾರ್‍ನೆ ದಿನ ದ್ಯಾಮವ್ವನ ಮನಿಗ್ಹೋಗಿ ಸಮಾಧಾನ ಮಾಡ್ದೆ.  ಬ್ಯಾರೆ ಕೆಲ್ಸ ಮಾಡ್ವಂತಿ ತಗಳಂಗೆ ಅಂದೆ.  ಅದ್ಕ ಆ ಯಮ್ಮ ಒಪ್ಲಿಲ್ಲ.  ಇಲ್ಲ ತಾತ ನಾನು ಇಲ್ಲೆ ಪೂಜೆ ಮಾಡ್ಕಂಡು ಇದ್ಬುಡ್ತೀನಿ ಅಂದ್ಲು.  ಆಗ್ಲೆವಾ... ಆದ್ರೆ ಕುಣಿ ತೋಡ ಕೆಲ್ಸ ಮಾಡಬ್ಯಾಡ ನಿನ್ನೊಬಾಕಿ ಕೈಯಾಗ ಆಗಂಗಿಲ್ಲ ಅಂದೆ.  ಅಂಗೇ ಆಗ್ಲಿ ಅಂದಿದ್ಲು.  ಆದ್ರೆ ಅದಾದ ಸ್ವಲುಪೇ ದಿನಕ್ಕ ಗೌಡನ ಮಗ ಸತ್ತ.  ಆ ಹೊತ್ನಾಗ ಕುಣಿ ತೋಡೋರು ಯಾರೂ ಇರ್‍ಲಿಲ್ಲ.  ನಿರ್ವಇಲ್ದೆ ದ್ಯಾಮವ್ವ ಕುಣಿ ತೋಡಿದ್ಲು.  ಮಕ್ಳನ ಸಾಕ ಸಲುವಾಗಿ ಈ ಕೆಲ್ಸ ಮಾಡ್ತೀನಿ ಬ್ಯಾಡ ಅನಬ್ಯಾಡ ತಾತ ಅಂತ್ಹೇಳಿ ಕಣ್ಣೀರು ತಗದ್ಲು.  ಆತ್ಬುಡವಾ ಎಂದು ಗೋಣು ಅಲ್ಲಾಡಿಸಿ ಬಂದೆ.  ಒಂದೊಂದು ಸರ್‍ತಿ ಯಾಕಾನಾ ಪಾಪ... ಆ ಎಣ್ಮಗ್ಳಿಗೆ ಪೂಜಿ ಕೆಲ್ಸ ಮಾಡ್ಸಕ್ಹತ್ಸಿ ಇಂಥ ಪರಿಸ್ಥಿತಿಗೆ ತಂದು ಬುಟ್ನೇನಂತ ನನ್ನ ಕಳ್ಳು ಚುರುಕ್ ಅಂತೈತಿ.  ತಪ್ಪು ಮಾಡ್ಬಿಟ್ನ್ಯಪೋ... ಎಂದು ಏದುಸುರು ಬಿಡುತ್ತಿರುವುದನ್ನು ನೋಡಿ ಸುಧಾರಿಸಿದ ಚನ್ನ.

ಅಂಗೇನಿಲ್ಲ ಕೇಳು... ದುಡ್ದು ಮಕ್ಳನ ಸಾಲಿ ಓದ್ಸದ್ಲು.  ಅವ್ರು ಬೇಸೋದಿ ಬೆಂಗಳೂರ್‍ನಾಗ ಒಬ್ಬಾತ ಇಂಜಿನಿಯರ್‍ ಆಗ್ಯಾನ.  ಇನ್ನೊಬ್ಬಾತ ಬಳ್ಳಾರ್‍ಯಾಗ ಬ್ಯಾಂಕ್ನಾಗ ಕೆಲ್ಸ ಮಾಡ್ತಾನ.  ಇಬ್ರಿಗೂ ಲಗ್ನ ಮಾಡಿದ್ಲು.  ಬಳ್ಳಾರ್‍ಯಾಗ ಇರ ಮಗ ದ್ಯಾಮವ್ವನ ಇಲ್ಲೆ ಇದ್ಬುಡಂತ ಕರ್‍ದ.  ಅದಕ್ಕ ಒಪ್ಲಿಲ್ಲ.  ನಾನೇ ಗದ್ರಿಸಿ ಅಲ್ಲೆ ಇದ್ಬುಡು ಈ ಸುಡುಗಾಡ್ಯಾಗೇನು ಇರ್‍ತಿ ಅಂದು ಕಳ್ಸಿದ್ದೆ.  ಆದ್ರೆ ಸೊಸಿ ಕಾಟ ಕೊಡಾಕ ಸುರುಮಾಡಿದ್ಲಂಥ ಮತ್ತೆ ಸುಡುಗಾಡಿಗೆ ಬಂದು ಸೇರ್‍ಕಂಡ್ಲು.  ಇಂಗಾತು ನೋಡು ತಾತ ಅಂದು ಗೋಳೋಂತ ಅತ್ಲು.  ನಾನೆಲ್ಲಿಗ್ಹೋಗಂಗಿಲ್ಲಪೋ ತಾತ... ಇಲ್ಲೇ ಇದ್ಬುಡ್ತೀನಿ ಅಂದ್ಲು.  ಅಂಗೆ ಮಾಡವಾಗ ನಿನ್ನ ಹಣೆಬರ್‍ದಂಗ ಇದ್ದಂಗೆ ಆಗ್ತೈತಿ ಅಂದು ಕಳ್ಸಿದ್ದೆ.

ಕುಣಿ ತೋಡದಂದ್ರೆ ಸುಮ್ನೆ ಏನ್ಲೆ ಚನ್ನ... ಐದೈದು ತಾಸು.  ಅದು ಈ ಬಿಸ್ಲಾಗ ಪಾಪ... ದ್ಯಾಮವ್ವ ಒಬ್ಬಾಕೆ ಕುಣಿ ತೋಡ್ತಾಳ.  ಹೆಣದ ಕಡೆಯರ್‍ರು ಕೊಡೋ ನೂರೈವತ್ತೋ... ಇನ್ನೂರೋ ತಗಂಡು ಜೀವ್ನ ಮಾಡ್ತಾಳ.  ಜತಿಗೆ ಈಸ್ವರ ದೇವ್ರು ಗುಡಿ ಪೂಜಿ... ಎಂಗೋ ನಡಸ್ತಾಳ ಜೀವ್ನ.  ಅದಲ್ದೆ ಗಂಡ ಮಾಡಿದ ಸಾಲ ತೀರಸ್ತೈದಾಳ.  ದ್ಯಾಮವ್ವನ ಅಪ್ಪ ಮನಿ ಕಟ್ಟಿಸ್ಗ್ಯಾಳಕಂತ ಜಾಗ ಕೊಟ್ಟಿದ್ದ.  ಅದನ್ಕೂಡ ಮಾರ್‍ಕ್ಯಾಂಡು ಬುಟ್ಟಿದ ಆ ಲಚಮ್ಯಾ.  ನನ್ಲಿಂದ ನಿಂಗೆ ಈ ಕಷ್ಟ ಬಂತು ನೋಡಂಗೆ ದ್ಯಾಮವ್ವ ಅಂದಿದ್ಕ ಆಕಿ ಏನಂದಿದ್ಲು ಗೊತ್ತೇನ್ಲೆ.... ಏ ಬುಡಪೋ ತಾತ ನಂಗೇನಾಗೈತಿ ಗುಂಡ್ಕಲ್ಲಿದ್ಹಂಗ ಐದೀನಿ.  ಅಂಗಲ್ಲವಾ ನಿನ್ನ ಮಕ್ಳು... ಥೂ... ಆ ಮಕ್ಳು ಸುದ್ದಿ ಎತ್ತಬ್ಯಾಡ ಅವ್ರು ನನ್ ಪಾಲಿಗೆ ಇಲ್ಲ ಅನ್ಕಮ್ತೀನಿ.  ಅವ್ರೆಸ್ರು ಎತ್ತಬ್ಯಾಡ ಅಂತೇಳಿದ್ಲು.  ಹೇಳ್ತಾ ಹೇಳ್ತಾ ಮಲ್ಲಣ್ಣ ತಾತ ಕುಸಿದ!

ಚನ್ನ ಮತ್ತವನ ಗೆಳೆಯರು ಎಷ್ಟೇ ಎಬ್ಬಿಸಿದರೂ ಏಳಲಿಲ್ಲ.  ಯಪ್ಪೋ... ತಾತ ನಮನ್ನ ಬುಟ್ಟು ಓಗ್ಬಿಟ್ನಲ್ಲಪ್ಪೋ... ಎಂದು ಬಾಯಿ ಬಾಯಿ ಬಡಿದು ಕೊಳ್ಳುತ್ತಿರುವ ಶಬ್ದ ದ್ಯಾಮವ್ವನ ಕಿವಿಗೆ ಬಿತ್ತು.  ಬಂದು ನೊಡಿದರೆ ಮಲ್ಲಣ್ಣ ತಾತ ಸತ್ತಿದ್ದ.  ಗರ ಬಡಿದಂತೆ ನಿಂತಳು.  `ನಾಡು ಓಗಂತೈತೆ... ಸುಡುಗಾಡು ಬಾ ಅಂತೈತಿ... ನನ್ನ ಕುಣಿ ನೀನೇ ತೋಡ್ಬುಡಂಗೆ'  ಎಂದು ಹೇಳದ್ದ ಮಾತುಗಳು ನೆನಪಾದವು.  ಎಂದಿನಂತೆ ಹಾರೆ, ಗುದ್ದಲಿ, ಪಿಕಾಸಿ ಹಿಡಿದು ಕುಣಿ ತೋಡಲು ಅಣಿಯಾದಳು.

        *   *   *

ಕೀಲಿಕರಣ: ಕಿಶೋರ್‍ ಚಂದ್ರ

ಸದ್ಗುರುವಿನ ವರವು ನಮಗೆ ಇರಲಿ

ಸದ್ಗುರುವಿನ ವರವು ನಮಗೆ ಇರಲಿ
ಸರಸಿಜ ಮುಖಿಯೆ                        ||ಪ||

ಪರಮ ನಿತ್ಯಾನಂದ ಸುಖವು
ಆರವು ಹಿಡಿದು ನುಡಿಯುತಿರಲು
ಸ್ಮರನ ಮತ್ಸರವನ್ನು ಗೆದ್ದು
ಮರಣ ಬಾಧೆ ಮಾಯೆ ತುಳಿದು       ||೧||

ದೇವ ಶಿಶುನಾಳಧೀಶನ
ಜೀವ ದಣಿದು ಉಸುರಿದ೦ತೆ
ಕೇವಲಾದ ಬ್ರಹ್ಮ ತಾನು
ಠಾವಿನೊಳಗೆ ನಿಂತ ಬಳಿಕ             ||೨||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ

ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ ಎನಗೊಂದು
ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ

ಪ್ರಣಮ ಪಂಚಾಕ್ಷರಿಯ ಎಣಿಸಿ ಜಪಮಾಡೆಂದು
ಹನ್ನೊದುಮಣಿ ಮೇಲೆ ಇನ್ನೊಂದು ಸಣ್ಣರುದ್ರಾಕ್ಷಿ                                ||ಅ. ಪ||

ಆದರೊಳುನ್ನತಾಮೃತದ ಶಿಲೆಮಾನ ರತ್ನದ ಹರಳಿನೊಳು
ಚಿನ್ನದ ಎಳಿಯ ಪೊಣಿಸಿ ಎಣಿಸಿ ಜಪಮಾಡೆಂದು                                 ||೧||

ಕಸುಗ್ರಾಮದ ಕಡಕೊಳ್ಳ ಕಡೆಗಿಟ್ಟು
ಹೊಸಗ್ರಾಮ ಸ್ಥಳಕಿಳಿದು
ಬಸವನಾಮಾಮೃತದ ರುಚಿ ಕಂಠಮಾಲೆಯನು ಕೊಟ್ಟಾತನೋ ತಾನು  ||೨||
ಕರದಿ ಕೈದಂಡ ಕೋಲು ಪಾರಮಾಡಿದ ವಿರಚಿಸಲು
ವರವೀರಯೋಗಿ ಧರೆಗೆ ಮೇಲೆ ಶಿಶುನಾಳಢೀಶ
ತರಲಘಟ್ಟದ ಪೀರ ಫಕೀರನಾಗೆನುತ ಮಣಿಮಾಲಿಕವ ಕೊಟ್ಟನೋ        ||೩||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುನಾಥನಂತಃಕರಣವಾಯಿತು

ಗುರುನಾಥನಂತಃಕರಣವಾಯಿತು ಆತ್ಮರಾಮನಿಗೆ
ನಿನ್ನಂತರ೦ಗದಿ ಮರಳಿ ತೆರಳದಂತೆ ಇಹದೊಳಗೆ     ||ಪ||

ಸಾಧು ಸಂತತಿ ಸಿದ್ಧ ಆರೂಢಗೆ ತಾನೇಕದೋಳ್
ಆರನಳಿಯುತ ಮೂರು ಮೀರುವನೆ ಬ್ಯಾರೊಂದು ತತ್ವಾಧಾರದಲಿ
ಗುರುಬೋಧ ಪಡದವಗೆ ಪಾರಮಾರ್ಥದ
ನೆಲೆಯನೇರುವಗೆ ಘನತೂರ್ಯದೋಳ್                 ||೧||

ವಸುಧಿಯೊಳ್ ಶಿಶುನಾಳಧೀಶನ ಆಸಮಸೇವಕರಿಗೆ
ಪಶುಪತಿಯ ವಶವಾಗಿ ಗುರುಗೋವಿಂದನಾಥನಿಗೆ
ಕಸಮಳದಿ ಗುರುಕೊಟ್ಟ ಮಂತ್ರವ ಜಪಿಸುತಿರುವವಗೆ || ೨ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಹೋಗೋಣ ನಡಿಯೋ ಬೇಗನೆ ಎದ್ದು

ಹೋಗೋಣ ನಡಿಯೋ ಬೇಗನೆ ಎದ್ದು
ಸಾಗಿ ಸದ್ಗುರುವಿನ ಯೋಗ್ಯ ಮಂದಿರಕೆದ್ದು                ||ಪ||

ಮೃಡನ ಆಕಾರಾ ಪೊಡವಿಯೊಳು ಬಡವರಾಧಾರಾ
ಬಿಡದೆ ಭಕ್ತ ಜನರ ಉದ್ಧಾರಾ ಮಾಡುತಲಿಹ
ಆಡವಿ ಪಾಚ್ಛಾನೆಂಬೋ ಒಡಿಯನಾ ಮಠಕೆದ್ದು           ||೧||

ಕಿಂಕರರಾಗಿ ನಾವಿಬ್ಬರು
ಭೊಂಕರನೆ ಸಾಗಿ ಭಜಿಸಿ ಕರುಣಾಹಂಕಾರ ಪೋಗಿ
ಪಂಕಜಮುಖಿ ಶಂಕರನೆನಿಸಿದ ಆಂಕಲಿಸ್ಥಳಕೆದ್ದು        ||೨||

ಪರಮ ವಿಶಾಲಾ ಪಾವನ ಶುಭ
ಚರಿತನಿರಾಲಾ ನಿರಂಜನ ನಿರುಪಮಶಾಲಾ ದಯಾಪರ
ಪರಲೋಕ್ಕೋದ್ಧರಿಸಿದ ಚರಣಕಮಲಕೆದ್ದು                ||೩||

ಚರರೂಪಧರಿಸಿ  ಚೆನ್ನಾಗಿ ಸಾಧು
ಧರಿಯೊಳವತರಿಸಿ ದಾಸೋಹದ ಸಿರಿಯನ್ನೇ ಮೆರಸಿ
ಸಾರುವೆ ದೇವಾ ಹರಲೀಲೆ ನಟಿಸಿದ ಶರಣ ಪಾದಕೆದ್ದು  ||೪||

ಶಿವಯೋಗಿ ಕಾಣ ಸಂಕಟ ಮಾಯಾ
ಭವ ಜೈಸಿದನೆ ದಯಾಪರಭವದ ಜೀವನನೇ ಸಿದ್ಧೇಶನೆ
ಹರಲೀಲ ಧರಿಸಿಪ ಮಹಿಮನ ಪಾದಕ್ಕೆ                      ||೫||

ವಸುಧಿಪಾಲಿಪನೆ ಶ್ರೀ ಬಸವಾದಿ ಪ್ರಮಥರೋಳ್ ಇಹನೆ
ಶಿಶುವಿನಾಳಧೀಶ ಸಾಖನೆ ಸದ್ಗುರುದಯ
ಅಸಮ ಸದ್ಗುರು ಗೋವಿಂದನ ದಯದಿಂದ                  ||೬||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಗುರುಸೇವಾ ಮಾಡೋ

ಗುರುಸೇವಾ ಮಾಡೋ ನೀನು
ಪಾಮರ ಮೂಢಾ                                       ||ಪ||

ಗುರುಸೇವೆ ಮಾಡದೆ
ನರಸೇವೆ ಮಾಡುವಿ
ತಾರಿಸುವವರ ಕಾಣೆ ತಾಮಸ ನಿನ್ನೊಳು         ||ಅ.ಪ.||

ಬಂಧನ ಇಲ್ಲೆ ಕಂಡಿ
ಇಂದಿನ ಕರ್ಮಫಲವೆಲ್ಲ ಇಲ್ಲೆ ಉಂಡಿ
ಮುಂದಿನ ಮಾಗ ತಿಳಕೋಳೋ ಹುಚ್ಚುಮುಂಡೆ
ಎಚ್ಚರಿಕಿಲ್ಲದೆ ಹುಚ್ಚನ ತೆರದಂತೆ
ಬೆಟ್ಟನ ಮರದಂತ ಕೆಟ್ಟನಾಗಲಿಬೇಡ               ||೧||

ಸಾಧುಗಳ ಸಂಗವ ಬಿಟ್ಟು
ವಾದಮಾಡಿ ಕಾದುವದ್ಯಾಕೋ ಖೊಟ್ಟಿ
ವೇದವನೋದಿ ಆದೆಲ್ಲೋ ಮುರಾಬಟ್ಟಿ
ಬೋಧನ ಮಾರ್ಗವ ಸಾಧಿಸಿ ಸದ್ಗುರು
ಪಾದಸೇವೆಯೋಳ್ ನಿರತನಾಗಿ ಬೇಗನೆ          ||೨||

ಮದ್ಯಪಾನ ಮಾಡಿದಿಯೆಲ್ಲೋ
ಮದವೇರಿದಾನಿಯೆಂತಾದಿಯಲ್ಲೋ
ಕದನದೊಳ್ ಕಾಲ ಯಮನಾದಿಯಲ್ಲೋ
ಸದಮಲ ಶಿಶುನಾಳಧೀಶನ ಕಾಣದೆ
ಕಾಲನ ವಶವಾಗಿ ಕೈಸೆರೆ ಸಿಗುವಿಯಲ್ಲೋ         ||೩||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

ಶ್ರೀಗುರು ಮಂತ್ರ

ಶ್ರೀಗುರು ಮಂತ್ರವ
ರಾಗದಿ ನುತಿಸಲು
ಬೋಧ ಸಂಪದ ಸುಖವಾಗುವದೋ     ||ಪ||

ಮಾಜದೆ ಮಂತ್ರದ
ಮೊದಲಕ್ಷರವ
ತೇಜಿಸುತಲಿ ನಿತ್ಯ ಜಪಿಸುವದೋ       ||೧||

ಬಿಡದೆರಕ್ಷರ
ನಡುವಿನ ಶೂನ್ಯದಿ
ದೃಧವಿಡಿದಾತ್ಮದಿ ನುತಿಸುವದೋ      ||೨||

ಬರೆದು ಮೂರಕ್ಷರ
ಕರುಣ ಸೇವಿಸಿದರೆ
ಜನನ ಮರಣ ಭಯ ನೀಗುವದೋ     ||೩||

ನೀ ಕಲಿ ಸುಮ್ಮನೆ
ನಾಲ್ಕು ಅಕ್ಷರಗಳ
ಬೇಕೆನಿಸಿದ ವಸ್ತು ಸಿಗುರಿತಿಹುದೋ   ||೪||

ಶಿಶುನಾಳಧೀಶನ
ಹೆಸರಿನೈದಕ್ಷರ
ಹಸನಾಗಿ ಭಜಿಸಲಹುದೆನಿಸುವದೋ  ||೫||
                ****


-ಶಿಶುನಾಳ ಶರೀಫ್



ಕೀಲಿಕರಣ: ಎಂ.ಎನ್.ಎಸ್. ರಾವ್

ದಯಾಳು ಶ್ರೀಮಂತ

- ಡಬ್ಲ್ಯು. ಬಸವರಾಜ್

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ.  ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ' ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು' ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ.
 ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು.  `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ' ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.
  ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ.  ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ' ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು.
  ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ' ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ.
  ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ.  ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ' ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.
  ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ' ಎಂದು ಹೇಳಿ ಅರಮನೆಯತ್ತ ಹೊರಟವು.
  ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ' ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.


ಕೀಲಿಕರಣ : ಎಂ ಎನ್ ಎಸ್ ರಾವ್

ದೊರಕಿದಾ ಗುರು

ದೊರಕಿದಾ ಗುರು
ದೊರಕಿದಾ                        || ಪ ||

ಪರಮಾನಂದ ಬೋಧ
ಆರವಿನೊಳಗ ಬಂದು
ದೊರಕಿದಾ ಗುರು
ದೊರಕಿದಾ                        ||ಅ.ಪ.||

ಕರಪಾತ್ರೆ ಹಿಡಿದು ಈ
ನರ ಶರೀರದಿ ತನ್ನ
ಅರುವ ತನಗೆ ತೋರಿ
ಪರಮ ನಂಬುಗೆಯಲಿ
ದೊರಕಿದಾ ಗುರು
ದೊರಕಿದಾ                        ||೧||

ಹಿಂದೆ ಜನ್ಮಾಂತರ
ಒಂದು ಉಳಿಯದಂತೆ
ಒಂದು ವಸ್ತುವಿನೊಳು
ಚಂದದಿಂದಲಿ ಬಂದು
ದೊರಕಿದಾ ಗುರು
ದೊರಕಿದಾ                        ||೨||

ಶಿಶುನಾಳಧೀಶ ಪ್ರ-
ಕಾಶ ಗೋವಿಂದನ
ಆಸಮ ತೇಜೋರೂಪ
ಕಿರಣದಿಂದಲೆ ಬಂದು
ದೊರಕಿದಾ ಗುರು
ದೊರಕಿದಾ                       ||೩||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

ಎಂಥಾ ಬೇಗನೆ ಯವ್ವನ ಬಂತೆ

ಎಂಥಾ ಬೇಗನೆ ಯವ್ವನ ಬಂತೆ ನಿನಗೆ
ನಿಂತು ನೋಡಿ ಹೋಗದಾಂಗಾಯಿತೆನಗೆ          ||ಪ||

ಸಂತಿಗ್ಹೊಗಿ ಸಣ್ಣದೊಂದು
ಚಿಂತಾಕವ ಕದ್ದುಕೊಂಡು
ಹಂತಿಲಿದ್ದವರೆಲ್ಲ ಕಂಡರೆ
ಮೆಂತೇದವನಾ ಹೊಲಾವೂಕ್ಕೆ
ಕಾಂತೆ ಕಬ್ಬಿನ ವನದಿ ಬಂದು
ಕುಂತೆಲ್ಲ ಶೀಗಿಹುಣ್ಣಿವಿಗೆ                                ||೧||

ದಿನದಲ್ಲಿ ಹುಡೂಗಿ ಸಣ್ಣಾಕಿ ಒಳ್ಳೆ
ಘನ ಹಿರಿಯರಿಗೆ ಕಣ್ಣಾರೆ
ಎಣಕಿಗೆಟ್ಟ್ಹಾದರವ ಮಾಡಿ
ಹಣಜಿ ಹುಲ್ಲೋಳಡಗಿ ನೋಡಿ
ಬಣಜಿಗೇರಣ್ಣಾನ ಕೂಡಿ
ಕಣಜತುಂಬಾ ಹೊನ್ನ ಗಳಸಿ                        || ೨ ||

ನೊಣವು ಹತ್ತಿಗೆ ಏರಿ ಸಣ್ಣ
ಮಣಕ ಎಮ್ಮಿ ಕೋಣನೀದ್ಹಾಂಗ,
ಶಿಶುನಾಳೇಶನ ಸೇವಕಗೆ ಸುಳ್ಳೇ
ವಿಷಯಕ್ಕೆ ಎಳಸೀದಿ ಹೀಗೆ                           ||೩||

ಹಸಿಯ ಕಬ್ಬಿನಂತೆ ಶಟದು
ಮಸಿವ ಹಿಂಡಿಯ ಕಲ್ಲು ಕಟದು
ಹೆಸರ ಬಳ್ಳಿಗೆ ಉರುಳಿಬಿದ್ದು
ಕಸದ ಬುಟ್ಟಿ ಹೊತ್ತುಕೊಂಡು
ಬಸರು ಬಯಕಿ ತೋರಲಾಗಿ
ಕೊಸರಿತಲ್ಲೋ ಕರ್ಮ ಕಣ್ಣಿಗೆ                       ||೪||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

ಬೆಳ್ಳಿ ಕಡಗ

-ಬಸವರಾಜ್ ಡಬ್ಲ್ಯೂ

ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು.  ಅವರಿಗೆ ಒಬ್ಬ ಮಗನಿದ್ದ.  ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ.  ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು ನಮ್ಮ ಮಗ ಧನವಂತ.  ಇವನು ದಡ್ಡ.  ಹೇಗಾದರೂ ಮಾಡಿ ಇವನನ್ನು ಬುದ್ಧವಂತನನ್ನಾಗಿ ಮಾಡಿ.  ನಮ್ಮ ಬಳಿ ಇರುವ ಆಸ್ತಿ, ಹಣವನ್ನು ಆಶ್ರಮಕ್ಕೆ ಒಪ್ಪಿಸಿ ನಾವೂ ಇಲ್ಲಿಯೇ ಕೆಲಸ ಮಾಡಿಕೊಮಡು ಇರುತ್ತೇವೆ' ಎಂದು ಬೇಡಿಕೊಂಡರು.  ಧನವಂತನನ್ನೊಮ್ಮೆ ನೋಡಿದ ಋಷಿ `ಆಯಿತು' ಎಂದರು.

`ಧನವಂತಾ, ನೀನು ಸ್ವಲ್ಪ ದಿನಗಳವರೆಗೆ ಸ್ವಚ್ಛಂದವಾಗಿ ಆಶ್ರಮದಲ್ಲಿ ಸುತ್ತಾಡಿಕೊಂಡಿರು.  ಇಲ್ಲಿ ನಿನಗಾಗಿ ಈಜುಕೊಳ, ಪ್ರಾಣಿ, ಪಕ್ಷಿಗಳಿವೆ' ಎಂದರು.  ಸಂತಸಗೊಂಡ ಧನವಂತ `ಆಗಲಿ' ಎಂದು ಕುಣಿಯುತ್ತ ಹೋದ.

ಸ್ವಲ್ಪ ದಿನಗಳ ನಂತರ ಋಷಿಗಳು ತಾವು ಕಲಿತ ಎಲ್ಲ ವಿದ್ಯೆಗಳನ್ನೂ ಕಲಿಸಿ ಧನವಂತನನ್ನು ಬುದ್ಧವಂತನನ್ನಾಗಿ ಮಾಡಿದರು.  ನಂತರ `ನಾನು ಕಲಿತ ವಿದ್ಯೆಯನ್ನೆಲ್ಲ ನಿನಗೆ ಧಾರೆ ಎರೆದಿದ್ದೇನೆ.  ನಿನಗೆ ರಾಜನಾಗುವ ಲಕ್ಷಣಗಳಿವೆ.  ನಿನಗೊಂದು ಬೆಳ್ಳಿ ಕಡಗ ಕೊಡುವೆ.  ಇದು ಸಾಮಾನ್ಯವಾದುದಲ್ಲ.  ನೀನು ಕೇಳಿದ್ದನ್ನೆಲ್ಲ ಕೊಡುತ್ತದೆ.  ಆದರೆ, ಒಳ್ಳೆಯ ಕಾರ್ಯಗಳಿಗೆ ಮಾತ್ರ ಉಪಯೋಗಿಸು' ಎಂದು ಹೇಳಿ ಬೆಳ್ಳಿ ಕಡಗವನ್ನು ಧನವಂತನಿಗೆ ಕೊಟ್ಟರು.

ರಾತ್ರಿ ಮಲಗಿದ್ದ ಸಮಯದಲ್ಲಿ ಧನವಂತನ ಮನದಲ್ಲಿ ಕೆಟ್ಟ ಯೋಚನೆಗಳು ಸುಳಿದಾಡಿದವು.  ತುಸು ಸಮಯದ ನಂತರ ಆತ ಎದ್ದು ಕುಳಿತು, ಬೆಳ್ಳಿ ಕಡಗವನ್ನು ಕೈಗೆ ಹಾಕಿಕೊಂಡು ನನಗೊಂದು ಅರಮನೆ ಬೇಕೆಂದ.  ಕೂಡಲೇ ಅಲ್ಲೊಂದು ಅರಮನೆ ಸೃಷ್ಟಿಯಾಯಿತು.  ತನಗೊಬ್ಬ ರಾಜಕುಮಾರಿ ಬೇಕೆಂದ.  ಮರುಕ್ಷಣವೇ ಅಲ್ಲಿಗೆ ಒಬ್ಬ ಸುಂದರ ಯುವತಿ ಬಂದಳು.  ಹೀಗೆ ಅರಮನೆಯ ರಾಜನಿಗೆ ಬೇಕಾದ ಬೆಳ್ಳಿ, ಬಂಗಾರ, ವಜ್ರ, ವೈಢೂರ್‍ಯ, ಸೈನಿಕರು, ಸೇವಕರು ಎಲ್ಲವೂ ಬಂದವು.  ಇದನ್ನೆಲ್ಲ ಗಮನಿಸಿದ ಋಷಿಗಳು `ಧನವಂತ, ಏನಿದು ವಿಚಿತ್ರ' ಎಂದು ಕೋಪಗೊಂಡರು.  ಆದರೆ, ಧನವಂತ ಅದನ್ನು ಗಮನಿಸುವ ಸ್ಥಿತಿಯಲ್ಲಿರಲಿಲ್ಲ.  ಆತ ಅಹಂಕಾರದಿಂದ `ಏ! ಯಾರು ನೀನು?  ನಡೆ ಇಲ್ಲಿಂದ' ಎಂದು ಗದರಿಸಿದ.

`ಥೂ, ಪಾಪಿ, ನೀನು ಸರ್ವನಾಶವಾಗುತ್ತಿ ಹೋಗು' ಎಂದು ಹೇಳಿ ಋಷಿಗಳು ಅಲ್ಲಿಂದ ಹೊರಟರು.

ಇತ್ತ ಧನವಂತ ತನ್ನ ರಾಜ್ಯದಲ್ಲಿ ದರ್ಪ, ಸೊಕ್ಕಿನಿಮದ ಮೆರೆಯುತ್ತ ಪ್ರಜೆಗಳಿಗೆ ಕಿರುಕುಳ ಕೊಡಲು ಆರಂಭಿಸಿದ.  ಅನ್ಯಾಯವಾಗಿ ಭೂಕಂದಾಯ ವಸೂಲಿ ಮಾಡುವುದು, ಭೂಮಿ ಕಬಳಿಸುವುದು, ಪಕ್ಕದ ರಾಜರನ್ನು ಯುದ್ಧಕ್ಕೆ ಆಹ್ವಾನಿಸಿ ತನ್ನ ಬೆಳ್ಳಿ ಕಡಗದ ಸಹಾಯದಿಂದ ಅವರನ್ನು ಸೋಲಿಸಿ, ಅವರ ಸಮಸ್ತ ರಾಜ್ಯವನ್ನೂ ತೆಗೆದುಕೊಂಡು ಆ ರಾಜರನ್ನು ತನ್ನ ಗುಲಾಮರನ್ನಾಗಿಸಿಕೊಳ್ಳುವುದೇ ಅವನ ಬದುಕಾಯಿತು.

ಇದನ್ನೆಲ್ಲ ಅರಿತ ಋಷಿಗಳು ಧನವಂತನಿಗೆ ಕೊಟ್ಟ ಬೆಳ್ಳಿ ಕಡಗವನ್ನು ದಿವ್ಯ ಶಕ್ತಿಯಿಂದ ತಮ್ಮ ಬಳಿ ಬರುವಂತೆ ಮಾಡಿದರು.  ಕೂಡಲೇ ಬೆಳ್ಳಿ ಕಡಗ ಋಷಿಗಳ ಹತ್ತಿರ ಬಂತು.  ಅಂದಿನಿಂದ ಧನವಂತ ಹಂತ ಹಂತವಾಗಿ ಎಲ್ಲವನ್ನೂ ಕಳೆದುಕೊಂಡ.  ತನ್ನ ತಪ್ಪಿನ ಅರಿವಾಗಿ ಪುನಃ ಋಷಿಗಳ ಹತ್ತಿರ ಬಂದು ತನ್ನ ತಪ್ಪನ್ನು ಮನ್ನಿಸುವಂತೆ ಕೇಳಿಕೊಂಡ.  ಅವನ ಕೋರಿಕೆ ತಿರಸ್ಕರಿಸಿದ ಋಷಿಗಳು `ನಿನ್ನನ್ನು ಶಿಷ್ಯನನ್ನಾಗಿ ಮಾಡಿಕೊಂಡಿದ್ದೇ ತಪ್ಪು, ನಡೆ ಆಚೆ' ಎಂದರು.  ಧನವಂತನ ಹೆಂಡತಿ ಅಳುತ್ತ `ಸ್ವಾಮೀಜಿ, ನನ್ನ ಗಂಡನದು ತಪ್ಪಾಗಿದೆ.  ಮನ್ನಿಸಿ.  ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ಕೊಡಿ' ಎಂದು ಬೇಡಿಕೊಂಡಳು.  ಋಷಿಗಳು ಕಡೆಗೊಮ್ಮೆ ಆ ಮಾತಿಗೆ ಒಪ್ಪಿದರು.  ಮುಂದೆ ಧನವಂತ ಸನ್ಮಾರ್ಗದಲ್ಲಿ ನಡೆದು ತನ್ನ ತಪ್ಪನ್ನು ತಿದ್ದಿಕೊಂಡ.  ಆಶ್ರಮದಲ್ಲೇ ಇದ್ದು ಋಷಿಗಳ ಸೇವೆ ಮಾಡುತ್ತ ಕಾಲ ಕಳೆದ.

ಕೀಲಿಕರಣ: ಕಿಶೋರ್‍ ಚಂದ್ರ

ಪ್ರಾಯ ಹೋಗುತ ಬಂತು

ಪ್ರಾಯ ಹೋಗುತ ಬಂತು ದೇಹ ಒಣಗಿ ನಿಂತು
ಜೀವದ ಬಡಿವಾರವೇನೆಂಬೆ                          ||ಪ||

ಕೋವಿಧನಾದರೆ ಸಾವಿಗಂಜದೆ ಆ
ಮಹಾದೇವರ ನುತಿಸಲೆಂಬೆ                        || ೧ ||

ಆಸ್ತಿ ಚರ್ಮದ ಘಟವಿಸ್ತರಣದಲಿ ಕೂಟ
ಮಸ್ತಕ ಮನ ಬುದ್ಧಿಯೆಂತೆಂಬೆ                     || ೨ ||

ಮಸ್ತಿ ಮಸ್ತಕರ ಕಾಮ ರಸ್ತೆಯೊಳಿರುವಂತೆ
ಆಸ್ಥಿರ ಮಾತಿದು ಮೊದಲು ಕಾಂಬೆ               || ೩ ||

ಶಿಶುನಾಳೇಶನ ಎಸವ ಪಾದಕ ನೀನು
ಮುಸುಗು ತೆಗದು ಪೂಜಿಪೊಡಲೇನೆಂಬೆ        || ೪ ||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್

ಮುತ್ತಿನಂಥಾ ಮಾತಿದು ಕೇಳೇ ಗೆಳತಿ

ಮುತ್ತಿನಂಥಾ ಮಾತಿದು ಕೇಳೇ ಗೆಳತಿ
ನಿಮ್ಮತ್ತಿಮಾವಗಳಿಗುತ್ತರ ಏನ ಹೇಳತಿ           ||ಪ||

ಗೊತ್ತುಗೇಡಿ ಮಗಳೆ ವ್ಯರ್ಥ
ಹೊತ್ತುಗಳಿಯುತ್ತೀ
ಆತ್ತ ಇತ್ತ ತಿರುಗಿ ಭವದೊಳ್ ಬೀಳತೀ
ಛೀ ಛೀ ಕೆಡತೀ                                         ||೧||

ನಾದುನಿ ಮೈದುನ ಭಾವಗೇನ ಹೇಳತೀ
ಒಬ್ಬ ಮಾದರವನ ಸ್ನೇಹಮಾಡಿ ಮತಿಗೆಡತೀ
ಬಿಡು ಬಿಡು ತರವಲ್ಲಾ ಈ ನಡತೀ
ಸುಳ್ಳೇ ಬಾಯ್ಬಿಡತೀ                                 ||೨||

ಮುಟ್ಟದಿರು ಎನ್ನ ಎಂದು ದೂರ ಹೋಗತೀ
ನಿಲ್ಲೋ ಖೊಟ್ಟಿಗಂಡಾ ಎಂದು ಬಾಯಿಲೆ ಆಡತೀ
ಬಿಟ್ಟು ಬಿಟ್ಟು ಊರ ಕಡೆ ಓಡಿ ಹೋಗತೀ
ಜಾರತನ ತೋರತೀ                                 ||೩||

ಶಿಶುನಾಳಧೀಶನ ಕಸಾ ಬಳಿದು
ಹಸನಾಗಿ ನೀ ಕಾಲಕಳಿದು
ಆಲ್ಲೇ ಹುಸಿ ಮಾತನಾಡದೆ ಇರು ತಿಳಿದು
ಒಳ್ಳೇ ಮಾತಿದು                                       ||೪||
                    ****
-ಶಿಶುನಾಳ ಶರೀಫ್

ಕೀಲಿಕರಣ: ಎಂ.ಎನ್.ಎಸ್. ರಾವ್