ನಾನಾರೆಂಬುದು ನಾನಲ್ಲಾ

- ಶಿಶುನಾಳ ಶರೀಫ್

ನಾನಾರೆಂಬುದು ನಾನಲ್ಲಾ  ಈ
ಮಾನುಷ ಜನ್ಮವು ನಾನಲ್ಲಾ        ||ಪ||
ನಾರಾಯಣ ವರ ಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲಾ        ||ಅ.ಪ||

ಮಾತಾ ಪಿತ ಸುತ  ನಾನಲ್ಲಾ
ಭೂನಾಥನಾದವ ನಾನಲ್ಲಾ
ಜಾತಿಗೋತ್ರಗಳು ನಾನಲ್ಲಾ
ಪ್ರೀತಿಯ  ಸತಿ ಸುತ  ನಾನಲ್ಲಾ    ||೧||

ವೇದ ಓದುಗಳು ನಾನಲ್ಲಾ
ವಾದ ಮಾಡಿದವ ನಾನಲ್ಲಾ
ನಾದಬಿಂದುಕಳೆಭೇದ ವಸ್ತು ನಿಜ -
ಬೋಧದಲಿದ್ದವ ನಾನಲ್ಲಾ            ||೨||

ನಾನಾಗಿ ನಡೆದವ ನಾನಲ್ಲಾ
ನಾ ಶಿಶುನಾಳಧೀಶನ  ಬಿಡಲಿಲ್ಲಾ
ನಾ ಅಳಿಯದೆ ನಾ ತಿಳಿಯಲಾರದು
ನೀ ಎನಿಸುವ ಗುಣ ನಾನಲ್ಲಾ        ||೩||

          *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ನೋವಿಗೆ ಸಾವಿಗೆ ಆಯಾಸಪಡಬ್ಯಾಡ

- ಶಿಶುನಾಳ ಶರೀಫ್

ನೋವಿಗೆ ಸಾವಿಗೆ ಆಯಾಸಪಡಬ್ಯಾಡ
ದೇವಗಂಗಾಧರ ಭಾವದೊಳಿರಲು                          ||೧||

ಮನಸ್ಸಿನ ಇಚ್ಛೆಗೆ ಘನ ವಿಪರೀತ ಮಾಡಿ
ದಿನ ಬಳಲ್ವದು ಇದು ಏನು                                    ||೨||

ವಸುಧಿಯೊಳು ಶಿಶುನಾಳಧೀಶನ
ಹಸುಳನಾಗಿ ಈ ಪರಿ ಕಸವಿಸಿಪಡುವದು ಹಸನವಲ್ಲ    ||೩||

              *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ಕರುಣಾಮೃತ ರಸ ರುಚಿಕರದೋಗರ

- ಶಿಶುನಾಳ ಶರೀಫ್

ಕರುಣಾಮೃತ  ರಸ ರುಚಿಕರದೋಗರ
ಸುರಿದುಂಬುವಗಾಗುವದೇ ಮುಕುತಿ ?             ||ಪ||

ಬೇಗನೆ ತನುನಿನ  ಭೋಗವ ನೀಗದೆ
ಯೋಗಮಾರ್ಗ ಸಾಗುವದೇ  ಮನುಜಾ?        ||ಅ.ಪ||

ಮಂಗಗೆ ಮಾಣಿಕ ತೋರಲು  ಗಿಡಗಳ
ಟೊಂಗಿಗೆ   ಹಾರದೆ ಬಿಡುತಿಹುದೆ ?
ಅಂಗಜರಾಜ ಹೆದರುವ ತಪಶ್ವಿಗೆ
ಹೆಂಗಸರಾಸೆಯು  ಹಿಂಗುವುದೆ?                     ||೧||

ಜರೆಮರಣಾದಿಯೋಳ್ ಚರಿಶ್ಯಾಡುವವನಿಗೆ
ಗುರುಮಾರ್ಗವು ದೊರಕುವದೇ  ಮನುಜಾ
ಧರೆಯೊಳು  ಶಿಶುನಾಳಧೀಶನ  ಸ್ಮರಿಸದೆ
ಮರಳಿ ಮರಳಿ ಜನ್ಮ ತಪ್ಪುವುದೆ ?                    ||೨||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ಮಾತು ಮೌನವಾಗುತ್ತದೆ

- ರವಿ ಕೋಟಾರಗಸ್ತಿ

ಮಾತು ಮೌನವಾಗುತ್ತಿದೆ
ದಿನ.. ದಿನವು ಕ್ಷಣ.. ಕ್ಷಣವು
ಜಗದೆಲ್ಲೆಡೆ ಬಾಯಿ ಚಾಚುತಿಹ
ಕೋಮು-ಮತೀಯ ವಿಷ ಜಂತುವಿನ
ಉದ್ದನೆಯ ಕರಿ ನಾಲಗೆಯ ಕಂಡು...

ಮಾತು ಮೌನವಾಗುತ್ತಿದೆ
ನಾಡಿನ ಉದ್ದಗಲು...
ಶಾಂತಿ... ಸೌಹಾರ್ದತೆ ದೂಡಿ ಧರ್ಮದ
ಹೆಸರಲಿ ಜಾತಿ-ರಾಜಕೀಯ ಬೀಜ
ಬಿತ್ತಿ, ಕಳೆಯ ಬೆಳೆಯುವದನ್ನು ಕಂಡು.

ಮಾತು ಮೌನವಾಗುತ್ತಿದೆ
ಬದುಕಿನ ಹಸಿರು ಉಸಿರಾಗಿರುವ
ಪ್ರಕೃತಿ ಸಿರಿ ಪರಿಸರಕೆ
ಬೆಂಕಿಯಿಡುತ ಬೆಂದು
ಬರಡಾಗುತಿಹ ಮನುಕುಲ ಕಂಡು
ಮಾತು ಮೌನವಾಗುತ್ತಿದೆ.

ಜನನಿ... ಸಹೋದರಿ...
ಒಡಲ ಕುಡಿ... ಬಾಂಧವ್ಯ ಸವಿ ಅರಿಯದ
ಕ್ಷಣ... ದೇಹದ ತೃಷೆಗಾಗಿ
ಮಾರಾಟ ಮಾಡುವ ಭಂಡರ ಕಂಡು.

ಮಾತು ಮೌನವಾಗುತ್ತಿದೆ
ಕೆಂಪು ದೀಪದಡಿ ನಲುಗುತಿಹ
ಕಣ್ಣುಮುಚ್ಚಿ ಬೇಯುತಿಹ
ತನು... ಮನಗಳ ಆಳದ ನೋವು
ಕೇಳದ... ಕುರುಡಾಗಿಹ ಸಮಾಜ ಕಂಡು.

         *****

ಕೀಲಿಕರಣ: ಕಿಶೋರ್‍ ಚಂದ್ರ

ನಿತ್ಯ ಚೈತ್ರ

- ಗಿರಿಜಾಪತಿ ಎಂ. ಎನ್

ಹರಿವ ನದಿಗೆ ಹಾದಿ
ಯಾವುದೆಂಬ ನಿಯತಿಯಲದೆಲ್ಲಿದೆ?
ಮೊಳೆವ ಪ್ರೀತಿ-ಪ್ರೇಮಕೆಲ್ಲಿ
ಭಿನ್ನ-ಭೇದವೆಣಿಸಬೇಕಿದೆ?

ಬೀಸುಗಾಳಿಗೆ ಹೂವು ಅರಳಲು
ಸುಮದ ಕಂಪಿನ ಘಮ..... ಘಮ.....
ಹಾರಿಬರುವ ದುಂಬಿ ಮನದಲಿ
ಬಗೆ ಬಗೆಯ ಸಂಭ್ರಮ..... ||

ಬೆಸೆದ ಬೆಳಕಿಗೆ ಹೊಸತು ಹೊಸತಿನ
ನಿತ್ಯ ನೂತನ ನಂದನ
ಬುವಿಯ ಬಾನಿನ ಬಾಳ ಹಾದಿಗೆ
ಹಾಸಿ ಬೀಸಿದ ಚಂದನ

ಉರಿವ ಧಗೆಯಲಿ ದಿನವು ಮುಗಿದರೂ
ಮತ್ತೆ ಅರಳಿದೆ ಸುಮಬನ
ಅಂದಿನುಗಮವೇ ಅರಿದಿನಳೆವುದೆಂದರೂ
ನೆಗೆಯ ಸೂಸುವ ಬಂಧನ

        *****

ಕೀಲಿಕರಣ: ಕಿಶೋರ್‍ ಚಂದ್ರ

`ಕಾಯಮಾಯದ ಹಾಡು' - ದೇಸಿಯ ಹೊಸ ಭಾಷ್ಯ

- ತಾರಿಣಿ ಶುಭದಾಯಿನಿ

ಎಸ್.ಜಿ.ಸಿದ್ದರಾಮಯ್ಯನವರ ಕಾವ್ಯ ಹುಟ್ಟುವುದು ದೇಸಿದಿಬ್ಬದಲ್ಲಿ. ಅದು ಉಸಿರಾಡುವುದು ಅಲ್ಲಿನ ಗಾಳಿಯನ್ನೆ. ಹೀಗೆ ನೆಲಮೂಲವನ್ನು ನೆಚ್ಚಿಕೊಂಡು ಬರೆಯುವ ಕವಿ ಅವರಾಗಿರುವುದರಿಂದ ತಮ್ಮ ಸಮಕಾಲೀನರಿಗಿಂತ ಭಿನ್ನರಾಗಿ ಕಾಣುತ್ತಾರೆ.  ಮೇಲುನೋಟಕ್ಕೆ ಅವರ ಕಾವ್ಯ ಹಳ್ಳಿಗಾಡಿನ ಕೃಷಿಯ, ಅನುಭಾವದ ಸುತ್ತ ತಿರುಗಾಡುತ್ತಿರುವಂತೆ ಕಾಣಿಸಿದರೂ, ಅದರಲ್ಲಿ ನಿರೂಪಿತವಾಗುವ ನೆಲಮೂಲದ ತಾತ್ತ್ವಿಕತೆಯು ಭಿನ್ನ ಸಾಧ್ಯತೆಗಳ ಇರುವನ್ನು ಸೂಚಿಸುವಂತಿದೆ.

ಸಿದ್ದರಾಮಯ್ಯನವರು ನೆಲಮೂಲಕ್ಕೆ ಕೊಡಮಾಡಿಕೊಂಡಂತೆ ಕಾಣುವಾಗ ಅವರ ಕಾವ್ಯ ಎತ್ತಿಕೊಳ್ಳುವ ನೆಲಸಂಸ್ಕೃತಿಯ ಸಂಗತಿ ಕೆಲವು ಪ್ರಶ್ನೆಗಳನ್ನು ಮುಂದಿಡುತ್ತವೆ.  ಸಮಕಾಲೀನ ಸಂದರ್ಭದಲ್ಲಿ ದೇಸಿಯತೆಯ ಕೂಗು ಜೋರಾಗಿಯೇ ಕೇಳುತ್ತಿರುವಾಗ ಈ ಕವಿ ಯಾವ ನೆಲೆಯಲ್ಲಿ ದೇಸಿಯನ್ನು ಗ್ರಹಿಸುತ್ತಾರೆ ಮತ್ತು ಯಾವ ರೀತಿಯ ತಾತ್ತ್ವಿಕ ನಿಲುವನ್ನು ಪ್ರಕಟಿಸುತ್ತಾರೆ ಎಂಬುದನ್ನು ಮುಖ್ಯವಾಗಿ ಗ್ರಹಿಸಬೇಕಾಗುತ್ತದೆ.

ದೇಸಿಯ ಮಾತು ಕನ್ನಡದ ಸಂದರ್ಭದಲ್ಲಿ ವಿಶೇಷವಾಗಿಯೇ ನಿರ್ವಚನಗೊಳ್ಳುತ್ತ ಬರುತ್ತದೆ ಎಂಬುದು ಕನ್ನಡ ಕಾವ್ಯದ ಓದುಗರಿಗೆ ತಿಳಿದ ವಿಷಯ. ಮಾರ್ಗಕಾವ್ಯಗಳಲ್ಲಿ ಇರುವ ದೇಸಿ ವಚನಕಾರರಲ್ಲಿ ಇನ್ನಷ್ಟು, ಸ್ಪಷ್ಟವಾಗಿಯೇ ಕಾಣಿಸಿಕೊಳ್ಳುತ್ತದೆ. ಕನ್ನಡ ಸಾಹಿತ್ಯ-ಸಂಸ್ಕೃತಿಯ ಮಟ್ಟಿಗೆ ಅದು ಗುಪ್ತಗಾಮಿನಿಯಾಗಿ ಚಲನಶೀಲ ಗುಣವನ್ನು ತೋರುತ್ತಲೇ ಬಂದಿದೆ.  ಅಂದರೆ ದೇಸಿಯು ಕ್ರಿಯಾಶೀಲತೆಯ ಸಂಕೇತವೂ, ಅರಿವಿನ ಪ್ರಕ್ರಿಯೆಯೂ ಆಗಿದೆ ಎನ್ನಬಹುದು. ಅರಿವು ಎಂಬುದು ಒಳಗು ಹೊರಗು ಎರಡಕ್ಕು ಸಂಬಂಧಿಸಿದ ಪ್ರಕ್ರಿಯೆ.  ಇನ್ನೂ ಹಿಗ್ಗಿಸಿ ಹೇಳುವುದಾದರೆ, ನಿಜದನೆಲೆಯ ಹುಡುಕಾಟ;  ಸಹಜತೆಯ ಹುಡುಕಾಟ.

ಸಂಸ್ಕೃತಿ, ಪ್ರಭುತ್ವಗಳು ಜಡ್ಡುಗಟ್ಟಿದಾಗಲೆಲ್ಲ ಸಮುದಾಯಗಳಲ್ಲಿ ಒಳದಾರಿಯ ಹುಡುಕಾಟ ನಡೆಯುತ್ತಿರುತ್ತದೆ.  ಅದರಲ್ಲೂ ಸಂಸ್ಕೃತಿ, ಪ್ರಭುತ್ವಗಳ ಪ್ರತಿಗಾಮಿಧೋರಣೆಗಳನ್ನು ತಳೆದಾಗ, ಜೀವವಿರೋಧಿಯಾದಾಗ ಈ ಹುಡುಕಾಟ ಇನ್ನಷ್ಟು ಗಟ್ಟಿಯಾಗುತ್ತದೆ.  ತಂತಮ್ಮ ಜೀವರಕ್ಷಣೆಯ ವಿಷಯದಲ್ಲಿ ಎಲ್ಲ ಜೀವಿಗಳು ಇದು.  ದೇಸಿಯು ಕ್ರಿಯಾಶೀಲವಾಗುವುದೂ ಹೀಗೆಯೇ. ಜನಪದವು ತನ್ನನ್ನು ತಾನು ಕಾಯ್ದುಕೊಳ್ಳಲೆಂದು ಹೂಡವ ಒಳಬಂಡಾಯದ ರಕ್ಷಣಾತಂತ್ರ ಎಂದು ಇದನ್ನು ಕರೆಯಬಹುದು. ಈ ಪ್ರಕಿಯೆಯಾದರೋ ಎದ್ದು ಕಾಣುವಂತದಲ್ಲ.  ವ್ಯವಸ್ಥೆಯ, ಪ್ರಭುತ್ವದ ಅಥವಾ ಸಂಸ್ಕೃತಿಯ ಆಡಂಬರದ ಮಾದರಿಗಳಿಗೆ ಪ್ರತಿಯಾಗಿ ಒಳಗಿನ ಸಾಮಾನ್ಯತಾ ಸತ್ವವನ್ನು ಉದ್ದೀಪಿಸಿಕೊಂಡು ನಿಲ್ಲುವುದನ್ನು ಇಲ್ಲಿ ಗಮನಿಸಬಹುದು.  ಒಂದೆಡೆಯಿಂದ ತನ್ನೊಳಗನ್ನು ನೋಡಿಕೊಳ್ಳುವ ಪರಿಯೂ ಇನ್ನೊಂದೆಡೆ ಸ್ವಾಭಿಮಾನದ ಸಂಕೇತವೂ ಆಗಿ ಕಾಣುವ ದೇಸಿಯು ಸಾಧಾರಣೀಕರಣವನ್ನೇ ತನ್ನ ಹೆಗ್ಗುರುತನ್ನಾಗಿ ಮಾಡಿಕೊಂಡಿರುತ್ತದೆ.  ಸಾಧಾರಣ ಎನಿಸುವ ಸಂಗತಿಗಳ ಅಡಿಯಲ್ಲಿಯೇ ಸ್ವಂತಿಕೆಯನ್ನು ರೂಪಿಸಿಕೊಂಡು ಭಾಷೆ, ಸಂಸ್ಕೃತಿಗಳನ್ನು ಪುನರ್ರಚನೆ ಮಾಡಿಕೊಳ್ಳುವ ಮತ್ತು ಅದರಿಂದ ಸಂರಚನೆಗಳನ್ನು ವಿಭಿನ್ನವಾದ ಒಳನೋಟಗಳಿ೦ದ ಕಂಡುಕೊಳ್ಳುವ ರೀತಿ ಅದು.

ಈ ಬಗೆಯಲ್ಲಿ ಸಹಜವಾಗಿಯೇ ದ್ವಂದ್ವಭಾವವಿರುತ್ತದೆ. ನಾನೆಂಬುದಿದ್ದರೆ ನೀನೆಂಬುದೂ ಇರಲೇಬೇಕು ಎಂಬಂತೆ.  ಸ್ವಾತಂತ್ರ್ಯ ಚಳವಳಿಯ ಕಾಲದಲ್ಲಿ ಹುಟ್ಟಿದ ಸ್ವದೇಶಿ ಪರಿಕಲ್ಪನೆಯು ವಿದೇಶಿ ಎಂಬುದಕ್ಕೆ ದ್ವಂದ್ವಭಾವವಾಗಿ ಹುಟ್ಟಿದ್ದು.  ಆನಂತರದ ಆಧುನಿಕತೆಯ ಪರಿಕಲ್ಪನೆಯಲ್ಲಿ ಆಧುನಿಕತೆಯೆನ್ನುವುದು ಅರ್ಬನ್‍ಗೆ ಸಂವಾದಿಯಾಗಿ ನಿಂತು ಒಂದು ಹಳ್ಳಗಾಡಿನ ಸಮಾಜಕ್ಕೆ ಎದುರು ನೆಲೆಯಾಗಿರುವುದನ್ನು ಕಾಣಬಹುದು. ಇಂದಿನ ಜಾಗತೀಕರಣದ ಕಾಲದಲ್ಲಿ ದೇಸಿಯ ಭಾವವು ಹುಟ್ಟಿಕೊಳ್ಳುವುದು ಒಂದು ವಿರೋಧಿ ನೆಲೆಯಲ್ಲಿಯೇ.  ಆಧುನಿಕತೆಯ ನೆಲೆ ಪೂರ್ವಪಶ್ಚಿಮವನ್ನು ಇನ್ನಷ್ಟು ಗೆರೆ ಕೊರೆದಂತೆ ಮಾನದ೦ಡಗಳನ್ನು ರೂಪಿಸಿಕೊಳ್ಳುವಂತೆ ಕಾಣುವಾಗ ಸ್ವದೇಶಿ ವಿದೇಶಿ ವಿಂಗಡಣೆಗಳು ಸಹಜವಾಗಿಯೇ ದ್ವಂದ್ವನೆಲೆಗಳಾಗಿ ಬರುತ್ತವೆ.  ಸಿದ್ದರಾಮಯ್ಯನವರಂತಹ ಕವಿ ದೇಸಿಯನ್ನು ಒಪ್ಪುವಾಗ ಇಂಥ ದ್ವಂದ್ವಗಳ ಅಲುಗನ್ನು ಹಾಯಲೇಬೇಕು.  ಇದರಂತೆ ಅವರ ಕವಿತೆಗಳಲ್ಲಿ ಕೆಲವಾದರೂ ಪೂರ್ವ-ಪಶ್ಚಿಮ, ನಗರ-ಹಳ್ಳಿಗಳ ದ್ವಂದ್ವವನ್ನು ವ್ಯಕ್ತಪಡಿಸುತ್ತವೆ.  ಅವುಗಳ ಧೋರಣೆಯು ಕವಿಯ ನಿಲುವಿಗೆ ಬದ್ಧವಾಗಿರುವಂತೆ ಇರುವುದು ಗಮನಾರ್ಹ.

`ಗಿಡುಗ ಮತ್ತು ಎರೆಹುಳ' ಕವಿತೆ `ಕಾಯಮಾಯದ ಹಾಡು' ಸ೦ಕಲನದಲ್ಲಿ ಕಾಣುವ ಕವಿತೆ.  ಅಲ್ಲಿ ಕಾಣುವ ದ್ವಂದ್ವಭಾವ ನೋಡಬೇಕು. ಗಿಡುಗವು ಪಂಚರಂಗಿ ಬಣ್ಣದ್ದು, ಪಶ್ಚಿಮದಿಂದ ಹಾರಿ `ರವರವ್ವನೆ' ಹಾರಿ ಬರುತ್ತಿದೆ.  ಅದಕ್ಕೆ ಎದುರಾಗಿ ಸಾಧಾರಣವೆನಿಸುವ, ಮಣ್ಣನ್ನು ನಂಬಿ ಬದುಕುವ ಎರೆಹುಳ ಇದೆ.  ಅಲ್ಲಿ ಒಂದು ಪ್ರಶ್ನೆಯಿದೆ- ಯಾರಲಾ ಯಾರಲಾ! ನೆಲದ ವಾರಸು ಯಾರಲಾ? ಎಂಬುದು.  ಅದರ ದನಿಯು ಈ ಸಲದ ಹಕ್ಕು, ವಾರಸುದಾರಿಕೆ ಖಂಡಿತವಾಗಿಯೂ ಎರೆಹುಳಕ್ಕೆ ದಕ್ಕಬೇಕೆನ್ನುವ ಪಕ್ಷಪಾತಿ ನಿಲುವನ್ನು ಹೊಂದಿದಂತಿದೆ.  ಅದೇ ಕವನದ ಮುಂದಿನ ಭಾಗದಲ್ಲಿ, `ಬಣ್ಣದ ಬೆಡಗಿನ | ಪೂರ್ವದ ಜೀವಜಾತಗಳೆಲ್ಲ ಮಾತು ಕಳೆದವು' ಎಂದು ಹೇಳಿರುವುದು ಸಹ ಪೂರ್ವದ ಪರವನ್ನೇ ಸೂಚಿಸುವಂತಿದೆ.

ಈ ದ್ವಂದ್ವಗಳ ಇರವನ್ನು ಒಪ್ಪಿಕೊಳ್ಳುತ್ತಲೇ ಅಲ್ಲಿರುವ ಬಿಕ್ಕಟ್ಟನ್ನು ನೋಡಬೇಕು.  ಯಾವುದಾದರೊಂದು ನಿಲುವನ್ನು ಬೆಂಬಲಿಸಿ ನಿಂತರೂ ಅದಕ್ಕೇ ಬಾಧ್ಯಸ್ಥನಾಗಬೇಕಾದ ಅನಿವಾರ್ಯತೆ ಉಂಟಾಗುವುದಲ್ಲದೆ ತನ್ನ ಆಯ್ಕೆಯ ಸತ್ವಶೀಲತೆಯನ್ನು ಪರೀಕ್ಷೆಗೊಡ್ಡಬೇಕಾದ ಪರಿಸ್ಥಿತಿಗೆ ಕವಿ ಸಿಲುಕುತ್ತಾನೆ.  ಇದು ಅವನ ಸವಾಲು ಕೂಡ.

`ಈಗಾಗಲೇ ಹೇಳಿದಂತೆ ಸಿದ್ದರಾಮಯ್ಯನವರ ಕಾವ್ಯವು ಕೇಂದ್ರೀಕೃತವಾಗುವುದು ದೇಸಿದಿಬ್ಬದಲ್ಲಿ- ದೇಸಿಯೆಂದರೆ ಒಂದು ಜೀವನಕ್ರಮವೆಂದು ನಿರ್ವಚನ
ಮಾಡಿಕೊಳ್ಳುವಾಗ ಅದು ರೈತಾಪಿವರ್ಗದ ಜೀವನ ಕ್ರಮವೆಂದು ಅವರು ಭಾವಿಸುತ್ತಾರೆ.  ರೈತಾಪಿ ವರ್ಗವು ಜಾಗತೀಕರಣದ ಅಪಾಯಗಳಿಗೆ ಬದುಕನ್ನು ಒಡ್ಡಿಕೊ೦ಡಿರುವ ಸಂದರ್ಭದಲ್ಲಿ ಅದರ ಅಳಿವು ಕಂಗೆಡಿಸುವ ಅಂಶ.  ಇದನ್ನು ಪರಿಗಣಿಸುತ್ತಲೇ ಜಾಗತೀಕರಣದ ಸವಾಲುಗಳಿಗೆ ದೇಸಿದಿಬ್ಬದ ಸಾಮನ್ಯತಾ ಸತ್ವಗಳನ್ನು ಮುಂದಿಡುತ್ತದೆ ಸಿದ್ದರಾಮಯ್ಯನವರ ಕಾವ್ಯ. ಜಾಗತೀಕರಣ ಪರ್ಯಾಯ ನೆಲೆಗಳಲ್ಲಿ ಉತ್ತರ ಹುಡುಕುವ ಸಂದರ್ಭದಲ್ಲಿ ದೇಸಿಯತೆಯಲ್ಲಿ ಗೋಚರಿಸುವ ಸತ್ವಶೀಲ ಉತ್ತರಗಳು ರಾಜಕೀಯ, ಸಾಂಸ್ಕೃತಿಕ ನೆಲೆಗಳನ್ನು ಪುನರ್ರ್‍ಅಚಿಸಬಹುದೆಂಬ ಆಶಯವನ್ನೂ ಅದು ವ್ಯಕಪಡಿಸುತ್ತದೆ.

ನೆಲಮೂಲದ ಕಲ್ಪನೆಯು ವ್ಯವಸಾಯದ ಬದುಕನ್ನು ಬಿಟ್ಟು ರೂ‌ಪುಗೊಳ್ಳುವಂತದ್ದಲ್ಲ.  ಇಂದು ನಶಿಸುತ್ತಿರುವ ಜೀವಸಂಕುಲಗಳನ್ನು ಜೀವ ವಿಜ್ಞಾನಿಗಳು
ಪಟ್ಟಿ ಮಾಡುತ್ತಿರುತ್ತಾರೆ. ಅದರೊಳಗೆ ರೈತನೆಂಬ ಜೀವಿಯೂ ಸೇರಿಕೊಳ್ಳುವ ಕಾಲ ಬರುತ್ತಿದೆ.  ಈ ಆತಂಕ ಸ್ವಷ್ಟಿಯಾದರೆ ಅವನನ್ನು ನಂಬಿ ಬದುಕುತ್ತಿರುವ ಜೀವ ಸರಪಳಿಯು ಕಳಚಿಕೊಂಡಂತೆ ಎಂಬುದೇ ಸಿದ್ದರಾಮಯ್ಯನವರ ಆತಂಕ.  ರೈತನ ನಾಶವೆಂದರೆ ಒಂದು ಜೀವನಶೈಲಿಯ ಕಣ್ಮರೆಯಾಗುವಿಕೆ.  ಇದು ಬರಿಯ ರಾಜಕೀಯ, ಆರ್ಥಿಕ ಪ್ರಶ್ನೆಗಳನ್ನಷ್ಟೆ ಒಳಗೊಳ್ಳುವಂತಿದ್ದರೆ ಈ ಕುರಿತು ಯೋಚಿಸಬೇಕಾದ ತೀವ್ರತೆ ಅಷ್ಟಾಗಿ ಇರುತ್ತಿರಲಿಲ್ಲವೇನ್ನೋ.  ಇದು ಮೌಲ್ಯದ, ಜೀವ ಸಂಸ್ಕೃತಿಯ ಪ್ರಶ್ನೆಗಳೂ ಆಗಿರುವುದರಿಂದಲೇ ನಮ್ಮನ್ನು ಬಾಧಿಸುತ್ತದೆ.  ಬಂಡವಾಳಶಾಹಿ ಪ್ರಭುತ್ವಗಳು ಸೃಷ್ಟಿಸುವ ಬಿಕ್ಕಟುಗಳು ರೈತನನ್ನು ಮಾತ್ರವಲ್ಲದೆ, ಅವನು ನಂಬಿರುವ ನೀರು, ನೆಲ, ಗಾಳಿಗಳನ್ನೂ ಬಿಡುತ್ತಿಲ್ಲ.  ಹೀಗಿರುವಾಗ ನೆಲದ ವಾರಸುದಾರಿಕೆಯ ಪ್ರಶ್ನೆ ಇಲ್ಲಿ ಎದುರಾಗುವುದು
ಸಹಜ.  `ಈಸಕ್ಕಿಯಾಸೆ ನಿಮಗೇಕಯ್ಯ?' ಎನ್ನುವ ನೈತಿಕ ಸೊಲ್ಲು ಉಡುಗಿಸಿ, ಲಾಭಕೋರತನವನ್ನೇ ಮೌಲ್ಯ ಎಂದು ಬಿಂಬಿಸಿ ಬೆಳೆಸುವ ಜಾಗತೀಕರಣವು ಖಂಡಿತವಾಗಿ ಜೀವವಿರೋಧಿ ನೆಲೆಯದು ಎಂದು ಕವಿ ಗುರುತಿಸಿಕೊಳ್ಳುವುದು ಇಲ್ಲಿ ಕಾಣುತ್ತದೆ.  ತಳಿಗಳ ವಶೀಕರಣ, ಕುಲಾಂತರಿಗಳ ಸೃಷ್ಟಿ ನಿಸರ್ಗನೇಮಕ್ಕೆ ಎರವಾದುದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಇದು ಆಕ್ರಮಣಶೀಲತೆಯ ಸ್ವರೂಪ.  ಇದನ್ನು ಕವಿ ಗುರುತಿಸಿಕೊಳ್ಳುವ ರೀತಿ ಹೀಗಿದೆ:

    ಕುಲಾಂತರಿಗಳ ಕೋಟಲೆಯಲ್ಲಿ
    ಕುಲಾಂತರಿಗಳ ನೆಲೆ ಕಣ್ಮರೆಯಾದುದೋ

ಇಲ್ಲಿ ಕವಿಗೆ ಒಂದು ಮಾದರಿಯ ಕಲ್ಪನೆ ಇರುವುದು ಸ್ಪಷ್ಟ.  ಒಂದು ಜೀವನ ಶೈಲಿಯನ್ನು ಅವರು ಬೆಂಬಲಿಸುತ್ತಿದ್ದಾರೆ.  ಅದರ ಮೇಲಾಗುವ ಅಕ್ರಮವನ್ನು ನೋಡುತ್ತ, ಅದಕ್ಕೆ ಪರಿಹಾರವಾಗಿ ಪರ್ಯಾಯ ಮಾರ್ಗೋಪಾಯಗಳೇನು ಎಂದು ಚಿಂತಿಸುವಲ್ಲಿ ಮತ್ತೆ ಅದರಲ್ಲೇ ಉತ್ತರಗಳಿರಬಹುದಾದ ಸಾಧ್ಯತೆಗಳನ್ನು ಅರಸುತ್ತಾರೆ.

    ಎಲ್ಲಿರುವೆ ನನ್ನವ್ವ | ಮರುಜೇವಣಿಯ ಅಡ್ಡಿಕೆಯೇ  
    ಅಡ್ಡದಾರಿಗೆ ಬಿದ್ದ ಕರುಳ | ಕಾಯುವ ಅರಿವೇ

ಹೀಗೆಂದು ಅವರ ಏಕಲವ್ಯನ ತಾಯಿ ಕೂಗಿ ಕರೆಯುತ್ತಾಳೆ.  ನಗರದ ಮರೆ ಮೋಸಕ್ಕೆ ಬಲಿಯಾದ ಮಗು ಏಕಲವ್ಯನಿಗಾಗಿ ಮರುಗುತ್ತ, ಅವನ ಹೆಬ್ಬೆರಳಿಗಾಗಿ ಶೋಕಿಸುತ್ತ ತಾಯಿ ಸುಮ್ಮನೇ ಇರುವುದಿಲ್ಲ.  ಮುಂದಿನ ಪರಿಹಾರವನ್ನು ಹುಡುಕುವುದರಲ್ಲಿದ್ದಾಳೆ.  `ಬೆಂಕಿಗೋಳದ ರಾಚು' ತುಂಬಿದೆ ಎಂದು ಹೇಳುವ ಸಿಂದಾಬಾದ್‌ನಾವಿಕನೂ ನಿರಾಶನಾಗುವುದಿಲ್ಲ - `ಬೆಂದ ಮಣ್ಣಿನೊಡಲಲ್ಲೇ | ನೊಂದ ಮನಸು ಚಿಗುರುವುದು | ಛಲದ ಬಾಳ್ಗೆ ನೆಲದ ಏಳ್ಗೆ' - ಎನ್ನುತ್ತಾನೆ.  ಇದೆಲ್ಲಕ್ಕಿಂತ ಮಿಗಿಲಾಗಿ `ಜಲದ ಕಣ್ಣಿನ ಶೋಧ' ಎಂಬ ಭರವಸೆಯ ಮಾತು ಅಂತರ್ಗಾಮಿಯಾಗಿರುವ ನೀರಿನ ಶಕ್ತಿಯನ್ನು ನಂಬುವ ನೆಲಮೂಲದ ಅತ್ಯುನ್ನತ ಶಕ್ತಿಯ ನೆಲೆ.  ಈ ದೃಷ್ಟಿಯಿಂದ ಕವಿಯದು ಒಂದು ತೆರನಾದ ಉಗ್ರನಿಷ್ಠೆ ಎನ್ನಬಹುದು.  ಅದು ಅನ್ಯದೈವಕ್ಕೆಳಸದ ಭಕ್ತನ ಛಲದಂತೆ, ಸತತ ನಂಬುಗೆಯಲ್ಲಿ ನಿಂತು ತನ್ನ ಸತ್ವವನ್ನು ಪರೀಕ್ಷಿಸಿಕೊಳ್ಳುವುದಾಗಿದೆ.

`ಕಾಯಮಾಯದ ಹಾಡು' ಸಂಕಲನದ ತುಂಬೆಲ್ಲ ಒಕ್ಕಲು ಮಕ್ಕಳು ಇದ್ದಾರೆ (ಅಪ್ಪ, ಅಜ್ಜಿ, ಅವ್ವ - ಇವರೂ ಇದೇ ಸಾಲಿನಲ್ಲಿ ಬರುತ್ತಾರೆ ಎನ್ನುವುದು ವಿಶೇಷ).  ಜೊತೆಗೆ ಏಕತಾರಿಯ ಜೋಗಿಗಳು ಇದ್ದಾರೆ.  ಸುಮ್ಮನೇ ನೋಡಿದರೆ ಸಂಬಂಧವಿಲ್ಲದ ಚಿತ್ರಗಳಿವು.  ಆದರೆ ಇವರೆಲ್ಲ ಬೆಸೆಯುವುದು ನೆಲಮೂಲದ ಅಂಥಃಸೂತ್ರದಲ್ಲಿ.  ನೆಲಮೂಲದಿಂದಲೇ ಹುಟ್ಟಿಬಂದವರು ಇವರೆಲ್ಲ.  ಪೌರಾಣಿಕ ಪಾತ್ರಗಳಾದ ಅಹಲ್ಯೆ ಇಂದ್ರರು, ಅಮೃತಮತಿ ಬದಗರು ನೆಲಕ್ಕೆ ಸಹಜವಾದ ರೀತಿಯಲ್ಲಿ ಬರುತ್ತಾರೆ.  ಬದಗನನ್ನು `ನೆಲದ ಬಾಳಿನ ನೀತಿ ಸೂತ್ರಧಾರ' ಎಂದು ಕರೆಯುವಲ್ಲಿ ನೆಲಮೂಲದ ನೀತಿ ವಿಭಿನ್ನವಾಗಿರುವುದನ್ನು ಸೂಚಿಸಲಾಗಿದೆ.  ಏಕಲವ್ಯನ ಉದಾಹರಣೆಯನ್ನು ಇಲ್ಲಿ ತೆಗೆದುಕೊಳ್ಳಬಹುದು.  ಇವರಂತೆಯೇ ಸಹಜವಾಗಿ ಈ ನೆಲದಿಂದ ಹುಟ್ಟಿಬಂದ ಅಲ್ಲಮ, ಶರೀಫ, ದರವೇಶಿ, ರಾಬಿಯಾ ಮುಂತಾದ ಸತ್ವಶಾಲೀ ಅನುಭಾವಿಗಳು.  ಹಾಗಾಗಿ ಇಲ್ಲಿ ನೆಲಮೂಲವೆಂಬುದು ಸಹಜತೆಯ ಪರಿಕಲ್ಪನೆಯಾಗಿ ರೂಪುಗೊಳ್ಳುತ್ತಲಿದ್ದು, ಸಹಜತೆಗೆ ತೆರೆಯಾಗಿರುವ ಆವರಣಗಳನ್ನು ಸರಿಸಿ ನೋಡುವ ಕ್ರಮವೊಂದನ್ನು ನೇರ್ಪುಗೊಳಿಸುತ್ತಲಿರುವುದು ಗೋಚರಿಸುತ್ತದೆ.  ಸಹಜ ಬದುಕಿನ ತಡಕಾಟವೇ ನಿಜದ ನೆಲೆಯ ಅರಸುವಿಕೆಯಾಗಿದೆ.

ಮರುಜೇವಣಿಯನ್ನು ಹುಡುಕುವ ಮೂಲಕ ಆವರಣಗಳನ್ನು ಸರಿಸಿ ಸಹಜ ಬದುಕನ್ನು ಮತ್ತೊಮ್ಮೆ ಕಾಣಬಹುದೆಂಬ ಹಂಬಲದಲ್ಲಿರುವ ಕವಿ ಅದಕ್ಕಾಗಿ ಸಮುದಾಯದ ಬದುಕಿನಲ್ಲಿಯೂ, ಜೋಗಿತ್ವದ ಬದುಕಿನ ಸತ್ವದಲ್ಲಿಯೂ ಅರಸುತ್ತಾರೆ.  ಮರುಜೇವಣಿಯ ಸತ್ವವು `ಬಹುಜನಹಿತಾಯ'ವೆಂಬ ತಾತ್ವಿಕತೆಯಲ್ಲಿ ಕಾಣಿಸುತ್ತದೆ.  ಅದರಲ್ಲಿ ಸಮುದಾಯದ ಕಲ್ಪನೆ ಇದ್ದು, ವರ್ತಮಾನದ ಒಂಟಿ, ಒಡಕಲು ಬದುಕುಗಳಿಗೆ ಉತ್ತರವಾಗಬಹುದಾದ ಆಶಯವಿದೆ.

ಸಿದ್ಧರಾಮಯ್ಯನವರು ನೆಚ್ಚುವ ಸಮುದಾಯದ ಬದುಕು ವ್ಯವಸಾಯ ಮೂಲದ್ದು.  ಬೇಸಾಯಕ್ಕೆ ಮೂಲಾಧಾರವಾಗಿ ತಾಳ್ಮೆ, ಪರಿಶ್ರಮಗಳಿರುತ್ತವೆ.  ಫಲಾನುಭವದ ಸಂತೃಪ್ತಿ ಸಿಕ್ಕಿದರೂ ಅದು ಒಬ್ಬನದಲ್ಲ, ಸಮುದಾಯದ್ದು.  ಈ ತತ್ವವನ್ನು ಬಿಂಬಿಸುವಂತೆ ಅವರ ಕಾವ್ಯದಲ್ಲಿ ಇರುವೆ ಮತ್ತು ಇರುವೆಗೂಡಿನ ಚಿತ್ರಗಳಿವೆ.  ಕಾಯಕತತ್ವಕ್ಕೆ ಹೆಸರಾದ ಇರುವೆಗಳು ಆಹಾರವನ್ನು ಸಂಗ್ರಹಿಸಿ, ಅದನ್ನು ಹೊತ್ತುಕೊಂಡು ಹೋಗುವುದರಿಂದ ಹಿಡಿದು ಅದನ್ನು ವರ್ಷದ ಕೂಳಾಗಿ ಕಾಪಾಡಿಕೊಂಡು, ಹಂಚಿ ತಿನ್ನುವುದರ ತನಕ ಸಮುದಾಯದ ಬದುಕಿಗೆ ರೂಪಕವಾಗಿ ನಿಲ್ಲುತ್ತದೆ.  ಇದಲ್ಲದೆ ಕವಿ ಕೊಡುವ ಜಿಡ್ಡು ಕದಡಿರುವ ಮಜ್ಜಿಗೆಯ ಚಿತ್ರವು ಇದೇ ಆಶಯವನ್ನು ವ್ಯಕ್ತಪಡಿಸುತ್ತದೆ.  ಜಿಡ್ಡು ಒಟ್ಟುಗೂಡಿದಲ್ಲದೇ ಬೆಣ್ಣೆಮುದ್ದೆಯಾಗದು;  ಒಟ್ಟಾಗದೇ ಜಿಡ್ಡಿನ ಶಕ್ತಿಯಾಗದು ಎಂದು ಸೂಚಿಸುತ್ತದೆ.  ಇದಕ್ಕೆ ಪೂರಕವಾಗಿ ಇನ್ನೂ ಸ್ಪಷ್ಟವಾದ ಸಾಲುಗಳನ್ನು ಕವಿಯೆ ಬರೆಯುತ್ತಾರೆ:

    ಒಂಟೆತ್ತಿನಾರಂಬ | ಸೊಂಟ ಮುರಿದಾ ಬದುಕು
    ಮುರಿದ ಮನಸುಗಳಿಂದ | ಬಿತ್ತೋ ಹೊಲ ಬರೀ ಬೀಳು

ಈ ಸಂಯೋಜಕ ಶಕ್ತಿಯು ಅವರ ಇನ್ನೊಂದು ಪರಿಕಲ್ಪನೆಯಲ್ಲಿ ವಿವರಿಸುವುದಾದರೆ, `ಕಳ್ಳುಬಳ್ಳಿಯ ಬಂಧ' ಎನ್ನಬಹುದು.  ಕುಲಮೂಲ ಎಂಬುದು ಕುಲಾಂತರಿಗಳಿಗೆ ಎದುರು ನಿಲ್ಲುವ ತಾಯಿಬೇರಿನ ಚೇತನವಾದರೆ ಕುಲ, ಕಳ್ಳುಬಳ್ಳಿಯ ಬಂಧವು ಒಟ್ಟು ಸಮುದಾಯದ ಸ್ವರೂಪವನ್ನು ಸೂಚಿಸುತ್ತ ಪ್ರೇರಕ ಶಕ್ತಿಗಳಾಗುವುದನ್ನು ಕವಿ ಕಾಣುತ್ತಾರೆ.

ಇದಕ್ಕೆ ಜೊತೆಗೂಡುವುದು ಏಕತಾರಿಯ ನಿಶ್ಶಬ್ದದ ನಾದ.  ಜೋಗಿತ್ವದ ನೆಲೆಯೆಂದರೆ ಸ್ಥಾವರವಲ್ಲ, ಜಂಗಮವು.  ನಿರಂತರ `ಆಗುವಿಕೆ'ಯಲ್ಲಿ ಜಂಗಮದ ಶಕ್ತಿಯಿದೆ.  ತನ್ನ ತಾನು ಕಳೆದುಕೊಳ್ಳುತ್ತ ಆಗುವಿಕೆಯನ್ನು ಸಾಧಿಸುವ ಪ್ರಕ್ರಿಯೆ ಅದು.  ಇದನ್ನು `ಜನುಮವೆಂಬುದು ಜಂಗಮ' ಎಂಬ ಕವಿ ಸಾಲು ವಿವರಿಸುತ್ತದೆ.  ಗತಿಶೀಲತೆಯ ಕುರುಹಾಗಿ ಬರುವ ಜೋಗಿ ಎಲ್ಲಿಯೂ ನಿಲ್ಲದೆ ನಿರಂತತೆಯ ಸಂಕೇತವಾಗಿ, ಆವರಣಗಳನ್ನು ಸರಿಸುತ್ತ ನಿಜದ ನೆಲೆಯನ್ನು ಅರಸಿ ಹೋಗುವ ಶಕ್ತಿಯಾಗಿ ಕಾಣುತ್ತಾನೆ.  ಈ ನಿರಂತರತೆಯ ಸೃಜನಾತ್ಮಕ ಧಾತುವನ್ನು ದೇಸಿಯಲ್ಲಿ ಗುರುತಿಸಿಕೊಳ್ಳುವುದು ಮತ್ತು ಅದನ್ನು ಬಿಡುಗಡೆಯ ಉಪಾಯವಾಗಿ ಕಾಣುವುದು ಮಹತ್ವದ ನಿಲುವು.

ಸುತ್ತಲಿನ ಬದುಕು ಹೊದ್ದುಕೊಂಡ ಆವರಣಗಳನ್ನು ಸರಿಸಿ ನೋಡುವ ಒಳದೃಷ್ಟಿಯ ಪಡೆದ ಜೋಗಿಗಳು `ಕಾಯಮಾಯದ ಹಾಡು' ಸಂಕಲನದಲ್ಲಿ ಕಾಣುತ್ತಾರೆ.  ರಾಬಿಯಾ ಎಂಬ ಸೂಫಿ ಒಂದು ಕೈಯಲ್ಲಿ ಬೆಂಕಿ ಇನ್ನೊಂದು ಕೈಯಲ್ಲಿ ನೀರು ಹಿಡಿದು ಸ್ವರ್ಗನರಕಗಳನ್ನು ಎದುರಿಸ ಹೊರಡುತ್ತೇನೆ ಎನ್ನುತ್ತಾಳೆ.  ಸ್ವರ್ಗನರಕಗಳು ಎರಡು ಅತಿಗಳು, ಇವನ್ನು ನಿರಾಕರಿಸಿ ಒಂದು ಮಧ್ಯಮ ಮಾರ್ಗವನ್ನು ಹುಡುಕುವ ಅವಳ ರೀತಿ ಮರುಜೇವಣಿಯ ಭರವಸೆಯಲ್ಲಿ ಕಾಣುತ್ತದೆ.  ಅಮರಿಕಾ ಎಂಬ ಸ್ವರ್ಗ, ಇರಾಕೆಂಬ ನರಕಗಳನ್ನು ಕಾಣುವ ಸಮಕಾಲೀನ ಪ್ರಪಂಚಕ್ಕು ಮಧ್ಯಮ ಮಾರ್ಗದ ಅವಶ್ಯಕತೆಯಿದೆ ಎಂಬುದು ಕವಿ ಜೋಗಿತ್ವದ ನೆಲೆಯಲ್ಲಿ ಸೂಚಿಸುವ ಪರಿಹಾರ ಮಾರ್ಗ.

ಜೋಗಿತ್ವದ ಅರಿವು ವಿಕಾಸಗೊಂಡಂತೆಲ್ಲ `ಮರೆಮಾಚಿದ' ಬದುಕಿನ ಆವರಣಗಳು ಸರಿಸಿ ನೋಡುವ ದೃಷ್ಟಿ ಬಲವಾಗುತ್ತದೆ.  ಸಾರ್ವಜನಿಕ ಬದುಕಿಗೆ ಸಂಪರ್ಕಕೊಂಡಿಯಾದ ಮಾತು ನಿಜವಲ್ಲದೆ ಸೂತಕವೆನಿಸುವುದು, ಜೀವಪಾತಕವೆನಿಸುವುದು ಇಲ್ಲಿನ ಕವಿತೆಗಳು ಬಿಚ್ಚಿಡುವ ಅಂಶ.  `ಸೊಲ್ಲುಫಲವಾಗಿ' ಎಂಬ ಕನವರಿಕೆಯಲ್ಲಿರುವ ಅವು ನಡೆನುಡಿಯ ಪಾರದರ್ಶಕತೆಯನ್ನು ಎತ್ತಿಹಿಡಿಯುತ್ತವೆ.  `ನೆತ್ತರ ಪಾತಕದಲ್ಲಿ ಉರಿಯುವ ನೆಲ', `ಮನೆಯೆಂಬೋ ಮನೆ ಮಸಣವಾಟಿಯಾಗುವುದು ಮಾತಿನ ಸೂತಕದ ಫಲಗಳೆಂಬುದು `ನುಡಿ ಜ್ಯೋರ್ತಿಲಿಂಗ' ಎಂಬ ತಾತ್ವಿಕ ತಿಳಿವಳಿಕೆಯಿಂದ ಕಂಡುಕೊಂಡ ಸತ್ಯ.  ಇದು ಜೋಗಿತ್ವದ ತಿಳುವಳಿಕೆಯ ಮಾದರಿ.

ಜೋಗಿತ್ವದ ಇನ್ನೊಂದು ಮುಖ್ಯ ಕಾಣ್ಕೆ ಎಂದರೆ ನಾನು ಎಂಬ ಅಹಂಕಾರವನ್ನು ಕಳೆದುಕೊಳ್ಳುವುದು.  ಸಮಷ್ಟಿಯಲ್ಲಿ ಬಿಂದುವಾಗಿ ಸೇರುವುದು.  ಇದೊಂದು ಅನುಭಾವದ ದರ್ಶನವಷ್ಟೇ ಅಲ್ಲದೆ, ಸಮುದಾಯದ ಬದುಕಿನ ಮೂಲಾಧಾರ ತಿಳುವಳಿಕೆಯೂ ಆಗಿದೆ.  ಇದನ್ನು ಕವಿ `ನನ್ನದೆನ್ನುವ ಸೊಲ್ಲು ಕರಕರಗಿ ಕರ್ಪೂರ' ಎಂಬ ಮಾತುಗಳ ಮೂಲಕ ವ್ಯಕ್ತಪಡಿಸುತ್ತಾರೆ.  ಸಮುದಾಯದ ಬದುಕಿಗೆ ಕನಸುವುದಾದರೆ ಜೋಗಿತ್ವದ ಅರಿವು ತಂದುಕೊಡುವ ಅಹಂಕಾರ ನಿರಸನದ ತತ್ವವು ಅಗತ್ಯ ಎಂಬುದನ್ನು ಧ್ವನಿಸುವುದರಿಂದಲೇ ಇಲ್ಲಿನ ಕವಿತೆಗಳು ರೈತರನ್ನು ಜೋಗಿಗಳನ್ನು ಒಟ್ಟು ದೃಷ್ಟಿಯಲ್ಲಿ ನೋಡಲು ಬಯಸುವುದು.  ಇದನ್ನೇ ಕವಿ ಅರಿವಿನಕ್ಕರದಲಿ ಊರಿನೊಕ್ಕಲ ಗೆಲುವು' ಎನ್ನುವುದು;  ಇದನ್ನೇ ಅವರು `ಗುರುವು ಹಚ್ಚಿದ ಅರಿವು' ಎನ್ನುವುದು.  ಹಳೆಯ ಹೊನ್ನನ್ನು ಪುಟಕ್ಕಿಟ್ಟು ಮತ್ತೆ ಬಳಸುವಂತೆ ದೇಸಿಯ ಅರಿವಿನ ಮಾರ್ಗಗಳನ್ನು ಕವಿ ಯಾವ ಕಾರಣಕ್ಕೂ ಅಪ್ರಸ್ತುತ ಎಂದು ಭಾವಿಸುವುದಿಲ್ಲ.  ಅದನ್ನು ತಾತ್ವಿಕವಾಗಿ ಹೇಗೆ ಪ್ರಸ್ತುತಗೊಳಿಸಬಹುದೆಂದು ಚಿಂತಿಸುತ್ತಾರೆ.  ಹೀಗೆ ಸಿದ್ಧರಾಮಯ್ಯನವರ ಕಾವ್ಯ ಅರಿವಿನ ಮಾರ್ಗದಲ್ಲಿ ಬಂದು ನಿಲ್ಲುವುದು, ತಾತ್ವಕವಾಗಿ ನೆಲೆಮುಟ್ಟುವುದು ಅದಕ್ಕೆ ಸಂದ ಜಯ.  ಆದರೆ ಇದೇ ಸಂದರ್ಭದಲ್ಲಿ ಅವರ ತಾತ್ವಿಕ ನಿಲುವನ್ನು ಪ್ರಶ್ನಿಸುವ ಅವಕಾಶಗಳು ಇದ್ದೇ ಇವೆ.  ಈ ಲೇಖನದ ಮೊದಲ ಭಾಗದಲ್ಲಿ ಚರ್ಚಿಸಿದಂತೆ ದೇಸಿಯೆಂಬ ಇರ್ಬಾಯ ಖಡ್ಗದ ಅಲುಗು ಸಿದ್ಧರಾಮಯ್ಯನವರ ಕಾವ್ಯವನ್ನೂ ಮುಟ್ಟದೇ ಇರದು.  ದೇಸಿದಿಬ್ಬ ಸೃಷ್ಟಿಸುವ ಪರಿಹಾರಗಳೆಡೆಯಲ್ಲೇ ಇಣುಕುವ ರಮ್ಯತೆಯ ಛಾಯೆಯು ಕಾಡುತ್ತದೆ.  ಅವರ ಸಮುದಾಯ ಶಕ್ತಿಯ ಭರವಸೆಯ ಬಗ್ಗೆ ಹೇಳುವುದಾದರೆ, ಆ ಆಶಯಗಳು ಒಂದು ಟ್ರೈಬಲ್ ಸಮಾಜವನ್ನೂ, ಅದರ ಸ್ವಯಂಪೂರ್ಣಶಕ್ತಿಯನ್ನು ನಿರ್ದೇಶಿಸಿದಂತೆ ತೋರುತ್ತವೆ ಎಂಬ ಸಂದೇಹ ನನ್ನದು.  ಸಮುದಾಯಗಳ ಶಕ್ತಿ ಛಿದ್ರವಾಗುತ್ತಿರುವ ಆತಂಕ ವ್ಯಕ್ತಪಡಿಸುವ ಅವರ ಕಾವ್ಯವನ್ನು ಓದುತ್ತಿರುವಾಗ ಸಮುದಾಯಗಳ ಶಕ್ತಿಯ ಪ್ರದರ್ಶನವನ್ನು ಮಾಡಿ, ಅಹಂಕಾರದಿಂದ ಸ್ವಾರ್ಥಿಗಳಾಗುತ್ತಿರುವ ಸಮುದಾಯಗಳನ್ನು ಸಮಕಾಲೀನ ಜಗತ್ತಿನಲ್ಲಿ ಕಾಣುತ್ತಿದ್ದೇವೆ ಎಂಬ ವಿಪರ್ಯಾಸದ ಭಾವನೆಗಳು ಮೂಡುತ್ತವೆ.  ಕುಲಮೂಲವನ್ನು ಅರಸುವುದರಲ್ಲಿಯೇ ಒಂದು ರೀತಿಯ ಅನ್ಯತೆಯನ್ನು ಸಾಧಿಸುವ ಸಮುದಾಯಗಳು ತಮ್ಮ ಪರಿಧಿಯಿಂದ ಆಚೆಗೆ ವಿಶಾಲ ದೃಷ್ಟಿಕೋನದಿಂದ ನೋಡುವುದೇ ಇಲ್ಲ ಎಂಬ ಸ್ಥಿತಿ ಉಂಟಾಗಿದೆಯಲ್ಲವೆ?  ಎಂಬುದು ನನ್ನ ಇನ್ನೊಂದು ಸಂದೇಹ.  ಇಂದಿನ ವಸಾಹತೋತ್ತರ ಸಮಾಜಗಳಲ್ಲಿ ಕಾಣುವ ಸಮುದಾಯಗಳ ಶಕ್ತಿ ಪ್ರದರ್ಶನವು ಇನ್ನೊಂದು ಸಮುದಾಯವನ್ನು ಅಳಿಸಿ ಹಾಕುವ ಕ್ರಿಯೆಯಲ್ಲಿ ತೊಡಗಿರುವುದನ್ನು ನಮ್ಮ ಅರಿವಿಗೆ ಬರುತ್ತಿದೆ.  ಹೀಗಿರುವಾಗ ದೇಸಿದಿಬ್ಬವನ್ನು ನೆಚ್ಚಿ ಬದುಕುವ ಬದುಕಿಗೆ ತಮ್ಮದೇ ಆದ ಅಗ್ನಿ ಪರೀಕ್ಷೆಗಳಿವೆ.  ಒಂದು ರೀತಿಯಲ್ಲಿ `ಕಾಯಮಾಯದ ಹಾಡು' - ಸಂಕಲನವು ಸಮಕಾಲೀನ ರಾಜಕೀಯ, ಸಾಮಾಜಿಕ ಸ್ಥಿತ್ಯಂತರಗಳ ತಲ್ಲಣಗಳನ್ನು ಕಂಡು ತೀವ್ರವಾಗಿ ಪ್ರತಿಕ್ರಿಯಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿದೆ.  ಒಳಬಂಡಾಯದ ದನಿಗಳಿಂದ ಪರ್‍ಯಾಯ ಸಾಧ್ಯತೆಗಳನ್ನು ಸೂಚಿಸುತ್ತ, ಜೀವಪರ ನಿಲುವನ್ನು ಹೊಂದಿದೆ.  ಇದನ್ನು ನಿಷ್ಠೆಯ ದಾರಿ ಎಂದು ಕರೆಯೋಣ.  ಆದರೆ ಅದನ್ನು ಸಹ ಪ್ರಶ್ನಿಸುವ, ಪುನರ್ವಿಮರ್ಶಿಸುವ ಅವಕಾಶಗಳಿವೆ ಎಂಬುದನ್ನು ಮರೆಯದಿರೋಣ.
        *****
ಕೀಲಿಕರಣ: ಎಂ.ಎನ್.ಎಸ್. ರಾವ್

ರಕ್ಷಕ

-ರವಿ ಕೋಟಾರಗಸ್ತಿ

ಶಿಕ್ಷಕ... ನೀ... ರಕ್ಷಕ
ಭವ್ಯ ಭಾರತದ...
ಅರಳುವ ಕುಡಿಗಳ ಆರಾಧಕ

ನಿನ್ನ ರಕ್ಷೆಯಲಿ
ಮಕ್ಕಳು ಅರಿತು ಬೆರೆತು
ವಿದ್ಯೆಯ ಕಲಿತು ನುರಿತರೆ
ಬೆಳೆಯುವದು ಬಾನೆತ್ತರಕೆ...

ಪ್ರೀತಿ ವಾತ್ಸಲ್ಯ
ಮಕ್ಕಳೊಡನೆ ಹಂಚಿಕೊಳ್ಳುತ
ನೀರುಣಿಸಿ ಪೋಷಿಸುವ...
ಕುಶಲ ಕಲೆಯ ತೋಟಿಗ ನೀನು

ಶಾಂತಿ ಸಮತೆ ಮಂತ್ರ ಹೇಳುವ
ಸೌಹಾರ್ದತೆಯ ಸೌಮ್ಯಮೂರ್ತಿ
ಅನಕ್ಷರತೆಯನು ಆಳಕ್ಕೆ ಅಟ್ಟಿ
ಅಕ್ಷರಗಳ ಸಾಕ್ಷಾರಗೊಳಿಸುವ
ಸಾಕಾರಮೂರ್ತಿ ಚತುರಶಿಲ್ಪಿ ನೀನು

         ***

ಕೀಲಿಕರಣ: ಕಿಶೋರ್‍ ಚಂದ್ರ

ಸೆಪ್ಟೆಂಬರ್ ತಿಂಗಳಿನ ಹುಡುಗಿಯರು

- ಮಂಜುನಾಥ ವಿ ಎಂ

ಮಧ್ಯಾಹ್ನ ಬಿಯರ್ ಕುಡಿದದ್ದು ತಲೆ ಸುತ್ತುತ್ತಿದೆ;
ಈಗ ನನ್ನೊಂದಿಗಿಲ್ಲದ, ಮಠಕ್ಕೆ ಓದಲು ಬರುವ
ಅವರ ನೆನಪು ಜೀವ ಹಿಂಡುತ್ತಿದೆ.

ಹೆಣ ತಿನ್ನುವ ರಾತ್ರೆಯ ಹುಳುಗಳು ಸುಳಿದಾಡಲಾರಂಭಿಸಿವೆ.

ಅವರ ಮುಗ್ಧತೆ, ಸೆಡವು, ಕುಗ್ರಾಮದ ಲಾವಣಿಗಳು-
ಒಂದರಿಂದೊಂದು ಹಳಸಲಾರಂಭಿಸಿವೆ.

ಪ್ರೇಮದಿಂದೊದಗುವ ಚುಂಬನ, ಆಲಿಂಗನದೂರದ
ಬೆಟ್ಟದಂತೆ ಅವರ ಮನಸ್ಸಿನಾಳದಲ್ಲಿ ಹುದುಗಿಕೊಂಡಿದೆ.

ನಾನು ಎಚ್ಚರ ತಪ್ಪುವುದು ನನಗೆ ಗೊತ್ತಾಗುತ್ತಿದೆ, ಕ್ಷಮಿಸಿ.

        *****

ಗಣೇಶ ಸಂಘ (ಸಂ.ರಂ)

- ಪಟ್ಟಾಭಿ ಏ ಕೆ

ಮಧ್ಯಾಹ್ನ ಎರಡು ಘಂಟೆಗೆ ಐದು ನಿಮಿಷ ಬಾಕಿ ಇತ್ತು.  ನ್ಯೂಸ್ ಕೇಳೋಣವೆಂದು ಟಿ.ವಿ.  ತಿರುಗಿಸಿದೆ.  ಕಾಲಿಂಗ್ ಬೆಲ್ ಬಾರಿಸಿತು.  ಇದೊಂದು `ನ್ಯೂಸೆನ್ಸ್' ಆಯಿತಲ್ಲಾ ಎಂದುಕೊಂಡು ಬಾಗಿಲು ತೆರೆದೆ.  ಐದಾರು ಹುಡುಗರು ನಾಯಿ ನಮ್ಮ ಮನೆಯಲ್ಲಿ ಇಲ್ಲವೆಂಬುದನ್ನು ಖಾತ್ರಿ ಮಾಡಿಕೊಂಡು, "ಅಂಕಲ್, ನಾವು ಪ್ರತಿವರ್ಷದಂತೆ ಈ ಸಲವೂ ಗಣೇಶನನ್ನು ನಮ್ಮ ಬಡಾವಣೆಯ ಪಾರ್‍ಕಿನಲ್ಲಿ ಕೂರಿಸುತ್ತಿದ್ದೇವೆ.  ನೀವು ಏನಾದರೂ ಸಹಾಯ ಮಾಡಬೇಕು" ಒಬ್ಬ ವಿನಂತಿಸಿಕೊಂಡ.  ಮತ್ತೊಬ್ಬ ಪ್ಯಾಂಪ್ಲೆಟ್ ಕೈಗೆ ತುರುಕಿದ.  ನಾನು ಪಟ್ಟಿಯನ್ನು ಹಾಗೆಯೇ ಗಮನಿಸುತಾ "ಇದೇನ್ರಯ್ಯಾ, ಗಣೇಶ ಸಂಘ (ಸಂ.ರಂ.)' ಎಂದು ಪ್ರಿಂಟ್ ಮಾಡಿಸಿದ್ದೀರಿ.  ಇದು ಯಾವ ಸಂಘ?  ಮಾಮೂಲು ಇಡುತ್ತಿರುವವರು ನೀವೇ ತಾನೇ?  ಏಕೆಂದರೆ ಈ ಹಬ್ಬದ ಸೀಸನ್‌ನಲ್ಲಿ ಮೂರು ನಾಲ್ಕು ಗುಂಪುಗಳು ಬಂದು ನಮಗೆ ಚಂದಾ ಕೊಡಿ ನಮಗೆ ಚಂದಾ ಕೊಡಿ ಎಂದು ಪೀಡಿಸುತ್ತಾರೆ.  ಯಾರು ಸಾಚಾ, ಯಾರೂ ನೀಚಾ ಒಂದು ತಿಳಿಯುವುದಿಲ್ಲ.  ಅದೂ ಅಲ್ಲದೆ ಗಣೇಶ ಸಂಘ (ಸಂ.ರಂ) ಎಂಬುದನ್ನು ಈಗಲೇ ನಾನು ಕೇಳುತ್ತಿರುವುದು", ಎಂದೆ.  ಗುಂಪಿನ ನಾಯಕ ಮಾತಿಗೆ ಶುರುಮಾಡಿದ:  "ನಿಜ, ಅಂಕಲ್ ನೀವು ಹೇಳೋದು, ಬೀದಿ ಬೀದಿಗೂ ಒಂದೊಂದು ಗಣೇಶ ಸಂಘ ಪ್ರತಿ ಸಲವೂ ಇರುತ್ತಿದ್ದವು.  ಈ ಸಲ ಎಲ್ಲಾ ಸೇರಿ ಸಂಯುಕ್ತ ರಂಗವನ್ನು ರಚಿಸಿಕೊಂಡಿದ್ದೇವೆ".  "ಅಂದರೆ ಕೇಂದ್ರ ಸರ್‍ಕಾರದಲ್ಲಿರುವಂತೆ ಹತ್ತಾರು ರಾಜಕೀಯ ಪಕ್ಷಗಳು ಒಗ್ಗೂಡಿ ಸಂಯುಕ್ತರಂಗವನ್ನು ರಚಿಸಿರುವ ಮಾದರಿಯಲ್ಲಿ ಮಾಡಿಕೊಂಡಿದ್ದೀರಿ ಅಲ್ಲವೇ?"  ನಾನು ಕೇಳಿದೆ.  ಎಲ್ಲರೂ ಒಟ್ಟಾಗಿ "ನೀವು ಹೇಳಿದ್ದು, ಸೆಂಟ್ ಪರ್‌ಸೆಂಟ್ ಕರೆಕ್ಟ್ ಅಂಕಲ್.  ಈ ನಮ್ಮ ಬಡಾಣೆಯಲ್ಲಿ ಎರಡೇ ಸಂಘಗಳು ಗಣೇಶನನ್ನು ಕೂರಿಸಿವುದು.  ಬೇರೆಯ ಸಂಘ ವಿರೋಧ ಪಕ್ಷದವರದು.  ಅಂದರೆ ನಮ್ಮ ಸಂಘಕ್ಕೆ ಸೇರದೇ ಇರುವವರು.  ಅವರೇ ಪ್ರತ್ಯೇಕವಾಗಿ ಇಟ್ಟುಕೊಳ್ಳುತ್ತಾರೆ.  ಅವರೂ ಚಂದಾಕ್ಕೆ ನಿಮ್ಮಲ್ಲಿಗೆ ಬಂದರೂ ಬರಬಹುದು.  ಆದರೆ ನಮಗೇ ಕೊಡಿ ಪ್ಲೀಸ್" ಎಂದ ಅವರಲ್ಲಿ ಒಬ್ಬ.  ಕೇಂದ್ರ ಪರಿಸ್ಥಿತಿಯಂತೆಯೇ ಈ ಸಂಘಗಳು ಎಂದು ಅರಿವಾಯಿತು.

"ಅದೆಲ್ಲಾ ಸರಿ ಎರಡು ಸಂಘಗಳು ಇರುವ ಒಂದೇ ಪಾರ್‍ಕಿನಲ್ಲಿ ಹೇಗೆ ಗಣೇಶನನ್ನು ಇಡುತ್ತೀರಾ?"  "ಅದು ಬಹಳ ಸಿಂಪಲ್ ಅಂಕಲ್", ಒಬ್ಬ ನುಡಿದ.  "ಪಾರ್‍ಕಿನಲ್ಲಿ ಅವರು ಪೂರ್ವಕ್ಕೆ ಎದುರಾಗಿ ಗಣೇಶನನ್ನು ಕೂರಿಸಿದರೆ ನಾವು ಪಶ್ಚಿಮಕ್ಕೆ ಎದುರಾಗಿ ಕೂರಿಸುತ್ತೇವೆ" ಮುಂದುವರಿದು ಹೇಳಿದ.  "ಹೌದಪ್ಪಾ, ಇಬ್ಬಿಬ್ಬರು ಮೈಕ್ ಸೆಟ್‌ಗಳನ್ನು ಹಾಕಿದರೆ ನಮ್ಮ ಗತಿ?" ನಾನು ಕೇಳಿದೆ.  "ಹಾಗೇನಿಲ್ಲ;  ಅವರ ಮೈಕೇ ನಮಗೂ ಅಡ್ಜಸ್ಟ್ ಆಗಿ ಬಿಡುತ್ತೆ.  `ಟು ಇನ್ ಒನ್' ಅಷ್ಟೆ.  ಒಂದೇ ಪೆಂಡಾಲ್, ಲೈಟು ವ್ಯವಸ್ಥೆ ಎಲ್ಲಾ ಕಾಮನ್" ಎಂದೆಲ್ಲಾ ಹೇಳುತ್ತಿದ್ದ.

ಈ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ನನ್ನವಳು ದಿಢೀರ್‍ ಎಂದು ಬಂದವಳೇ ನನ್ನ ಕೈಲಿದ್ದ ಪಾಂಪ್ಲೆಟ್ ಕಿತ್ತುಕೊಂಡು ಓದಲು ಶುರು ಮಾಡಿದಳು.  "ಗಣೇಶ ಸಂಘ (ಸಂ.ರಂ) - ಏನ್ರೀ ಇದು ಸಂ.ರಂ.?  ನಿಮಗೆ ಮಾಡಲು ಇನ್ನೇನು ಬದುಕಿಲ್ಲವೆ?  ನಿಮಗೆ ಚಂದಾ ಕೊಡುವುದಿಲ್ಲ ಹೊರಟುಬಿಡಿ" ಎಂದು ಪಕ್ಷದ ಹೈಕಮಾಂಡ್‌ನಂತೆ ಗುಡುಗಿದಳು.  ಕೊನೆಗೆ `ಸಂ.ರಂ' ಅಂದರೆ ಏನು ಎಂದು ವಿವರಿಸಿ ನನ್ನವಳಿಗೆ ನಾನೇ ಹೇಳಬೇಕಾಯಿತು.
         *****

ಕೀಲಿಕರಣ: ಕಿಶೋರ್‍ ಚಂದ್ರ

ಜೀವಯಾನ

- ಗಿರಿಜಾಪತಿ ಎಂ. ಎನ್

ಸುಳಿವ ಗಾಳಿಗೆ
ತಳಿರು ತೂಗಲು
ಹಕ್ಕಿಗೊರಳಲಿ ಇನಿದನಿ......
ಉದಯ ಕಿರಣವು
ಮುದದಿ ಹೊಮ್ಮಲು
ಲತೆಗಳಲ್ಹರಳು ಸುಮದನಿ ಮಣ್ಣನಿ
ಯಾವ ಕೈಗಳು
ಬೆಸೆದ ಮಾಯೆಯೋ
ಲೋಕ ಜೀವಯಾನಕೆ ಮುನ್ನುಡಿ
ಇಂದು ನಿನ್ನೆಗು
ಮುನ್ನ ನಾಳೆಗೂ
ಸಾಗಿ ಬಂದಿದೆ ಜೇನ್ನುಡಿ
ಎಲ್ಲೆ ಮೀರದ ಹೆಜ್ಜೆಗಳಲಿ
ನಿತ್ಯ ಸಾಗುವ ಜೀವನ
ಎಷ್ಟು ಸ್ತುತಿಸಿದರಷ್ಟು ಸಾಲದ
ಸತ್ಯ ಸಗ್ಗವಿದುವೆ ಪಾವನ

        *****

ಕೀಲಿಕರಣ: ಕಿಶೋರ್‍ ಚಂದ್ರ

ಬಾಳು ಕೋಮಲ

- ಡಾ || ರಾಜಪ್ಪ ದಳವಾಯಿ

ಬಾಳು ಕೋಮಲ
ಎಳೆ ಬಾಳೆಯಲೆಯಲ
ಬಾಲೆ ಜೊತೆ ಮಧುರತೆಯಿರೆ
ಹಣ್ಣ ಸವಿ ಮೆದ್ದಂತೆ
ಸಂ - ಬಂಧ ಬಿರಿಯೆ
ದಿಂಡ ರಸಪಾನದಂತೆ
        *****

ನಗೆ ಡಂಗುರ - ೨

- ಪಟ್ಟಾಭಿ ಎ ಕೆ

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  "ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?"
ಶಿಷ್ಯ:  "ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!"

        *****

ಬೆಳ್ಳಿಯ ಬಟ್ಟಲು

- ಅಬ್ಬಾಸ್ ಮೇಲಿನಮನಿ

        - ೧ -
ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ.  ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ.  ಹಗಲು-ರಾತ್ರಿ ವಿಲಿ ವಿಲಿ ಮೊರೆತ.  ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ ಬಾಯಿ ಸೇರುತ್ತಿಲ್ಲ ಕುಟುಂಬದ ವೈದ್ಯರು ಕೊಟ್ಟ ಔಷಧಿ, ಗುಳಿಗೆಗಳನ್ನು ರಮಿಸುತ್ತ, ಸಿಟ್ಟು ಮಾಡಿ, ಒತ್ತಾಯದಿಂದ ಮಗನಿಗೆ ನುಂಗಿಸುವ ಸಬಿನಾ ಒಂದೇ ಸಮನೆ ತಹತಹಿಸುತ್ತಿದ್ದಾಳೆ.  ಹೈದರನ ಜ್ವರ ಔಷಧಿಗೆ ಬಗ್ಗುತ್ತಿಲ್ಲ.  ನಿನ್ನೆ ದವಾಖಾನಗೆ ಹೋದಾಗ ವೈದ್ಯರು ಹುಡುಗನ ರಕ್ತ ಪರೀಕ್ಷಿಸಿಕೊಂಡು ಬರಲು ಹೇಳಿದ್ದರು.  ಇಮಾನಬಿ ಮನೆಯಲ್ಲಿದ್ದ ಪುಡಿಗಾಸುಗಳನ್ನು ಹೊಂದಿಸಿಕೊಂಡು ಹೋಗಿ ಹೈದರನ ರಕ್ತ ಪರೀಕ್ಷಿಸಿಕೊಂಡು ಬಂದಿದ್ದಳು.  "ನನ್ನ ಆನುಮಾನ ನಿಜಾ ಆತು.  ನಿನ್ನ ಮೊಮ್ಮಗ್ಗ ಮಲೇರಿಯಾ.  ಆವನ್ನ ಪಾಟೀಲ ಡಾಕ್ಷರ್ ದವಾಖಾನಿಗೆ ಅಡ್ಮಿಟ್ ಮಾಡಿಸಿರಿ" ಎಂದು ರಿಪೋಟ್೯ ನೋಡಿ ಹೇಳಿದ್ದರು ವೈದ್ಯರು.  ಆದನ್ನು ಕೇಳಿ ಸಬಿನಾ ಥರಗುಟ್ಟಿದ್ದಳು.  ಇಮಾನಬಿಯ ನರನಾಡಿಯಲ್ಲಿನ ರಕ್ತ ನಿಶ್ಚಲಗೊಂಡಂತಾಗಿತ್ತು.

ಗರೀಬಿರಿಗೆ ಖಾಸಗಿ ದವಾಖಾನೆ ಯಂದರೆ ಸುಮ್ಮನೆ ಆದೀತೆ? ಆಲ್ಲಿ ಹಣವೇ ಮಾತಾಡುವುದು.  ಆದನ್ನು ನೆನಪಿಸಿಕೊಂಡೆ ಇಮಾನಬಿ "ಸರಕಾರಿ ದಾವಾಖಾನೆಗೆ ಕರ್ಕೊಂಡು ಹೋಗ್ತೀನಿ ಸಾಹೇಬರ" ಎಂದಿದ್ದಳು.

"ಆಲ್ಲಿಯಾರು ದರಕಾರ ಮಾಡ್ತಾರ ನಿನ್ನ ಮೊಮ್ಮಗನ್ನ?" ವೈದ್ಯರು ಪ್ರಶ್ನಿಸಿದ್ದರು.  ಆವರು ಹೇಳಿದ್ದರಲ್ಲಿ ಸುಳ್ಳು ಇರಲಿಲ್ಲ ಜೀವದ ಮೇಲೆ ಆಸೆ ಇಲ್ಲದವರು ಸರಕಾರಿ ದವಾಖಾನೆಗೆ ಹೋಗಬೇಕು.  ಕಣ್ಣಲ್ಲಿ ರಕ್ತ ಹರಿಸಿದರೂ ಆಲ್ಲಿನ ಶ್ವೇತ ಪಿಶಾಚಿಗಳಿಗೆ ತೊಟ್ಟು ಕರುಣೆ ಹುಟ್ಟುವುದಿಲ್ಲ.  ಒಮ್ಮೆ ಬೆಡ್ ಮೇಲೆ ಮಲಗಿದರೆ ಅವರ ಅದ್ವಾನ ಚಿತ್ರಹಿಂಸೆಗಳಿಂದ ಕಫನ್ (ಶವದ ಮೇಲೆ ಹೊದಿಸುವ ಬಟ್ಟೆ) ಹೊದ್ದುಕೊಳ್ಳಬೇಕು ಎಂಬಂಥ ಸಂಗತಿಗಳನ್ನು ಇಮಾನಬಿ ಕೇಳಿದ್ದಳು.  ಸರಕಾರಿ ದವಾಖಾನೆಯ ಗೊಡವೆ ಬೇಡವೆಂದು ನಿರ್ಧರಿಸಿದ ಆಕೆ ಸಾಹೇಬರ ದೊಡ್ಡ ದವಾಖಾನ್ಯಾಗ ಖರ್ಚು ಎಷ್ಟು ಬರಬಹುದ್ರಿ?" ಎಂದು ಕೇಳಿದ್ದಳು.

"ಹ್ಯಾಂಗ್ ಹೇಳುದು.  ಜಲ್ದಿ ಆರಾಮಾದ್ರ ರೊಕ್ಕ ಕಡ್ಮಿ ಖರ್ಚಾಗಬಹುದು.  ಆದ್ರ ನೀವು ರೊಕ್ಕದ ಚಿಂತಿ ಮಾಡ್ಕೊಂತ ಕುಂತ್ರ ಹುಡ್ಗನ್ನ ಕಳ್ಕೊಂತಿರಿ ಮತ್ತ' ಎಂದು ವೈದ್ಯರು ಎಚ್ಚರಿಸಿ ಕಳಿಸಿದ್ದರು.

ಹೈದರ್ ಒಮ್ಮೆ ಥಂಡಿ ಎನ್ನುವನು.  ಮತ್ತೊಮ್ಮೆ ಮೈಯಲ್ಲಾ ಕಾದ ಹೆಂಚಾಗಿ ನರಳುವನು.  ಹನಿ ನೀರು ಕುಡಿಸಿದರೂ ಹೊಟ್ಟಿಯಿಂದ ಹೊರಗೆ ಬರುವುದು.  ಶಾಂತವಾಗಿ ಮಲಗಿದ್ದಾನೆ ಎಂದುಕೂಳ್ಳುವಷ್ಟರಲ್ಲಿ ಗಬಕ್ಕನೆ ಹೆದರಿಕಯಿಂದ ಎದ್ದುಕುಳಿತುಕೊಳ್ಳುವನು.  ತಾಯಿ- ಮಗಳು ಅವನೆದುರು ದೃಷ್ಟಿ ನೆಟ್ಟು ಕುಳಿತೆ ಇದ್ದರು.  ಅವನ ಬಾಡಿದ ಮುಖ ನೋಡುತ್ತ ಕಳವಳಿಸುವರು.  ವೈದ್ಯರ ಮಾತು ಅವರ ಎದೆಯ ಒಳಗೆ ಪ್ರತಿಧ್ವನಿಸುತ್ತಲೇ ಇದ್ದವು.

ಮೊಮ್ಮಗನನ್ನು ದವಾಖಾನೆಗೆ ಸೇರಿಸಲೇಬೇಕು.  ಹಣಕ್ಕೇನು ಮಾಡುವುದು? ಇಮಾನಬಿ ಯೋಚಿಸುತ್ತಲೇ ಇದ್ದಳು ಮತ್ತೆ ಧಣಿಯರ ಎದುರು ನಿಂತು ದ್ಯೆನೇಸಿ ಕೈಯೊಡ್ಡಬೇಕು.  ನೇಯ್ಗೆಯೂ ಸಮಯಕ್ಕಿಲ್ಲ.  ಸರಿಯಾಗಿ ಬಾಕಿ ಮುರಿಯಲು ಸಾಧ್ಯವಾಗಿಲ್ಲ.  ಯಾವ ಮುಖವಿಟ್ಟುಕೊಂಡು ಹೋಗಿ ನಿಲ್ಲುವುದು ಧಣಿಯರ ಮುಂದೆ.

ಹೈದರ ಒಮ್ಮಲೆ ಅಳತೊಡಗಿದ.

ಸಬಿನಾ ಅವನ ಹಣೆಯ ಮೇಲೆ ಕೈಯಿಟ್ಟು "ಅಮ್ಮಾ ಮೈಯೊಳಗಿಂದ ಉಗಾ ಬಂದ್ಹಂಗ ಅನಸಾಕ ಹತ್ತೈತಿ.  ದವಾಖಾನೆಗ ಕರ್ಕೊಂಡು ಹೋಗುನ್ನಡಿ" ಎಂದು ಗಡಿಬಿಡಿಸಿದಳು.

"ಹ್ವಾದ ಕೂಡ್ಲೆ ಅಲ್ಲಿ ರೊಕ್ಕಾ ಕೊಡಬೇಕು ಬೇಟಿ.  ಹ್ಯಾಂಗ್ ಮಾಡುದಂತ ವಿಚಾರ ಮಾಕಾಡಲಿಕ ಹತ್ತೀನಿ."
"ನೀ ಹೀಂಗ ಕುಂತ್ರ ನನ್ನ ಬೇಟಾ ಕಬರಸ್ತಾನ (ಸ್ಮಶಾನ) ಸೇರ್ತಾನ" ಸಬಿನಾ, ಸಂಕಟ, ಸಿಟ್ಟು ವ್ಯಕ್ತಪಡಿಸಿದಳು.
"ಧನೇರ ಹತ್ರ ಹೋಗಿ ಕೇಳಾಕ ನನ್ಗ ನಾಚ್ಗಿ ಬರತೈತಿ ಬೇಟಿ" ಹತಾಶೆಯಿತ್ತು ಇಮಾನಬಿಯ ಧ್ವನಿಯಲ್ಲಿ.
"ಅವರ ಹತ್ರ ಯಾಕ್ ಹೋಗ್ತಿ ಆ ಬೆಳ್ಳಿ ಬಟ್ಲ ಐತಲ್ಲ"
"ಅಂದ್ರ...  ಆ ಬೆಳ್ಳಿ ಬಟ್ಲ ಮಾರಂತಿಯೇನು ನೀನು?" ದಿಗಿಲಾಗಿ ಕೇಳಿದಳು ಇಮಾನಬಿ.
"ಮಾರೇರ ಮಾರು ಇರ್ಲಿಕಂದ ಒತ್ತಿಯರ ಇಡು.  ಮೊದ್ಲ ರೊಕ್ಕಾ ತಗೊಂಡು ಬಾ." ನಿಷ್ಟುರವಾಗಿ ಹೇಳಿದಳು ಸಬಿನಾ.
"ಅದರ ಮ್ಯಾಲೆ ಬಿತ್ತೇನು ನಿನ್ನ ಕಣ್ಣು.  ನೀನೂ ಚಲೋ ಆದಿ ಮತ್ತ.." ಮಗಳ ಮಾತನ್ನು ಧಿಕ್ಕರಿಸುತ್ತ ಇಮಾನಬಿ ನಾಗವಂದಿಗೆಯ ಮೇಲೆ ತನ್ನ ನೋಟ ಹರಿಸಿದ್ದಳು.

         - ೨ -

ಆಲ್ಲಿ ಇದ್ದದ್ದು ಒಂದು ಹಳೆಯ ಟ್ರಂಕು.  ಅದನ್ನು ಅವಳ ಅಬ್ಬಾ ಗುಲಬರ್ಗಾ ಬಂದೇನವಾಜ್ ಉರುಸಿಗೆ (ಜಾತ್ರೆ) ಹೋದಾಗ ತಂದಿದ್ದ.  ಮತ್ತು ಅದನ್ನ ಅವಳ ನಿಕಾಹ್
(ಮದುವೆ)ಯಲ್ಲಿ ಜೀಜಿ (ವಧುವಿನೊಂದಿಗೆ ಕಳುಹಿಸುವ ಪಾತ್ರೆ ಸಾಮಾನುಗಳು)ನ ಸಾಮಾನುಗಳೊಂದಿಗೆ ಕೊಟ್ಟಿದ್ದ ದಪ್ಪ ತಗಡಿನ, ಹಸಿರು ಬಣ್ಣದ, ಹೂಬಳ್ಳಿಗಳಿಂದ ಚಂದವೆನಿಸಿದ ಆ ಟ್ರಂಕಿನಲ್ಲಿ ಅವಳ ಎರಡು ಇಲಕಲ್ಲ ಸೀರೆ, ಗುಳೇದಗುದ್ದದ ಬಣ್ಣದ ಕುಪ್ಪಸಗಳಿದ್ದವು.  ಈದ್ ಸಮಯದಲ್ಲಿ ಇಮಾನಬಿ ಹೀಗೆ ಉಟ್ಟು ಹೀಗೆ ಇಡುವ ಕಾರಣದಿಂದ ಸೀರೆಯ ಮಡಿಕೆ ಕೆಡದಂತಿದ್ದವು.  ಆ ಮಡಿಕೆಗಳಲ್ಲಿ ಜೋಪಾನವಾಗಿ ಇರುವುದೇ ಬೆಳ್ಳಿಯ ಬಟ್ಟಲು.  ಖಾದರಖಾನ್‍ಗೆ ಅದು ನಜರಾನಾ (ಕಾಣಿಕೆ) ರೂಪದಲ್ಲಿ ಸಿಕ್ಕಿದ್ದು ಅವನು ಒಳ್ಳೆಯ ಹಾಡುಗಾರ.  ಉರುಸುಗಳ ಬೈಠಕ್‍ನಲ್ಲಿ ಪಾಲ್ಗೊಳ್ಳುತ್ತಿದ್ದ ಒಂದು ಸಂದರ್ಭದಲ್ಲಿ ಅವನ ಗಾಯನಕ್ಕೆ ತಲೆದೂಗಿ, ಸಂಪ್ರೀತಿಯಿಂದ ಮುರಷಿದ್ (ಧರ್ಮಗುರು)ರೂಬ್ಬರು ಈ ಬಟ್ಟಲನ್ನು ನೀಡಿ ಗೌರವಿಸಿದ್ದರು.  ಈ ಸನ್ಮಾನದಿಂದ ಖಾದರಖಾನ್‍ಗೆ ಅತ್ಯಂತ ಖುಷಿಯೆನಿಸಿತ್ತು.

ಹೈದರಾಬಾದಿನ ನಿಜಾಮನಿಂದಲೋ, ದೆಹಲಿಯ ಬಾದಶಹನೊಬ್ಬನಿಂದಲೋ ಈ ಬೆಳ್ಳಿಯ ಬಟ್ಟಲು ಧರ್ಮ ಗುರುವಿಗೆ ಭಕ್ತಿರೂಪದಲ್ಲಿ‌ಆರ್ಪಿತವಾದುದು ಎಂಬ ಪ್ರತೀತಿಯಿತ್ತು.  ಇಂಥ ವಸ್ತುವಿನ ಮೇಲೆ ವ್ಯಾಮೋಹ ಇಟ್ಟುಕೊಳ್ಳದ ಮುರಷಿದ್‍ರು ಅದನ್ನು ಖಾದರಖಾನಗೆ ನೀಡಿದ್ದರು.  ಬಟ್ಟಲನ್ನು ದೇವರ ಅನುಗ್ರಹವೆಂದು ನಂಬಿದ್ದ ಖಾದರಖಾನ್ ಅದನ್ನು ಉತ್ಸಾಹದಿಂದ ಎಲ್ಲರಿಗೂ ತೋರಿಸಿದ್ದ.

ಅಜಮಾಸು ಇಪ್ಪತ್ತುತೊಲೆಗೂ ಮಿಕ್ಕಿದ ಬೆಳ್ಳಿಯ ಬಟ್ಟಲು ಅತ್ಯಾಕರ್ಷಕವಾಗಿತ್ತು.  ಕೆಲವರು ಆದನ್ನು ಕ್ಕೆಯಲ್ಲಿ ಹಿಡಿದು ಸೂಕ್ಷ್ಮ ನಕ್ಷೆಗಳ ಸೌಂದರ್ಯ ಸವಿದಿದ್ದರು.  ಇನ್ನೂ ಕೆಲವರು ಆ ಬಿಟ್ಟಲು ಬಾದಷಹನಿಗೆ ಸಂಬಂಧಿಸಿದ್ದೆಂದು, ಅದರ ವೈಭವವನ್ನು ತಮಗೆ ಇಷ್ಟವನಿಸಿದಂತೆ ಊಹಿಸಿಕೊಂಡು ಖುಶಿ ಅನುಭವಿಸಿದ್ದರು.  ಮತ್ತೊಂದಿಷ್ಟು ಮಂದಿ ಅದು ಮುರಷಿದ್‍ರ ಹಸ್ತದಿಂದ ಬಂದ ಪುಣ್ಯದ ಸಂಕೇತವೆಂದು ಪರಿಭಾವಿಸಿ ಆ ಬಟ್ಟಲಿಗೆ ದುಡ್ಡು ಹಾಕಿ ಶ್ರದ್ಧಾಭಕ್ತಿ ಪ್ರದರ್ಶಿಸಿದ್ದರು.  ಖಾದರ್ ಖಾನ್ ಆದನ್ನು ಆಚ್ಚರಿಯಿಂದ ಗಮನಿಸಿದ್ದ.  ಆ ದುಡ್ಡು ತಂದು ತಾಯಿಯ ಕೈಗೆ ಕೊಟ್ಟಿದ್ದ.  ಪರವರ್ದಿಗಾರ (ದೇವರು) ಬೆಳ್ಳಿಯ ಬಟ್ಟಲಲ್ಲಿ ಕರಾಮತ್ತು ಇರಿಸಿದ್ದಾನೆಂದು ಆಕೆ ದೃಢವಾಗಿ ನಂಬಿದ್ದರು.  ಆ ಹಣದಿಂದ ಮೊಹರಂ ಹಬ್ಬದಲ್ಲಿ ಹಸೇನ-ಹುಸೇನರಿಗೆ ಕಂದೂರಿ (ದೇವರ ಹೆಸರಲ್ಲಿ ಊಟ ಮಾಡಿಸುವುದು) ಮಾಡಿ ಐದು ಜನ ಫಕೀರರಿಗೆ ಉಣಿಸಿದ್ದಳು.

ಅವಳ ಮರಣಾನಂತರ ಈ ರಿವಾಜು ಖಾದರ್ ಖಾನನಿಂದ ಮುಂದುವರಿದಿತ್ತು.  ಪ್ರತಿವರ್ಷ ಮೊಹರಂ ಆರಂಭದ ಮೊದಲ ಐದು ದಿನಗಳಲ್ಲಿ ಖಾದರ್‌ಖಾನ್ ಬೆಳ್ಳಿ ಬಟ್ಟಲು ತೆಗೆದುಕೂಂಡು ಹಿಂದೂ-ಮುಸ್ಮಿಮರೆಂದು ಭೇದ ಮಾಡದೆ ಕೆಲವು ಮನೆಗಳಿಗೆ ಹೋಗುತ್ತಿದ್ದ.  ಸ್ಥಿತಿವಂತರಾಗಿದ್ದ ಆವರಿಗೆ ಬಟ್ಟಲು ತುಂಬ ಚುರಮರಿ, ಬೆಂಡು, ಬತ್ತಾಸು ಕೊಡುತ್ತಿದ್ದ.  ಅವರು ಖುಶಿ ರೂಪದಲ್ಲಿ ಬಟ್ಟಲಿನಲ್ಲಿ‌ಇರಿಸಿದ ಹಣ ತಂದು ಕತ್ತಲ್ ರಾತ್ರಿಯ (ಇಮಾಮ್ ಹುಸೇನರು ಹುತಾತ್ಮಾರಾದ ದಿನ) ದಿನ ಕಂದೂರಿ ಮಾಡಿ, ಮಣ್ಣಿನ ಪರಿಯಾಣದಲ್ಲಿ ಜೋಳದ ಕಿಚಡಿ ಮತ್ತು ಬಿಂದಿಗೆಯಲ್ಲಿ ಶರಬತ್ತನ್ನು ಮಸೀದಿಗೆ ಒಯ್ದು ಹಸೇನ-ಹುಸೇನರಿಗೆ ಫಾತಿಹಾ (ನೈವೇದ್ಯ) ಕೊಟ್ಟು ಬರುವಾಗ ಫಕೀರರನ್ನು ಕರೆದುಕೊಂಡು ಬಂದು ಊಟ ಮಾಡಿಸುತಿದ್ದ. 

ಅಮ್ಮಾ ......  ಅಮ್ಮಾ ....  ಹೈದರನ ಒಣಗಿದ ತುಟಿಗಳು ಸಂಕಟದ ಧ್ವನಿಯಲ್ಲಿ ತೆರೆದುಕೊಳ್ಳುತ್ತಲೇ ಇದ್ದವು.  ಮಗನ ಸುಡುವ ಹಣೆಯ ಮೇಲೆ ತಣ್ಣೀರಿನ ಬಟ್ಟೆಯನ್ನು ಬದಲಾಯಿಸುತ್ತಿದ್ದ ಸಬಿನಾ ತುಮುಲ ಅನುಭವಿಸತೊಡಗಿದಳು.  ಮಗಳ ಮುಖ ನೋಡಿದ ಇಮಾನಬಿಯ ವಿಹ್ವಲತೆ ವರ್ಧಿಸತೊಡಗಿತು.  ಮತ್ತೆ ಅವಳ ಕಣ್ಣು ಟ್ರಂಕಿನ ಮೇಲೆ ಹರಿದಾಡಿತು.  ತಂದೆಯ ನೆನಪು ಕಾಡಿತು ಆಕೆಗೆ.

         - ೩ -

ಖಾದರಖಾನ ಸ್ಥಿತಿವಂತನಾಗಿರಲಿಲ್ಲ.  ಹಿರಿಯರು ಗಳಿಸಿದ ಒಂದು ಮನೆ, ಎರಡು ಮಗ್ಗಗಳು ಅವನ ಪಾಲಿಗಿದ್ದವು.  ಅಮರಪ್ಪ ಧಣಿಯರ ಮನೆಯಿಂದ ರೇಷ್ಮೆ ಚಮಕಾ ತಂದು ಅವನು ಸೀರೆ ನೇಯುತ್ತಿದ್ದ.  ಅವನೆದುರು ಮಗ್ಗದಲ್ಲಿ ಜೈರಾಬಿ ನೇಯುತ್ತಿದ್ದಳು.  ಗಾಯನ, ಸಂಗೀತವೆಂದರೆ ಅವನಿಗೆ ಆದಮ್ಯ ಪ್ರೀತಿ.  ಮಗ್ಗದ ನಾದದೊಳಗೆ ತನ್ನ ಸ್ವರ ಮಾಧುರ್ಯ ಸಂಯೋಜಿಸಿ ಅವನು ತನ್ಮಯವಾಗಿ ಹಾಡುತ್ತಿದ್ದ.  ಸಂತ ಶಿಶುನಾಳ ಶರೀಫ್‌ರ ಆನುಭಾವದ ಗೀತೆ, ದಾಸರಪದ, ಶರಣರ ವಚನಗಳನ್ನು ಹಾಡುತ್ತಿದ್ದರೆ ಗಲ್ಲಿಯೆಂಬೊಗಲ್ಲಿ ಗಂಧರ್ವಲೋಕವಾಗುತ್ತಿತ್ತು.  ಜಾತ್ರೆ ಉತ್ಸವ, ಉರುಸು ಸಂದರ್ಭಗಳಲ್ಲಿ ಖಾದರಖಾನನ ಗಾಯನ ಇದೆಯೆಂದರೆ ಜನರಿಗೆ ವಿಶೇಷ ಆಸಕ್ತಿ ಅವರ ಉತ್ಸಾಹದಿಂದ ಅರಳಿಕೊಂಡ ಅವನು ಹಸನಾಗಿ ಹಾಡಿ, ಸಮಿತಿಯವರು ಕೊಟ್ಟಷ್ಟು ಹಣ ಮತ್ತು ಮಾನ ಸನ್ಮಾನದೊಂದಿಗೆ ಹಿಂತಿರುಗುತ್ತಿದ್ದ.

ಆಗೆಲ್ಲ ವಿದ್ಯುತ್ ದೀಪಗಳಿರಲಿಲ್ಲ.  ಹೀಗಾಗಿ ಊರ ಪಂಚಾಯಿತಿಯ ಛೇರಮನ್‌ರು ಹೇಳಿಕಳಿಸಿದರೆ ಹೋಗಿ ಸೂರ್ಯ ಮುಳುಗಿದ ತುಸು ಹೊತ್ತಿಗೆ ರಸ್ತೆಯ ದೀಪಗಳನ್ನು ಹಚ್ಚಿ ಬರುತ್ತಿದ್ದ.  ದೀಪ ಹಚ್ಚುವುದೆಂದರೆ ಹಾಡಿನಷ್ಟೇ ಪ್ರೀತಿ ಅವನಿಗೆ.  ಜೈರಾಬಿ ಗಂಡನಿಗೆ ಎಂದಿಗೂ ಬಂಧನಕಾರಿಯೆನಿಸಲಿಲ್ಲ.  ಅವಳ ತೀವ್ರ ಕಾಳಜಿಯಿಂದಾಗಿ ಇಮಾನಬಿ ನಿಕಾಹ್ ಆಗಿತ್ತು.  ಅಳಿಯ ಸಿರಾಜಲಿ ಜೈರಾಬಿಗೆ ದೂರದ ಸಂಬಂಧಿಯೇ ಆಗಿದ್ದ ಒಬ್ಬಳೆ ಮಗಳನ್ನು ಕಣ್ಣೆದುರಿಗೆ ಇಟ್ಟುಕೊಳ್ಳಲೆಂದು ಖಾದರಖಾನ್ ಸಿರಾಜಲಿಯನ್ನು ಮನೆಯ ಅಳಿಯನನ್ನಾಗಿ ಇಟ್ಟುಕೊಂಡಿದ್ದ.  ಮತ್ತು ಮಗನಂತೆ ಕಾಣುತ್ತಿದ್ದ ಸಿರಾಜಲಿಗೆ ನೇಯ್ಗೆ ಕಲಿಸುವ ಆಸೆಯಿತ್ತು ಜೈರಾಬಿಗೆ.  ಆದರೆ ಅವನು ಬಸ್ ಸ್ಟ್ಯಾಂಡಿನಲ್ಲಿ ಹಮಾಲಿ ಮಾಡಿಕೂಂಡಿದ್ದ.  ಇಮಾನಬಿ ಒಂದು ಹೆಣ್ಣು ಮಗುವಿನ ತಾಯಿಯಾದ ಮೇಲೆ ಜೈರಾಬಿ ಕ್ಷಯದ ಬಾಧೆಯಿಂದ ತೀರಿಕೊಂಡಿದ್ದಳು.  ಅವಳಿಲ್ಲದೆ ಪ್ರತಿಯೊಂದು ಕ್ಷಣಗಳು ಖಾದರಖಾನನನ್ನು ಅನಾಥ ಪ್ರಜ್ಞೆಗೀಡು ಮಾಡಿದ್ದವು.  ಇಮಾನಬಿ ಮಗ್ಗದಲ್ಲಿ ಕುಳಿತಿದ್ದಳು.  ತಂದೆಯ ಮೇಲೆ ಸ್ಫುರಿಸಿದ ಅವಳ ಕಾಳಜಿ ನಿಷ್ಪ್ರಯೋಜಕವಾಗಿತು.  ಜೈರಾಬಿಯನ್ನು ಮನಸು ತುಂಬಿಕೊಂಡು ಕುಳಿತಿದ್ದ ಖಾದರ್‌ಖಾನ್ ಹಾಡು ಹೇಳುತ್ತ ಕುಳಿತಿರುವಾಗಲೇ ತನ್ನುಸಿರು ನಿಲ್ಲಿಸಿದ.


         - ೪ -

ಆಘಾತ ಸಹಿಸಿಕೂಂಡಿದ್ದಳು ಇಮಾನಬಿ.

ತನ್ನ ಬಾಬಾನ ನೆನಪು ತೀವ್ರವಾದಾಗಲೆಲ್ಲ ಆಕೆ ಟ್ರಂಕಿನ ಕೀಲಿ ತೆರೆದು ಬೆಳ್ಳಿಯ ಬಟ್ಟಲಿನೊಳಗೆ ಮನಸು ನೆಟ್ಟು ಕುಳಿತುಕೊಳ್ಳುತ್ತಿದ್ದಳು.  ಸಾಯುವ ಮುಂಚಿನ ದಿನ ಖಾದರಖಾನ್ ಮಗಳನ್ನು ಹತ್ತಿರ ಕುಳ್ಳಿರಿಸಿಕೊಂಡು "ಹಿರ್ಯಾರು ಗಳಿಸಿದ ಈ ಮನಿ ಬಿಟ್ಟು, ನಿನ್ನ ಜೀವಕ್ಕ ಮತ್ತೊಂದಾಧಾರ ಮಾಡಾಕ ನನ್ನಿಂದೇನೂ ಸಾಧ್ಯ ಆಗಲಿಲ್ಲ ಬೇಟಿ.  ನನ್ನ ಗರೀಬಿ ನಿನ್ನ ಕೂಡ ಹಂಗ ಉಳಿತು.  ನನ್ನ ಮಾಫ್ (ಕ್ಷಮೆ) ಮಾಡು.  ಈ ಬೆಳ್ಳಿ ಬಟ್ಲಾ ನಿನ್ನ ಹಂತೇಕನ ಇರಲಿ.  ನಿನ್ನ ದಾದಿ ಹರಕಿ ಈಡೇರಿತು.  ಯಾವ ಪ್ರಸಂಗದಾಗೂ ಈ ಬಟ್ಲಾ ಹೊರಗ ಹೋಗಾಕ ಕೊಡಬ್ಯಾಡ" ಎಂದಿದ್ದ.

ಏಕಾ‌ಏಕಿ ಗೋಣನ್ನು ಅತ್ತಿತ್ತ ಹೊರಳಾಡಿಸಿದ ಹೈದರನ ತಲೆಯನ್ನು ತನ್ನ ತೊಡೆಯ ಮೇಲಿಟ್ಟುಕೊಂಡು ನೇವರಿಸತೊಡಗಿದಳು ಸಬಿನಾ.  ಅಮ್ಮಾ...ದಾದಿ....  ಅಮ್ಮಾ....  ದಾದಿ.....  ಎಂದು ತನಗರಿವಿಲ್ಲದಂತೆ ಬಡಬಡಿಸತೊಡಗಿದ ಮೊಮ್ಮಗನ ಕೈಹಿಡಿದುಕೊಂಡಳು ಇಮಾನಬಿ.  "ಸುಡುಗಾಡು ಜ್ವರ.  ಕೂಸಿನ ದೇಹಾನ್ನ ಪಿಶಾಚಿ ಹಂಗ ಹಿಡ್ಕೊಂಡು ಬಿಟ್ಟಿತಲ್ಲ" ಒಳಗೇ ಕಳವಳಿಸಿದಳು ಆಕೆ.

ನೋವಿಗೆ ಸಾವಿಗೆ ಆಯಾಸ ಪಡಬೇಡ
ದೇವ ಗಂಗಾಧರನು ಭಾವದೊಳಿರಲು
............................
ವಸುಧಿಯೊಳ್ ಶಿಶುನಾಳಧೀಶನ ಹಸುಳನೆ
ಕಸಿವಿಸಿ ಹೊಂದುವದು ಹಸನಲ್ಲ ನಿನಗೆ

ಖಾದರಖಾನ್ ನೇಯುತ್ತಿದ್ದ ಮಗ್ಗದ ಕಡೆಯಿಂದ ಅಲೆ ಅಲೆಯಾಗಿ ತೇಲಿ ಬಂದಿತ್ತು ಹಾಡು.  ಇಮಾನಬಿಯ ಮನಸ್ತು ಮತ್ತ ಹಿಂದಿನದನ್ನು ಜ್ಞಾಪಿಸಿಕೊಂಡಿತ್ತು.

         - ೫ -

ಅವತ್ತು ಆಕಾಶದಲ್ಲಿ ಚಂದ್ರ ಕಾಣಿಸಿಕೂಂಡಿದ್ದ.  ಮಸೀದೆಯ ಮುಂದೆ ಕುದಾಲಿ (ಮೊಹರಂ ಹಬ್ಬದ ಮೊದಲನೇ ದಿನ ದೇವರ ಎದುರು ತೋಡುವ ಗುಂಡಿ) ಹಾಕಲಾಗಿತ್ತು.

ಇಮಾನಬಿಯ ಕಣ್ಣು ಒದ್ದೆಯಾಗಿದ್ದವು.  ತನ್ನ ಅಬ್ಬಾ ಇಲ್ಲದ ಮೊದಲ ಮೊಹರಮ್‌ದ ಆ ಕ್ಷಣಗಳಲ್ಲಿ ಆಕೆಯ ಹೃದಯ ಹೆಪ್ಪುಗಟ್ಟಿತ್ತು.  ಅವಳ ಸಂವೇದನೆಗಳಿಗೂ ತನಗೂ ಸಂಬಂಧವಿಲ್ಲದವನಂತಿದ್ದ ಸಿರಾಜಲಿ, ತನ್ನನ್ನು ತಾನೇ ಸಂಬಾಳಿಸಿಕೊಂಡಿದ್ದಳು ಇಮಾನಬಿ.  ಸ್ನಾನಮಾಡಿ ಟ್ರಂಕಿನೊಳಗಿಂದ ಬೆಳ್ಳಿಯ ಬಟ್ಟಲು ತೆಗೆದು, ಅದನ್ನು ಮೀಸಲು ನೀರಿನಿಂದ ತೊಳೆದು, ಗಂಧ ಲೇಪಿಸಿ, ಊದು ಹಾಕಿ ಸಕ್ಕರೆ ಫಾತಿಹಾ ಕೊಟ್ಟದ್ದಳು.  ಖಾದರಖಾನ್ ಒಯ್ಯುತ್ತಿದ್ದ ಒಂದು ಚಿಕ್ಕ ಪಿಸ್ವಿ (ಚೀಲ)ಯಲ್ಲಿ ಚುರುಮರಿ, ಬೆಂಡು-ಬತ್ತಾಸು ತುಂಬಿಕೊಂಡು, ಅದರಲ್ಲಿ ಬಟ್ಟಲು ಹುದುಗಿಸಿಟ್ಟು ಆಕೆ ಹೊಸಿಲು ದಾಟಿದ್ದಳು.

ಅವಳ ಚಟುವಟಿಕೆಗಳನ್ನು ಗಮನಿಸಿದ್ದ ಸಿರಾಜಲಿ ತುಟಿ ಎರಡು ಮಾಡಿರಲಿಲ್ಲ. 

ಕೋಲಾಹಲವಿತ್ತು ಅವನೆದೆಯೊಳಗೆ.  ತನ್ನ ತಂದೆಯ ರೀತಿ-ರಿವಾಜುಗಳನ್ನು ಅನುಸರಿಸುತ್ತಿರುವ ಇಮಾನಬಿಯ ಧೋರಣೆಗಳ ಬಗ್ಗೆ ಅವನಿಗೆ ಸಿಟ್ಟು ಬರತೊಡಗಿತ್ತು.  ಹೆಣ್ಣುಹೆಂಗಸು ಹೀಗೆ ಹೊರಗೆ ಹೋಗಿ, ಮನೆ ಮನೆ ತಿರುಪೆಯೆತ್ತಿತಂದ ಹಣದಿಂದ ಕಂದೂರಿ ಮಾಡುವುದರಿಂದ ಬರುವ ಭಾಗ್ಯವೇನು ? ಎಂದು ಅವನು ತೀವ್ರವಾಗಿ ಚಿಂತಿಸಿದ್ದ.  ಹೋದಲ್ಲೆಲ್ಲ ಇಮಾನಬಿಗೆ ಗೌರವಾದರಗಳು ಪ್ರಾಪ್ತವಾಗಿದ್ದವು.  ಜನರು ಅವಳನ್ನು ಕುಳ್ಳಿರಿಸಿಕೊಂಡು ಪ್ರೀತಿಯಿಂದ ಮಾತಾಡಿಸಿದ್ದರು.  ಖಾದರಖಾನನ ಹೃದಯ ಮತ್ತು ಗಾಯನದ ಬಗ್ಗೆ ಮೆಚ್ಚುಗೆ ನುಡಿದಿದ್ದರು.  ಅವಳಿಂದ ಚುರುಮರಿ, ಬೆಂಡು ಬತ್ತಾಸು ಸ್ವೀಕರಿಸಿ ತಮ್ಮ ಶ್ರದ್ಧೆತೋರಿಸಿದ್ದರು.  ಖಾದರಖಾನ್‌ಗೆ ತಕ್ಕ ಮಗಳೆಂದು ಅವಳನ್ನು ಹೊಗಳಿದ ಕೆಲವರು ಸೀರೆ ಕುಪ್ಪಸದ ಉಡುಗೊರೆ ನೀಡಿದ್ದರು.

ಮನೆಗೆ ಬಂದು ಗಂಡನನ್ನು ಎದುರಿಗೆ ಕುಳ್ಳಿರಿಸಿಕೊಂಡು ಹಣದ ಲೆಕ್ಕ ಮಾಡಿದ್ದಳು ಇಮಾನಬಿ.  ಈ ಸಲ ಹೆಚ್ಚು ಹಣ ಸಿಕ್ಕಿತ್ತು.  ಹತ್ತು ಜನ ಫಕೀರರಿಗೆ ಊಟ ಮಾಡಿಸೋಣ ಎಂದಿದ್ದಳು ಆಕೆ.  ಸಿರಾಜಲಿ ಉದಾಸೀನ ವ್ಯಕ್ತಪಡಿಸಿದ್ದ.  ಇಷ್ಟೊಂದು ಹಣವನ್ನು ಸುಮ್ಮನೆ ಕೊಡುತ್ತಾರೆಯೇ ಜನ ? ಅನುಮಾನ ಕಾಡಿತ್ತು ಅವನಿಗೆ.  ಅದೇ ನೋಟದಲ್ಲಿ ಹೆಂಡತಿಯ ತುಂಬು ಮೈಯನ್ನು ಅವಲೋಕಿಸಿದ್ದ ಅವನು.

ಇಮಾನಬಿಯದು ಪಾಕ್ ಪಾಕಿಜಾ ಮನಸ್ಸು! ತನ್ನ ಬಾಬಾನ ಹರಕೆಯನ್ನು ಪರಿಪಾಲಿಸುವ ನಿಷ್ಟೆಯಿಂದ ಆಕೆ ಕತ್ತಲ್ ರಾತ್ರಿಯ ದಿವಸ ಉಪವಾಸ ಮಾಡಿದ್ದಳು.  ಸಂಜೆಯ ಹೊತ್ತಿಗೆ ಮಗಳು ಮತ್ತು ನೆರೆಮನೆಯವರೊಂದಿಗೆ ಹಸೇನ-ಹುಸೇನರಿಗೆ ಎಡೆ ಕೊಟ್ಟು ಬಂದಿದ್ದಳು.  ಪರಿಯಾಣದಲ್ಲಿನ ತಬರ್ರುಕ್‍ದ (ಪ್ರಸಾದ) ಒಂದು ತುತ್ತು ಬಾಯಲ್ಲಿ ಹಾಕಿಕೊಂಡು ನೀರು ಕುಡಿದಿದ್ದಳು.  ಬಂದ ಫಕೀರರಿಗೆ ಉಣ್ಣಿಸಿ ಬೀಳ್ಕೊಟ್ಟಿದ್ದಳು.  ಗಲ್ಲಿಯ ಜನರಿಗೆ ಶರಬತ್ ಕುಡಿಸಿದ್ದಳು. 

ದೇವರಿಗೆ ಅಲ್ವಿದಾ (ವಿದಾಯ) ಹೇಳಿದ ರಾತ್ರಿ ಚೊಂಗಾ (ಒಂದು ರೀತಿಯ ತಿಂಡಿ) ಮಾಡಿ ಅಕ್ಕ- ಪಕ್ಕದ ಹಿಂದೂಗಳಿಗೆ ಹಂಚಿದ್ದಳು.  ಇದೆಲ್ಲ ಜನ್ನತ್ನಲ್ಲಿರುವ ಖಾದರಖಾನನಿಗೆ ತೃಪ್ತಿ ತಂದಿರಬೇಕು.  ಆದರೆ ಸಿರಾಜಲಿಗೆ ಮಾತ್ರ ಎಳ್ಳಷ್ಟೂ ಹಿಡಿಸಿರಲಿಲ್ಲ.  ಅದರ ಒಳಗುದಿ ಇಮಾನಬಿಗೆ ತಾಕಿರಲಿಲ್ಲ.  ಬೆಳ್ಳಿಯ ಬಟ್ಟಲು ಟ್ರಂಕು ಸೇರಿತ್ತು.  ಸಿರಾಜಲಿಯ ಕುದಿವ ಮನಸ್ಸು ತಣ್ಣಗಾಗಿತ್ತು.

ದಿನಗಳು ಉರುಳಿದ್ದವು.  ಮತ್ತೆ ಬಂದಿತ್ತು ಮೊಹರಮ್.

        - ೬ -
ಮೋಡಗಳ ಮರೆಯಿಂದ ಚಂದ್ರ ನಸುವಾಗಿ ಗೋಚರಿಸಿದ್ದ. 

ಸಿರಾಜಲಿಯ ಎದೆಯೊಳಗೆ ರಾಹುಕೇತು ಸೇರಿಕೊಂಡು ಕತ್ತಲು ಹರಡಿ ಕುಳಿತಿದ್ದರು.

ಇಮಾನಬಿ ನಾಗವಂದಿಗೆಯ ಮೇಲಿನ ಟ್ರಂಕು ಕೆಳಗೆ ಇಳಿಸಿಕೊಂಡು ಬೆಳ್ಳಿಯ ಬಟ್ಟಲನ್ನು ಹೊರಗೆ ತೆಗೆದಿದ್ದಳು.  ಅದೇ ಹೊತ್ತಿಗೆ ಮನೆಯ ಮುಂದೆ ಹಾದು ಹೋದ ಮಾಜಾನ್ (ಮಸೀದಿಯ ಕೆಲಸ ನೋಡುವವ) ಕುದಾಲಿ (ಗುದ್ದಲಿ) ಬಿತ್ತು ಎಂದು ಸಾರುತ್ತ ನಡೆದಿದ್ದ ಇದನ್ನು ಕೇಳಿಸಿಕೊಂಡ ಸಿರಾಜಲಿಯ ಮುಖ ದುಮು ದುಮು ಎಂದಿತ್ತು.  ಕುದಾಲಿ ಬಿದ್ದದ್ದು ಆಶುರಖಾನಾದ ಮುಂದೆಯಲ್ಲ ತನ್ನ ಎದೆಯೊಳಗ ಎನ್ನುವ ಭಾವನೆ ಮೂಡಿ, "ಇಮ್ಮು ಆ ಕಟೋರಾ (ಬಟ್ಟಲು) ಹಿಡ್ಕೊಂಡು ಭಿಕಾರಿ ಹಾಂಗ ಮನಿ ಮನಿ ತಿರುಗಾಡಬ್ಯಾಡ ನೀನು" ಎಂದು ಅಸಹನೆಯನ್ನು ಹೊರಹಾಕಿದ್ದ. 

ಗಂಡನನ್ನು ಅಚ್ಚರಿಯಿಂದ ನೋಡಿದ್ದಳು ಇಮಾನಬಿ.  ಇದೂವರೆಗೂ ಅವನಿಂದ ಇಂಥ ಮಾತುಗಳನ್ನು ಆಕೆ ಕೇಳಿಸಿಕೂಂಡಿರಲಿಲ್ಲ.  "ಇಲ್ಲಿ ತನಕ ನಿನ್ನ ವರ್ತನಾ ಸೈರಿಸಿಕೊಂಡಿನಿ ನಾನು" ಸಿರಾಜಲಿಯ ಧ್ವನಿಯಲ್ಲಿ ಸಿಟ್ಟು, ಅಸಹನೆ ಎರಡೂ ಬೆರೆತಿದ್ದವು.
"ಯಾಕ್ರಿ ಅಂಥದ್ದೇನಾಗೇತಿ?" ಕೇಳಿದ್ದಳಾಕೆ.
"ಹೆಂಗಸ್ಸಾಗಿ ಮಂದಿಮನಿಗೆ ಕಟೋರಾ ಹಿಡ್ಕೊಂಡು ತಿರ್ಕೊಂಡು ಬರುದು ನನ್ಗೆ ಲಾಯಕ್ಕಿಲ್ಲ."
"ಹಿಂದೆ ಈ ಮಾತು ಹೇಳಿಲ್ಲ ನೀವು"
"ನಿಮ್ಮಪ್ಪನ ವಿರುದ್ಧ ಮಾತಾಡ್ತಿ ಅಂತ ತಿಳ್ಕೊಂತಿದ್ದಿ ನೀನು"
"ಈಗ ತಿಳ್ಕೊಳ್ಳಂಗಿಲ್ಲೇನು ನಾನು ?"
"ನಾನೂ ತಿಳೀಲಂತ ಹೇಳಾಕ ಹತ್ತೀನಿ"
"ನಮ್ಮ ಮನಿನ್ ರಿವಾಜು ಬಿಟ್ಟಬಿಡು ಅಂತಿರೇನು ನೀವು ?"
"ಇದು ಕೆಟ್ಟ ರಿವಾಜು"
"ಇದರಾಗ ಬಾಬಾನ ಸ್ವಾರ್ಥ ಇರಲಿಲ್ಲ"
"ಏನಿದ್ರೂ ಅದು ಅವನ ಕಾಲಕ್ಕ ಮುಗೀತು"
"ನಾನು ಬಾಬಾನ ಹರಕಿ ಈಡೇರಿಸುವಾಕಿ"
"ಹಠಾ ಸಾಧಿಸ್ತಿಯೇನ್ ನೀನು?"
"ಹಠಾ ಯಾಕಂತೀರಿ? ಬಾಬಾನ ಮನಸ್ಸಿಗೆ ಸಮಾಧಾನ ತರು ಮಾತು ಹೇಳಿದ್ಯಾ"
"ನನ್ನ ಮಾನಾ ಕಳೀತಿ ನೀನು ?"
"ನನ್ನ ಹತ್ರ ಅಂಥ ಕೆಟ್ಟ ಚಾಳಿ ಏನ್ ಕಂಡ್ರಿ ?"
"ಜನಾ ನನ್ನ ಬೆನ್ನ ಹಿಂದೆ ಆಡಿಕೊಂಡು ನಗ್ತಾರ"
"ಯಾಕಂತ ಅವರನ್ನ ಹಿಡ್ದು ಕೇಳ್ರಲ್ಲ"
"ಮೊದ್ಲ ನೀನು ಈ ಪದ್ಧತಿ ಬಿಡು"
"ಇದು ನನ್ನ ಜೀವದ ಕೂಡ ಹೋಗತೈತಿ"
"ಇವತ್ತಽಽ ಈ ಕಟೋರಾ ಒಯ್ದು ಮಾರಿ ಬರ್ತೀನಿ ನಾನು"
"ಅದನ್ನು ಮುಟ್ಟಾಕ ಕೊಡಂಗಿಲ್ಲ ನಾನು"
"ಕರೋಡ ರೂಪಾಯಿ ಕಿಮ್ಮತ್ತಿಂದು ಐತಲ್ಲ ಅದು ?"
"ಅದರ ಬೆಲೆ ಕಟ್ಟಾಕ ಆಗುದಿಲ್ಲ"
"ಅದಕ್ಕಽಽ ನಿಮ್ಮಪ್ಪ ತಿರ್ಕೊಂಡು ತಿನ್ನಿ‌ಅಂತ ಈ ಬಟ್ಲಾಕೊಟ್ಟಾನ" ಸಿರಾಜಲಿಯ ಮಾತು ಡಬಗಳ್ಳಿಯ ಮುಳ್ಳಿನಂತಿತ್ತು.
"ನಮ್ಮ ಬಾಬಾಗ ಏನೂ ಅನಬ್ಯಾಡ್ರಿ, ನನ್ಗ ಬೇಷ್ ಅನಿಸುದಿಲ್ಲ"
"ದುಗ್ಗಾಣಿ ಮನಿ, ಇದೊಂದು ಚಿಲ್ಲರ ಬಟ್ಲಾ ಕೊಟ್ಟು ಹ್ವಾದಂತ ಅವನ ಮ್ಯಾಲೆ ಪ್ರೀತಿಯೇನ್ ನಿನ್ಗ ?"
"ನಮ್ಮ ಬಾಬಾ ಅಷ್ಟರ ಬಿಟ್ಟು ಹ್ವಾದ ನನ್ನ ಪಾಲಿಗೆ.  ನಿಮ್ಮಿಂದ ಯಾ ಭಾಗ್ಯ ಕಂಡೆ ನಾನು" ಇಮಾನಬಿಯ ಮಾತು ಸಿರಾಜಲಿಯ ಎದೆ ಉರಿಸಿತ್ತು.
"ನಾನು ಪರದೇಶಿ ಸೂಳೇಮಗ, ತುತ್ತು ಕೂಳಿಗೆ ಬಂದು ಬಿದ್ದಾಂವ ಇಲ್ಲಿ" ತನ್ನ ನಸೀಬು ಹಳಿದುಕೂಂಡಿದ್ದ ಅವನು.
"ಬಾಬಾ, ನಿಮ್ಮನ್ನ ಸ್ವಂತ ಮಗನ್ಹಂಗ ನೋಡ್ತಿದ್ರು"
"ಅದಕಽಽ ನನ್ಗೊಂದು ಮಾತು ಹೇಳ್ದ ಈ ಮನೀನ್ನ ನಿನ್ನ ಹೆಸರಿಗೆ ಬರಿಸಿಬಿಟ್ಟ.  ಯಾಕಂದರ ನಾನು ನಿಮ್ಮ ಮನಿ ಚಾಕರಿಗೆ ಇದ್ದವನಲ್ಲ"
"ಅಂಥ ಭಾವನಾ ಬಾಬಾಗ ಇರ್ಲಿಲ್ಲಬಿಡ್ರಿ.  ಈಗರ ಏನಾತು ಈ ಮನೀನ ನಿಮ್ಮ ಹೆಸರಿಗೇ ಮಾಡ್ಕೋರಿ"
"ಅತ್ತೂಕರ್ದೂ ಔತಣ ಹೇಳಿಸಿಕೊಳ್ಳೋ ಜಾತಿ ಅಲ್ಲ ನಮ್ದು.  ನೀನು ಮನಿ ಮಾಲಕಿ; ಎಷ್ಟಿದ್ರೂ ನಾನು ಹೊರಗಿನಂವಾ"
"ನನ್ನ ಮ್ಯಾಲೆ ಇದ್ದಾಂಗ ನಿಮ್ಗ ಈ ಮನಿ ಮೇಲೇನೂ ಹಕ್ಕು ಐತಿ"
"ಇಲ್ಲೆ ನನ್ಮಾತು ನಡಿಯೂದಿಲ್ಲ"
"ಅಂಥದ್ದು ಇಲ್ಲೇನೂ ನಡಿದಿಲ್ಲ"
"ಹಾಂಗರ ನಾನು ಈ ಮನಿಯಾಗ ಇರಬೇಕಂದ್ರ ಆ ಬಟ್ಲಾ ಹಿಡ್ಕೊಂಡು ಹೊರಗ ಹೋಗಬ್ಯಾಡ ನೀನು" ನಿಷ್ಟುರನಾಗಿ ಹೇಳಿದ್ದ ಅವನು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ಅವನ ವರ್ತನೆ ಇಮಾನಬಿಗೆ ವಿಚಿತ್ರ ಅನಿಸತೊಡಗಿತ್ತು.  ಆವನು ಬಾಬಾನ ಮೇಲಿನ ಮತ್ಸರದಿಂದ ಇಂಥ ಮಾತು ಹೇಳುತ್ತಿರುವನೋ ? ಬೆಳ್ಳಿಯ ಬಟ್ಟಲಿನ ಮೇಲೆ ಅವನಿಗೇಕೆ ಈ ಪರಿ ಸಿಟ್ಟು ? ಪ್ರೀತಿ ಅಭಿವ್ಯಕ್ತಿಸುವ, ಒಂದಿನವೂ ಸರಿದು ಕುಳಿತುಕೋ ಎನ್ನದ ಸಿರಾಜಲಿಗೆ ಏಕಾ‌ಏಕಿ ತನ್ನ ಮೇಲೆ ಗುಮಾನಿ ಏಕೆ ಹುಟ್ಟುತು? ತಾನು ಬಟ್ಟಲು ಹಿಡಿದು ಹೋಗುವುದು ವರ್ಷದಲ್ಲಿ ಒಂದು ದಿನ ಮಾತ್ರ.  ಅದು ದೇವರ ಹರಕೆಯ ಸಲುವಾಗಿ.  ಫಕೀರರಿಗೆ ಉಣ್ಣಿಸುವುದು ಪುಣ್ಯದ ಕೆಲಸವಲ್ಲವೆ? ಇದರಲ್ಲಿ ಸಿರಾಜಿಗೆ ಯಾವ ದೋಷ ಕಂಡಿತು? ಅವನು ಮನೆಯಲ್ಲಿ ಇರಬೇಕೆಂದರೆ ತಾನು ಈ ರಿವಾಜು ಬಿಡಬೇಕು ಎನ್ನುತ್ತಾನೆ.  ಹೀಗಾದರೆ ಬಾಬಾನ ಆತ್ಮಕ್ಕೆ ತಳಮಳವಾಗದೇ ಇದ್ದೀತೆ? ಹಾಗಾಗಲು ತಾನು ಅವಕಾಶ ಕೊಡಬಾರದು.  ಅವನು ತನ್ನನ್ನು ಹೆದರಿಸಲು ನೋಡುತ್ತಿದ್ದಾನೆ.  ಹೆಣ್ಣನ್ನು ದಮನಿಸುವುದು ಗಂಡಸರ ಕೆಟ್ಟ ಚಾಳಿ.  ತನ್ನ ಮನಸ್ಸು ಪರಿಶುದ್ಧವಾಗಿಯೇ ಇದೆ ಭಯವೇನು? ಹೀಗೆ ಆಲೋಚಿಸಿದ ಇಮಾನಬಿ "ನಾಳೆ ನಾನು ಬಟ್ಟಲು ಹಿಡ್ಕೊಂಡು ಹೋಗ್ತೀನಿ" ಎಂದಿದ್ದಳು.  ರಪ್ಪನೆ ಮುಖದ ಮೇಲೆ ಹೊಡೆತ ಬಿದ್ದಂತೆ ತತ್ತರಿಸಿದ್ದ ಸಿರಾಜಲಿ.  ಅವನ ರಕ್ತ ಒಮ್ಮೆಲೆ ಕುದ್ದಿತ್ತು.  `ಈ ಬಟ್ಟಲ ಕೂಡ ನೀನು ಸಾಯಿ' ಎಂದು ಬಿರುಗಾಳಿಯಂತೆ ಹೊರಗೆ ಹೋಗಿದ್ದ.

ರಾತ್ರಿಯೆಲ್ಲ ಬಾಗಿಲು ತೆಗೆದು ಕುಳಿತೆ ಇದ್ದಳು ಇಮಾನಬಿ.

ಸಿರಾಜಲಿ ಬರಲಿಲ್ಲ.

ತಲ್ಲಣದ ನಡುವೆಯೂ ಆಕೆ ರಿವಾಜು (ಪದ್ಧತಿ) ಬಿಡಲಿಲ್ಲ.  ಕಂದೂರಿ ಮಾಡಿ ಫಕೀರರಿಗೆ ಉಣ್ಣಿಸಿದ್ದಳು. 

ದೇವರ ಸವಾರಿ ಹೊರಟಿದ್ದವು.

ಊರಿನ ಎಲ್ಲ ಆಶುರಖಾನಾ ( ಪಂಜಾ ಕುಳಿತುಕೊಳ್ಳುವ ಸ್ಥಳ )ಗಳ ಆಲಮ್ ( ದೇವರು ) ಗಳು ಭೇಟಿ ಮಾಡುವ ಬಜಾರಿನ ಚೌಕದಲ್ಲಿ ಜನಜಾತ್ರೆ.  ಇಮನಬಿ ಮಗಳೊಂದಿಗೆ ಬಂದು ಎತ್ತರದ ಕಟ್ಟೆಯ ಮೇಲೆ ನಿಂತಿದ್ದಳು.  ಅಲ್ಲಿ ಎರಡು ಹೆಜ್ಜೆ ಮೇಳಗಳು ( ಮೊಹರಂದಲ್ಲಿ ಹೆಜ್ಜೆಯಾಡುವ ಗುಂಪುಗಳು ) ಸ್ಪರ್ಧೆಗಿಳಿದಂತೆ ತೋರಿದ್ದವು.  ಜನರ ಕಣ್ಣಲ್ಲಿ ಕುತೂಹಲವಿತ್ತು.  ಮನಸ್ಸಿನಲ್ಲಿ ತುಂಬ ಉತ್ಸಾಹ.  ಹಲಗೆಯ ತಾಳಬದ್ಧ ನಾದಕ್ಕೆ ಸನಾದಿಯ ಸ್ವರ ಮಾಧುರ್ಯಕ್ಕೆ ಸಂಗತ್ಯಗೊಂಡು ಹೆಜ್ಜೆಯಾದುವವರನ್ನು ಹುರುಪುಗೊಳಿಸಿತ್ತು.  ಕುಣಿಯುವ ಜನರನ್ನು ನೋಡುತ್ತಿದ್ದಂತೆ ಇಮಾನಬಿಗೆ ಸಿರಾಜಲಿ ನೆನಪಾಗಿದ್ದ.

ಹೆಜ್ಜೆಯಾಡುವುದರಲ್ಲಿ ಅವನು ನಿಸ್ಸೀಮ.  ತಲೆಗೆ ಹಸಿರು ಪಟ್ಟಿ ಕಟ್ಟಿಸಿಕೊಂಡು, ಕಣ್ಣಿಗೆ ಸುರುಮಾ, ಹಣೆಗೆ ಪಕ್ಕದ ಮಲಕುಗಳಿಗೆ ಸುನೇರಿ ಬಣ್ಣದ ಮುದ್ರೆ ಹಾಕಿಕೊಂಡು, ಪೈಜಾಮ ಎತ್ತಿಕಟ್ಟಿ, ಕೈಯಲ್ಲಿ ದಸ್ತಿ ಹಿಡಿದುಕೊಂಡು ಹೋಯ್ಯಽಽ...  ಎಂದು ಹೆಜ್ಜೆ ಹಾಕುತ್ತಿದ್ದರೆ ಇಮಾನಬಿ ನವಿಲಾಗುತ್ತಿದ್ದಳು.  ಅವನು ಮನೆಗೆ ಬಂದಿದ್ದೆ ತಡ ಆಕೆ ಅವನ ಮೇಲೆ ಲಿಂಬೆಹಣ್ಣು ಇಳಿಸಿ ಒಗೆಯುತ್ತಿದ್ದಳು.  ಉಪ್ಪು ಇಳಿಸಿ ಉರಿಯುವ ಒಲೆಗೆ ಹಾಕುವಳು.  ಕೆಂಡದ ಮೇಲಿನ ಉಪ್ಪು ಚಿಟ್ ಚಿಟ್ ಎಂದರೆ ಕೆಟ್ಟ ನೆದರಾಗಿದೆ ಎನ್ನುವಳು. 
ಸಿರಾಜಲಿ ಆವಳ ಮಾತಿಗ ನಕ್ಕು "ನನ್ಗನಿಂದಽಽ ನೆದರು ಹತ್ತದು" ಎಂದು ರೇಗಿಸುವನು.  "ನಂದು ಒಳ್ಳೆ ನಜರು" ಎಂದು ಆಕಿ ಅವನ ಎದೆಯೊಳಗೆ ಹುದುಗಿಕೊಳ್ಳುತ್ತಿದ್ದಳು. 

ಸಿರಾಜಲಿ ಇಲ್ಲದ ಹೆಜ್ಜೆ ನೋಡಲು ಆಕಗೆ ಕಾತರ ಹುಟ್ಟಿರಲಿಲ್ಲ.

ಮೂರು ದಿನದ ಜಾರತಾ (ಮರಣದ ಮೂರನೆ ದಿನ ಮಾಡುವ ದಿನಕರ್ಮ) ಆದ ಮೇಲೆ ಸಿರಾಜಲಿ ಸೊಲ್ಲಾಪುರ ಸೇರಿಕೂಂಡಿದ್ದರ ವಿಚಾರ ತಿಳಿದಿತ್ತು.  ಇಮಾನಬಿ ಬಿಕ್ಕಿ ಬಿಕ್ಕಿ ಅತ್ತಿದ್ದಳು.  ಬೆಳದ ಮಗಳನ್ನು ನೋಡುತ್ತಿದ್ದಂತೆ ಅವಳ ಕಣ್ಣೀರು ನಿಂತಿತ್ತು.  ಸಿರಾಜಲಿ ಹೊಣೆಗಾರಿಕೆಯನ್ನು ತಪ್ಪಿಸಿಕೂಳ್ಳಲು ಈ ನಾಟಕ ಹೂಡಿದನೆ ? ಯೋಚಿಸುತ್ತ ಹೋದಂತೆ ಆಕೆಗೆ ಗಂಡ ಮೇಲೆ ಸಿಟ್ಟು ಬಂದಿತ್ತು.  ಆದರೆ ರಕ್ತಕುದ್ದರೆ ತನಗೇ ನಷ್ಟ ಎಂದು ಸದೃಢಗೊಂಡಿದ್ದಳು ಇಮಾನಬಿ.  ಪಲಾಯನವಾದ ಗಂಡಸಿಗೆ ಸುಲಭ ; ಹೆಂಗಸಿಗೆ ಅದು ಹೇಗೆ ಸಾಧ್ಯ ? ಎಂದು ಆಕೆ ಮಗ್ಗದಲ್ಲಿಕುಳಿತಿದ್ದಳು.  ನೂಲಿನೆಳೆಗಳನ್ನು ಚೂಕ್ಕವಾಗಿ ನೆಯ್ಯತೊಡಗಿದ್ದಳು.

ಬೆಳ್ಳಿಯ ಬಟ್ಟಲು ಅವಳ ಪುಟ್ಟ ಟ್ರಂಕಿನಲ್ಲಿ ಬೆಚ್ಚಗೆ ಉಳಿದಿತ್ತು.

         - ೭ -

ಮುಂದಿನ ದಿನಗಳಲ್ಲಿ ಕಿವಿ ಸೇರಿದ್ದ ಸುದ್ದೀ ಅವಳ ಮನಸ್ಪನ್ನು ಘಾಸಿಗೊಳಿಸಿತ್ತು.  ಸೊಲ್ಲಾಪೂರ ಸೇರಿಕೊಂಡಿದ್ದ ಸಿರಾಜಲಿ ಹಮಾಲಿ ಮಾಡಿಕೂಂಡು, ಯಾವಳೋ ಒಬ್ಬಳ ಕೂಡ ಅವನ ಕೂಡಾವಳಿ ಆಗಿದೆಯಂದು ಅವನನ್ನು ಮಾತಾಡಿಸಿಕೂಂಡು ಬಂದವರು ಹೇಳಿದ್ದರು.  ಬಟ್ಟಲಿನ ನೆಪದಲ್ಲಿ ಅವನು ತನ್ನನ್ನು ವಂಚಿಸಿದನೆಂದು ಆಕೆ ಮನದಟ್ಟು ಮಾಡಿಕೊಂಡಳು.  ಜಮಾತಿನವರು ಸಿರಾಜಲಿಯನ್ನು ಬೈದುಕೊಂಡು ಇಮಾನಬಿಗೆ ಧೈರ್ಯ ಹೇಳಿದ್ದರು.

ಮಗಳಿಗೆ ನಿಕಾಹ್ ಮಾಡಿಕೂಡುವ ಜವಾಬುದಾರಿಯಿಂದ ಆಕೆ ಮಗ್ಗದ ಕಾಲ್ವಿಡಿ ತುಳಿಯತೂಡಗಿದ್ದಳು.

ಆರಗೊಡವಿನ್ನೇನು ಮಗಳೆ
ಮುನ್ನೋಡಿ ಹಂಜಿ ನೂಲಮ್ಮ
ಜ್ಞಾನವೆಂಬುವಾ ಕದರನು ಇಟ್ಟು
ಮಾನವ ಧರ್ಮದ ಹಂಜಿಯ ಪಿಡಿದು
ಆನುಭವವೆಂಬುವ ಎಳೆಗಳ ತೆಗೆದು
ಅನುವಿಲೆ ಸುಮ್ಮನೆ ನೂಲಮ್ಮ

ಶರೀಫರ ಜೀವತಂತುವನ್ನು ಆಗಾಧವಾಗಿ ಮೀಟುವ ಖಾದರಖಾನನ ಹಾಡು ಇಮಾನಬಿಗೆ ಧೈರ್ಯ ನೀಡತೊಡಗಿತ್ತು.  ಬದುಕನ್ನು ನಾಜೂಕಾಗಿ ನೇಯುತ್ತಿದ್ದವಳ ಕಣ್ಣೀಗೀಗ ಚಸ್ಮಾ ಬಂದಿತ್ತು.  ನೇಯ್ಗೆಯ ಚಕ್ರದ ಹೊರಳಿನಲ್ಲಿ ಆಕೆ ಕಷ್ಟದಿಂದ ಮೊಹರಂನ ರಿವಾಜನ್ನು ನೆರವೇರಿಸಿಕೂಂಡು ಬರುತ್ತಲೇ ಇದ್ದಳು.

ಆದರೆ ಬಟ್ಟಲು ಹಿಡಿದು ಹೋದರೆ ಖುಶಿ ಕೊಡುವವರು ಅವಳಿಗೆ ಮೊದಲಿನಷ್ಟು ಆಸ್ಥೆ ತೋರಿಸುತ್ತಿರಲಿಲ್ಲ.  ಎರಡು ಮನೆಯ ಯಜಮಾನರು ಮೃತರಾಗಿದ್ದರು.  ಮತ್ತೆರಡು ಮನೆಯ ಸಾಹುಕಾರರು ವಯಸ್ಸಿನ ಕಾರಣದಿಂದ ತಮ್ಮ ವ್ಯವಹಾರಗಳನ್ನು ಮಕ್ಕಳಿಗೊಪ್ಪಿಸಿದ್ದರು.  ಕೆಲವು ಕಡೆಗೆ ಇಮಾನಬಿ ಮುಜುಗರ ಅನುಭವಿಸುತ್ತಿದ್ದಳು.  ಆಕಿ ಬಟ್ಟಲಲ್ಲಿ ಬೆಂಡು ಬತ್ತಾಸ ತುಂಬಿ ಕೊಟ್ಟು ಹಣದ ನಿರೀಕ್ಷೆಯಲ್ಲಿ ಕುಳಿತು ಕೊಳ್ಳುತ್ತಿದ್ದಳು.  ಒಬ್ಬರು, "ಇದೊಂದ್ಸಲ ಒಯ್ದು ಬಿಡವ್ವ" ಎಂದರೆ ಮತ್ತೊಬ್ಬರು "ಕಾಲಮಾನ ಸೂಕ್ಷ್ಮ ಆಗ್ಯಾವ ಇಮಾನವ್ವ, ಮಕ್ಕಳು ಕೊಟ್ಟಷ್ಟು ಒಯ್ದು ಬಿಡು" ಎನ್ನುವರು.

ಇಷ್ಟಾದರೂ ಜಹಾಂಗೀರ್ ಕೊಲ್ಲಾಪುರೆ, ಬಾಬಣ್ಣ ದೇಸಾಯಿ ಮೊದಲಿನಂತೆ ಬಟ್ಟಲಿಗೆ ಹಣ ಹಾಕುತ್ತಿದ್ದರು.  ಶೋಕಿ, ಪ್ರತಿಷ್ಟೆಯಲ್ಲಿ ಅವರಿಬ್ಬರೂ ಸಮಾನರು.  ಹಿಂದೊಮ್ಮೆ ಖಾದರಖಾನನಿಂದ ಬೆಳ್ಳಿಯ ಬಟ್ಟಲನ್ನು ಪಡೆದುಕೊಳ್ಳಲು ಅವರಿಬ್ಬರೂ ಪ್ರಯತ್ನಿಸಿದ್ದರು.  "ನನ್ನೆದಿ ಗುಂಡಿಗೀನ ಕೇಳಾಕ ಹತ್ತೀರಿ ನೀವು" ಎಂದು ನಗೆಯಾಡಿ ಬಟ್ಟಲ ಮೇಲಿನ ಅವರ ಆಸೆಯನ್ನು ಛಿದ್ರಗೊಳಿಸಿದ್ದ ಖಾದರಖಾನ್.

ಅವನು ಸತ್ತು ಇಮಾನಬಿ ಬೆಳ್ಳಿಯ ಬಟ್ಟಲು ಹಿಡಿದು ತಮ್ಮಮುಂದೆ ಯಾವಾಗ ನಿಂತಳೋ ಜಹಾಂಗೀರ ಮತ್ತು ಬಾಬಣ್ಣರ ಆಸೆಗಳು ಮತ್ತೆ ಕೊನರಿದ್ದವು.  "ಈ ಬಟ್ಲಾ ಕೊಟ್ರ ಎರಡು ಸಾವಿರ ರೂಪಾಯಿ ಕೊಡ್ತೀನಿ" ಅಂದಿದ್ದ ಜಹಾಂಗೀರ್.  ಅದನ್ನು ಕೇಳಿಸಿ ಕೊಂಡವನಂತೆ ಬಾಬಣ್ಣ ದೇಸಾಯಿ "ಇಂಥ ಬಟ್ಟಲು ನಮ್ಮಂಥವರ ಮನತನದ್ದಾಗಿರಬೇಕು.  ನೀ ಕೇಳಿದಷ್ಟು, ರೊಕ್ಕಾ ಕೂಡ್ತೀನಿ ಕೊಟ್ಟು ಬಿಡು ಇಮಾನವ್ವ" ಎಂದು ಉತ್ತೇಜಿಸಿದ್ದ.  "ಇದು ಗುರುಗಳ ಕಾಣ್ಕಿ, ಇದರಾಗ ನಮ್ಮ ಬಾಬಾನ ಜೀವಾನ ಐತ್ತಿ.  ಹ್ಯಾಂಗ್ ಮಾರಬೇಕ್ರಿ ಧಣೇರ ?" ಎಂದು ನಿಷ್ಟುರವಾಗಿ ತಿರಸ್ಕರಿದ್ದಳು ಇಮಾನಬಿ.

         - ೮ -

ಬಾಬಾಽಽ.....  ಬಾಬಾಽಽ....  ಹೈದರ್ ತನ್ನ ತಂದೆಯನ್ನು ನನಪಿಸಿಕೊಂಡು ನರಳಿದ.  ವಿಹ್ವಲತೆಯ ಕಿಚ್ಚಿನಲ್ಲಿದ್ದರೂ ಸಬಿನಾ "ಆ ಕುರುಸಾಲ್ಯಾನ್ನ ಯಾಕ್ ನೆನಸ್ಕೋತಿಯೋ ಬೇಟಾ ?" ಎಂದು ಅಸಹನೆ ವ್ಯಕ್ತ ಪಡಿಸಿದಳು.  ಅವನೂ ಒಬ್ಬ ತಂದೆ.  ತನ್ನದೇ ರಕ್ತ ಹಂಚಿಕೊಂಡು ಬಂದ ಕೂಸಿಗೆ ಚೂರು ಪ್ರೀತಿ, ವಾತ್ಸಲ್ಯ ದರ್ಶನ ಮಾಡಿಸಲಿಲ್ಲ.  ಕರುಳ ಬಳ್ಳಿಯ ಸಂಬಂಧದ ಗಂಧ ಇಲ್ಲದವನು.  ಜೀವಂತಿದ್ದಾನೋ, ಸತ್ತಿದ್ದಾನೊ....  ಎಂಥ ಹಣೆಬರಹ ಅವನದು! ರೊಟ್ಟಿ-ಚಟ್ನಿ ತಿಂದು ಆರಾಮಿರು ಅಂದರೆ ಶೆಗಣಿ ಹುಳುವಾದ.  ಬದುಕು ಕೊಟ್ಟ ಖುದಾ (ದೇವರು)ನಿಗೂ ವಂಚಿಸುವ ಸ್ಯೆತಾನ (ರಾಕ್ಷಸ) ಎಂದು ಇಮಾನಬಿ ಸ್ವಗತದಲ್ಲಿಯೇ ಬೈದುಕೊಂಡಳು.

ಸಬಿನಾಳ ಶಾದಿಗೆ ಅಮರಪ್ಪ ಧಣಿ ಸಾಲ ಕೊಟ್ಟಿದ್ದರು.

ಆಕೆಯ ಗಂಡ ನಿಜಾಮುದೀನ ಇಲಕಲ್ಲಿನಲ್ಲಿ ಟೇಲರಿಂಗ್ ದಂಧೆ ಮಾಡುತಿದ್ದ.  ಮದುವೆಯಾದ ೬ ತಿಂಗಳಿಗೆ ತನ್ನ ತಾಯಿಯೊಂದಿಗೆ ಜಗಳ ಮಾಡಿಕೂಂಡು ಬಂದು ಅತ್ತೆಯ ಮನೆಯಲ್ಲಿ ಠಿಕಾಣಿ ಹೂಡಿದ್ದ.  ತಾನೂ ಒಬ್ಬಂಟಿ.  ಮಗಳು ಜೊತೆಗಿದ್ದರೆ ಸಂತೋಷವೆಂದು ಅಳಿಯನ ಮೇಲೆ ಕಾಳಜಿ ಸ್ಪುರಿಸಿದ್ದಳು.  ಪರಿಚಯದ ಟೇಲರಿಂಗ್ ಅಂಗಡಿಯಲ್ಲಿ ಅವನ ಹೊಲಿಗೆ ಕೆಲಸಕ್ಕೂ ಅನುಕೂಲ ಮಾಡಿಕೂಟ್ಟಿದ್ದಳು. 

ಸಬಿನಾಳ ಬಸಿರು, ಬಯಕೆ, ಬಾಣಂತನ ಶುರುವಾಗಿ ಮೂರು ಹೊಟ್ಟೆ ಇಳಿದಿದ್ದವು.

ಚಿಂತೆ ಇಲ್ಲದವನು ಸಂತೆಯಲ್ಲಿ ಮೆಲಕಾಡಿಸುವವನಂತಿದ್ದ ನಿಜಾಮುದ್ದೀನ್ ಜಬರ್ದಸ್ತಾಗಿ ಮೂರು ಹೊತ್ತು ಕೂಳು ತಿಂದು, ನಿದ್ದೆಮಾಡಿ ಮೈ ಉಬ್ಬಿಸಿಕೂಂಡಿದ್ದ.  ಮಾಲೀಕನೂಂದಿಗೆ ಮನಸ್ತಾಪ ಮಾಡಿಕೊಂಡು ಹೆಂಡತಿ ಮತ್ತು ಅತ್ತೆಯನ್ನು ಕಾಡಿ ಡಬ್ಬಿ ಆಂಗಡಿಯಲ್ಲಿ ಹಳೆಯದೊಂದು ಹೊಲಿಗೆ ಮಿಷನ್ ಇಟ್ಟುಕೂಂಡಿದ್ದ.  ಹಣ ಬೇಕು ಅನಿಸಿದರೆ ಕುಳಿತು ಬಟ್ಟೆ ಹೊಲಿಯುತ್ತಿದ್ದ.  ಊರು, ಹೋಟೇಲ್, ಸಿನಿಮಾ ಎಂದು ದುಡಿದದ್ದನ್ನೆಲ್ಲ ಹಾಳು ಮಾಡುತಿದ್ದ.

ಸಬಿನಾಳಿಗೆ ನಾಲ್ಕನೆಯ ಗರ್ಭ ನಿಂತಾಗ ಅವನು ಟ್ರಂಕಿನೊಳಗಿನ ಬೆಳ್ಳಿಯ ಬಟ್ಟಲು ಕದ್ದು ಊರು ಬಿಟ್ಟಿದ್ದ.  ಬೀಗ ಮುರಿದ ಟ್ರಂಕು ನೋಡಿ ಇಮಾನಬಿ ದಿಗ್ಭ್ರಮೆಗೊಂಡಿದ್ದಳು.  ಬಸಿರಿಯಾದ ಸಬಿನಾ ತಾಯಿಯ ಅವಸ್ಥೆಯಿಂದ ಮೈಯೆಲ್ಲಾ ನೀರೊಡೆದಿದ್ದಳು.

"ಕಳ್ಳ, ಕೊರಮ ನಮ್ಮ ಮನಿ ನಾಶ ಮಾಡಕ್ಕಽಽ ಬಂದಾನ" ಇಮಾನಬಿ ಅಳಿಯನನ್ನು ವಾಚಾಮಗೋಚರವಾಗಿ ಶಪಿಸಿದ್ದಳು.  ಬೆಳ್ಳಿಯ ಬಟ್ಟಲನ್ನು ಹೊರಗೆ ಹೋಗಲು ಬಿಡಬಾರದು ಎಂದಿದ್ದ ಬಾಬಾ.  ಈಗೇನು ಕುತ್ತು ಬರುವುದೊ ಎಂದು ಕಳವಳಸಿದ್ದಳು.  ಬಟ್ಟಲು ಇಲ್ಲದೆ ತನಗೆ ಜಿಂದಗೀನೆ ಇಲ್ಲ ಎನ್ನುವಂತೆ ಆಕೆ ಅನ್ನ ನೀರು ಬಿಟ್ಟು ಕುಳಿತಿದ್ದಳು.

ಮೂರನೆಯ ದಿನ ಬೆಳಿಗ್ಗೆ ಪತ್ತಾರ ಗಂಗಪ್ಪ ಬಂದು ಬಟ್ಟಲು ತೋರಿಸಿದಾಗಲೇ ಇಮಾನಬಿ ನಿಶ್ಚಿಂತಳಾಗಿದ್ದಳು.  ಈ ಬಟ್ಟಲು ಇಮಾನಬಿಯದು ಎಂದು ಗಂಗಪ್ಪನಿಗೆ ಗೊತ್ತು.  ನಿಜಾಮುದ್ದೀನ ಅವನಿಲ್ಲದ ವೇಳೆಯಲ್ಲಿ ಬಟ್ಟಲು ಮಾರಿ ಅವನ ಮಗನ ಕಡೆಯಿಂದ ನೂರು ರೂಪಾಯಿ ಇಸಿದುಕೂಂಡು ಹೋಗಿದ್ದ.  ಅದರ ಸತ್ಯ ತಿಳಿಯಲು ಗಂಗಪ್ಪ ಬಂದಿದ್ದ.  ಇಮಾನಬಿ ಅರ್ಧದಷ್ಟು ಹಣ ಕೊಟ್ಟು ಇನ್ನರ್ಧ ಹಣವನ್ನು ನಂತರ ಕೊಡುವುದಾಗಿ ಹೇಳಿ ಗಂಗಪ್ಪನಿಂದ ಬಟ್ಟಲು ಪಡೆದುಕೂಂಡು "ನಿನ್ಗ ಆಲ್ಲಾಹ ಒಳ್ಳೇದು ಮಾಡಲಿ !" ಎಂದು ಹಾರೈಸಿದ್ದಳು.  ತಡ ಮಾಡದೆ ಜೋಗೇರ ಹತ್ತಿರ ಹೋಗಿ ಟ್ರಂಕಿನ ಬೀಗವನ್ನು ಸರಿಮಾಡಿಸಿ ಎಂದಿನಂತೆ ಸೀರೆಯ ಮಡಿಕೆಯಲ್ಲಿ ಬಟ್ಟಲು ಇಟ್ಟು ನಿರಾಳತೆ ಅನುಭವಿಸಿದ್ದಳು.

ಸಬಿನಾ ಗಂಡುಮಗುವಿಗೆ ಜನ್ಮಕೊಟ್ಟ ವೇಳೆಯಲ್ಲಿ ನಿಜಾಮುದ್ದೀನ್ ಬಂದಿದ್ದ.  ಇಮಾನಬಿ ಅವನಿಗೆ ಏನೂ ಅನ್ನಲಿಲ್ಲ.  ಅವನೆ ಅತ್ತೂ ಕರೆದು ಮಾಫ್ ಬೇಡಿದ್ದ.  ಇಮಾನಬಿ ಮೊಮ್ಮಗನಿಗೆ ಹೈದರ್ ಎಂದು ನಾಮಕರಣ ಮಾಡಿದ್ದಳು.  ತನ್ನ ಬಾಬಾ ಮತ್ತೆ ಹುಟ್ಟಿ ಬಂದಿದ್ದಾನೆಂದು ನೆಮ್ಮದಿಯನಿಸಿತ್ತು ಆಕೆಗೆ.

ಹುಡುಗ ಬೆಳಯುತ್ತಿದ್ದಂತೆ ನಿಜಾಮುದ್ದೀನ್‍ನ ಹವ್ಯಾಸಗಳು ಆತಿರೇಕವಾಗಿದ್ದವು.  ಈಗವನು ಸಾರಾಯಿ ಕುಡಿದು ಬರಲು ಶುರು ಮಾಡಿದ್ದ.  ಸಬಿನಾಳನ್ನು ಹಣಕ್ಕಾಗಿ ಪೀಡಿಸಿ ಬಡಿಯುತ್ತಿದ್ದ.  ಮನೆಯಲ್ಲಿನ ಸಾಮಾನು ಕದ್ದೊಯ್ದು ಮಾರುತ್ತಿದ್ದ.  ಇಮಾನಬಿ ಅವನ ದಬ್ಬಾಳಿಕೆಗೆ ಪ್ರತಿರೋಧವೊಡ್ಡುತ್ತಿದ್ದಳು.  ದಪ್ಪ ಚರ್ಮದ ಅವನಿಗೆ ನಾಚಿಕೆ, ಮರ್ಯಾದೆಯ ಹಂಗು ಇರಲಿಲ್ಲ.  ಒಮ್ಮೊಮ್ಮೆ ಕಾಲ ಮೇಲೆ ಬಿದ್ದು ಢೋಕಾರಿತನ ಮಾಡುತ್ತಿದ್ದ.  ಕೊನೆಗೊಮ್ಮೆ ಹೊಲಿಗೆ ಮಿಶನ್ ಮತ್ತು ಜನರ ಬಟ್ಟೆಗಳೊಂದಿಗೆ ಅವನು ಊರನ್ನು ಬಿಟ್ಟು ಹೋಗಿದ್ದ.  ತಾಯಿ-ಮಗಳು ಪೀಡೆ ತೊಲಗಿತೆಂದು ನಿರುಮ್ಮಳಾಗಿದ್ದರು. 

ಸಾಲ ಎದೆಯ ಮೇಲಿನ ಬಂಡೆಗಲ್ಲಿನಂತಿದ್ದರೂ ಇಮಾನಬಿ ಮಗ್ಗದಲ್ಲಿ ಕುಳಿತೇ ಇದ್ದಳು.  ಉಪನಾಸ ವನವಾಸದ ಕ್ಷಣಗಳು ಹಗಲು ರಾತ್ರಿಗಳನ್ನು ತ್ರಸ್ತಗೊಳಿಸುತ್ತಿದ್ದರೂ ತನ್ನ ಬದುಕಿನ ಹೋರಾಟದಲ್ಲಿ ಜಿಗುಟತನವನ್ನು ಕಳೆದುಕೊಳ್ಳದಂತಿದ್ದಳು ಆಕೆ.

         - ೯ -

ಹೈದರ್ ದಿಗ್ಗನೆ ಎದ್ದು ಕುಳಿತುಕೊಳ್ಳಲು ನೋಡಿದ.  ಸಬಿನಾ ಅವನ ಬೆನ್ನಿಗೆ ಕೈಯಾಸರೆ ನೀಡಿ "ಏನಾತು ಬೇಟಾ ?" ಎಂದು ಗಾಬರಿಗೊಂಡಳು.  ಮೊಮ್ಮಗನ ನಿಸ್ತೇಜ ಕಣ್ಣು, ಜೋತು ಬಿದ್ದಿರುವ ಮುಖ ಕಂಡು ಇಮಾನಬಿ ಕಂಗಾಲಾದಳು.  "ಸ್ವಲ್ಪ ನೀರರ ಕುಡಿಸು ಕೂಸಿಗೆ" ಎಂದಳು.

"ಗುಟುಕು ನೀರು ಕುಡದ್ರ ಕರುಳು ಹೊರಗ ಬಂದಂಗ ಹೊರಗ ಹಾಕ್ತಾನ.  ಏನ್ಮಾಡ್ಲಿ? ಅದರ ನಸೀಬದಾಗ ಇದ್ದಾಂಗಾಗ್ಲಿ, ಬೇಶರ್ಮ (ನಾಚಿಕೆ ಮರ್ಯಾದೆ ಇಲ್ಲದವನು)ನ ಕೂಡ ಗಂಟ್ಹಾಕಿ ನನ್ನ ಜಿಂದಗೀನ ಹಾಳ್ಮಾಡ್ದಿ.  ಈಗ ಎಂಥ ಹೊತ್ತುಬಂತು ನೋಡು.  ನನ್ನ ಕೂಸಿಗ ದವಾಖಾನಿಗೆ ಕರ್ಕೊಂಡು ಹೋಗಿ ತೋರ್ಸುವ ಗತಿ ಇಲ್ಲಂಗಾತು"
ತನ್ನ ನಸೀಬು ಜರಿದುಕೂಳ್ಳುತ್ತ ಮುಖಮುಖ ಬಡಿದುಕೂಂಡಳು ಸಬಿನಾ.

ಹೈದರ್ ಇದ್ದಕ್ಕಿದ್ದಂತೆ ನಡುಗತೊಡಗಿದ.  ಅವನ ಮೈಯೆಂಬೋ ಮೈ ಬರ್ಫಿನಂತೆ ಜುನುಗತೊಡಗಿತು.  ಇಮಾನಬಿ ದಪ್ಪನೆಯ ಕೌದಿಯನ್ನು ಅವನ ಮೈಮೇಲೆ ಹರಡಿದಳು.  ಹೈದರ್ ಎತ್ತರಕ್ಕೆ ಪುಟಿಯತೊಡಗಿದ.  ಹೆದರಿಕೆಯಿಂದ ತಾಯಿ ಮಗಳು ಅವನ ಕೈಕಾಲು ತಿಕ್ಕತೊಡಗಿದರು. 

ಸ್ವಲ್ಪ ಹೊತ್ತಿಗೆ ತಣ್ಣಗಿನ ಮೈ ಕಾದ ಹೆಂಚಾಯಿತು.  "ಜ್ವರ ಮತ್ತ ಬಂದು" ಸಬಿನಾ ಚಡಪಡಿಸಿದಳು.  ಮಗನ ಒಳಗಿನ ಕೆಂಡ ತನ್ನ ಒಡಲಲ್ಲಿ ಬಿದ್ದು ಸುಡುವಂತೆ "ಯಾ ಆಲ್ಲಾಹ್ ! ಪಾಕ್ ಪರವರ್ಧಿಗಾರ ನನ್ನ ಕೂಸಿನ ಮ್ಯಾಲೆ ಕರುಣಾ ತೋರ್ಸು.  ಜಲ್ದೀನ ಬೆಳಗು ಹರಿಸು ನಾಳೆ ಎಲ್ಲೇರ ನನ್ನ ಜೀವಾ ಒತ್ತಯಿಟ್ಟು ಮಗನ್ನ ದವಾಖಾನಿಗೆ ಸೇರಿಸ್ತೀನಿ.  ಸತ್ತಂದ್ರ ಮಣ್ಣಿಗರ ಇಡ್ತೀನಿ" ಎಂದು ಹಲುಬಿದಳು.

ಮಗಳ ಮಾತು ಇಮಾನಬಿಯ ಎದೆ ಬಗೆಯತೊಡಗಿತು.

ಇಮಾನಬಿ ತೀರ್ಮಾನಕ್ಕೆ ಬರುವ ಹೊತ್ತಿಗೆ ಕತ್ತಲು ಸರಿದಿತ್ತು.  ಜೀವಪ್ರೀತಿಯ ಬೆಳಕು ಅವಳ ಆಂತಃಕರಣವನ್ನು ತುಂಬಿ ನಿಂತಿತ್ತು.  "ಸಬಿನಾ ನೀನು ಹೈದರನನ್ನು ಕರ್ಕೊಂಡು ದವಾಖಾನಿಗೆ ನಡಿ.  ನಾ ಬಾಬಣ್ಣದೇಸಾಯರ ಮನಿಗೆ ಹೋಗಿ ಬರ್ತ್ತೀನಿ" ಎಂದು ನಾಗವಂದಿಗೆಯ ಮೇಲಿಂದ ಟ್ರಂಕು ಇಳಿಸಿ, ಕೀಲಿ ತೆಗೆದು, ಬೆಳ್ಳಿಯ ಬಿಟ್ಟಲನ್ನು ಸೀರೆಯ ಸೆರಗಿನೊಳಗೆ ಮರೆಮಾಡಿಕೂಂಡು ಹೊಸ್ತಿಲು ದಾಟಿದಳು ಇಮಾನಬಿ.  ತೆರೆದ ಬಾಗಿಲಿನಿಂದ ತೂರಿ ಬಂದ ತಂಗಾಳಿ ಸಬಿನಾಳಿಗೆ ಹಿತವೆನಿಸಿತು.
 *****

ಕೀಲಿಕರಣ: ಎಂ. ಎನ್. ಎಸ್. ರಾವ್ 

ಯಾತಕೆ ಬೇಕು ಸಂಸಾರ ಸುಖ

- ಶಿಶುನಾಳ ಶರೀಫ್

ಯಾತಕೆ ಯಾರಿಗೆ ಬೇಕು
ಈ ಸಂಸಾರಸುಖ ಇನ್ನು ಸಾಕು                                                               ||೧||

ನೀ ಸತ್ತು ನಾನಿರಬೇಕು
ನಾನು ನೀನು ಒಂದಾದಮೇಲೆ                                                                ||೨||

ಆನಂದಸ್ಥಲದ ಮಾಲಿಂಗನೋಳ್  ಬೆರಿಯಲಿಬೇಕ
ಇಂತಾದಮೇಲೆ  ಗುರುಗೋವಿಂದನ ಮರಿ  ಶರೀಫನ ಗುರುತು ನಿನಗ್ಯಾಕ    ||೩||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ನಗೆ ಡಂಗುರ - ೧

- ಪಟ್ಟಾಭಿ ಎ ಕೆ

ಅವರು: "ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?"
ಇವರು: "ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ.  ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ.  ಹೊಟೆಲ್ ನಡೆಸುತ್ತಿದ್ದೇನೆ.  ಹಾಗಾಗಿ ಈಗ ನಾನು ಅನ್ನಮಾರಪ್ಪ!".....

        *****

ಪೀಠಿಕೆ

- ಗಿರಿಜಾಪತಿ ಎಂ. ಎನ್

ನಿನಗು ನನಗು ನೆಲ-ಮುಗಿಲಿನಂತರ
ವೆಂದನಲ್ಲನ ಮೊಗದಲಿ.....
ಮೊಗವಿಟ್ಟು ನುಡಿದಳು
ಇನಿದು ದನಿಯಲಿ..
ನಿಜದ ಬದುಕಿದೆ ನೆಲದಲಿ

ಭರದಿ ಸುರಿವಾ ಮಳೆಯಬ್ಬರ
ಸುವ ಕೋಪದುರಿಯ ನೇಸರ.....
ಗೊತ್ತು-ಗುರಿಯು ಇಲ್ಲದಲೆಯೋ.....
ಬೀಸುಗಾಳಿಯ ಬರ್ಬರ
ಎಲ್ಲ ಕಂಡು, ಎಲ್ಲ ಉಂಡು.....
ಬಸಿರ ಜೀವಕೆ ಬಾಳ ಬೆಸೆವಾ.....
ಇಳೆಯೇ ಜೀವಕೆ ಕಂಗಳು.....

ಇಂದು-ನಾಳೆಗೆ ನಾಳೆ-ಮುಂದಕೆ
ಕಣ್ಣ ಕನಸಿನ ಪೀಠಿಕೆ
ಬರುವುದೆಲ್ಲವ ಬರಸೆಳೆದು ಒಪ್ಪುತೆ
ಮಣ್ಣ ಹಾಡಿನ ಚರಣಕೆ
ಎಲ್ಲ ನಮ್ಮದು, ಎಲ್ಲೆ ಮೀರದು
ಉಸಿರುಸಿರ ಹಸಿರನಲಿ
ಸ್ಪುರಿಸೋ ಭಾವಕೆ ಪಥಗಳು.....

        *****

ಕೀಲಿಕರಣ: ಕಿಶೋರ್‍ ಚಂದ್ರ

ನಾನಾ ವಿದ್ಯೆಗಳೆಲ್ಲಾ ಕಲಿಯದೇನರಿಯದಲ್ಲಾ

- ಶಿಶುನಾಳ ಶರೀಫ್
ನಾನಾ  ವಿದ್ಯೆಗಳೆಲ್ಲಾ ಕಲಿಯದೇನರಿಯದಲ್ಲಾ
ನಾ ಸತ್ತು ನೀನಾಗುವದಿನ್ನೆಂದಿಗೆ      ||ಪ||

ನಾ ಬಂದು ನಾನಿನ್ನು ನಾನೇನು ಮಾಡಿದ್ದೆ
ನಾ ಸುಳ್ಳು   ನೀನಾಗುವದಿನ್ನೆಂದಿಗೆ    ||ಅ.ಪ||

ನಾ ಬ್ರಹ್ಮ ನಾ ವಿಷ್ಣು ನಾ ರುದ್ರ ನೆಂಬಂತೆ
ನಾನಾದಳಿಸುವದಿನ್ನೆಂದಿಗೆ  
ನಾ ಧರ್ಮ ನಾ ಕರ್ಮ ನಾ ಪಾಪ
ನಾ ರೂಪ  ಅಳಿಸುವದಿನ್ನೆಂದಿಗೆ       ||೧||

ನಾ ಹುಟ್ಟಿ  ನಾ ಖೊಟ್ಟಿ   ನಾ ಯಟ್ಟಿ
ನಾ ಮುಟ್ಟಮುರಿಸುವದಿನ್ನೆಂದಿಗೆ
ನಾ ಬಿಟ್ಟು ನಾ ಸುಟ್ಟು ನಾ ಶಿಶುನಾಳಧೀಶನ
ನಾ ಹೊಗಿ ಹೊಂದುವದಿನ್ನೆಂದಿಗೆ        ||೨||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ನೀರು ಮಾಯಾ ವಸ್ತುವಲ್ಲ

- ಡಾ || ರಾಜಪ್ಪ ದಳವಾಯಿ

ನೀರೆಂಬುದು ಬಯಸಿದಾಗಲೆಲ್ಲ
ಸಿಗುವ ಮಾಯಾ ವಸ್ತುವಲ್ಲ ||

ಬೇಕಾಬಿಟ್ಟಿ ಬಳಸಿದರೆ
ಕುಡಿಯಲು ನೀರಿರದೆ
ಮಣ್ಣಾಗಿ ಹೋಗುವೆ ಅಣ್ಣಾ ||
    ನೀನು ಮಣ್ಣಾಗಿ ಹೋಗುವೆ ಅಣ್ಣಾ ||

ಭೂ ತಾಯಿಯ ಕೊರೆದು
ಜಲದ ಕಣ್ಣ ಸೆಳೆದು
ಒಣಭೂಮಿ ನೆನದರೇನಣ್ಣಾ ||
    ಕೇಳು ಒಣಭೂಮಿ ನೆನದರೇನಣ್ಣಾ ||

ಮುಗಿಲಿಂದ ಬಂದ ಭಾಗ್ಯ
ಕೂಡಿಡಲಿಲ್ಲ ನೀನು ಯೋಗ್ಯ
ಕೆರೆ ಬಾವಿ ಕಟ್ಟೆಗಳ ಮರೆತೆಯಣ್ಣಾ ||
    ನೀನು ಕೆರೆ ಬಾವಿ ಕಟ್ಟೆಗಳ ಮರೆತೆಯಣ್ಣಾ ||

ಕೈಲಿದ್ದ ಜಲವ
ಜಂಭ ಮಾಡಿ ಕಳೆದೆ
ನೀರಿರದೆ ಹೊಲ ಉತ್ತರೇನಣ್ಣಾ
    ನೀನು ನೀರಿರದೆ ಹೊಲ ಉತ್ತರೇನಣ್ಣಾ ||

ಬಿದ್ದ ಜಲವ ಹಿಂಗಿಸು
ಅದ ಮಿತದಿಂದ ಬಳಸು
ಕೆರೆ ಬಾವಿಕಟ್ಟೆಗಳೆ ಸಂಪತ್ತಣ್ಣಾ ||
    ನಿನಗೆ ಕೆರೆ ಬಾವಿ ಕಟ್ಟೆಗಳೆ ಸಂಪತ್ತಣ್ಣಾ ||

        *****

ಕೀಲಿಕರಣ: ಕಿಶೋರ್‍ ಚಂದ್ರ

ನಿಜವೇ ಇದು ನಿಜವೇ


- ಶಿಶುನಾಳ ಶರೀಫ್

ನಿಜವೇ ಇದು ನಿಜವೇ ನಿಜವಲ್ಲಾ
ಅಜ ಹರಿ ಸುರರಿಗಲ್ಲದ ಮಾತು                           ||ಪ||

ನರಜನ್ಮ ಸ್ಥಿರವೆಂದು ಧರೆಗೆ ಉದಿಸಿಬಂದು
ಸಿರಿಯು ಸಂಪತ್ತು ಸೌಭಾಗ್ಯ  ಲೋಲ್ಯಾಡುವದು    ||೧||

ಅಂಗಲಿಂಗದ ಸಮರಸನರಿಯದೆ
ಮಂಗನ ತೆರದಲ್ಲಿ  ಪೂಜಿಸುವದು                        ||೨||

ವಸುಧಿಯೊಳು ಶಿಶುನಾಳಧೀಶನಲ್ಲದೆ  ಬ್ಯಾರೆ
ತುಸು ಜ್ಞಾನ ಅರಿಯದೆ  ಶಾಸ್ತ್ರಪುರಾಣವು             ||೩||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ಒಂಟಿ ಬ್ಯಾರಿಯೂ ಅವಭೃತ ಉತ್ಸವವೂ

- ಪ್ರಭಾಕರ ಶಿಶಿಲ

ಬಿದಿರ ಮೆಳೆಗಳು ಹೂಬಿಟ್ಟು ಬಿದಿರಕ್ಕಿ ರಾಜಂದರಿಯನ್ನು ಕೊಡಲು ಶುರುಮಾಡಿದ್ದು ಮತ್ತು ಕಪಿಲಳ್ಳಿಯ ಇತಿಹಾಸದ ಪುಟಗಳಲ್ಲಿ ಏಕಮೇವಾದ್ವಿತೀಯನಾದ ಒಂಟಿ ಬ್ಯಾರಿಯ ಹೆಸರು ದಾಖಲಾದದ್ದು ಒಂದೇ ವರ್ಷದ ಅಪೂರ್ವ ಯೋಗಾಯೋಗವೆಂದು ಕಪಿಲಳ್ಳಿಯ ಜನರು ಹೇಳುತ್ತಿರುತ್ತಾರೆ. ಅರುವತ್ತು ವರ್ಷಗಳಿಗೊಮ್ಮೆ ಬಿದಿರ ಮೆಳೆಗಳು ಹೂಬಿಟ್ಟು ರಾಜಂದರಿ ಕೊಟ್ಟು ಒಣಗಿ ನಶಿಸಿಹೋಗುತ್ತವೆ.  ಅದು ಅಪಶಕುನವಾದರೆ ಬೇಕೆಂದರೂ ಒಬ್ಬನೇ ಒಬ್ಬ ಇಸ್ಲಾಮು ಕಾಣಸಿಗದ ಕಪಿಲಳ್ಳಿಗೆ ಒಂಟಿ ಬ್ಯಾರಿಯ ಪ್ರವೇಶವಾದದ್ದು ಶುಭಶಕುನ. ಅಪಶಕುನಕ್ಕೆ ಪ್ರತಿಯಾಗಿ ಶುಭಶಕುನವಾದುದರಿಂದ ಅಲ್ಲಿಗಲ್ಲಿಗೆ ಆದು ಸರಿಯಾಗಿ ಊರಿಗೇನೂ ತೊಂದರೆ ಬಾರದಂತೆ ಆ ಕಪಿಲೇಶ್ವರ ನೋಡಿಕೊಂಡ ಎಂದು ಕಪಿಲಳ್ಳಿಯ ಜನ ಸಮಾಧಾನ ಪಟ್ಟುಕೊಂಡು ನೆಮ್ಮದಿಯಿಂದ ಭೋಜನ, ನಿದ್ರಾ, ಮೈಥುನಾದಿ ಕ್ರಿಯೆಗಳಲ್ಲಿ ಎಂದಿನಂತೆ ತಮ್ಮ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡರು.

ವಾಸ್ತವವಾಗಿ ಕಪಿಲಳ್ಳಿಯ ಪರಿಸ್ಥಿತಿ ತೀರಾ ಹದಗೆಡತೊಡಗಿತ್ತು. ಕಪಿಲಳ್ಳಿಯನ್ನು ಸಮೃದ್ದಗೊಳಿಸುತ್ತಾ ಹರಿಯುವ ತೇಜಸ್ವಿನಿಯ ದಡದುದ್ದಕ್ಕೂ ಇದ್ದ ಭತ್ತದ ಗದ್ದೆಗಳನ್ನು ಅಡಿಕೆ ತೋಟಗಳನ್ನಾಗಿ ಮಾಡಿದ್ದೇ ಊರಲ್ಲಿ ಅಕ್ಕಿ ಸಾಕಷ್ಟು ಸಿಗದ ಪರಿಸ್ಥಿತಿ ಉಂಟಾಯಿತು. ಊಟಕ್ಕೆ ತತ್ವಾರವಾದಾಗ ಬಡ ಶೂದ್ರರು ಮತ್ತು ಆತಿಶೂದ್ರರು ಕಾಡು ನುಗ್ಗಿ ನೆರೆ, ಕುರ್ಡು ಮತ್ತು ಕಾಡಗೆಣಸುಗಳನ್ನು ಅಗೆದು ತಂದು ಬೇಯಿಸಿ ತಿನ್ನತೊಡಗಿದರು. ಅದನ್ನು ಮೂರು ಹೊತ್ತು ತಿಂದವರಿಗೆ ವಾಂತಿ, ಬೇಧಿ ಹತ್ತಿ ಫಜೀತಿಯಾಗಿತ್ತು.  ಅದೇ ಕಾಲಕ್ಕೆ ಘನ ಸರಕಾರವು ಅಂತರ ಜಿಲ್ಲಾ ಆಹಾರ ಸಾಮಾನು ಸಾಗಾಟ ನಿರ್ಬಂಧ ಕಾಯಿದೆ ಜಾರಿ ಮಾಡಿ ಕಪಿಲಳ್ಳಿಯ ಗಾಯದ ಮೇಲೆ ಬರೆ ಎಳೆದುಬಿಟ್ಟಿತು.  ಅದೇ ವರ್ಷ ಕಪಿಲಳ್ಳಿಯಲ್ಲಿ ಬಿದಿರ ಮೆಳೆಗಳು ಹೂಬಿಟ್ಟು ರಾಜಂದರಿ ಕೊಡತೊಡಗಿದ್ದು.  ಆಗಲೇ ಒಂಟಿ ಬ್ಯಾರಿಯು ತನ್ನ ಏಕೈಕ ಮಡದಿ ಉಮ್ಮ ಮತ್ತು ಮೂವರು ಮಕ್ಕಳೊಡನೆ ಕಪಿಲಳ್ಳಿಗೆ ಬಂದು ಖಾಯಮ್ಮಾಗಿ ತಳವೂರಿ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡದ್ದು.

ಅವನದು ಕಪಿಲಳ್ಳಿಯ ಏಕೈಕ ಇಸ್ಲಾಮು ಕುಟು೦ಬವಾದುದರಿಂದ ಊರಿಗೊಂದೇ ಮದ್ದಿನ ಕೊಂಬಿನಂತಿರುವ ಕುಟುಂಬ ಮುಖ್ಯಸ್ಥನ ಶುಭನಾಮಧೇಯವೇನೆಂದು ಕೇಳದೆ ಜನರು ಅವನಿಗೆ ಒಂಟಿ ಬ್ಯಾರಿಯೆಂಬ ರೂಢನಾಮವನ್ನು ಯಾವ ತಕರಾರೂ ಇಲ್ಲದೆ ಅತ್ಯಂತ ಉದಾರತೆಯಿಂದ ದಯಪಾಲಿಸಿ ಬಿಟ್ಟಿದ್ದರು. ಇಸ್ಲಾಮು ಗಂಡಸರಲ್ಲಿ ಕಿವಿ ಚುಚ್ಚುವ ಕ್ರಮ ಇಲ್ಲದಿದ್ದರೂ ಈ ಬ್ಯಾರಿಯ ಎಡ ಕಿವಿಯಲ್ಲಿ ಚಿನ್ನದ ಟಿಕ್ಕಿಯೊಂದು ಕಪಿಲೇಶ್ವರನ ಜಟೆಯ ಮೇಲಣ ಅಷ್ಟಮಿ ಚಂದ್ರನಂತೆ ರಾರಾಜಿಸುತ್ತಿದ್ದುದು ಒಂಟಿ ಬ್ಯಾರಿಯೆಂಬ ಹೆಸರನ್ನು ಅನ್ವರ್ಥ ನಾಮವಾಗಿ ಪರಿವರ್ತಿಸಿಬಿಟ್ಟಿತು.  ಒಂಟಿ ಬ್ಯಾರಿಯ ಸಂಕೋಚ ಸ್ವಭಾವದ ಮಡದಿ ಉಮ್ಮ ಅಡ್ಡ ಕಂಬಾಯಿ ಉಟ್ಟು, ಮುಕ್ಕಾಲು ಕೈಯ ರವಿಕೆ ತೊಟ್ಟು ತಲೆಗೊ೦ದು ಬಟ್ಟೆ ಕಟ್ಟಿ ನಗುನಗುತ್ತಾ ಮಾತಾಡಲು ತೊಡಗಿದ್ದೇ, ಕಪಿಲಳ್ಳಿಯ ನಾರೀಮಣಿಯರು ಒಂಟಿ ಬ್ಯಾರಿಯ ಮಡದಿ ಉಮ್ಮನ ಸ್ನೇಹ ಬೆಳೆಸಿಕೊಂಡು ಬಿಟ್ಟರು.

ಬಂದ ಹೊಸತರಲ್ಲಿ ಒಂಟಿ ಬ್ಯಾರಿಯು ಕಪಿಲಳ್ಳಿಯ ಏಕಮಾತ್ರ ಮುಖ್ಯರಸ್ತೆಯ ಬಳಿಯಲ್ಲೇ ಸರ್ಕಾರಿ ರೆವಿನ್ಯೂ ಹತ್ತು ಸೆಂಟ್ಸ್ ಜಾಗದಲ್ಲಿದ್ದ, ಕಪಿಲಳ್ಳಿ ಜಾತ್ರೆಯಲ್ಲಿ ಗರ್ನಾಲಿಗೆ ಬೆಂಕಿ ಹಚ್ಚಿ ಮೇಲೆಸೆದು ಢಾಂ ಸದ್ದಿನಿಂದ ಎಲ್ಲರನ್ನೂ ಬೆಚ್ಚಿಬೀಳಿಸುವಂತೆ ಮಾಡುತ್ತಿದ್ದ ಗರ್ನಾಲು ರಾಮಣ್ಣನ ಮನೆಯನ್ನು ನಗದು ಹಣ ಕೊಟ್ಟು ಕೊಂಡುಕೊಂಡನು. ಮನೆಯೆದುರು ಬಿದಿರ ಚಪ್ಪರ ಹಾಕಿ, ಅಲ್ಲಲ್ಲಿ ಬಿದಿರ ತಟ್ಟಿ ಅಡ್ಡ ಕಟ್ಟಿ, ಮುಂಭಾಗದ ಬಿದಿರ ಕಂಬವೊಂದಕ್ಕೆ "ಸ್ಟಾರು ಹೋಟೆಲು ಕಪಿಲಳ್ಳಿ" ಎಂಬ ದೊಡ್ಡ ಅಕ್ಷರದ ಬೋರ್ಡು ತಗಲಿಸಿ ಅದರಲ್ಲಿ ಕೆಳಗಡೆ, "ಇಲ್ಲಿ ಬಿಸಿ ಬಿಸಿ ಚಾ-ಕಾಫಿ, ಸೋಜಿ-ಕಲ್ತಪ್ಪ' ದೊರೆಯುತ್ತದೆ ಎಂದು ಬರೆಸಿ ಹಾಕಿದ್ದನು. ಹೀಗೆ ಹೊಸದೊಂದು ಸಂಪ್ರದಾಯಕ್ಕೆ ಕಾರಣನಾದ ಒಂಟಿ ಬ್ಯಾರಿ ಬಗ್ಗೆ, ಈ ವರೆಗೆ ಬೋರ್ಡೇ ಹಾಕದೆ ವ್ಯವಹಾರ ನಡೆಸುತ್ತಿದ್ದ ಇನ್ನುಳಿದ ಎರಡು ಹೋಟೆಲುಗಳವರು "ಅಬ್ಬಾ ಈ ಒಂಟಿ ಬ್ಯಾರಿಯ ಧಿಮಾಕೇ?  ನಾವೇನು ಥ೦ಡಿ ಕಲ್ತಪ್ಪ, ಚಾ-ಕಾಫಿ ಕೊಡುತ್ತಿದ್ದೇವೆಯೇ?" ಎಂದು ಮಾತಾಡುವಂತಾಗಿ ಬಿಟ್ಟಿತು.

ಕಪಿಲಳ್ಳಿ ಜನರಿಗೆ ಕಲ್ತಪ್ಪ ಹೊಸ ತಿಂಡಿಯೇನಲ್ಲ. ಅಕ್ಕಿಯನ್ನು ನೀರಲ್ಲಿ ನೆನೆಹಾಕಿ ಗಟ್ಟಿಯಾಗಿ ರುಬ್ಬಿ ದೊಡ್ಡ ಬಾಣಲೆಯಂತಹ ಚಟ್ಟೆ ಪಾತ್ರೆಯಲ್ಲಿ ಎಣ್ಣೆ ಹಾಕಿ, ನೀರುಳ್ಳಿ, ಹಸಿಮೆಣಸುಗಳ ಹದವಾದ ಒಗ್ಗರಣೆಗೆ ಹಿಟ್ಟುಹಾಕಿ ಕೆಳಗಿನಿಂದ ಧಗಧಗನೆ ಬೆಂಕಿ ಉರಿಸಿ ಪಾತ್ರೆಯ ಮುಚ್ಚಳದ ಮೇಲೆ ನಿಗಿನಿಗಿ ಕೆಂಡ ಹಾಕಿ ಬೇಯಿಸಿದರೆ ಬಾಯಲ್ಲಿ ನೀರೂರುವ ಬಿಸಿ ಬಿಸಿ ಕಲ್ತಪ್ಪ ಸಿದ್ದಗೊಳ್ಳುತ್ತದೆ. ಸ್ಟಾರು ಹೋಟೆಲಲ್ಲಿ ಒಂಟಿ ಬ್ಯಾರಿಯ ಮಡದಿ ಉಮ್ಮ ಮಾಡುವ ಗಮಗಮಿಸುವ ಎಟ್ಟಿ, ಬಲ್ಯಾರು, ನಂಗು ಸಾರಿನೊಡನೆ ಕಲ್ತಪ್ಪ ತಿನ್ನುವುದನ್ನು ಕಪಿಲಳ್ಳಿಯ ಶೂದ್ರರು ಮತ್ತು ಶೂದ್ರಾತಿಶೂದ್ರರು ತಮ್ಮ ದಿನಚರಿಯ ಒಂದು ಅವಿಭಾಜ್ಯ ಅಂಗವನ್ನಾಗಿ ಮಾಡಿಕೊ೦ಡರು. ಗಂಡಂದಿರ ಕಣ್ಣ ತಪ್ಪಿಸಿ ಕೆಲಸದ ಹೆಂಗಸರು ಒಮ್ಮೊಮ್ಮೆ ಸ್ಟಾರು ಹೋಟೆಲಿಗೆ ಬಂದು ಕಲ್ತಪ್ಪ, ಸಾರು ತಿಂದು, ಬಿಸಿ ಬಿಸಿ ಸೋಜಿ ಕುಡಿದು ಉಮ್ಮನೊಡನೆ ಗಂಟೆಗಟ್ಟಲೆ ಮಾತಾಡುತ್ತಿದ್ದರು. ಒಂದು ಸಲ ಉಮ್ಮ ಹಾಗೆ ಬಂದವರನ್ನು ಒಳಗೆ ಕರೆದು ತನ್ನ ತವರುಮನೆಯವರು ಮದುವೆ ಕಾಲದಲ್ಲಿ ಕೊಟ್ಟ ಮೂನೇಟಿ, ಅಲಿಕತ್, ಕೊಂಬತಾಂಙ, ಚಪ್ಪಲೆ, ತಾಮರ, ತಿರ್ಪುಂಡೆ ಪೂ, ಕೋಯಕ್ಕ ಅರಞಣಂ, ಕೊತ್ತಂಬಳೆ ಉರ್ಕುಕಾಯಿ ಮೀನ್ ಸರಪ್ಪಳಿ, ಮಿಸಿರಿ ಮಾಲ, ಮುಡಿಪ್ಪಲೆ, ಕೊಪ್ಪು ಸರಪಳಿ ಎಂಬಿತ್ಯಾದಿ ಆಭರಣ ವೈವಿಧ್ಯಗಳನ್ನು ತೋರಿಸಿ ದಂಗುಬಡಿಸಿದ್ದಳು. ಅಲ್ಲಿಂದ ಹೋದ ಮೇಲೆ ಆಭರಣಗಳು ನೆನಪಾಗಿ ಕಾಡುವಾಗೆಲ್ಲ ಕೆಲಸದ ಹೆಂಗಸರು, "ಒಂಟಿ ಬ್ಯಾರಿ ನಿಜಕ್ಕೂ ಪುಣ್ಯಾತ್ಮ. ಇಷ್ಟೆಲ್ಲಾ ಬಂಗಾರ ಇರುವ ಉಮ್ಮ ಎಷ್ಟು ಚೆನ್ನಾಗಿ ಕಲ್ತಪ್ಪ - ಸಾರು ಮಾಡಿ ಹಾಕುತ್ತಾಳೆ?  ಎಷ್ಟು ಚೆನ್ನಾಗಿ ಬಾಯಿ ತುಂಬಾ ನಗುತ್ತಾ ಮಾತಾಡುತ್ತಾಳೆ?  ಉಮ್ಮನ ಮಾತು ಕೇಳುತ್ತಾ ನಿಂತರೆ ಹೊತ್ತು ಹೋಗುವುದೇ ಗೊತ್ತಾಗುವುದಿಲ್ಲ" ಎಂದು ಗುಣಗಾನಕ್ಕೆ ತೊಡಗಿಬಿಡುವುದುಂಟು.

ಆದರೆ ಕಪಿಲಳ್ಳಿಯ ಧರ್ಮಸಂರಕ್ಷಣಾ ಪರಿಷತ್ತು ಮಾತ್ರ ಒಂಟಿ ಬ್ಯಾರಿಯನ್ನು ಭಯೋತ್ಪಾದಕನೆಂದು ಪರಿಗಣಿಸಿ ಅವನ ವಿರುದ್ದ ಏಕಪಕ್ಷೀಯ ಶೀತಲ ಸಮರ ಸಾರಿಬಿಟ್ಟಿತು.  ಕಡೆಕೊಡಿ ಒಂದೂ ತಿಳಿಯದ ಯಾವುದೋ ಊರಿನ ಮ್ಲೇಂಚ್ಛನೊಬ್ಬ ಹೀಗೆ ದಿಡೀರನೆ ಕಪಿಲಳ್ಳಿಯನ್ನು ಆಕ್ರಮಿಸಿ ಅದೇನೇನೋ ಮಾಡಿ ಹಾಕಿ ಕಪಿಲಳ್ಳಿಯ ಹೆಂಗಸರನ್ನು ಕೂಡಾ ಆಕರ್ಷಿಸುವುದೆಂದರೇನು?  ನಾಳೆ ಇವನು ಸ್ವಾರು ಹೋಟೆಲಲ್ಲಿ ಕೋಣಂದೋ, ಎತ್ತಿದ್ದೋ ಮಾಂಸವನ್ನು ಮಾಡಿ ಹಾಕಿ ಇವರಿಗೆಲ್ಲಾ ತಿನ್ನಿಸುವುದಿಲ್ಲವೆಂದು ಏನು ಗ್ಯಾರಂಟಿ? ಇವನ ಕಲ್ತಪ್ಪ, ನಂಗು ಸಾರು, ಸೋಜಿಗ ಮನಸೋತು ಸಾಲ ಮಾಡಿ ತಿನ್ನುವವರು ನಾಳೆ ಸಾಲ ತೀರಿಸಲಾಗದೆ ಮ್ಲೇಂಚ್ಛರಾಗಿ ಬಿಟ್ಟರೇನು ಗತಿ?  ಇದಕ್ಕೆಲ್ಲಾ ಕಾರಣ ಗರ್ನಾಲು ರಾಮಣ್ಣ ಇನ್ನೂ ರಿಕಾರ್ಡಾಗದ ತನ್ನ ಹತ್ತು ಸೆಂಟ್ಟು ಸರ್ಕಾರೀ ಜಾಗವನ್ನು ಮತ್ತು ಮನೆಯನ್ನು ಒಂಟಿ ಬ್ಯಾರಿಗೆ ಮಾರಾಟ ಮಾಡಿದ್ದು. ಊರಿನ ವಿಪ್ರರು, ಅತಿವಿಪ್ರರು, ಹಿರಿಯರು, ಪಟೇಲರು ಮತ್ತು ದೇವಸ್ಥಾನದ ಮೊಕ್ತೇಸರರನ್ನು ಒಂದು ಮಾತು ಕೇಳದೆ ಎಲ್ಲಿಯವನೋ ಒಬ್ಬ ಬ್ಯಾರಿಗೆ ಹೀಗೆ ಸರಕಾರೀ ಭೂಮಿ ಮಾರಾಟ ಮಾಡಿದ್ದು ತಪ್ಪಲ್ಲವೇ?  ಧರ್ಮ ಸಂರಕ್ಷಣಾ ಪರಿಷತ್ತು ಗರ್ನಾಲು ರಾಮಣ್ಣನನ್ನು ದೇವಸ್ಥಾನಕ್ಕೆ ಕರೆಸಿ ವಿಚಾರಣೆ ನಡೆಸಿ ತಾರಾಮರಾ ಬೈದು ಅಲೆಕ್ಸಾಂಡರನು ಭಾರತವನ್ನು ಆಕ್ರಮಿಸಿದಾಗ ಅವನೊಡನೆ ಸೇರಿಕೊಂಡ ಅಂಬಿಗೆ ಗರ್ನಾಲು ರಾಮಣ್ಣನನ್ನು ಹೋಲಿಸಿ, ಅವನ ಕುಲಗೋತ್ರ ಜಾಲಾಡಿಸಿ ಬಿಟ್ಟದ್ದಲ್ಲದೆ ಒಂಟಿ ಬ್ಯಾರಿಯಿಂದ ಜಾಗ ವಾಪಾಸು ಪಡೆದುಕೊಳ್ಳದಿದ್ದರೆ ಕಪಿಲೇಶ್ವರನ ಜಾತ್ರೋತ್ಸವದಲ್ಲಿ ಗರ್ನಾಲು ಹೊಡಿಸುವ ಅವಕಾಶವನ್ನು ಬೇರೆಯವರಿಗೆ ನೀಡುವುದಾಗಿ ಭಯಾನಕ ಬೆದರಿಕೆ ಒಡ್ಡಿಬಿಟ್ಟಿತು. ಗರ್ನಾಲು ರಾಮಣ್ಣನು ತಾನು ದಿಲ್ ಪುಕಾರು ಬೀಡಿ ಸೇದಿ ಅದರ ಮೂತಿಗೆ ಗರ್ನಾಲಿನ ಬತ್ತಿಯನ್ನು ಇಟ್ಟು, ಅದು ಸುರ್ ಸುರ್ ಎಂದು  ಹತ್ತಿಕೊಂದಾಗ ಆಕಾಶದೆತ್ತರಕ್ಕೆ ಹಾರಿಸಿ ಢಾಂ ಸದ್ದಿನಿಂದ ಎಲ್ಲರನೂ ಬೆಚ್ಚಿಬೀಳಿಸುವ ತನ್ನ ಸಾಹಸಕ್ಕೆ ಸಿಗುವ ಮೆಚ್ಚುಗೆಯ ನೋಟಗಳ ಪುಳಕದಿಂದ ವಂಚಿತನಾಗುವ ದೌರ್ಭಾಗ್ಯದಿಂದ ವಿಚಲಿತನಾದನು. ಕೊನೆಗೆ ಅವನು ತನಗೆ ಆಗಾಗ ಕಾಣಿಸಿಕೊಳ್ಳುವ ಮಲೇರಿಯಾ ವಾಸಿ ಮಾಡಲು ಮಾಡಿದ ಸಾಲದಿಂದಾಗಿ ತಲೆ ಎತ್ತಿ ನಡೆಯಲಾಗದೆ ದೀನಸ್ಥಿತಿ ತನ್ನನ್ನು ಜಾಗ ಮಾರಾಟ ಮಾಡುವಂತೆ ಮಾಡಿಸಿತೆಂದೂ, ಧರ್ಮ ಸಂರಕ್ಷಣಾ ಪರಿಷತ್ತು ಆ ಜಾಗ ಮತ್ತು ಮನೆಗೆ ಒಂಟಿ ಬ್ಯಾರಿ ಕೊಟ್ಟಿದ್ದಕ್ಕಿಂತ ಸ್ವಲ್ಪ ಹೆಚ್ಚು ಹಣ ಕೊಡುವುದಾದರೆ ಒಂಟಿ ಬ್ಯಾರಿಯನ್ನು ಜಾಗ ಮತ್ತು ಮನೆಯಿಂದ ಮಾತ್ರವಲ್ಲದೆ ಊರಿನಿಂದಲೇ ಬಿಡಿಸಿ ಓಡಿಸುತ್ತೇನೆಂದು ಖಡಾಖಂಡಿತವಾಗಿ ಹೇಳಿದಾಗ ಧರ್ಮ ಸಂರಕ್ಷಣಾ ಪರಿಷತ್ತು ಅನ್ಯ ದಾರಿ ಕಾಣದೆ "ನಿನ್ನ ಕರ್ಮ ಅನುಭವಿಸು" ಎಂದು ಹೇಳಿ ತಣ್ಣಗಾಗಿ ಬಿಟ್ಟಿತು.

ಗದ್ದೆಗಳನ್ನು ತೋಟ ಮಾಡಿದ್ದಕ್ಕೆ ಕಪಿಲಳ್ಳಿಯಲ್ಲಿ ಅಕ್ಕಿಯ ಬೆಲೆ ವಿಪರೀತ ಹೆಚ್ಚಾದಾಗ ಸಾಹಸಿಗಳು ಬಹಳ ಕಷ್ಟಪಟ್ಟು ಅಭೇಧ್ಯ ಮಲೆ ಹತ್ತಿ ಘಟ್ಟ ಸೇರಿ ಅಲ್ಲಿನ ಪೋಲಿಸರ ಕಣ್ತಪ್ಪಿಸಿ ಅಲ್ಲಿಂದ ತಲೆಹೊರೆಯಲ್ಲಿ ಹೇಗೋ ಆಕ್ಕಿ ತಂದು ಕಪಿಲಳ್ಳಿಯಲ್ಲಿ ಮಾರುವ ಕಾರ್ಯಕ್ಕೆ ಇಳಿದುಬಿಟ್ಟರು. ತಲೆ ಹೊರೆಯಲ್ಲಿ ಹದಿನೈದು ಮೈಲಿ ಬೆಟ್ಟ ಕಾಡು ಹತ್ತಿ ಇಳಿದು ಅಕ್ಕಿಯನ್ನು ಹೊತ್ತು ತರುವ ಹಾದಿಯುದ್ದಕ್ಕೂ ರಕ್ತಹೀರುವ ಸೊಳ್ಳೆ, ಕುರ್ಡ, ಜಿಗಣೆ, ಭಯಾನಕವಾದ ಕಾಟಿ, ಕಾಡಾನೆ, ಸಿಕ್ಕಿಬಿದ್ದರೆ ಬೆನ್ನ ಚರ್ಮ ಸುಲಿದು ಅಜೀವಪರ್ಯಂತ ಕಂಬಿ ಎಣಿಸುವಂತೆ ಮಾಡಬಹುದಾದ ಪೋಲಿಸರು, ಎಲ್ಲವನ್ನೂ ನಿಭಾಯಿಸಿ ಕಪಿಲಳ್ಳಿಗೆ ತಂದದ್ದನ್ನು ಮರಾಟ ಮಾಡಿದರೆ ಅಸಲಿಗೆ ಮೋಸವಿರಲಿಲ್ಲವಾದರೂ ಹೇಳಿಕೊಳ್ಳುವಂಥ ಲಾಭ ಸಿಗುತ್ತಿರಲಿಲ್ಲ".  ಒಮ್ಮೆ ಘಟ್ಟಕ್ಕೆ ಹೋಗಿ ಬಂದರೆ ಎಣ್ಣೆ ತಿಕ್ಕಿ, ಬಿಸಿ ನೀರ ಸೇಕ ಕೊಟ್ಟು ಕೈಕಾಲು, ಮೈ ಸರಿಪಡಿಸಲು ಒಂದು ವಾರವಾದರೂ ಬೇಕಾಗಿದ್ದುದರಿಂದ ಹಾಗೆ ಹೋಗಿ ಬಂದವರಿಗೆ ವಾರವಿಡೀ ಬೇರೆ ಗಳಿಕೆ ಏನೇನೂ ಇರಲಿಲ್ಲ.

ಇಂಥ ಪರಿಸ್ಥಿತಿಯಲ್ಲಿ ಒಂಟಿ ಬ್ಯಾರಿಯ ಮಡದಿ ಉಮ್ಮ ರಸ್ತೆಯ ಮೇಲ್ಗಡೆಯ ನಾಲ್ಕೈದು ಬಿದಿರ ಮಳೆಗಳ ಸುತ್ತಲಿನ ಒರಟು ನೆಲವನ್ನು ಕತ್ತಿ ಮನೆಯ೦ಗಳದಂತೆ ಸಾಪಾಟಾಗಿ ಮಾಡಿ ಸಗಣಿ ಸಾರಿಸಿ, ಹಗಲಿಡೀ ತನ್ನ ಮಕ್ಕಳನ್ನು ಅಲ್ಲಿ ಕಾವಲಿರಿಸಿ, ದಿನಾ ಬೆಳಗ್ಗೆ ರಾಜಂದರಿಯನ್ನು ಗುಡಿಸಿ ಒಟ್ಟುಮಾಡಿ ತಂದು, ಕಸ ತೆಗದು, ಒನಕೆಯಿಂದ ಕುಟ್ಟಿ, ಡಾಲ್ಡದ ಒಗ್ಗರಣೆ ಹಾಕಿ ಗಮಗಮಿಸುವ ಉಪ್ರಟ್ಟು, ದೋಸೆ ತಯಾರಿಸಿ ಸ್ಟಾರು ಹೋಟಲಲ್ಲಿ ಮಾರಾಟಕ್ಕಿಟ್ಟ ಸಾಹಸ ಮನೆ ಮನೆ ಮಾತಾಗಿ ಬಿಟ್ಟತು. ಈಗ ಕಪಿಲಳ್ಳಿಯ ಕೆಲಸದ ಹೆಂಗಸರು, ಗ೦ಡಸರು ಕಾಡಿಗೆ ನುಗ್ಗಿ ಬಿದಿರ ಮಳೆಗಳನ್ನು ತಮ್ಮೊಳಗೆ ಹ೦ಚಿಕೂಂಡು, ಕಾಡಿಗೆ ಕಾಡನ್ನೇ ಅಲ್ಲಲ್ಲಿ ಗುಡಿಸಿ, ಚೊಕ್ಕಟಮಾಡಿ, ಸಂಗ್ರಹವಾದ ರಾಜಂದರಿಯನ್ನು ಸ್ಟಾರು ಹೋಟೆಲಿಗೆ ಮಾರಿ, ಅದರಿಂದಲೇ ಮಾಡಿದ ಉಪ್ಪಿಟ್ಟು, ದೋಸೆ ಚಪ್ಪರಿಸಿ ಚಪ್ಪರಿಸಿ ತಿನ್ನತೊಡಗಿದರು. ಹೊಸದೊಂದು ಸಾಧ್ಯತೆಯೆನ್ನು ಕಪಿಲಳ್ಳಿಗೆ ತೋರಿಸಿಕೊಟ್ಟ ಒಂಟಿ ಬ್ಯಾರಿಯ ಹೆಂಡತಿ ಉಮ್ಮ ಈಗ ರಾಜಂದರಿ ಉಮ್ಮನಾಗಿ ಊರಲ್ಲಿ ಹೊಸ ಪ್ರಭಾವಳಿಯಿಂದ ಕಂಗೊಳಿಸತೊಡಗಿದಳು. ಕಪಿಲಳ್ಳಿಯ ಕಾಡುಗಳಿಂದ ತಿಂಗಳೂರಿಗೆ ಮರ ಸಾಗಿಸುವ ಲಾರಿಗಳ ಡ್ರೈವರು, ಕ್ಲೀನರು, ರೋಡಿನ ಕೆಲಸದವರು ಮತ್ತು ಮೇಸ್ತ್ರಿಗಳು ಒಂಟಿ ಬ್ಯಾರಿಯ ಸ್ಟಾರು ಹೋಟೆಲನ್ನು ತಮ್ಮ ಖಾಯಂ ತಂಗುದಾಣವನ್ನಾಗಿ ಮಾಡಿಕೊಂಡುದರಿಂದ ಖುಲಾಯಿಸಿದ ಅದೃಷ್ಟದಿಂದಾಗಿ ಒಂಟಿ ಬ್ಯಾರಿಯನ್ನು ಕಪಿಲಳ್ಳಿ ಜನ ಸಾವುಕಾರ್ರೇ; ಎಂದು ಎದುರಿಂದ ಮರ್ಯಾದೆ ಕೊಟ್ಟು ಕರೆಯತೊಡಗಿದರು.

ಎಲ್ಲವೂ ಹೀಗೆ ಸುಸೂತ್ರವಾಗಿ ಸಾಗಲಾಗಿ ಕಪಿಲೇಶ್ವರನ ಸಂಭ್ರಮದ ಏಳು ದಿನಗಳ ಜಾತ್ರೋತ್ಸವ ಆರಂಭವಾಗಿ ಬಿಟ್ಟಿತು. ಏಳು ದಿನವೂ ಮಧ್ಯಾಹ್ನ ಊರವರಿಗೆ ಪುಷ್ಕಳ ಭೋಜನದ ಸ್ವರ್ಗ ಸುಖ. ದೇವಸ್ಥಾನದ ಒಳಾಂಗಣದಲ್ಲಿ ವಿಪ್ರರಿಗೆ ಮತ್ತು ಅತಿವಿಪ್ರರಿಗೆ ಮೊದಲು ಎರಡು ಗಂಟೆಗಳ ಸಮಾರಾಧನೆ. ಅವರ "ಭೋಜನಕಾಲೇ ನಮಃ ಪಾರ್ವತೀ ಪತೇ ಹರಹರಾ ಮಹಾದೇವ" ಎಂಬ ಮುಗಿಲು ಮುಟ್ಟುವ ಸಂತೃಪ್ತ ಸಾಮೂಹಿಕ ಘೋಷಣೆ ಮುಗಿದು ಅವರೆದ್ದ ಮೇಲೆ, ಆ ವರೆಗೆ ಪಲ್ಯ, ಪಳದ್ಯ, ಕಾಯಿಹುಳಿ, ಪಾಯಸಗಳ ಸುವಾಸನೆಯನ್ನು ಹೀರುತ್ತಾ ಹಸಿದು ಕಂಗಾಲಾಗಿ ಕಾಯುತ್ತಿರುವ ಶೂದ್ರರಿಗೆ ದೇವಸ್ಥಾನದ ಹೊರಾ೦ಗಣದಲ್ಲಿ ಊಟವಾಗುವಾಗ ಸಂಜೆ ನಾಲ್ಕಾಗುತ್ತದೆ. ಎಲ್ಲರಿಗೂ ಊಟವಾದ ಮೇಲೆ ಉಳಿದದ್ದೆಲ್ಲವನ್ನೂ ಬುಟ್ಟಿ, ಹಂಡೆ ಸಮೇತ ಹೊರಾಂಗಣದಿಂದ ಸಾಕಷ್ಟು ದೂರದ ಮಜಲಿನಲ್ಲಿ ಅತಿಶೂದ್ರರಿಗೆ ತಂದು ಕೊಡುವದು ಆರ್ಷೇಯ ಸಂಪ್ರದಾಯ. ಆರನೆಯ ದಿನ ರಥೋತ್ಸವವಾಗಿ ಕಪಿಲೇಶ್ವರನ ಉತ್ಸವಮೂರ್ತಿ ಗರ್ಭಗುಡಿ ಸೇರಿದರೆ ಗುಡಿಯ ಬಾಗಿಲು ತರೆಯುವುದು ಮರುದಿನ ಬೆಳಗ್ಗೆ ಹತ್ತು ಗಂಟೆಗೆ. ಅಂದು ಸಂಜೆ ಆರು ಗಂಟೆಗೆ ಕಪಿಲೇಶ್ವರನ ಉತ್ಸವಮೂರ್ತಿ ಪಟ್ಟಣ ಸವಾರಿ ಹೊರಡುವ ಮುನ್ನ ದೇವಸ್ತಾನದ ಬಳಿಯಲ್ಲೆ ಹರಿಯುವ ತಪಸ್ವಿನಿಯ ಮಧ್ಯದಲ್ಲಿರುವ ಗೌರೀಶಿಲೆಗೆ ತೆಪ್ಪದಲ್ಲಿ ಉತ್ಸವಮೂರ್ತಿಯ ಪ್ರದಕ್ಷಿಣೆಯಾಗುತ್ತದೆ. ತೆಪ್ಪೋತ್ಸವ ಮುಗಿದ ಮೇಲೆ ಒಂದೂವರೆ ಮೈಲು ದೂರದ ಜಳಕದ ಗುಂಡಿಗೆ ದೇವರು ಅವಭೃತಕ್ಕೆ ತೆರಳುತ್ತಾರೆ. ಆಗ ಹಾದಿಯುದ್ದಕ್ಕೂ  ಹೋಟೆಲು, ಆಂಗಡಿ, ಮನೆಗಳವರು ದೇವರಿಗೆ ಕಾಯಿ ಒಡೆದು ಆರತಿ ಎತ್ತಿ, ಪಂಚಜ್ಜಾಯ ಹಂಚಿ, ಪಾನಕ ನೀಡಿ ಶ್ರೀ ದೇವರ ಕೃಪಗೆ ಪಾತ್ರರಾಗುತ್ಪಾರೆ.

ಅವಭೃತಕ್ಕೆಂದು ಕಪಿಲೇಶ್ವರನ ಉತ್ಸವಮೂರ್ತಿ ಪಟ್ಟಣ ಸವಾರಿ ಆರಂಭಿಸುವಾಗ ಮೊದಲಿಗೆ ಸಿಗುವುದೇ ಒಂಟಿ ಬ್ಯಾರಿಯ ಸ್ಟಾರ್ ಹೋಟೆಲು. ಕಪಿಲಳ್ಳಿಯಲ್ಲಿ ನೆಲೆನಿಂತು ಎಂಟು ತಿಂಗಳುಗಳಾದರೂ ದೇವಸ್ಥಾನ ಎಲ್ಲಿದೆಯಂದು ತಿರುಗಿಯೂ ನೋಡದ ಒಂಟಿ ಬ್ಯಾರಿ, ಈಗ ತನ್ನ ಸ್ಟಾರು ಹೋಟಿಲಿನ ಎದುರಿನಿಂದಲೇ ಮೆರವಣಿಗೆ ಸಾಗುವಾಗ ಏನು ಮಾಡುತ್ತಾನೆ? ಊರಿನ ಎಲ್ಲಾ ಅಂಗಡಿ ಮನೆಗಳವರು ದೇವರಿಗೆ ಕಾಯಿ ಒಡೆದು ಆರತಿ ಎತ್ತಿ ಗೌರವಿಸುವಾಗ ಆರಂಭದಲ್ಲೇ ಸಿಗುವ ಒಂಟಿ ಬ್ಯಾರಿಯ ಸ್ಟಾರು ಹೋಟೆಲು ದೇವರಿಗೆ ಗೌರವ ತೋರಿಸದಿದ್ದರೆ ಮಂಗಳಕಾರ್ಯಕ್ಕೆ ಆರಂಭ ವಿಘ್ನ ಬಂದಂತಾಗುವುದಿಲ್ಲವೇ? ಆದರೆ ಕಪಿಲೇಶ್ವರನಿಗೆ ಕಾಯಿ ಒಡೆದು ಆರತಿ ಎತ್ತಬೇಕೆಂದು ಒಂಟಿ ಬ್ಯಾರಿಯಲ್ಲಿ ಕೇಳುವುದು ಸರಿಯೇ?  ಒಂಟಿ ಬ್ಯಾರಿ ಕಾಯಿ ಒಡೆದು ಆರತಿ ಎತ್ತದಿದ್ದರೆ ಇಡೀ ಊರು ಒಂದು, ಬ್ಯಾರಿ ಮಾತ್ರ ಬೇರೆ ಎಂದಾಗುವುದಿಲ್ಲವೆ?  ಒಂದು ವೇಳೆ ಒಂಟಿ ಬ್ಯಾರಿ ಆರತಿ ಎತ್ತಿ ಕಾಯಿ ಒಡೆದರೆ ಅದು ಕಪಿಲೇಶ್ವರನಿಗೆ ಮೆಚ್ಚುಗೆ ಯಾದೀತೇ? ದೇವತಾ ಕಾರ್ಯಗಳಲ್ಲಿ ಏನಾದರೂ ದೋಷ ಕಂಡುಬಂದರೇನು ಗತಿ? ಒಂಟಿ ಬ್ಯಾರಿಯ ಮನಸ್ಸೇನೆಂದು ತಿಳಿದುಕೊಳ್ಳಲು ಯಾರನ್ನು ಸಂಧಾನಕ್ಕೆ ಕಳಿಸುವುದು? ಹಾಳಾದ ಗರ್ನಾಲು ರಾಮಣ್ಣ ತನ್ನ ಸರ್ಕಾರೀ ಜಾಗವನ್ನು ರೆಕಾರ್ಡು ಆಗುವ ಮೊದಲೇ ಯಾರಿಗೂ ತಿಳಿಸದೆ ಮಾರಿದ್ದೇ ತಪ್ಪು. ಈಗ ಇಡೀ ಊರಿಗೆ ಊರೇ ಶಿಕ್ಷೆ ಆನುಭವಿಸುತ್ತಿದೆ. ಯೋಚಿಸಿ ಯೋಚಿಸಿ ದೇವಸ್ಯಂ ಟ್ರಸ್ಟು ಎಲ್ಲವನ್ನೂ ಕಪಿಲೇಶ್ವರನಿಗೆ ಬಿಟ್ಟುಬಿಡುವುದು ಎಂದು; ಅವನಿಗೆ ಬೇಕಾದಂತೆ ನಡೆಸಿಕೊಂಡು ಹೋಗಲಿ ಎಂದು ನಿರಾಳವಾಯಿತು. ಊರಿನವರು ಮಾತ್ರ ಅವಭೃತದ ದಿನ ಒಂಟಿ ಬ್ಯಾರಿ ಖಂಡಿತವಾಗಿ ಸ್ಟಾರು ಹೋಟೆಲು ಮುಚ್ಚಿ ಕುಟು೦ಬ ಸಮೇತ ಮಲೆಯಾಳ ದೇಶಕ್ಕೆ ಹೋಗಿ ಬಿಡುತ್ತಾನೆ ಎಂದುಕೊಂಡು ನೆಮ್ಮದಿಯಿಂದಿದ್ದರು.

ಕಾತರದಲ್ಲೇ ಆರಂಭವಾಯಿತು ಅವಭೃತದ ಮೆರವಣಿಗೆ. ಒಳಾಂಗಣದಿಂದ ಹೊರಟ ಕಪಿಲೇಶ್ವರನ ಉತ್ಸವಮೂರ್ತಿ ದೇವಸ್ತಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಬಂದು ತಪಸ್ವಿನಿಗಿಳಿದು ಪಿಂಡಿ ಹತ್ತಿತು. ಪಿಂಡಿ ಗೌರಿಶಿಲೆಗೆ ಮೂರು ಬಾರಿ ಪ್ರದಕ್ಷಿಣೆ ಬಂದು ಹೊಳೆ ದಾಟಿತು. ಅಲ್ಲಿಂದ ಎರಡು ಫರ್ಲಾಂಗು ಗದ್ದೆಯ ಬದುವಿನಲ್ಲೇ ನಡೆದರೆ ಒಂಟಿ ಬ್ಯಾರಿಯ ಸ್ಟಾರು ಹೋಟೆಲು ಇರುವ ಮುಖ್ಯ ರಸ್ತೆ ಸಿಗುತ್ತದೆ. ಅಲ್ಲಿಗೆ ಮುಟ್ಟುತ್ತಿದ್ದಂತೆ ಮೆರವಣಿಗೆ ನಿಂತುಬಿಟ್ಟಿತು. ಒಂಟಿ ಬ್ಯಾರಿ  ಸ್ಟೂಲೊಂದರಲ್ಲಿ ಕಾಯಿ - ಹಣ್ಣು, ಆರತಿ ತಟ್ಟೆ, ಎಣ್ಣೆ, ಬತ್ತಿ, ಕರ್ಪೂರ, ಆಗರಬತ್ತಿ ಇಟ್ಟು,  ರಾಜಂದರಿ ಉಮ್ಮ ಮತ್ತು ಮೂವರು ಮಕ್ಕಳೊಡನೆ ಕಾಯುತ್ತಿದ್ದಾನೆ!

ಯಾರಿಗೆ ಏನು ಹೇಳಬೇಕೆಂದೇ ತೋಚದ ಸಂದಿಗ್ದತೆ. ಸೂಜಿ ಬಿದ್ದರೂ ಕೇಳಿಸು ವಂತಹ ನಿಶ್ಶಬ್ದ ಮುರಿದು ಒಂಟಿ ಬ್ಯಾರಿ ಕೈ ಜೋಡಿಸಿ ಹೇಳಿದ. "ಈ ದೇವರ ಮುಂದೆ ನಿಂತು ಸತ್ಯ ಹೇಳುತ್ತೇನೆ. ಜಾತ್ರೆ ಶುರುವಾದಂದಿನಿಂದ ನನ್ನ ಹೋಟೆಲಲ್ಲಿ ಕೋಳಿ, ಮೀನು ಮಾಡಿಲ್ಲ. ಇಂದು ಇಡೀ ಮನೆಗೆ, ಅಂಗಳಕ್ಕೆ ಸೆಗಣಿ ಸಾರಿಸಿ, ಬೆಳಗ್ಗೊಮ್ಮೆ, ಈಗೊಮ್ಮೆ ತಪಸ್ವಿನಿಯಲ್ಲಿ ಮಿಂದು ಶುಚಿಯಾಗಿದ್ದೇವೆ. ಈ ಊರು ನನಗೆ ಅನ್ನ ಕಂಡುಕೊಳ್ಳುವ ದಾರಿ ತೋರಿಸಿದೆ.  ಅದಕ್ಕೆ ಕಪಿಲೇಶ್ವರನಿಗೆ ಇದು ನಮ್ಮ ಕೃತಜ್ಞತೆ. ಬೇರೆ ಮಾತಾಡದೆ ನಮ್ಮ ಕಾಣಿಕೆಯನ್ನು ದೇವರಿಗೆ ಒಪ್ಪಿಸಿಕೊಳ್ಳಬೇಕು."

ಅರ್ಚಕರು ಮೊಕ್ತೇಸರರ ಮುಖ ನೋಡಿದರು. ಮೊಕ್ತೇಸರರು ಪಟೇಲರತ್ತ ದೃಷ್ಟಿ ಹಾಯಿಸಿದರು. ಪಟೇಲರತ್ತ ಮೆರವಣಿಗೆಯ ಮು೦ಭಾಗದಲ್ಲಿರುವವರ ಮುಖಗಳನ್ನು  ಓದಿಕೊಂಡವರಂತೆ ಹೇಳಿದರು. "ಒಂಟಿ ಬ್ಯಾರಿಗಳು ಈಗ ನಮ್ಮ ಊರಿನವರು. ನಮ್ಮ ದೇವರನ್ನು ಒಪ್ಪಿಕೊಳ್ಳುವ ದೊಡ್ಡ ಗುಣ ಅವರದ್ದು. ಅವರು ಕಪಿಲೇಶ್ವರ ಮೆಚ್ಚುವ ಕೆಲಸ ಮಾದಿದ್ದಾರೆ. ಕಪಿಲೇಶ್ವರ ಅವರ ಸೇವೆಯನ್ನು ಸ್ವೀಕರಿಸಲಿ.  ಅರ್ಚಕರು ಕಾಯಿ ಒಡೆದು ಅದಕ್ಕೆ ಗಂಧ ಹಚ್ಚಿ ಸ್ಟೂಲಿನ ಮೇಲಿಟ್ಟರು. ಆರತಿ ತಟ್ಟೆಯನ್ನು ಕಾಲ್ದೀಪದಲ್ಲಿ ಬೆಳಗಿಸಿ ಮ೦ತ್ರ ಹೇಳುತ್ತಾ ಗಂಟೆಯಾಡಿಸಿಕೊಂಡು ಆರತಿ ಎತ್ತಿದರು.  ಅದನ್ನು ಸ್ಟೂಲಲ್ಲಿಟ್ಟು ಬೊಗಸೆಯೊಡ್ಡಿ ನಿಂತಿದ್ದ ಒಂಟಿ ಬ್ಯಾರಿಗೆ ಗಂಧ ಪ್ರಸಾದ ಮತ್ತು ಹೂ ನೀಡಿದರು. ಪ್ರಸಾದ ಸ್ವೀಕರಿಸುವಾಗ ಒಂಟಿ ಬ್ಯಾರಿ ಹೇಳಿದ. ನಾನು ಯವುದೋ ಕಾಯಿಲೆಯಿಂದಾಗಿ ಸಾಯುವ ಸ್ಥಿತಿಯಲ್ಲಿದ್ದಾಗ ದೇವರಿಗೆ ನೇರ್ಚೆ ಹೇಳಿ ಕಿವಿಗೆ ಬಂಗಾರದ ಒಂಟಿ ಚುಚ್ಚಿದ್ದ ನನ್ನ ಹೆತ್ತುಮ್ಮ ಹಿಂದೆ ಮಾತು ಹೇಳಿದ್ದಳು.  "ದೇವರೆಲ್ಲಾ ಒಂದೇ ಮೋನೇ. ನಮಗೊಂದು ದೇವರು, ಬೇರೆಯವರಿಗೆ ಇನ್ನೊಂದು ದೇವರು ಇರಲು ಸಾಧ್ಯವಿಲ್ಲ" ಎಂದು.  ಕಪಿಲಳ್ಳಿಯಲ್ಲಿ ಬದುಕುವ ನನಗೆ ಕಪಿಲೇಶ್ವರನು ಅಲ್ಲಾಹು."

ಯಕ್ಷಗಾನ ಪ್ರಿಯ ಪಟೇಲರ ಮುಖ ಬಿರಿಯಿತು. ಅವರೆಂದರು. "ಭಗವದ್ಗೀತೆಯಲ್ಲಿ ಕೃಷ್ಣ ಚಾತುವರ್ಣ್ಯಮಯಾಂ ಸೃಷ್ಟಂ ಗುಣ ಕರ್ಮ ವಿಭಾಗಶಃ ಎ೦ದಿದ್ದಾನೆ. ಅ೦ದರೆ ಅವರವರ ಗುಣ ಸ್ವಭಾವಕ್ಕನುಗುಣವಾಗಿ ಜಾತಿ ನಿರ್ಧಾರವಾಗುತ್ತದೆ, ಹುಟ್ಟಿನಿಂದಲ್ಲ. ಜಾತಿ ವರ್ಣಕ್ಕಿಂತ ಮನುಷ್ಯತ್ವ ಮುಖ್ಯ ಎನ್ನುವುದನ್ನು ಒಂಟಿ ಬ್ಯಾರಿಗಳು ತೋರಿಸಿಕೊಟ್ಟಿದ್ದಾರೆ. ಆವರಿಗೆ ಕಪಿಲೇಶ್ವರ ಒಳಿತನ್ನು ಉಂಟು ಮಾಡಲಿ."

ಹೊಸ ಉತ್ಸಾಹದಿಂದ ರಾಮಣ್ಣ ಗರ್ನಾಲು ಸಿಡಿಸಿದ. ಮೆರವಣಿಗೆ ಮುಂದಕ್ಕೆ ಸಾಗಿತು.   

                    *****
ಕೀಲಿಕರಣ: ಎಮ್.ಎನ್.ಎಸ್.ರಾವ್