ನಗೆ ಡಂಗುರ - ೪

- ಪಟ್ಟಾಭಿ ಎ ಕೆ

ಗುರು :  "ನರ ಎಂಬ ಶಬ್ದಕ್ಕೆ ಸ್ತ್ರೀಲಿಂಗ ಏನು?"
ಶಿಷ್ಯ:  "`ನರಿ' ಸಾರ್‍!"

        *****

ಅದ್ವೈತ

- ಶೇಖರ್‌ಪೂರ್ಣ

        ಭಾಗ-೧
ಹೀಗೀಗೆ ಆಗುತ್ತದೆ- ಆಗಲೇಬೇಕು’ - ಇದು ತರ್ಕ.  ಮನುಷ್ಯನೊಬ್ಬನ ಸಕಲ ನಡವಳಿಕೆಗಳನ್ನು ಯಾವುದೇ ಒಂದು ತಾರ್ಕಿಕ ವಲಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರೆ ಒಬ್ಬರು ಇನ್ನೊಬ್ಬರನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲವೇನೊ.  ಯಾವುದೋ ಒಂದನ್ನು ಹೇಳಬೇಕು ಎಂದನ್ನಿಸಿ ಹೇಳಬೇಕಾದ್ದನ್ನೆಲ್ಲ ಈ ತಾರ್ಕಿಕ ಪಥದಲ್ಲೇ ಹೇಳ ಹೊರಡುವುದು ಸದಾ ಸಾಧ್ಯವಾಗದ ಮಾತು.  ಸಾಹಸಿಸಿದರೆ ಎಡವುವುದು ಸಹಜ.  ಹೇಳುವವನ ಕೇಳುವವನ [ಪ್ರೇಕ್ಷಕ, ಓದುಗ, ಕೇಳುಗ ಇತ್ಯಾದಿ] ನಡುವೆ ಸಂವಹನ ಕುಸಿದು ಬೀಳುತ್ತದೆ.  ಆದ್ದರಿಂದಲೇ ನಾನು ಹೇಳ ಹೊರಟಿರುವುದನ್ನು ತರ್ಕರಾಹಿತ್ಯವಾಗಿ ನಡೆದ್ದದ್ದನ್ನು ನಡೆದಂತೆಯೆ, ಅನ್ನಿಸಿದ್ದನ್ನು ಅನ್ನಿಸಿದಂತೆಯೆ - ಬಹುಶಃ ಹೀಗಿರಬಹುದು- ಹೀಗಿದ್ದಿರಬೇಕು ಎಂಬ ಅಂದಾಜಿನ ತರ್ಕ [ಹೈಪೋತೀಸಿಸ್] ಬಳಸಿ ಹೇಳಲಾರಂಭಿಸುತ್ತೇನೆ.  ಶಂಕೆಯಂತೂ ಇದ್ದೇ ಇದೆ.  ನಾನು ಹೇಳಿದ ರೀತಿಯಲ್ಲೆ ಆಗಿರಬಹುದು.  ನಿಮಗೆ ಬೇರೆನಾದರು ಅನ್ನಿಸಿದರೆ ನೀವು ಹೇಳಿ- ತರ್ಕ ಬೇಡ ಆಷ್ಟೆ.

ಎಷ್ಟೋ ಜನರ ಬಾಯಲ್ಲಿ ಕೇಳಿದ್ದೇನೆ-
"ನನ್ನ ಹೆಂಡ್ತೀನ ನೋಡ್ಕೊಂಡ ಹಾಗೆ ಗಾಡೀನ ನೋಡ್ಕೊಂಡಿದೀನಿ.  ಸಿಂಗಲ್ ಹ್ಯಾಂಡ್.  ಬೇರೆ ಯಾರ ಕೈಗೂ ಕೊಡೋಲ್ಲ."
ನನ್ನ ಬಳಿಯೂ ಒಂದು ಮೊಪೆಡ್ ಇದೆ.  ೧೯೮೫ರ ಮಾಡೆಲ್‌ನದು.  ಎಲ್ಲರೂ ಉಪಯೋಗಿಸುತ್ತಾರೆ!
ಪಾಪ, ಬಹಳ ಒಳ್ಳೆಯ ಗಾಡಿ- ಈಗ ಲಟಾರಿ ಎದ್ದು ಹೋಗಿದೆ.  ಈಗೀಗ ಬಹಳ ಜನ ಹೇಳುತ್ತಾರೆ- "ಗುಜರಿಗಾಕೋ".  "ಬೀಗ ಬೇರೆ ಯಾಕಾಕ್ತೀಯ?  ಈ ಗಾಡೀನ ಯಾರೂ ಮುಟ್ಟೋ ಧೈರ್ಯ ಮಾಡೋಲ್ಲ, ಬಾ" -
"ಸ್ಕ್ರಾಪ್ ಇಟ್, ಸೆಂಡ್ ಇಟ್ ಟು ಸಾಲ್ವೇಜ್" - ಹೀಗೆ ವ್ಯಂಗ್ಯದ ಸರಣಿ ನಾನು ಎದುರಿಸಬೇಕಾಗಿ ಬಂದ್ದದಿದೆ.  ಆಗೆಲ್ಲ ನನಗೆ ಏನೂ ಅನ್ನಿಸುವುದಿಲ್ಲ.  ಅವಮಾನವೂ ಇಲ್ಲ.  ನಕ್ಕುಬಿಡುತ್ತೇನೆ.  ‘ದೇವರೆ ಇವರು ಏನು ಹೇಳುತ್ತಿದ್ದಾರೊ ಇವರಿಗೆ ತಿಳಿಯದು, ಇವರನ್ನು ಕ್ಷಮಿಸು!’ ಬೇರೆಯವರಿರಲಿ, ಸೀತಳೂ ಒಮ್ಮೊಮ್ಮೆ ಹೇಳಿದ್ದಿದೆ, "ರೀ ಮಾರಾಕಿ ಬೇರೆ ಹೊಸದನ್ನಾದ್ರೂ ತೊಗೋ ಬಾರ್ದೇನ್ರಿ..." ಇವಳಿಗೂ ಅರ್ಥವಾಗುವುದಿಲ್ಲ.  ಕ್ಷಮೆ ಇರಲಿ!
ಸೀತಳಿಗೂ ಸೇರಿದಂತೆ ಯಾರಿಗೂ ಅರ್ಥವಾಗುವುದಿಲ್ಲ.  ನಾನು ಈ ಮೊಪೆಡ್ಡನ್ನ ಪ್ರೀತಿಸ್ತೀನಿ ಅಂತಂದ್ರೆ.  ಬಹುಶಃ ನಿಮಗೂ ಗೊತ್ತಾಗುತ್ತೋ ಇಲ್ಲವೋ, ನನಗೆ ಗೊತ್ತಿಲ್ಲ.  ಖಾತ್ರಿಯೂ ಇಲ್ಲ.  ಷುಡ್ ಐ ಕೇರ್?  ಉದ್ಧಟತನಕ್ಕೆ ಕ್ಷಮೆ ಇರಲಿ. 

ಒಂದ್ಸಾರಿ ಏನಾಯ್ತೂಂದರೆ:
ನಾನೂ ನನ್ನ ದೊಡ್ಡಮ್ಮನ ಮಗ ಸುಬ್ಬು ಇಬ್ಬರೂ ನಮ್ಮ ಮಾವನ ಹಳ್ಳಿಗೆ ಹೋಗಬೇಕಾಯ್ತು.  ನಾವಿಬ್ಬರೂ ಅಕ್ಕ ತಂಗಿಯರನ್ನೆ ಮದುವೆಯಾಗಿರೋದು.  - ದಾರೀಲಿ ಗೌರಿಬಿದನೂರಿಗೆ ಸ್ವಲ್ಪ ದೂರದಲ್ಲಿ ಮೈನ್‌ರೋಡಿನಲ್ಲಿ ಅಂದರೆ ಮಾಕಳಿದುರ್ಗದ ಬಳಿ ಘಾಟಿಸುಬ್ರಹ್ಮಣ್ಯಕ್ಕೆ ದಾರಿ ಸೂಚನಾ ಫಲಕವೊಂದು ಇತ್ತು.  ಆಸ್ತಿಕನಾದ ಸುಬ್ಬನಿಗೆ ಅದು ಕಣ್ಣಿಗೆ ಬಿದ್ದು ಕೂಗಿಕೊಂಡ;
"ಲೋ ಚಂದ್ರ, ಇಷ್ಟು ಹತ್ತಿರ ಬಂದಿದ್ದೀವಿ, ದೇವ್ರನ್ನ ನೋಡ್ಕೊಂಡು ಬಂದುಬಿಡೋಣ."
ಸಮಯ ಬಹಳ ಕಡಿಮೆಯಿತ್ತು, ಅಪರಿಚಿತವಾದ ಹಾದಿ.  ಅವನ ಬೇಡಿಕೆಯನ್ನ ನಿರಾಕರಿಸಿ ನನ್ನ ಲಟಾರಿ ಗಾಡಿಯಲ್ಲಿ ಹಾಗೂ ಹೀಗೂ ಅರ್ಧರಾತ್ರಿ ತಲುಪಿದೆ.  ದಾರಿಯಲ್ಲಿ ಷೀಲ್ಡ್‌ಸ್ಕ್ರೂಗಳು ಕಳಚಿ ಹೋಗಿ, ಸೈಲೆನ್ಸರ್ ಕಳಚಿಕೊಂಡು ಅವಸ್ಥೆಯೋ ಅವಸ್ಥೆ.  ಆದರೂ ಸಿಂಪ್ಲಿ ಐ ಲವ್ ದಿಸ್ ಮೊಪೆಡ್.  ಸುಮಾರು ೧೩೦ ಕಿ.ಮೀ ಇಬ್ಬರನ್ನು ಹೊತ್ತು ತಂದಿತ್ತು!

ಅಲ್ಲಿಯ ಕೆಲಸ ಮುಗಿಸಿ ಎರಡು ದಿನದ ನಂತರ ಆ ಹಳ್ಳಿ ಬಿಟ್ಟು ಮರಳಿ ಹೊರೆಟೆವು.  ಹಿಂದೂಪುರದಲ್ಲಿ ಒಂದು ಕಡೆ ಸ್ಕಿಡ್ ಆಯಿತು.  ಸ್ವಲ್ಪ ದೂರ ಬಂದ ಮೇಲೆ ಹಿಂದಿನ ಬ್ರೇಕ್ ಪೂರ್ತಾ ಕೈ ಕೊಡಲಾರಂಭಿಸಿತು.  ಆದರೂ ನನ್ನ ಮೊಪೆಡ್ ಮೇಲೆ ನನಗೆ ಬಹಳ ನಂಬಿಕೆ.  ಒಳ್ಳೆಯ ಹಿಡಿತವೂ ಇತ್ತು.  ಗೌರಿಬಿದನೂರಿನಲ್ಲಿ ‘ಬ್ರೇಕ್ ಷೂ’ ಗೆ ಹುಡುಕಿದೆ.  ಹೊಂದುವಂತದ್ದು ದೊರೆಯದೆ ವ್ಯರ್ಥ ಪ್ರಯತ್ನದನಂತರ ಹೊರಟು ಬಿಟ್ಟೆ.  ಸುಬ್ಬ ಸ್ವಲ್ಪ ದೂರ ಓಡಿಸುತ್ತೇನೆಂದು ತಾನು ಸ್ಟೀರಿಂಗ್ ಹಿಡಿದಿದ್ದ. 

ಘಾಟಿಸುಬ್ರಹ್ಮಣ್ಯದ ಸೂಚಿಫಲಕ ನೋಡಿದೊಡನೆ ನಾಸ್ತಿಕನಾದ ನಾನು ಸುಬ್ಬನ ಮುಖ ನೋಡಿದೆ.  ಹೋಗಬೇಕೆಂಬ ಅವನ ಆಸಕ್ತಿಯನ್ನು ಶ್ರದ್ಧೆಯನ್ನು ತುಳಿಯುವುದು ನನ್ನಿಂದ ಅಸಾಧ್ಯವಾಯಿತು.

ಸ್ವಲ್ಪ ಹೊತ್ತು ಗಾಡಿಗೆ ವಿಶ್ರಾಂತಿ ಕೊಟ್ಟು ಸಿಗರೇಟು ಸೇದಿದನಂತರ ಸ್ಟೀರಿಂಗ್ ಹಿಡಿದೆ.  ಮೈನ್‌ರೋಡಿನಿಂದ ಸ್ವಲ್ಪ ಒಳಕ್ಕೆ ನೋಡಿದೊಡನೆ.  ಇಳುಕಲಿನ ತಿರುವು ಹಾದಿ.  ಘಟ್ಟದ ಕಮರಿಗಳು ರಸ್ತೆ ಬದಿಗೆ, ಹಿಂದಿನ ಬ್ರೇಕ್ ಇಲ್ಲ.  ಮುಂದಿನ ಬ್ರೇಕ್‌ನಲ್ಲೇ ವೇಗವನ್ನು ನಿಯಂತ್ರಿಸಬೇಕು.  ಧೈರ್ಯ ಮಾಡಿ ಆಕ್ಸಿಲರೇಟರ್ ಆಫ್ ಮಾಡಿದೆ.  ಇಳುಕಲಿನಲ್ಲಿ ಗಾಡಿ ಅಂದಾಜು ಮೀರಿ ವೇಗವಾಯ್ತು- ೫೦-೬೦ ಕಿ.ಮೀ. ವೇಗ.  ತಿರುವೊಂದರಲ್ಲಿ ಗಾಡಿ ನಿಯಂತ್ರಣಕ್ಕೆ ಸಿಗದೆ ಸ್ಕಿಡ್ ಆಯಿತು.  ಇಬ್ಬರಿಗೂ ಹೆಚ್ಚೇನು ಪೆಟ್ಟು ತಾಗಲಿಲ್ಲ, ಗಾಡಿಗೂ ಏನಾಗಲಿಲ್ಲ!

ಮತ್ತೆ ಇಳುಕಲಿನಲ್ಲಿ ಹೊರಟೆವು.  ವೇಗವೋ ವೇಗ.  ಬ್ರೇಕ್ ಹಾಕಿದೆ.  ಬ್ರೇಕ್ ಕೇಬಲ್ ತುಂಡರಿಸಿ ಹೋಗಿತ್ತು.  ಎಡಗಡೆಗೆ ಬೃಹತ್ ಬಂಡೆಗಳು- ಗುದ್ದಿದರೆ ‘ಸ್ಪಾಟ್ ಡೆತ್’ ರಿಪೋರ್ಟ್‌ಗಳಲ್ಲಿ ನಮ್ಮ ಹೆಸರಷ್ಟೆ ದಾಖಲಾಗುತ್ತಿತ್ತು.  ಬಲಗಡೆಗೆ ಆಳವಾದ ಕಮರಿ.  ಹೀಗೂ ಇಲ್ಲ- ಹಾಗೂ ಇಲ್ಲದಂತಹ ಸ್ಥಿತಿಯಲ್ಲಿ ಗಾಬರಿಯಿಂದ ಕೂಗಿಕೊಂಡೆ- "ಸುಬ್ಬ ಬ್ರೇಕ್ ಇಲ್ಲ, ದುಮುಕಿ ಬಿಡು" - ಗಾಡಿಯ ವೇಗಕ್ಕೆ ಅವನೂ ಸಹ ತಬ್ಬಿಬ್ಬಾಗಿದ್ದಿರಬಹುದು.  ಕೂತೆ ಇದ್ದ.  ಹೆಬ್ಬಂಡೆಗಳಿಗಿಂತ ಕಮರಿಯೆ ಮೇಲು ಎಂದು ಸ್ಪ್ಲಿಟ್ ಆಫ್ ಸೆಕೆಂಡ್‌ನಲ್ಲಿ ತೀರ್ಮಾನಿಸಿ ಗಾಡಿಯನ್ನು ಬಲಗಡೆ ಕಮರಿಗೆ ನುಗ್ಗಿಸಿದೆ.  ಎಂಟು ಹತ್ತು ಅಡಿಗಳ ಕಮರಿಗೆ ಐವತ್ತು ಅರವತ್ತು ಕಿ.ಮೀ ವೇಗದಲ್ಲಿ ೧೭೦ ಕೆ.ಜಿ ತೂಕದ ನಾವುಗಳು ಬಿದ್ದೆವು.  ನಂಬಿದರೆ ನಂಬಿ- ಬಿಟ್ಟರೆ ಬಿಡಿ, ನನಗೆ ಒಂದು ಚೂರೂ ಗಾಯವಾಗಿರಲಿಲ್ಲ.  ಸುಬ್ಬನಿಗೆ ಬಲ ಮೊಣಕಾಲಿನ ಕೆಳಗೆ ಒಂದಷ್ಟು ತರಚು ಗಾಯವಷ್ಟೆ.  ಗಾಡಿಯ ಸೀಟಷ್ಟೇ ಬೆಂಡ್ ಆಗಿತ್ತು.  ಉಳಿದಂತೆ ಹೆಡ್‌ಲೈಟ್ ಅಷ್ಟೆ ಸ್ವಲ್ಪ ಪೆಟ್ಟು ತಿಂದಿತ್ತು. 

ಸುಬ್ಬ, ಏನೂ ಅಗದ್ದಕ್ಕೆ ತನ್ನ ದೈವಶ್ರದ್ಧೆಯ ಅಹಂಕಾರ ಬೀಗಿ - ಪ್ರಯಾಣ ಮುಂದುವರಿಸಲಾಗದ್ದಕ್ಕೆ ವ್ಯಥೆಪಟ್ಟು "ಮುಂದೊಮ್ಮೆ ಬಂದು ತನ್ನ ಕಾಣಿಕೆ ಸಲ್ಲಿಸುವುದಾಗಿ" ಬೇಡಿದ.  ನಾನು ನನ್ನ ಮೊಪೆಡ್‌ಗೆ ನಮಸ್ಕರಿಸಿದೆ.  ಆ ಮುಹೂರ್ತದಲ್ಲಿ ಮೊಪೆಡ್ ಬಗೆಗೆ ನನಗಿದ್ದ ಪ್ರೀತಿ ನೂರ್ಮಡಿಯಾಯಿತು.  ನನ್ನ ಮತ್ತು ಮೊಪೆಡ್‌ನ ಸಂಬಂಧದಲ್ಲಿ ಇಂತಹ ಮುಹೂರ್ತಗಳೆಷ್ಟೋ ಇದ್ದವು.  ಉಡುಪು ಕಳಚಿ ನನ್ನ ಬೆತ್ತಲೆ ಮೈ ನೋಡಿದರೆ ಅಲ್ಲೊಂದು ಇಲ್ಲೊಂದು ಗೀರು ಗಾಯದ ಗುರುತು ಕಂಡಾತು. 

ಇಂತಹ ಮೊಪೆಡ್ಡನ್ನ ಮಾರು ಅನ್ನುತ್ತಾರಲ್ಲ, ಮೂದಲಿಸುತ್ತಾರಲ್ಲ, ಛೆ ಎಲ್ಲದರಿಂದಲೂ ಪಾರು ಮಾಡಿದ ಆ ಮೊಪೆಡ್ಡನ್ನ ನಾನು ಜೀವಕ್ಕಿಂತಲೂ ಅಧಿಕವಾಗಿ ಪ್ರೀತಿಸುತ್ತೇನೆ.  ಮಾರಾಟದ ಸಲಹೆ ನೀಡಿದವರನ್ನು, ಮೂದಲಿಸುವವರನ್ನು ಕಂಡರೆ ನನಗೆ ವಿಪರೀತ ಸಿಟ್ಟು.  ಆ ಸಿಟ್ಟನ್ನು ಎಂದೂ ತೋರಿಸದೆ ತೀರಾ ಗುಪ್ತವಾಗಿ ಇಟ್ಟು ನನ್ನ ಮೊಪೆಡ್ಡನ್ನ ಪ್ರೀತಿಸುತ್ತೇನೆ.  ಅರ್ಥವಾಗುತ್ತಾ, ನಿಮಗೆ?

        ಭಾಗ-೨
ಶಿವಾ.  .  .  .  .
ನೀವು ಅವನನ್ನು ನೋಡಬೇಕು.  ಕಪ್ಪು ಬಣ್ಣದ ತಮಿಳಿನವ.  ಕಪ್ಪಾದ ಮೈಗೆಲ್ಲಾ ಗ್ರೀಸು.  ಆಯಿಲ್ ಮಸಿ, ದೊಲ ದೊಲ ಪ್ಯಾಂಟು, ಶರಟು ಕಡುಕರೆ.  ೧೮-೨೦ ವರ್ಷದವ.  ಅಗಾಗ್ಯೆ ರಿಪೇರಿಯಲ್ಲಿ ಮೋಸ ಮಾಡುತ್ತಾನೆ.  ಅವನು ಕೆಲಸ ಮಾಡುವುದನ್ನು ನೋಡಿದರೆ ನನಗೆ ಒಮ್ಮೊಮ್ಮೆ ಅನ್ನಿಸುತ್ತದೆ- ‘ವರ್ಕ್‌ಶಾಪ್ ಎನ್ನುವ ಈ ಪೆಟ್ಟಿಗೆ ಅಂಗಡಿಯಲ್ಲೇ ಇವನು ಹುಟ್ಟಿದನೇನೊ’- ಎಂದು.  ಕೆಲಸಕ್ಕೆ, ಮನರಂಜನೆಗೆ, ಸ್ನೇಹಿತರೊಂದಿಗೆ ಹರಟುವುದಕ್ಕೆ, ಹಾದಿಬದಿಯ ಹುಡುಗಿಯರನ್ನು ಕಂಡು ಕಣ್ಣಲ್ಲಿ ಬೆಳಕು ತುಂಬಿಕೊಳ್ಳುವುದಕ್ಕೂ ಈ ವರ್ಕ್‌ಶಾಪ್ ನೆಲೆಯಾಗಿತ್ತು- ಸ್ಥಾವರವಾಗಿತ್ತು.  ಸ್ಪಾನರ್, ಸ್ಕ್ರೂ ಡ್ರೈವರ್, ಪ್ಲೇಯರ್‌ಗಳು ಅವನ ಆಟಿಕೆಗಳಾಗಿದ್ದವು.  ಆ ಜಾಗ ಮತ್ತು ತನ್ನ ಕೆಲಸದಲ್ಲಿ, ತನ್ನ ವಸ್ತುಗಳಲ್ಲಿ ಅವನಿಗೆ ಎಷ್ಟು ನಂಬಿಕೆಯೆಂದರೆ- ಅವನಿಗೆ ಒಮ್ಮೆ ಕಾಲ್ಬೆರಳು ಜಜ್ಜಿ ಹೋಗಿತ್ತು..  ಕ್ರೂಡ್ ಆಯಿಲ್ಲನ್ನು, ಗ್ರೀಸನ್ನು ಜಜ್ಜಿಹೋದ ಭಾಗಕ್ಕೆ ಗಸಗಸ ತಿಕ್ಕುತ್ತಿದ್ದ! "ಏನಯ್ಯ?"  ಎಂದರೆ "ಸಾರ್ ಎಂತಾ ಗಾಯವಾದ್ರೂ ಆಯಿಲ್, ಗ್ರೀಸ್ ಹಚ್ಚಿಬಿಟ್ರೆ ಮಾಯವಾಗುತ್ತೆ." ಎಂದು ಹಲ್ಕಿರಿದಿದ್ದ.  ಹೈಜೀನಿಕ್, ಸ್ಟೆರಿಲೈಜೇಷನ್, ಸೆಪ್ಟಿಕ್, ಈ ಪದಗಳೆಲ್ಲ ಅವನು ಕೇಳಿಯೂ ಇಲ್ಲ.  ವಾದಿಸಿದರೆ ಅವನಿಗೆ ಅರ್ಥವೂ ಆಗುವುದಿಲ್ಲ.  ತನ್ನ ಫಸ್ಟ್‌ಐಡ್ ಮೊದಲು, ಅನಂತರವೆ ಡಾಕ್ಟರ್, ನಾನು ಹೇಳಬಹುದಾದಷ್ಟು ಹೇಳಿ ಸುಮ್ಮನಾದೆ.  ಒಂದೆರಡು ದಿನ ಬಿಟ್ಟು ನೋಡಿದಾಗ, ‘ಮಿರಾಕಲ್’ ಎಂಬಂತೆ ಗಾಯ ಮಾಗಿಹೋಗಿತ್ತು!

ಕೆಲಸದಲ್ಲಿ ಅವನಿಗೆ ಎಂತದೋ ಖುಶಿ.  ದುಡ್ಡು ಬರುತ್ತದೆ ಎಂಬುದಕ್ಕಷ್ಟೆ ಅಲ್ಲ.  ಬೇರೇನೋ ತೆರೆನಾದ ಖುಷಿ.  ತನ್ನ ಕೈಚಳಕಕ್ಕೆ-ತನ್ನ ಜಾಣ್ಮೆಗೆ ತನ್ನ ನಯ ವಿನಯಕ್ಕೆ ತಾನೆ ಮರುಳಾದಂತೆ.  ಅದರಲ್ಲೇ ಮಗ್ನಗೊಂಡ ಖುಷಿ.  ಈ ತೆರೆನಾದ ಖುಷಿ ಅವನಿಗೆ ಬೇರೆಲ್ಲು ಸಿಗುವುದಿಲ್ಲ.  ಅವನ ತಂದೆ ತಾಯಿಯರು ಒಟ್ಟುಗೂಡಿ ಅಂಗಡಿ ಬೀದಿಯಲ್ಲಿ ಸಂಜೆ ಹೊತ್ತು ಬೋಂಡ ಬಜ್ಜಿ ವಡೆ ಸುಟ್ಟು ಮಾರುತ್ತಿದ್ದರು.  ವರ್ಕ್‌ಶಾಪ್‌ನಂತರ ಶಿವ ಅವರಿಗೆ ಮಾರಾಟದ ಸಮಯದಲ್ಲಿ ಸಹಾಯಕನಾಗಿ ನಿಲ್ಲುತ್ತಿದ್ದ.  ಆಗ ಅವನು ಸಪ್ಪಗೆ ಇರುತ್ತಿದ್ದುದನ್ನು ನೋಡಿ ನಗಿಸಲು ವೃಥಾ ಪ್ರಯತ್ನಿಸುತ್ತಿದ್ದೆ.  ಅವನು ಅಷ್ಟಷ್ಟೆ ಸಪ್ಪಗಿರುತ್ತಿದ್ದ. 

ಯಾವುದಾದರೂ ಒಂದು ಗಾಡಿಯೊಡನೆ ಅವನು ಸಾಧಿಸುವ ತಾದಾತ್ಮ್ಯದಲ್ಲಿ ಆಗಾಗ್ಯೆ ನಾನೂ ತಾದಾತ್ಮ್ಯ ಹೊಂದಿದ್ದಿದೆ. 

ಆದರೆ ಅವನು ಎಗ್ಗಮುಗ್ಗಾ ಸುಲಿಯುವುದು ನೋಡಿ ಜಗಳ ಮಾಡಿ ಅವನಲ್ಲಿ ಹೋಗುವುದು ಬಿಟ್ಟುಬಿಟ್ಟೆ. 

ಬೇರೆ ಮೆಕ್ಯಾನಿಕ್‌ಗಳ ಬಳಿ ನನ್ನ ಗಾಡಿ ತೆಗೆದುಕೊಂಡು ಹೋದಾಗ ಅವರ ಆಟಾಟೋಪ ಗಾಡಿ ಮೇಲೆ ಇರದೆ ಗಿರಾಕಿಗಳ ಮೇಲೂ ಇರುತ್ತಿತ್ತು.  ಹೀಗಾಗಿದೆ- ಹೀಗಾಗಿರುವುದರಿಂದ ಹೀಗೇನೆ, ಇಂತಿಂತದನ್ನ ಬದಲಾಯಿಸಬೇಕು ಎಂಬ ತರ್ಕವಿರುತ್ತಿರಲಿಲ್ಲ.  ಗಾಡಿ - ಗಿರಾಕಿ ಇಬ್ಬರೂ ತಮ್ಮ ಮುಲಾಜಿನಲ್ಲಿ ಇರುವಂತೆ , ತಾತ್ಸಾರ, ಉಪೇಕ್ಷೆ, ಉದಾಸೀನದಿಂದ "ತನ್ರಿ ಹಾಕ್ಕೊಡ್ತೀನಿ".  ಶಿವ ಎಂದೂ ಹಾಗೆ ಇರುತ್ತಿರಲಿಲ್ಲ.  ಪ್ರೀತಿಯಿಂದ ಎಂತಹ ಲಡಾಸ್ ಗಾಡಿಯಾದರೂ ತಡವುತ್ತಿದ್ದ.  ಲೋಪದೋಷಗಳನ್ನು ವಿವರಿಸಿ ಮನವರಿಕೆ ಮಾಡಿಕೊಡುತ್ತಿದ್ದ.  ಬಹಳ ದಿನ ಅವನ ರೀತಿ ನೀತಿಗು, ಬೇರೆ ಮೆಕ್ಯಾನಿಕ್‌ಗಳ ರೀತಿನೀತಿಗೂ ಹೋಲಿಸಿ ಅವನೊಂದಿಗೆ ಜಗಳವಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿದ್ದೂ ಉಂಟು. 

ಮೊಪೆಡ್ಡನ್ನು ಅವನ ಮುಂದೆಯೆ ಬೇರೆ ಮೆಕ್ಯಾನಿಕ್ ಬಳಿಗೆ ನೂಕಿಕೊಂಡು ಹೋಗುವಾಗ ಅವನು ಸಪ್ಪೆಯಾಗಿ ಕೂತಿರುತ್ತಿದ್ದ.  ನಾನು ಅವನ ಕಡೆ ಗಮನಿಸಿಯೂ ಗಮನಿಸದವನಂತೆ ಹೊರಟು ಬಿಡುತ್ತಿದ್ದೆ.  ಅವನೂ ಪಶ್ಚಾತ್ತಾಪ ಪಡಲಿ ಎಂದೊಮ್ಮೆ ಅನ್ನಿಸಿದರೆ, ಮತ್ತೊಮ್ಮೆ ಗಾಡಿ ನೂಕಿಕೊಂಡು ಹೊರಟಿರುತ್ತಿದ್ದುದನ್ನು ನೋಡಿ ಅವನು ಕಿಸಕ್ಕನೆ ನಕ್ಕುಬಿಟ್ಟರೆ ಎಂಬ ಭಯ ಇರುತ್ತಿತ್ತು.  ಆ ಭಯದಿಂದಲೆ ನಾನು ಅವನ ಕಡೆ ನೋಡುತ್ತಿದ್ದೆ.  ವ್ಯಂಗ್ಯವಾಗಲಿ, ಪರಿಹಾಸ್ಯದ ನಗುವಾಗಲಿ ಇರುತ್ತಿರಲಿಲ್ಲ.  ಖಿನ್ನನಾಗಿರುತ್ತಿದ್ದ ಆಷ್ಟೆ.  ಅವನ ಖಿನ್ನತೆಯನ್ನು ನೋಡುತ್ತಾ ಹೋಗುತ್ತಿದ್ದೆ.  ಒಳಗೆ ಎಂಥದೋ ಖುಷಿಯಾಗುತ್ತಿತ್ತು.  ಆದರೆ ಅವನ ಖಿನ್ನತೆಯೆ ನನ್ನದೂ ಆಗಿ, ಒಳಗೊಳಗೇ ಎಂಥದೋ ವಿಲವಿಲ.... 
*
*
*
ಏರು ರಸ್ತೆಯಲ್ಲಿ ಇಬ್ಬರನ್ನು ಹೊತ್ತು ನನ್ನ ಮೊಪೆಡ್ ಸರಾಗವಾಗಿ ನುಗ್ಗುತ್ತಿದ್ದ ಕಾಲ ಸರಿದು ಬಹಳಾ ದಿನಗಳೆ ಆಗಿದ್ದವು.  ತೀರಾ ಇತ್ತೀಚೆಗೆ ಒಬ್ಬನನ್ನೇ ಅದು ಎಳೆಯುತ್ತಿರಲಿಲ್ಲ.  ನಿತ್ರಾಣವಾಗಿಹೋಗಿತ್ತು.  ರಾತ್ರಿ ಪಾಳಿಗೆ ಅದನ್ನು ತೆಗೆದುಕೊಂಡು ಹೋಗಿ ಬಹಳ ಪ್ರಯಾಸ ಪಟ್ಟಿದ್ದಿದೆ.  ಈಗೀಗಂತೂ ಏರು ರಸ್ತೆಯಲ್ಲಿ ಒಬ್ಬನನ್ನು ಅದು ಎಳೆಯುವುದಿರಲಿ, ಸಮತಟ್ಟಾದ ರಸ್ತೆಯಲ್ಲಿಯೂ ಪೆಡಲ್ ಮಾಡಬೇಕಾದ ಸ್ಥಿತಿಗೆ ಅದು ಇಳಿದಿತ್ತು. 

ಓಡಿಸುವುದನ್ನು ನಿಲ್ಲಿಸಿದರೂ ಮೊಪೆಡ್ ಬಿಟ್ಟು ಇರಲಾಗಲಿಲ್ಲ.  ಮೂಲೆಯಲ್ಲಿ ತಳ್ಳಿದ್ದ ಅದನ್ನು ನೋಡಿದಾಗ, ಅದರ ಹರಿದು ಹೋಗಿದ್ದ ಸೀಟು, ಟೈಲ್ ಲ್ಯಾಂಪ್ ಸೆಟ್‌ನ ಭಗ್ನಾವಸ್ಥೆ, ಮೂಲ ಬಣ್ಣದ ಕುರುಹು ಇರದಿದ್ದುದು, ಅಲ್ಲಲ್ಲಿ ತುಕ್ಕು ಹಿಡಿದದ್ದು ಕಂಡು ಜಿಗುಪ್ಸೆ ಉಂಟಾಯಿತು. 

ಎಲ್ಲವನ್ನು ಬದಲಾಯಿಸಿ ಮೊಪೆಡ್ಡನ್ನು ಪೂರ್ವಸ್ಥಿತಿಗೆ ತರಲು ತೀರ್ಮಾನಿಸಿದ್ದೆ.  ಮಾರಲು ತೀರ್ಮಾನಿಸಿದ್ದಿದ್ದರೆ ಸಾವಿರ ರೂಗಳೂ ಬರುತ್ತಿರಲಿಲ್ಲ!

ಪೂರ್ವಸ್ಥಿತಿಗೆ ತರುವುದೆಂದೇನೋ ತೀರ್ಮಾನಿಸಿದ್ದಾಯಿತು.  ಆದರೆ ಅದನ್ನು ಬೇರೆ ಮೆಕ್ಯಾನಿಕ್‌ಗಳ ಬಳಿಗೆ ಅದನ್ನು ನೂಕಿಕೊಂಡು ಒಯ್ಯಲು ಬೇಕಿರಲಿಲ್ಲ. 

ಹೇಗಾದರೂ ಆಗಲಿ, ಶಿವನನ್ನು ಒಮ್ಮೆ ಮಾತನಾಡಿಸಿ ಒಂದು ನಿರ್ಧಾರಕ್ಕೆ ಬರುವುದು ಒಳ್ಳೆಯದು ಎಂದನ್ನಿಸಿತು.  ಹೊರಟೆ. 
*
*
*
ಮುರುಕಲು ಕುರ್ಚಿ ಮೇಲೆ ಕೂತಿದ್ದ.  ಸಪ್ಪಗಿದ್ದ.  ಬಾಗಿಲಲ್ಲಿ ನನ್ನ ನೋಡಿದವನೆ ಅವನ ಕಣ್ಣುಗಳು ಮಿನುಗಿದವು. 
"ಏನಣ್ಣಾ.." - ಅದೇ ವಿನಯ. 
"ಗಾಡಿ ಪಿಕಪ್ ಇಲ್ಲ.  ಸೈಲೆನ್ಸರ್ ಕ್ಲೀನ್ ಮಾಡಿಸಿದ್ದಾಯ್ತು.  ಡೀಕಾರ್ಬನ್ ಮಾಡಿಸಿಯಾಯ್ತು.  ಆಯಿಲ್ ಸೀಲ್ ಚೇಂಜ್ ಮಾಡ್ಸಿಯಾಯ್ತು, ಪ್ರಯೋಜನವಿಲ್ಲ..."
"ಗಾಡಿ ತೊಗೊಂಬನ್ನಿ , ಬೋರ್ ಚೆಕ್ ಮಾಡಿ ಹೇಳ್ತೀನಿ.. 
"ಗಾಡಿಯನ್ನು ತಂದೆ, ಚಕ ಚಕ ಬೋರ್ ಬಿಚ್ಚಿದ." ಹೊಸಾ ಬೋರ್ ಹಾಕಿಸ್‌ಬೇಕು- ಚೈನು -ಸ್ಪ್ರಾಕೆಟ್ ಹೋಗಿವೆ...."
ಹೊಸಬೋರು, ಚೈನುಸ್ಪ್ರಾಕೆಟ್‌ಗಳು, ಹೊಸಾ ಸೀಟು, ಸೈಡ್‌ಮಿರರ್, ಟೈಲ್‌ಲ್ಯಾಂಪ್ ಸೆಟ್ ಹೀಗೆ ಎಲ್ಲ ಹಳೆಯದನ್ನು ಕಿತ್ತು ಹಾಕಿ ಹೊಸದನ್ನು ಹಾಕಲು ತೀರ್ಮಾನಿಸಿದೆ.  ಸಾವಿರದ ಮುನ್ನೂರ್ ರೂಪಾಯಿಗಳ ಬಾಬತ್ತು.  ಆದರೂ ಶಿವನ ಮೇಲೆ ನಂಬಿಕೆಯಿತ್ತು. 

ಸಾವಿರ ರುಪಾಯಿ ಅಡ್ವಾನ್ಸ್ ಎಣಿಸಿ ಹೊರಟಾಗ ಗಮನಕ್ಕೆ ಬಂತು, ಕಾಲಿಗೆ ಬ್ಯಾಂಡೇಜು ಕಟ್ಟಿದ್ದ.  ಅದೆ ಕಾಲು, ಅದೆ ತೆರನಾದ ಬ್ಯಾಂಡೇಜು!
"ಏನೋ ಅದು?"
"ಕಲ್ಲೇಟು ಬಿತ್ತು ಸಾರ್.  ಜೊತೆಗೆ ಕೀವು ರಕ್ತ."
"ಕುಂಟುತ್ತಲೇ ಗಾಡಿಯ ಎಲ್ಲಾ ಭಾಗಗಳನ್ನು ಕಳಚಿ ಹಾಕುತ್ತ ನಗುನಗುತ್ತಾ ಗಾಡಿಯ ಬಗ್ಗೆ ಮಾತನಾಡಲು ತೊಡಗಿದ.  ನಾನು ಬಹಳ ಹೊತ್ತು ಜೊತೆಗಿದ್ದೆ.  ಏನೋ ಖುಷಿ ಖುಷಿ.  ಅವನಿಗೂ ಹಾಗೆಯೇ ಇರಬೇಕು. 
"ಗ್ರೀಸ್ ಆಯಿಲ್ ಹಚ್ಚಲಿಲ್ಲವೇನೋ?"
- ಅಲ್ಲಿಂದ ಹೊರಟಾಗ ಹಾಸ್ಯವಾಡಿದೆ. 
"ಸುಮ್ನಿರಿ ಸಾರ್, ನನ್ನ ಕಾಲು ನೋವು ನನಗೆ.."
ಅವನ ಕಣ್ಣುಗಳು ಮಿನುಗುತ್ತಲೇ ಇದ್ದವು.  ನನ್ನ ಕಣ್ಣುಗಳು ಸಹ ಅರಳಿದ್ದವು. 
*
*
*
ಮಾರನೆ ದಿನ ಗಾಡಿ ತಯಾರಾಗಿತ್ತು.  ಶಿವಾ ಗಾಡಿ ಟ್ರಯಲ್‌ಗೆ ತೆಗೆದುಕೊಂಡು ಹೋಗುವ ಮುನ್ನ
"ಸಾರ್ ಕಿಕ್ ಮಾಡಿ ಸ್ಟಾರ್ಟ್ ಮಾಡಿಕೊಡಿ"- ಎಂದ. 
ವಿಪರೀತವಾಗಿ ಕುಂಟುತ್ತಾ ನಡೆಯುತ್ತಿದ್ದ ಅವನನ್ನು ನೋಡಿ ಅಯ್ಯೋ ಎಂದನ್ನಿಸಿತು.  ಕುಂಟುತ್ತಲೇ ಗಾಡಿಯನ್ನು ಸಿದ್ದ ಮಾಡಿದ್ದ. 
"ಪ್ಯಾಂಟು ಮೇಲೆತ್ತು." ಎಂದೆ.  ಮಾತನಾಡದೆ ಪ್ಯಾಂಟು ಮೇಲೆತ್ತಿದ್ದ.  ತೊಡೆಯಿಂದ ಅಂಗಾಲಿನವರೆಗೆ ಕಾಲು ವಿಪರೀತವಾಗಿ ಊದಿಕೊಂಡಿತ್ತು.  ಕೊಳಕೊಳ ಬಿಗಿದುಕೊಂಡಂತೆ.  ಶವದ ಕಾಲಿನಂತೆ.  ನೋಡಿ ದಂಗಾದೆ. 
"ವಿಪರೀತ ನೋಯುತ್ತೆ, ಸಾರ್."
"ಮೊದಲು ಇವತ್ತೆ ಡಾಕ್ಟರ್ ಹತ್ರ ಹೋಗು, ತಡ ಮಾಡ್ಬೇಡ..."
ಎಂದೆನ್ನುತ್ತ ಗಾಡಿಯನ್ನ ಪೆಡಲ್-ಕಿಕ್ ಮಾಡಿದೆ.  ಒಂದೆ ಕಿಕ್‌ಗೆ ಸ್ಟಾರ್ಟ್ ಆಯಿತು.  ನನಗೋ ಖುಷಿಯಾಯಾಯಿತು.  ಗಾಡಿ ಟ್ರಯಲ್‌ಗೆ ತೆಗೆದುಕೊಡು ಹೋದ.  ವೇಗದಿಂದ ಮುನ್ನುಗ್ಗುತ್ತಾ ಹೋದ, ಗಾಡಿ ಕಣ್ಮರೆಯಾಗುವವರೆಗೆ ನೋಡುತ್ತಾ ನಿಂತಿದ್ದೆ.  ಏನನ್ನೋ ಸಾಧಿಸಿದ ತೃಪ್ತಿ ಇತ್ತು. 
ಟ್ರಯಲ್‌ನಿಂದ ಹಿಂತಿರುಗಿದ ಅವನಲ್ಲೂ ಅದೇ ತೃಪ್ತಿ ಇತ್ತು. 
ನಾನು ಗಾಡಿ ತೆಗೆದುಕೊಂಡು ಹೊರಟಾಗ ಅವನಿಗೆ ಡಾಕ್ಟರ್ ಬಳಿ ಹೋಗಲು ಮತ್ತೊಮ್ಮೆ ಸೂಚಿಸುವುದನ್ನು ಮರೆಯಲಿಲ್ಲ. 
*
*
*
ಎಡಕ್ಕೆ ಬಗ್ಗಿಸಿ, ಬಲಕ್ಕೆ ಬಾಗಿಸಿ, ನುಗ್ಗಿಸಿ ಒಂದಷ್ಟು ಗಾಡಿಗಳನ್ನು ಹಿಂದಕ್ಕೆ ಹಾಕುವ ಹೊಸ ವೇಗದಲ್ಲಿ ಮೈ ಮರೆತು, ಸುಖದಲ್ಲಿದ್ದೆ.  ಆಚೀಚಿನ ಬಗ್ಗೆ ಪ್ರಜ್ಞೆಯನ್ನೇ ಕಳೆದು ಕೊಂಡಿದ್ದೆ. 

ಗಾಡಿಗೂ ನನಗೂ ಹೊಸತೆ ಆದ ಜನ್ಮ ಸಿಕ್ಕಂತಾಗಿತ್ತು.  ಸುಮಾರು ಒಂದು ತಿಂಗಳು ಶಿವಾನನ್ನು ನೋಡುವ ಅವಕಾಶವೇ ಆಗಲಿಲ್ಲ.  ಸಂದರ್ಭವೂ ದೊರೆಯಲಿಲ್ಲ. 

ಒಂದುದಿನ ಅವನ ವರ್ಕ್‌ಶಾಪ್ ಬಳಿ ಹೋದೆ.  ನಿರಿಕ್ಷಿಸಿಯೇ ಇರಲಿಲ್ಲ.  ಕುರ್ಚಿ ಮೇಲೆ ಸಪ್ಪಗೆ ಕುಳಿತಿದ್ದ.  ಬಲಗಾಲು ಇರಲೇ ಇಲ್ಲ! ಏನಾಯ್ತೆಂದು ಕೇಳಲು ಬಾಯೇ ಬರಲಿಲ್ಲ.  ಆದರೂ ಕೇಳಿದಾಗ:
"ಹದಿನೈದು ದಿನದಾಗೆ ನೀವು ಹೇಳ್ದ ಹಾಗೇನೆ ಆಸ್ಪತ್ರೆಗೆ ಹೋದೆ.  ಅಡ್ಮಿಟ್ ಮಾಡ್ಕೊಂಡ್ರು.  ಅದೆಂತದೋ ಗ್ಯಾಂಗ್‌ಇನೊ ಪಾಂಗ್ರೀನೊ ಆಗಿದೆ, ಕತ್ತರಿಸಬೇಕೂಂದ್ರು- ಕತ್ತರಿಸಿದ್ರು.  ಇವತ್ತೇನೆ ಬಂದಿದ್ದು.  ಬಂದೋನು ಇಲ್ಲಿಗೆ ಬಂದ್ಬಿಟ್ಟೆ.  ನನ್ನ ತಮ್ಮ ಸೈಕಲ್ ಕ್ಯಾರಿಯರ್ ಮೇಲೆ ಕರಕೊಂಡು ಬಂದು ಬಿಟ್ಟುಹೋದ.  ಎರಡು ಮೂರು ಸಾರ್ತಿ ನಿಮ್ಮ ಆಫೀಸಿಗೆ ಫೋನ್ ಮಾಡ್ಸಿದ್ದೆ, ಸೀಟಲ್ಲಿರಲಿಲ್ಲಾಂದ್ರಂತೆ..."
- ಅವನು, ಹೇಳುವುದನ್ನು ತಲೆ ತಗ್ಗಿಸಿ ಕೇಳಿಸಿಕೊಳ್ಳುತ್ತಿದ್ದ ನಾನು ಅವನ ಕಣ್ಣಲ್ಲಿ ನೀರಿದ್ದಾತು ಎಂದು ನೋಡಿದೆ.  ನೀರಿರಲಿಲ್ಲ.  ಬದಲಿಗೆ ಮಿನುಗುತ್ತಿದ್ದವು. 
*
*
*
ಮತ್ತೆ ಅವನನ್ನು ನೋಡುವುದು ಒಂದು ವಾರವೇ ಆಯ್ತು.  ಅಂಗಡಿ ಬೀದಿಯ ಅವರ ಬೋಂಡಾ ಅಂಗಡಿ ಮುಂದೆ ನೋಡಿದೊಡನೆಯೇ ಕೇಳಿದ-
"ಏನ್ಸಾರ್, ನಡ್ಕೊಂಡು ಬರ್ತಿದೀರ..?"
"ಗಾಡಿ ಮಾರ್ಬಿಟ್ಟೆ ಕಣೋ...." ಅವನಿಗೆ ಅರ್ಥವಾಗಿತ್ತು.  ಕಣ್ಣಲ್ಲಿ ನೂರ್ಮಡಿ ಬೆಳಕು ತೋರಿದ.
"ಎಷ್ಟಕ್ಕೆ ಮಾರಿದ್ರಿ ಸಾರ್?"
"ಒಂದೂ ಕಾಲು ಸಾವಿರಕ್ಕೆ.."
"ನನಗೆ ಹೇಳಿದ್ದಿದ್ರೆ ಮೂರು ಸಾವಿರನಾದ್ರು ಕೊಡಿಸ್ತಿದ್‌ನಲ್ಲ ಸಾರ್..."
"ಹೋಗಲಿ ಬಿಡೋ, ನನ್ನ ಸ್ನೇಹಿತನಿಗೆ ಮಾರಿದ್ದು."
"ವರ್ಕ್‌ಶಾಪನ್ನೂ ಮಾರಿಬಿಟ್ಟೆ ಸಾರ್"- ನನಗೂ ಅರ್ಥವಾಯಿತು!
ಒಂದು ರೂಪಾಯಿಗೆ ಬೋಂಡಾ ವಡೆ ಕಟ್ಟಿಸಿಕೊಂಡು ಬಿಸಿ ಬಿಸಿ ಇದ್ದ ಅವನ್ನು ತಿನ್ನುತ್ತಾ- ಎಷ್ಟು ಬೇಗ ಚಕಚಕ ಬೋಂಡಾ ವಡೆ ಹಾಕುತ್ತಿದ್ದಾನೆ- ಇವನೇನು ಬೋಂಡಾ ವಡೆ ಬೇಯಿಸುತ್ತಲೇ ಹುಟ್ಟಿದನೋ ಎಂಬ ಸೋಜಿಗ ಪಡುತ್ತ ಬೆಚ್ಚಗೆ ಕುಳಿತಿದ್ದೆ. 
ಬಸ್ಸು ಬಂತು.  ವಿಪರೀತ ಜನ ಗಮನಿಸಿ ನಾನೂ ಚಕಚಕ ಎದ್ದು ಫುಟ್ ಬೋರ್ಡಿಗೆ ಜೋತುಬೀಳುತ್ತ ಎಷ್ಟು ಬೇಗ ಯಾವುದೇ ಬೇಸರವಿಲ್ಲದೆ, ಜಿಗುಪ್ಸೆ ಇಲ್ಲದೆ ಈ ಜನಸಂದಣಿ ಮಧ್ಯೆ ಬಸ್ಸಿನಲ್ಲಿ ಜಾಗ ದಕ್ಕಿಸಿಕೊಂಡೆ ಎಂದು ಆಶ್ಚರ್ಯವಾಗುತ್ತಿದ್ದಂತೆಯೆ ಶಿವನನ್ನು ನೋಡಿ ಕೂಗಿಕೊಂಡೆ-
"ಬರ್ತೀನೊ ಶಿವಾ, ಸಿಕ್ತೀನಿ..."
ಇನ್ನೊಂದು ಆಶ್ಚರ್ಯವೆಂದರೆ ಇವೆಲ್ಲಾ ತಾರ್ಕಿಕವೆ? ಗೊತ್ತಿಲ್ಲ!
              *****

ಕೀಲಿಕರಣ: ಶೇಖರ್‌ಪೂರ್ಣ

ನಗೆ ಡಂಗುರ - ೩

- ಪಟ್ಟಾಭಿ ಎ ಕೆ

ಈತ:  "ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?"
ಆತ:  "ಎರಡೂ ಒಂದೆ;  ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು.  ಬಗೆದಷ್ಟೂ ಮಾತು!"....

        *****

ಕಾಡು ಕುದುರೆಗೆ ಕೋಡು ಬಂತು

ಚಿತ್ರಕೃಪೆ: ಎ ಆರ್ ಮಣಿಕಾಂತರ ಬ್ಲಾಗು
ಭಾರತೀಯ ಸಾಹಿತ್ಯ ರಂಗ ಹೆಮ್ಮೆ ಪಡುವಂತೆ ಜಾನಪದ ಸೊಗಡಿನ ಸಾಹಿತಿ ಚಂದ್ರಶೇಖರ ಕಂಬಾರರು ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕನ್ನಡಿಗರ  ಸಂಭ್ರಮಕ್ಕೆ ದೊಡ್ಡ ಕಾರಣ. ಕಂಬಾರರಿಗೆ ಅಭಿನಂದನೆಗಳು.

ನಾಟಕಕಾರ, ಕವಿ, ಜಾನಪದ ತಜ್ಞ,  ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಅಧ್ಯಾಪಕ ಹೀಗೆ ಎಲ್ಲ ರಂಗಗಳಲ್ಲೂ  ಜಾನಪದದ ಛಾಪು ಮೂಡಿಸಿದ ದೈತ್ಯ ಪ್ರತಿಭೆ. "ಕಾಡು ಕುದುರೆ ಓಡಿಬಂದಿತ್ತಾsss.." ಹಾಡಿಗೆ ಸಂಗೀತ, ಸಾಹಿತ್ಯ ನೀಡಿದ ಕಂಬಾರರೂ ಜಾನಪದದ ಮೂಲದೊಂದಿಗೆ ಮನೆಮಾತಾದವರು. ಅವರು ನೆನಪಾಗೋದು ಈ ಹಾಡಿನ ಮೂಲಕವೇ.

ಎಂಟನೆ ಜ್ಞಾನಪೀಠ ಪಡೆದ ಕಂಬಾರರ ಚಿತ್ರವನ್ನೂ ಎಲ್ಲಾ ಶಾಲೆಗಳಲ್ಲೂ ಸೇರಿಸುವ ಕಂತ್ರಾತು ಹಿಡಿಯಲು ವೃತ್ತಿನಿರತ ಚಿತ್ರ ಕಲಾವಿದರು ಈಗಾಗಲೇ ಪ್ರಯತ್ನಿಸುತ್ತಿರುವ ಸುದ್ಧಿಯಿದೆ.

ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರಗೀತೆ
ಕಾಡು ಕುದುರೆ ಓಡಿ ಬಂದಿತ್ತಾ…
ಕಾಡು ಕುದುರೆ ಓಡಿ ಬಂದಿತ್ತಾ
ಊರಿನಾಚೆ ದೂರದಾರಿ
ಸುರುವಾಗೊ ಜಾಗದಲ್ಲಿ
ಮೂಡಬೆಟ್ಟ ಸೂರ್ಯ ಹುಟ್ಟಿ
ಹೆಸರಿನ ಗುಟ್ಟ ಒಡೆವಲ್ಲಿ
ಮುಗಿವೇ ಇಲ್ಲದ ಮುಗಿಲಿನಿಂದ
ಜಾರಿಬಿದ್ದ ಉಲ್ಕೀ ಹಾಂಗ
ಕಾಡಿನಿಂದ ಚಂಗನೆ ನೆಗೆದಿತ್ತ ||ಪ||
ಮೈಯಾ ಬೆಂಕಿ ಮಿರುಗತಿತ್ತ
ಬ್ಯಾಸ್ಗಿ ಬಿಸಿಲ ಉಸಿರಾಡಿತ್ತ
ಹೊತ್ತಿ ಉರಿಯೊ ಕೇಶರಾಶಿ
ಕತ್ತಿನಾಗ ಕುಣೀತಿತ್ತ
ಧೂಮಕೇತು ಹಿಂಬಾಲಿತ್ತ
ಹೌಹಾರಿತ್ತ ಹರಿದಾಡಿತ್ತ
ಹೈಹೈ ಅಂತ ಹಾರಿಬಂದಿತ್ತ ||೧||
ಕಣ್ಣಿನಾಗ ಸಣ್ಣ ಖಡ್ಗ
ಆಸುಪಾಸು ಝಳಪಿಸಿತ್ತ
ಬೆನ್ನ ಹುರಿ ಬಿಗಿದಿತ್ತಣ್ಣ
ಸೊಂಟದ ಬುಗುರಿ ತಿರಗತಿತ್ತ
ಬಿಗಿದ ಕಾಂಡ ಬಿಲ್ಲಿನಿಂದ
ಬಿಟ್ಟ ಬಾಣಧಾಂಗ ಚಿಮ್ಮಿ
ಹದ್ದ ಮೀರಿ ಹಾರಿ ಬಂದಿತ್ತ ||೨||
ನೆಲ ಒದ್ದು ಗುದ್ದ ತೋಡಿ
ಗುದ್ದಿನ ಬದ್ದಿ ಒದ್ದಿಯಾಗಿ
ಒರತಿ ನೀರು ಭರ್ತಿಯಾಗಿ
ಹರಿಯೋಹಾಂಗ ಹೆಜ್ಜೀ ಹಾಕಿ
ಹತ್ತಿದವರ ಎತ್ತಿಕೊಂಡು
ಏಳಕೊಳ್ಳ ತಿಳ್ಳೀ ಹಾಡಿ
ಕಳ್ಳೆ ಮಳ್ಳೆ ಆಡಿಸಿ ಕೆಡವಿತ್ತ ||೩||


ವೀಕಿಪೀಡಿಯ ಕಂಬಾರರ ಮೇಲೆ ಕೊಡುವ ವಿವರಗಳು ಇಲ್ಲಿವೆ:
ಡಾ. ಚಂದ್ರಶೇಖರ ಕಂಬಾರ (ಜನನ- ೨ ಜನವರಿ ೧೯೩೭) ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಅಧ್ಯಾಪಕ, ಜಾನಪದ ತಜ್ಞ, ಆಡಳಿತಗಾರ ಇತ್ಯಾದಿ.

ಮುಖ್ಯವಾಗಿ ಕವಿ-ನಾಟಕಕಾರರಾಗಿ ಕಂಬಾರ ಜನಪ್ರಿಯರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಉಪನ್ಯಾಸಕ ವೃತ್ತಿಯಿಂದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗ ಬೆಂಗಳೂರಿನ ಬನಶಂಕರಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿಯೂ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ೧೯೩೭ ಜನವರಿ ೨ರಂದು ಕಂಬಾರರು ಬೆಳಗಾವಿ ಜಿಲ್ಲೆ ಘೋಡಗೇರಿಯಲ್ಲಿ ಜನಿಸಿದರು. ತಮ್ಮ ಊರಿನ ವಾತಾವರಣದಲ್ಲಿನ ಜಾನಪದ ಹಾಡು, ಕುಣಿತ, ನಾಟಕಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವುಗಳ ಸಂಗ್ರಹ, ಬರವಣಿಗೆಯನ್ನು ರೂಢಿಸಿಕೊಂಡರು. ಉತ್ತರ ಕರ್ನಾಟಕದ ಅದರಲ್ಲೂ ಬೆಳಗಾವಿ, ಧಾರವಾಡದ ಗಂಡುಭಾಷೆಯನ್ನು ಕನ್ನಡ ಸಾಹಿತ್ಯಕ್ಕೆ ಹೊತ್ತು ತಂದರು. ಧಾರವಾಡದ ವರಕವಿ ಡಾ. ದ. ರಾ. ಬೇಂದ್ರೆ ಅವರ ನಂತರ ಭಾಷೆಯನ್ನು ಪರಿಣಾಮಕಾರಿಯಾಗಿ ದುಡಿಸಿಕೊಂಡವರಲ್ಲಿ ಕಂಬಾರರು ಒಬ್ಬರು.

ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರಗಳಾಗಿಸಿದರು. ಕರಿಮಾಯಿ, ಸಂಗೀತಾ, ಕಾಡುಕುದುರೆ ಇವುಗಳಲ್ಲಿ ಪ್ರಮುಖವಾದುವು. ಕಂಬಾರರು ತಮ್ಮ ಚಿತ್ರಗಳಿಗೆ ತಾವೇ ಸಂಗೀತ ನೀಡಿದ್ದಾರೆ. ಕಾಡುಕುದುರೆಯ ಹಿನ್ನಲೆ ಸಂಗೀತದ ``ಕಾಡು ಕುದುರೆ ಓಡಿಬಂದಿತ್ತಾsss.." ಹಾಡಿಗೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರಪತಿಗಳ ಫಲಕ ಕೂಡ ಸಿಕ್ಕಿತು. `ಜೀಕೆ ಮಾಸ್ತರ ಪ್ರಣಯ ಪ್ರಸಂಗ' ಕಾದಂಬರಿಯನ್ನು ಕಿರುತೆರೆಗೂ ಅಳವಡಿಸಿದ್ದಾರೆ. ಹತ್ತಾರು ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಿರುವ ಕಂಬಾರರು ಉತ್ತಮ ನಾಟಕಕಾರರು. ಜೊತೆಗೆ ಜಾನಪದ ಶೈಲಿಯ ಹಾಡುಗಳಿಗೆ ಜನಪ್ರಿಯರು. ತಾವೇ ಸ್ವತಃ ಹಾಡುಗರೂ ಸಹಾ.

ಹೇಳತೇನ ಕೇಳ, ಸಿರಿಸಂಪಿಗೆ, ಬೆಳ್ಳಿಮೀನು, ಋಷ್ಯಶೃಂಗ, ಕಾಡುಕುದುರೆ, ನಾಯಿಕಥೆ, ಹರಕೆಯ ಕುರಿ, ಬೋಳೇಶಂಕರ, ಸಿಂಗಾರವ್ವ ಮತ್ತು ಅರಮನೆ ಮುಂತಾದವು ಇವರ ಪ್ರಮುಖ ಕೃತಿಗಳು. ಮಹಾಮಾಯಿ ಅವರ ಇತ್ತೀಚಿನ ಹೊಸ ನಾಟಕ ಕೃತಿ.ಶಿಖರ ಸೂರ್ಯ ೨೬ ವರ್ಷಗಳ ನಂತರ ಹೊರಬಂದ ಕಾದಂಬರಿ;ಡಿಸೆಂಬರ ೨೦೦೬ರಲ್ಲಿ ಬಿಡುಗಡೆಯಾಯಿತು. ಕನ್ನಡ ಜಾನಪದ ವಿಶ್ವಕೋಶ ಸಂಪಾದಿತ ಕೃತಿ. ಸುಮಾರು ನಲವತ್ತಕ್ಕೂ ಮಿಕ್ಕಿ ಕೃತಿಗಳು ಹೊರಬಂದಿವೆ.

ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕಂಬಾರರು ೧೯೯೧ರಲ್ಲಿ ತಮ್ಮ `ಸಿರಿಸಂಪಿಗೆ' ನಾಟಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.



ಮೂಕನಾಗಿರಬೇಕೋ ಜಗದೊಳು

- ಶಿಶುನಾಳ ಶರೀಫ್

 ಮೂಕನಾಗಿರಬೇಕೋ ಜಗದೊಳು
ಜೋಕ್ಯಾಗಿರಬೇಕೋ                                 ||ಪ||
ಕಾಕು ಕುಹಕರ ಸಂಗ  ನೂಕಿರಬೇಕೋ
ಲೋಕೇಶನೊಳಗೇಕಾಗಿರಬೇಕೋ               ||ಅ.ಪ||

ಕಚ್ಚುವ ನಾಯಿಯಂತೆ  ಬೊಗಳ್ವರೋ
ಹುಚ್ಚರಂದದೊಳಿಹರೊ ಎಚ್ಚರಿಲ್ಲದವರೋ
ಲುಚ್ಚೇರು ನಾಚಿಕಿ ತೊರದಿಹರೋ
ಮುಚ್ಚಿದಾ ಸುದ್ದಿಯ ಬಚ್ಚಿಡದಂಥಾ
ಕುತ್ಸಿತ ಮನುಜರನಗಲಿರಬೇಕೋ               ||೧||

ಲೋಕನುಡಿಯ ಮಾತಾಡುವರೋ
ಕುಹಕ ಬುದ್ಧಿಯ ಜನರೋ
ತಾಕುತಗಲು ನುಡಿಯನಾಡ್ವರೋ
ತೂಕನರಿಯದವರೋ
ಸೂಕರ ಮನುಜರ ಸಂಗತಿ ಹಿಂಗಿಸಿ
ಶ್ರೀಕರ ಬ್ರಹ್ಮ ತಾನಾಗಿರಬೇಕೋ                 ||೨||

ನಡಿನುಡಿಗೆ ನುಡಿಯಬೇಕೋ  ಗುರುವಿನಾ
ಅಡಿಯ ಪಿಡಿಯಬೇಕೋ
ಕಡುಮದದೊಳಿರಬೇಕೋ
ದುರ್ಜನರಾ ನಡತಿಯ ಬಿಡಬೇಕೋ
ಪೊಡವಿಪ ಶಿಷುನಾಳ ಒಡಿಯನ ಕಂಡು
ಗುಡಿಪುರ ಕಲ್ಮನ ಕೂಡಿರಬೇಕು                  ||೩||

        *****

ಕೀಲಿಕರಣ: ಎಮ್.ಎನ್.ಎಸ್.ರಾವ್

ದಿನಮಾನ ಬಲು ಕೆಟ್ಟವೋ

- ಶಿಶುನಾಳ ಶರೀಫ್

ದಿನಮಾನ ಬಲು ಕೆಟ್ಟವೋ  ಸದ್ಗುರುಪುತ್ರ
ನಿನಗಾವು ಬಂದು ತಟ್ಟವೋ               ||ಪ||

ಚಿನುಮಯಾತ್ಮಕವಾದ ಐದಕ್ಷರವು
ತನ್ನೊಳು ಜಪಿಸಿಕೊಂಡಿಹ
ಮನುಜರೂಪವ ಕಳೆದು ಮಹಿಮೆಯ
ತಿಳಿದ ಪುರುಷನಿಗೇನು  ಆಗದು          ||ಅ.ಪ||

ದೇಹದೊಳಿದ್ದರೇನು ಜೀವನ ಕಾಯ
ಲೋಹಕೆ ಬಿದ್ದರೇನು
ಸಾವುನೋವಿನ ಭಾವ ತಿಳಿಯದೆ
ಜಾವಕೊಮ್ಮೆ ಓಂ ನಮಃ  ಶಿವಾಯೆಂದು
ಭಾವದಲಿ ನುಡಿಯೇ ಕಲಿಕರ್ಮದೊಳು ಮಹ-
ದೇವ ಮೆಚ್ಚುವ  ಸತ್ಯ ಮಾತಿದು           ||೧||

ವಿಷಯವಾಡಿದರೇನಾಯ್ತು   ಈ  ಲೋಕವು
ಹುಸಿಯನ್ನುವುದೇ  ಗೊತ್ತು
ವಸುಧಿಯೊಳು ಶಿಶುನಾಳಧೀಶನ
ಎಸೆವ ಸೇವಕನಾಗಿ  ಜಗದಿ
ಮಸಿದ ಪ್ರಣವಶಸ್ತ್ರ   ಕೈಯೊಳು
ಕೊಸರದಂದದಿ  ಹಿಡದು ನುಡಿಯಲು       ||೨||

        *****

ಕೀಲಿಕರಣ: ಎಮ್.ಎನ್.ಎಸ್.ರಾವ್

ನಾನಾರೆಂಬುದು ನಾನಲ್ಲಾ

- ಶಿಶುನಾಳ ಶರೀಫ್

ನಾನಾರೆಂಬುದು ನಾನಲ್ಲಾ  ಈ
ಮಾನುಷ ಜನ್ಮವು ನಾನಲ್ಲಾ        ||ಪ||
ನಾರಾಯಣ ವರ ಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲಾ        ||ಅ.ಪ||

ಮಾತಾ ಪಿತ ಸುತ  ನಾನಲ್ಲಾ
ಭೂನಾಥನಾದವ ನಾನಲ್ಲಾ
ಜಾತಿಗೋತ್ರಗಳು ನಾನಲ್ಲಾ
ಪ್ರೀತಿಯ  ಸತಿ ಸುತ  ನಾನಲ್ಲಾ    ||೧||

ವೇದ ಓದುಗಳು ನಾನಲ್ಲಾ
ವಾದ ಮಾಡಿದವ ನಾನಲ್ಲಾ
ನಾದಬಿಂದುಕಳೆಭೇದ ವಸ್ತು ನಿಜ -
ಬೋಧದಲಿದ್ದವ ನಾನಲ್ಲಾ            ||೨||

ನಾನಾಗಿ ನಡೆದವ ನಾನಲ್ಲಾ
ನಾ ಶಿಶುನಾಳಧೀಶನ  ಬಿಡಲಿಲ್ಲಾ
ನಾ ಅಳಿಯದೆ ನಾ ತಿಳಿಯಲಾರದು
ನೀ ಎನಿಸುವ ಗುಣ ನಾನಲ್ಲಾ        ||೩||

          *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ನೋವಿಗೆ ಸಾವಿಗೆ ಆಯಾಸಪಡಬ್ಯಾಡ

- ಶಿಶುನಾಳ ಶರೀಫ್

ನೋವಿಗೆ ಸಾವಿಗೆ ಆಯಾಸಪಡಬ್ಯಾಡ
ದೇವಗಂಗಾಧರ ಭಾವದೊಳಿರಲು                          ||೧||

ಮನಸ್ಸಿನ ಇಚ್ಛೆಗೆ ಘನ ವಿಪರೀತ ಮಾಡಿ
ದಿನ ಬಳಲ್ವದು ಇದು ಏನು                                    ||೨||

ವಸುಧಿಯೊಳು ಶಿಶುನಾಳಧೀಶನ
ಹಸುಳನಾಗಿ ಈ ಪರಿ ಕಸವಿಸಿಪಡುವದು ಹಸನವಲ್ಲ    ||೩||

              *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ಕರುಣಾಮೃತ ರಸ ರುಚಿಕರದೋಗರ

- ಶಿಶುನಾಳ ಶರೀಫ್

ಕರುಣಾಮೃತ  ರಸ ರುಚಿಕರದೋಗರ
ಸುರಿದುಂಬುವಗಾಗುವದೇ ಮುಕುತಿ ?             ||ಪ||

ಬೇಗನೆ ತನುನಿನ  ಭೋಗವ ನೀಗದೆ
ಯೋಗಮಾರ್ಗ ಸಾಗುವದೇ  ಮನುಜಾ?        ||ಅ.ಪ||

ಮಂಗಗೆ ಮಾಣಿಕ ತೋರಲು  ಗಿಡಗಳ
ಟೊಂಗಿಗೆ   ಹಾರದೆ ಬಿಡುತಿಹುದೆ ?
ಅಂಗಜರಾಜ ಹೆದರುವ ತಪಶ್ವಿಗೆ
ಹೆಂಗಸರಾಸೆಯು  ಹಿಂಗುವುದೆ?                     ||೧||

ಜರೆಮರಣಾದಿಯೋಳ್ ಚರಿಶ್ಯಾಡುವವನಿಗೆ
ಗುರುಮಾರ್ಗವು ದೊರಕುವದೇ  ಮನುಜಾ
ಧರೆಯೊಳು  ಶಿಶುನಾಳಧೀಶನ  ಸ್ಮರಿಸದೆ
ಮರಳಿ ಮರಳಿ ಜನ್ಮ ತಪ್ಪುವುದೆ ?                    ||೨||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

ಮಾತು ಮೌನವಾಗುತ್ತದೆ

- ರವಿ ಕೋಟಾರಗಸ್ತಿ

ಮಾತು ಮೌನವಾಗುತ್ತಿದೆ
ದಿನ.. ದಿನವು ಕ್ಷಣ.. ಕ್ಷಣವು
ಜಗದೆಲ್ಲೆಡೆ ಬಾಯಿ ಚಾಚುತಿಹ
ಕೋಮು-ಮತೀಯ ವಿಷ ಜಂತುವಿನ
ಉದ್ದನೆಯ ಕರಿ ನಾಲಗೆಯ ಕಂಡು...

ಮಾತು ಮೌನವಾಗುತ್ತಿದೆ
ನಾಡಿನ ಉದ್ದಗಲು...
ಶಾಂತಿ... ಸೌಹಾರ್ದತೆ ದೂಡಿ ಧರ್ಮದ
ಹೆಸರಲಿ ಜಾತಿ-ರಾಜಕೀಯ ಬೀಜ
ಬಿತ್ತಿ, ಕಳೆಯ ಬೆಳೆಯುವದನ್ನು ಕಂಡು.

ಮಾತು ಮೌನವಾಗುತ್ತಿದೆ
ಬದುಕಿನ ಹಸಿರು ಉಸಿರಾಗಿರುವ
ಪ್ರಕೃತಿ ಸಿರಿ ಪರಿಸರಕೆ
ಬೆಂಕಿಯಿಡುತ ಬೆಂದು
ಬರಡಾಗುತಿಹ ಮನುಕುಲ ಕಂಡು
ಮಾತು ಮೌನವಾಗುತ್ತಿದೆ.

ಜನನಿ... ಸಹೋದರಿ...
ಒಡಲ ಕುಡಿ... ಬಾಂಧವ್ಯ ಸವಿ ಅರಿಯದ
ಕ್ಷಣ... ದೇಹದ ತೃಷೆಗಾಗಿ
ಮಾರಾಟ ಮಾಡುವ ಭಂಡರ ಕಂಡು.

ಮಾತು ಮೌನವಾಗುತ್ತಿದೆ
ಕೆಂಪು ದೀಪದಡಿ ನಲುಗುತಿಹ
ಕಣ್ಣುಮುಚ್ಚಿ ಬೇಯುತಿಹ
ತನು... ಮನಗಳ ಆಳದ ನೋವು
ಕೇಳದ... ಕುರುಡಾಗಿಹ ಸಮಾಜ ಕಂಡು.

         *****

ಕೀಲಿಕರಣ: ಕಿಶೋರ್‍ ಚಂದ್ರ

ನಿತ್ಯ ಚೈತ್ರ

- ಗಿರಿಜಾಪತಿ ಎಂ. ಎನ್

ಹರಿವ ನದಿಗೆ ಹಾದಿ
ಯಾವುದೆಂಬ ನಿಯತಿಯಲದೆಲ್ಲಿದೆ?
ಮೊಳೆವ ಪ್ರೀತಿ-ಪ್ರೇಮಕೆಲ್ಲಿ
ಭಿನ್ನ-ಭೇದವೆಣಿಸಬೇಕಿದೆ?

ಬೀಸುಗಾಳಿಗೆ ಹೂವು ಅರಳಲು
ಸುಮದ ಕಂಪಿನ ಘಮ..... ಘಮ.....
ಹಾರಿಬರುವ ದುಂಬಿ ಮನದಲಿ
ಬಗೆ ಬಗೆಯ ಸಂಭ್ರಮ..... ||

ಬೆಸೆದ ಬೆಳಕಿಗೆ ಹೊಸತು ಹೊಸತಿನ
ನಿತ್ಯ ನೂತನ ನಂದನ
ಬುವಿಯ ಬಾನಿನ ಬಾಳ ಹಾದಿಗೆ
ಹಾಸಿ ಬೀಸಿದ ಚಂದನ

ಉರಿವ ಧಗೆಯಲಿ ದಿನವು ಮುಗಿದರೂ
ಮತ್ತೆ ಅರಳಿದೆ ಸುಮಬನ
ಅಂದಿನುಗಮವೇ ಅರಿದಿನಳೆವುದೆಂದರೂ
ನೆಗೆಯ ಸೂಸುವ ಬಂಧನ

        *****

ಕೀಲಿಕರಣ: ಕಿಶೋರ್‍ ಚಂದ್ರ

`ಕಾಯಮಾಯದ ಹಾಡು' - ದೇಸಿಯ ಹೊಸ ಭಾಷ್ಯ

- ತಾರಿಣಿ ಶುಭದಾಯಿನಿ

ಎಸ್.ಜಿ.ಸಿದ್ದರಾಮಯ್ಯನವರ ಕಾವ್ಯ ಹುಟ್ಟುವುದು ದೇಸಿದಿಬ್ಬದಲ್ಲಿ. ಅದು ಉಸಿರಾಡುವುದು ಅಲ್ಲಿನ ಗಾಳಿಯನ್ನೆ. ಹೀಗೆ ನೆಲಮೂಲವನ್ನು ನೆಚ್ಚಿಕೊಂಡು ಬರೆಯುವ ಕವಿ ಅವರಾಗಿರುವುದರಿಂದ ತಮ್ಮ ಸಮಕಾಲೀನರಿಗಿಂತ ಭಿನ್ನರಾಗಿ ಕಾಣುತ್ತಾರೆ.  ಮೇಲುನೋಟಕ್ಕೆ ಅವರ ಕಾವ್ಯ ಹಳ್ಳಿಗಾಡಿನ ಕೃಷಿಯ, ಅನುಭಾವದ ಸುತ್ತ ತಿರುಗಾಡುತ್ತಿರುವಂತೆ ಕಾಣಿಸಿದರೂ, ಅದರಲ್ಲಿ ನಿರೂಪಿತವಾಗುವ ನೆಲಮೂಲದ ತಾತ್ತ್ವಿಕತೆಯು ಭಿನ್ನ ಸಾಧ್ಯತೆಗಳ ಇರುವನ್ನು ಸೂಚಿಸುವಂತಿದೆ.

ಸಿದ್ದರಾಮಯ್ಯನವರು ನೆಲಮೂಲಕ್ಕೆ ಕೊಡಮಾಡಿಕೊಂಡಂತೆ ಕಾಣುವಾಗ ಅವರ ಕಾವ್ಯ ಎತ್ತಿಕೊಳ್ಳುವ ನೆಲಸಂಸ್ಕೃತಿಯ ಸಂಗತಿ ಕೆಲವು ಪ್ರಶ್ನೆಗಳನ್ನು ಮುಂದಿಡುತ್ತವೆ.  ಸಮಕಾಲೀನ ಸಂದರ್ಭದಲ್ಲಿ ದೇಸಿಯತೆಯ ಕೂಗು ಜೋರಾಗಿಯೇ ಕೇಳುತ್ತಿರುವಾಗ ಈ ಕವಿ ಯಾವ ನೆಲೆಯಲ್ಲಿ ದೇಸಿಯನ್ನು ಗ್ರಹಿಸುತ್ತಾರೆ ಮತ್ತು ಯಾವ ರೀತಿಯ ತಾತ್ತ್ವಿಕ ನಿಲುವನ್ನು ಪ್ರಕಟಿಸುತ್ತಾರೆ ಎಂಬುದನ್ನು ಮುಖ್ಯವಾಗಿ ಗ್ರಹಿಸಬೇಕಾಗುತ್ತದೆ.

ದೇಸಿಯ ಮಾತು ಕನ್ನಡದ ಸಂದರ್ಭದಲ್ಲಿ ವಿಶೇಷವಾಗಿಯೇ ನಿರ್ವಚನಗೊಳ್ಳುತ್ತ ಬರುತ್ತದೆ ಎಂಬುದು ಕನ್ನಡ ಕಾವ್ಯದ ಓದುಗರಿಗೆ ತಿಳಿದ ವಿಷಯ. ಮಾರ್ಗಕಾವ್ಯಗಳಲ್ಲಿ ಇರುವ ದೇಸಿ ವಚನಕಾರರಲ್ಲಿ ಇನ್ನಷ್ಟು, ಸ್ಪಷ್ಟವಾಗಿಯೇ ಕಾಣಿಸಿಕೊಳ್ಳುತ್ತದೆ. ಕನ್ನಡ ಸಾಹಿತ್ಯ-ಸಂಸ್ಕೃತಿಯ ಮಟ್ಟಿಗೆ ಅದು ಗುಪ್ತಗಾಮಿನಿಯಾಗಿ ಚಲನಶೀಲ ಗುಣವನ್ನು ತೋರುತ್ತಲೇ ಬಂದಿದೆ.  ಅಂದರೆ ದೇಸಿಯು ಕ್ರಿಯಾಶೀಲತೆಯ ಸಂಕೇತವೂ, ಅರಿವಿನ ಪ್ರಕ್ರಿಯೆಯೂ ಆಗಿದೆ ಎನ್ನಬಹುದು. ಅರಿವು ಎಂಬುದು ಒಳಗು ಹೊರಗು ಎರಡಕ್ಕು ಸಂಬಂಧಿಸಿದ ಪ್ರಕ್ರಿಯೆ.  ಇನ್ನೂ ಹಿಗ್ಗಿಸಿ ಹೇಳುವುದಾದರೆ, ನಿಜದನೆಲೆಯ ಹುಡುಕಾಟ;  ಸಹಜತೆಯ ಹುಡುಕಾಟ.

ಸಂಸ್ಕೃತಿ, ಪ್ರಭುತ್ವಗಳು ಜಡ್ಡುಗಟ್ಟಿದಾಗಲೆಲ್ಲ ಸಮುದಾಯಗಳಲ್ಲಿ ಒಳದಾರಿಯ ಹುಡುಕಾಟ ನಡೆಯುತ್ತಿರುತ್ತದೆ.  ಅದರಲ್ಲೂ ಸಂಸ್ಕೃತಿ, ಪ್ರಭುತ್ವಗಳ ಪ್ರತಿಗಾಮಿಧೋರಣೆಗಳನ್ನು ತಳೆದಾಗ, ಜೀವವಿರೋಧಿಯಾದಾಗ ಈ ಹುಡುಕಾಟ ಇನ್ನಷ್ಟು ಗಟ್ಟಿಯಾಗುತ್ತದೆ.  ತಂತಮ್ಮ ಜೀವರಕ್ಷಣೆಯ ವಿಷಯದಲ್ಲಿ ಎಲ್ಲ ಜೀವಿಗಳು ಇದು.  ದೇಸಿಯು ಕ್ರಿಯಾಶೀಲವಾಗುವುದೂ ಹೀಗೆಯೇ. ಜನಪದವು ತನ್ನನ್ನು ತಾನು ಕಾಯ್ದುಕೊಳ್ಳಲೆಂದು ಹೂಡವ ಒಳಬಂಡಾಯದ ರಕ್ಷಣಾತಂತ್ರ ಎಂದು ಇದನ್ನು ಕರೆಯಬಹುದು. ಈ ಪ್ರಕಿಯೆಯಾದರೋ ಎದ್ದು ಕಾಣುವಂತದಲ್ಲ.  ವ್ಯವಸ್ಥೆಯ, ಪ್ರಭುತ್ವದ ಅಥವಾ ಸಂಸ್ಕೃತಿಯ ಆಡಂಬರದ ಮಾದರಿಗಳಿಗೆ ಪ್ರತಿಯಾಗಿ ಒಳಗಿನ ಸಾಮಾನ್ಯತಾ ಸತ್ವವನ್ನು ಉದ್ದೀಪಿಸಿಕೊಂಡು ನಿಲ್ಲುವುದನ್ನು ಇಲ್ಲಿ ಗಮನಿಸಬಹುದು.  ಒಂದೆಡೆಯಿಂದ ತನ್ನೊಳಗನ್ನು ನೋಡಿಕೊಳ್ಳುವ ಪರಿಯೂ ಇನ್ನೊಂದೆಡೆ ಸ್ವಾಭಿಮಾನದ ಸಂಕೇತವೂ ಆಗಿ ಕಾಣುವ ದೇಸಿಯು ಸಾಧಾರಣೀಕರಣವನ್ನೇ ತನ್ನ ಹೆಗ್ಗುರುತನ್ನಾಗಿ ಮಾಡಿಕೊಂಡಿರುತ್ತದೆ.  ಸಾಧಾರಣ ಎನಿಸುವ ಸಂಗತಿಗಳ ಅಡಿಯಲ್ಲಿಯೇ ಸ್ವಂತಿಕೆಯನ್ನು ರೂಪಿಸಿಕೊಂಡು ಭಾಷೆ, ಸಂಸ್ಕೃತಿಗಳನ್ನು ಪುನರ್ರಚನೆ ಮಾಡಿಕೊಳ್ಳುವ ಮತ್ತು ಅದರಿಂದ ಸಂರಚನೆಗಳನ್ನು ವಿಭಿನ್ನವಾದ ಒಳನೋಟಗಳಿ೦ದ ಕಂಡುಕೊಳ್ಳುವ ರೀತಿ ಅದು.

ಈ ಬಗೆಯಲ್ಲಿ ಸಹಜವಾಗಿಯೇ ದ್ವಂದ್ವಭಾವವಿರುತ್ತದೆ. ನಾನೆಂಬುದಿದ್ದರೆ ನೀನೆಂಬುದೂ ಇರಲೇಬೇಕು ಎಂಬಂತೆ.  ಸ್ವಾತಂತ್ರ್ಯ ಚಳವಳಿಯ ಕಾಲದಲ್ಲಿ ಹುಟ್ಟಿದ ಸ್ವದೇಶಿ ಪರಿಕಲ್ಪನೆಯು ವಿದೇಶಿ ಎಂಬುದಕ್ಕೆ ದ್ವಂದ್ವಭಾವವಾಗಿ ಹುಟ್ಟಿದ್ದು.  ಆನಂತರದ ಆಧುನಿಕತೆಯ ಪರಿಕಲ್ಪನೆಯಲ್ಲಿ ಆಧುನಿಕತೆಯೆನ್ನುವುದು ಅರ್ಬನ್‍ಗೆ ಸಂವಾದಿಯಾಗಿ ನಿಂತು ಒಂದು ಹಳ್ಳಗಾಡಿನ ಸಮಾಜಕ್ಕೆ ಎದುರು ನೆಲೆಯಾಗಿರುವುದನ್ನು ಕಾಣಬಹುದು. ಇಂದಿನ ಜಾಗತೀಕರಣದ ಕಾಲದಲ್ಲಿ ದೇಸಿಯ ಭಾವವು ಹುಟ್ಟಿಕೊಳ್ಳುವುದು ಒಂದು ವಿರೋಧಿ ನೆಲೆಯಲ್ಲಿಯೇ.  ಆಧುನಿಕತೆಯ ನೆಲೆ ಪೂರ್ವಪಶ್ಚಿಮವನ್ನು ಇನ್ನಷ್ಟು ಗೆರೆ ಕೊರೆದಂತೆ ಮಾನದ೦ಡಗಳನ್ನು ರೂಪಿಸಿಕೊಳ್ಳುವಂತೆ ಕಾಣುವಾಗ ಸ್ವದೇಶಿ ವಿದೇಶಿ ವಿಂಗಡಣೆಗಳು ಸಹಜವಾಗಿಯೇ ದ್ವಂದ್ವನೆಲೆಗಳಾಗಿ ಬರುತ್ತವೆ.  ಸಿದ್ದರಾಮಯ್ಯನವರಂತಹ ಕವಿ ದೇಸಿಯನ್ನು ಒಪ್ಪುವಾಗ ಇಂಥ ದ್ವಂದ್ವಗಳ ಅಲುಗನ್ನು ಹಾಯಲೇಬೇಕು.  ಇದರಂತೆ ಅವರ ಕವಿತೆಗಳಲ್ಲಿ ಕೆಲವಾದರೂ ಪೂರ್ವ-ಪಶ್ಚಿಮ, ನಗರ-ಹಳ್ಳಿಗಳ ದ್ವಂದ್ವವನ್ನು ವ್ಯಕ್ತಪಡಿಸುತ್ತವೆ.  ಅವುಗಳ ಧೋರಣೆಯು ಕವಿಯ ನಿಲುವಿಗೆ ಬದ್ಧವಾಗಿರುವಂತೆ ಇರುವುದು ಗಮನಾರ್ಹ.

`ಗಿಡುಗ ಮತ್ತು ಎರೆಹುಳ' ಕವಿತೆ `ಕಾಯಮಾಯದ ಹಾಡು' ಸ೦ಕಲನದಲ್ಲಿ ಕಾಣುವ ಕವಿತೆ.  ಅಲ್ಲಿ ಕಾಣುವ ದ್ವಂದ್ವಭಾವ ನೋಡಬೇಕು. ಗಿಡುಗವು ಪಂಚರಂಗಿ ಬಣ್ಣದ್ದು, ಪಶ್ಚಿಮದಿಂದ ಹಾರಿ `ರವರವ್ವನೆ' ಹಾರಿ ಬರುತ್ತಿದೆ.  ಅದಕ್ಕೆ ಎದುರಾಗಿ ಸಾಧಾರಣವೆನಿಸುವ, ಮಣ್ಣನ್ನು ನಂಬಿ ಬದುಕುವ ಎರೆಹುಳ ಇದೆ.  ಅಲ್ಲಿ ಒಂದು ಪ್ರಶ್ನೆಯಿದೆ- ಯಾರಲಾ ಯಾರಲಾ! ನೆಲದ ವಾರಸು ಯಾರಲಾ? ಎಂಬುದು.  ಅದರ ದನಿಯು ಈ ಸಲದ ಹಕ್ಕು, ವಾರಸುದಾರಿಕೆ ಖಂಡಿತವಾಗಿಯೂ ಎರೆಹುಳಕ್ಕೆ ದಕ್ಕಬೇಕೆನ್ನುವ ಪಕ್ಷಪಾತಿ ನಿಲುವನ್ನು ಹೊಂದಿದಂತಿದೆ.  ಅದೇ ಕವನದ ಮುಂದಿನ ಭಾಗದಲ್ಲಿ, `ಬಣ್ಣದ ಬೆಡಗಿನ | ಪೂರ್ವದ ಜೀವಜಾತಗಳೆಲ್ಲ ಮಾತು ಕಳೆದವು' ಎಂದು ಹೇಳಿರುವುದು ಸಹ ಪೂರ್ವದ ಪರವನ್ನೇ ಸೂಚಿಸುವಂತಿದೆ.

ಈ ದ್ವಂದ್ವಗಳ ಇರವನ್ನು ಒಪ್ಪಿಕೊಳ್ಳುತ್ತಲೇ ಅಲ್ಲಿರುವ ಬಿಕ್ಕಟ್ಟನ್ನು ನೋಡಬೇಕು.  ಯಾವುದಾದರೊಂದು ನಿಲುವನ್ನು ಬೆಂಬಲಿಸಿ ನಿಂತರೂ ಅದಕ್ಕೇ ಬಾಧ್ಯಸ್ಥನಾಗಬೇಕಾದ ಅನಿವಾರ್ಯತೆ ಉಂಟಾಗುವುದಲ್ಲದೆ ತನ್ನ ಆಯ್ಕೆಯ ಸತ್ವಶೀಲತೆಯನ್ನು ಪರೀಕ್ಷೆಗೊಡ್ಡಬೇಕಾದ ಪರಿಸ್ಥಿತಿಗೆ ಕವಿ ಸಿಲುಕುತ್ತಾನೆ.  ಇದು ಅವನ ಸವಾಲು ಕೂಡ.

`ಈಗಾಗಲೇ ಹೇಳಿದಂತೆ ಸಿದ್ದರಾಮಯ್ಯನವರ ಕಾವ್ಯವು ಕೇಂದ್ರೀಕೃತವಾಗುವುದು ದೇಸಿದಿಬ್ಬದಲ್ಲಿ- ದೇಸಿಯೆಂದರೆ ಒಂದು ಜೀವನಕ್ರಮವೆಂದು ನಿರ್ವಚನ
ಮಾಡಿಕೊಳ್ಳುವಾಗ ಅದು ರೈತಾಪಿವರ್ಗದ ಜೀವನ ಕ್ರಮವೆಂದು ಅವರು ಭಾವಿಸುತ್ತಾರೆ.  ರೈತಾಪಿ ವರ್ಗವು ಜಾಗತೀಕರಣದ ಅಪಾಯಗಳಿಗೆ ಬದುಕನ್ನು ಒಡ್ಡಿಕೊ೦ಡಿರುವ ಸಂದರ್ಭದಲ್ಲಿ ಅದರ ಅಳಿವು ಕಂಗೆಡಿಸುವ ಅಂಶ.  ಇದನ್ನು ಪರಿಗಣಿಸುತ್ತಲೇ ಜಾಗತೀಕರಣದ ಸವಾಲುಗಳಿಗೆ ದೇಸಿದಿಬ್ಬದ ಸಾಮನ್ಯತಾ ಸತ್ವಗಳನ್ನು ಮುಂದಿಡುತ್ತದೆ ಸಿದ್ದರಾಮಯ್ಯನವರ ಕಾವ್ಯ. ಜಾಗತೀಕರಣ ಪರ್ಯಾಯ ನೆಲೆಗಳಲ್ಲಿ ಉತ್ತರ ಹುಡುಕುವ ಸಂದರ್ಭದಲ್ಲಿ ದೇಸಿಯತೆಯಲ್ಲಿ ಗೋಚರಿಸುವ ಸತ್ವಶೀಲ ಉತ್ತರಗಳು ರಾಜಕೀಯ, ಸಾಂಸ್ಕೃತಿಕ ನೆಲೆಗಳನ್ನು ಪುನರ್ರ್‍ಅಚಿಸಬಹುದೆಂಬ ಆಶಯವನ್ನೂ ಅದು ವ್ಯಕಪಡಿಸುತ್ತದೆ.

ನೆಲಮೂಲದ ಕಲ್ಪನೆಯು ವ್ಯವಸಾಯದ ಬದುಕನ್ನು ಬಿಟ್ಟು ರೂ‌ಪುಗೊಳ್ಳುವಂತದ್ದಲ್ಲ.  ಇಂದು ನಶಿಸುತ್ತಿರುವ ಜೀವಸಂಕುಲಗಳನ್ನು ಜೀವ ವಿಜ್ಞಾನಿಗಳು
ಪಟ್ಟಿ ಮಾಡುತ್ತಿರುತ್ತಾರೆ. ಅದರೊಳಗೆ ರೈತನೆಂಬ ಜೀವಿಯೂ ಸೇರಿಕೊಳ್ಳುವ ಕಾಲ ಬರುತ್ತಿದೆ.  ಈ ಆತಂಕ ಸ್ವಷ್ಟಿಯಾದರೆ ಅವನನ್ನು ನಂಬಿ ಬದುಕುತ್ತಿರುವ ಜೀವ ಸರಪಳಿಯು ಕಳಚಿಕೊಂಡಂತೆ ಎಂಬುದೇ ಸಿದ್ದರಾಮಯ್ಯನವರ ಆತಂಕ.  ರೈತನ ನಾಶವೆಂದರೆ ಒಂದು ಜೀವನಶೈಲಿಯ ಕಣ್ಮರೆಯಾಗುವಿಕೆ.  ಇದು ಬರಿಯ ರಾಜಕೀಯ, ಆರ್ಥಿಕ ಪ್ರಶ್ನೆಗಳನ್ನಷ್ಟೆ ಒಳಗೊಳ್ಳುವಂತಿದ್ದರೆ ಈ ಕುರಿತು ಯೋಚಿಸಬೇಕಾದ ತೀವ್ರತೆ ಅಷ್ಟಾಗಿ ಇರುತ್ತಿರಲಿಲ್ಲವೇನ್ನೋ.  ಇದು ಮೌಲ್ಯದ, ಜೀವ ಸಂಸ್ಕೃತಿಯ ಪ್ರಶ್ನೆಗಳೂ ಆಗಿರುವುದರಿಂದಲೇ ನಮ್ಮನ್ನು ಬಾಧಿಸುತ್ತದೆ.  ಬಂಡವಾಳಶಾಹಿ ಪ್ರಭುತ್ವಗಳು ಸೃಷ್ಟಿಸುವ ಬಿಕ್ಕಟುಗಳು ರೈತನನ್ನು ಮಾತ್ರವಲ್ಲದೆ, ಅವನು ನಂಬಿರುವ ನೀರು, ನೆಲ, ಗಾಳಿಗಳನ್ನೂ ಬಿಡುತ್ತಿಲ್ಲ.  ಹೀಗಿರುವಾಗ ನೆಲದ ವಾರಸುದಾರಿಕೆಯ ಪ್ರಶ್ನೆ ಇಲ್ಲಿ ಎದುರಾಗುವುದು
ಸಹಜ.  `ಈಸಕ್ಕಿಯಾಸೆ ನಿಮಗೇಕಯ್ಯ?' ಎನ್ನುವ ನೈತಿಕ ಸೊಲ್ಲು ಉಡುಗಿಸಿ, ಲಾಭಕೋರತನವನ್ನೇ ಮೌಲ್ಯ ಎಂದು ಬಿಂಬಿಸಿ ಬೆಳೆಸುವ ಜಾಗತೀಕರಣವು ಖಂಡಿತವಾಗಿ ಜೀವವಿರೋಧಿ ನೆಲೆಯದು ಎಂದು ಕವಿ ಗುರುತಿಸಿಕೊಳ್ಳುವುದು ಇಲ್ಲಿ ಕಾಣುತ್ತದೆ.  ತಳಿಗಳ ವಶೀಕರಣ, ಕುಲಾಂತರಿಗಳ ಸೃಷ್ಟಿ ನಿಸರ್ಗನೇಮಕ್ಕೆ ಎರವಾದುದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಇದು ಆಕ್ರಮಣಶೀಲತೆಯ ಸ್ವರೂಪ.  ಇದನ್ನು ಕವಿ ಗುರುತಿಸಿಕೊಳ್ಳುವ ರೀತಿ ಹೀಗಿದೆ:

    ಕುಲಾಂತರಿಗಳ ಕೋಟಲೆಯಲ್ಲಿ
    ಕುಲಾಂತರಿಗಳ ನೆಲೆ ಕಣ್ಮರೆಯಾದುದೋ

ಇಲ್ಲಿ ಕವಿಗೆ ಒಂದು ಮಾದರಿಯ ಕಲ್ಪನೆ ಇರುವುದು ಸ್ಪಷ್ಟ.  ಒಂದು ಜೀವನ ಶೈಲಿಯನ್ನು ಅವರು ಬೆಂಬಲಿಸುತ್ತಿದ್ದಾರೆ.  ಅದರ ಮೇಲಾಗುವ ಅಕ್ರಮವನ್ನು ನೋಡುತ್ತ, ಅದಕ್ಕೆ ಪರಿಹಾರವಾಗಿ ಪರ್ಯಾಯ ಮಾರ್ಗೋಪಾಯಗಳೇನು ಎಂದು ಚಿಂತಿಸುವಲ್ಲಿ ಮತ್ತೆ ಅದರಲ್ಲೇ ಉತ್ತರಗಳಿರಬಹುದಾದ ಸಾಧ್ಯತೆಗಳನ್ನು ಅರಸುತ್ತಾರೆ.

    ಎಲ್ಲಿರುವೆ ನನ್ನವ್ವ | ಮರುಜೇವಣಿಯ ಅಡ್ಡಿಕೆಯೇ  
    ಅಡ್ಡದಾರಿಗೆ ಬಿದ್ದ ಕರುಳ | ಕಾಯುವ ಅರಿವೇ

ಹೀಗೆಂದು ಅವರ ಏಕಲವ್ಯನ ತಾಯಿ ಕೂಗಿ ಕರೆಯುತ್ತಾಳೆ.  ನಗರದ ಮರೆ ಮೋಸಕ್ಕೆ ಬಲಿಯಾದ ಮಗು ಏಕಲವ್ಯನಿಗಾಗಿ ಮರುಗುತ್ತ, ಅವನ ಹೆಬ್ಬೆರಳಿಗಾಗಿ ಶೋಕಿಸುತ್ತ ತಾಯಿ ಸುಮ್ಮನೇ ಇರುವುದಿಲ್ಲ.  ಮುಂದಿನ ಪರಿಹಾರವನ್ನು ಹುಡುಕುವುದರಲ್ಲಿದ್ದಾಳೆ.  `ಬೆಂಕಿಗೋಳದ ರಾಚು' ತುಂಬಿದೆ ಎಂದು ಹೇಳುವ ಸಿಂದಾಬಾದ್‌ನಾವಿಕನೂ ನಿರಾಶನಾಗುವುದಿಲ್ಲ - `ಬೆಂದ ಮಣ್ಣಿನೊಡಲಲ್ಲೇ | ನೊಂದ ಮನಸು ಚಿಗುರುವುದು | ಛಲದ ಬಾಳ್ಗೆ ನೆಲದ ಏಳ್ಗೆ' - ಎನ್ನುತ್ತಾನೆ.  ಇದೆಲ್ಲಕ್ಕಿಂತ ಮಿಗಿಲಾಗಿ `ಜಲದ ಕಣ್ಣಿನ ಶೋಧ' ಎಂಬ ಭರವಸೆಯ ಮಾತು ಅಂತರ್ಗಾಮಿಯಾಗಿರುವ ನೀರಿನ ಶಕ್ತಿಯನ್ನು ನಂಬುವ ನೆಲಮೂಲದ ಅತ್ಯುನ್ನತ ಶಕ್ತಿಯ ನೆಲೆ.  ಈ ದೃಷ್ಟಿಯಿಂದ ಕವಿಯದು ಒಂದು ತೆರನಾದ ಉಗ್ರನಿಷ್ಠೆ ಎನ್ನಬಹುದು.  ಅದು ಅನ್ಯದೈವಕ್ಕೆಳಸದ ಭಕ್ತನ ಛಲದಂತೆ, ಸತತ ನಂಬುಗೆಯಲ್ಲಿ ನಿಂತು ತನ್ನ ಸತ್ವವನ್ನು ಪರೀಕ್ಷಿಸಿಕೊಳ್ಳುವುದಾಗಿದೆ.

`ಕಾಯಮಾಯದ ಹಾಡು' ಸಂಕಲನದ ತುಂಬೆಲ್ಲ ಒಕ್ಕಲು ಮಕ್ಕಳು ಇದ್ದಾರೆ (ಅಪ್ಪ, ಅಜ್ಜಿ, ಅವ್ವ - ಇವರೂ ಇದೇ ಸಾಲಿನಲ್ಲಿ ಬರುತ್ತಾರೆ ಎನ್ನುವುದು ವಿಶೇಷ).  ಜೊತೆಗೆ ಏಕತಾರಿಯ ಜೋಗಿಗಳು ಇದ್ದಾರೆ.  ಸುಮ್ಮನೇ ನೋಡಿದರೆ ಸಂಬಂಧವಿಲ್ಲದ ಚಿತ್ರಗಳಿವು.  ಆದರೆ ಇವರೆಲ್ಲ ಬೆಸೆಯುವುದು ನೆಲಮೂಲದ ಅಂಥಃಸೂತ್ರದಲ್ಲಿ.  ನೆಲಮೂಲದಿಂದಲೇ ಹುಟ್ಟಿಬಂದವರು ಇವರೆಲ್ಲ.  ಪೌರಾಣಿಕ ಪಾತ್ರಗಳಾದ ಅಹಲ್ಯೆ ಇಂದ್ರರು, ಅಮೃತಮತಿ ಬದಗರು ನೆಲಕ್ಕೆ ಸಹಜವಾದ ರೀತಿಯಲ್ಲಿ ಬರುತ್ತಾರೆ.  ಬದಗನನ್ನು `ನೆಲದ ಬಾಳಿನ ನೀತಿ ಸೂತ್ರಧಾರ' ಎಂದು ಕರೆಯುವಲ್ಲಿ ನೆಲಮೂಲದ ನೀತಿ ವಿಭಿನ್ನವಾಗಿರುವುದನ್ನು ಸೂಚಿಸಲಾಗಿದೆ.  ಏಕಲವ್ಯನ ಉದಾಹರಣೆಯನ್ನು ಇಲ್ಲಿ ತೆಗೆದುಕೊಳ್ಳಬಹುದು.  ಇವರಂತೆಯೇ ಸಹಜವಾಗಿ ಈ ನೆಲದಿಂದ ಹುಟ್ಟಿಬಂದ ಅಲ್ಲಮ, ಶರೀಫ, ದರವೇಶಿ, ರಾಬಿಯಾ ಮುಂತಾದ ಸತ್ವಶಾಲೀ ಅನುಭಾವಿಗಳು.  ಹಾಗಾಗಿ ಇಲ್ಲಿ ನೆಲಮೂಲವೆಂಬುದು ಸಹಜತೆಯ ಪರಿಕಲ್ಪನೆಯಾಗಿ ರೂಪುಗೊಳ್ಳುತ್ತಲಿದ್ದು, ಸಹಜತೆಗೆ ತೆರೆಯಾಗಿರುವ ಆವರಣಗಳನ್ನು ಸರಿಸಿ ನೋಡುವ ಕ್ರಮವೊಂದನ್ನು ನೇರ್ಪುಗೊಳಿಸುತ್ತಲಿರುವುದು ಗೋಚರಿಸುತ್ತದೆ.  ಸಹಜ ಬದುಕಿನ ತಡಕಾಟವೇ ನಿಜದ ನೆಲೆಯ ಅರಸುವಿಕೆಯಾಗಿದೆ.

ಮರುಜೇವಣಿಯನ್ನು ಹುಡುಕುವ ಮೂಲಕ ಆವರಣಗಳನ್ನು ಸರಿಸಿ ಸಹಜ ಬದುಕನ್ನು ಮತ್ತೊಮ್ಮೆ ಕಾಣಬಹುದೆಂಬ ಹಂಬಲದಲ್ಲಿರುವ ಕವಿ ಅದಕ್ಕಾಗಿ ಸಮುದಾಯದ ಬದುಕಿನಲ್ಲಿಯೂ, ಜೋಗಿತ್ವದ ಬದುಕಿನ ಸತ್ವದಲ್ಲಿಯೂ ಅರಸುತ್ತಾರೆ.  ಮರುಜೇವಣಿಯ ಸತ್ವವು `ಬಹುಜನಹಿತಾಯ'ವೆಂಬ ತಾತ್ವಿಕತೆಯಲ್ಲಿ ಕಾಣಿಸುತ್ತದೆ.  ಅದರಲ್ಲಿ ಸಮುದಾಯದ ಕಲ್ಪನೆ ಇದ್ದು, ವರ್ತಮಾನದ ಒಂಟಿ, ಒಡಕಲು ಬದುಕುಗಳಿಗೆ ಉತ್ತರವಾಗಬಹುದಾದ ಆಶಯವಿದೆ.

ಸಿದ್ಧರಾಮಯ್ಯನವರು ನೆಚ್ಚುವ ಸಮುದಾಯದ ಬದುಕು ವ್ಯವಸಾಯ ಮೂಲದ್ದು.  ಬೇಸಾಯಕ್ಕೆ ಮೂಲಾಧಾರವಾಗಿ ತಾಳ್ಮೆ, ಪರಿಶ್ರಮಗಳಿರುತ್ತವೆ.  ಫಲಾನುಭವದ ಸಂತೃಪ್ತಿ ಸಿಕ್ಕಿದರೂ ಅದು ಒಬ್ಬನದಲ್ಲ, ಸಮುದಾಯದ್ದು.  ಈ ತತ್ವವನ್ನು ಬಿಂಬಿಸುವಂತೆ ಅವರ ಕಾವ್ಯದಲ್ಲಿ ಇರುವೆ ಮತ್ತು ಇರುವೆಗೂಡಿನ ಚಿತ್ರಗಳಿವೆ.  ಕಾಯಕತತ್ವಕ್ಕೆ ಹೆಸರಾದ ಇರುವೆಗಳು ಆಹಾರವನ್ನು ಸಂಗ್ರಹಿಸಿ, ಅದನ್ನು ಹೊತ್ತುಕೊಂಡು ಹೋಗುವುದರಿಂದ ಹಿಡಿದು ಅದನ್ನು ವರ್ಷದ ಕೂಳಾಗಿ ಕಾಪಾಡಿಕೊಂಡು, ಹಂಚಿ ತಿನ್ನುವುದರ ತನಕ ಸಮುದಾಯದ ಬದುಕಿಗೆ ರೂಪಕವಾಗಿ ನಿಲ್ಲುತ್ತದೆ.  ಇದಲ್ಲದೆ ಕವಿ ಕೊಡುವ ಜಿಡ್ಡು ಕದಡಿರುವ ಮಜ್ಜಿಗೆಯ ಚಿತ್ರವು ಇದೇ ಆಶಯವನ್ನು ವ್ಯಕ್ತಪಡಿಸುತ್ತದೆ.  ಜಿಡ್ಡು ಒಟ್ಟುಗೂಡಿದಲ್ಲದೇ ಬೆಣ್ಣೆಮುದ್ದೆಯಾಗದು;  ಒಟ್ಟಾಗದೇ ಜಿಡ್ಡಿನ ಶಕ್ತಿಯಾಗದು ಎಂದು ಸೂಚಿಸುತ್ತದೆ.  ಇದಕ್ಕೆ ಪೂರಕವಾಗಿ ಇನ್ನೂ ಸ್ಪಷ್ಟವಾದ ಸಾಲುಗಳನ್ನು ಕವಿಯೆ ಬರೆಯುತ್ತಾರೆ:

    ಒಂಟೆತ್ತಿನಾರಂಬ | ಸೊಂಟ ಮುರಿದಾ ಬದುಕು
    ಮುರಿದ ಮನಸುಗಳಿಂದ | ಬಿತ್ತೋ ಹೊಲ ಬರೀ ಬೀಳು

ಈ ಸಂಯೋಜಕ ಶಕ್ತಿಯು ಅವರ ಇನ್ನೊಂದು ಪರಿಕಲ್ಪನೆಯಲ್ಲಿ ವಿವರಿಸುವುದಾದರೆ, `ಕಳ್ಳುಬಳ್ಳಿಯ ಬಂಧ' ಎನ್ನಬಹುದು.  ಕುಲಮೂಲ ಎಂಬುದು ಕುಲಾಂತರಿಗಳಿಗೆ ಎದುರು ನಿಲ್ಲುವ ತಾಯಿಬೇರಿನ ಚೇತನವಾದರೆ ಕುಲ, ಕಳ್ಳುಬಳ್ಳಿಯ ಬಂಧವು ಒಟ್ಟು ಸಮುದಾಯದ ಸ್ವರೂಪವನ್ನು ಸೂಚಿಸುತ್ತ ಪ್ರೇರಕ ಶಕ್ತಿಗಳಾಗುವುದನ್ನು ಕವಿ ಕಾಣುತ್ತಾರೆ.

ಇದಕ್ಕೆ ಜೊತೆಗೂಡುವುದು ಏಕತಾರಿಯ ನಿಶ್ಶಬ್ದದ ನಾದ.  ಜೋಗಿತ್ವದ ನೆಲೆಯೆಂದರೆ ಸ್ಥಾವರವಲ್ಲ, ಜಂಗಮವು.  ನಿರಂತರ `ಆಗುವಿಕೆ'ಯಲ್ಲಿ ಜಂಗಮದ ಶಕ್ತಿಯಿದೆ.  ತನ್ನ ತಾನು ಕಳೆದುಕೊಳ್ಳುತ್ತ ಆಗುವಿಕೆಯನ್ನು ಸಾಧಿಸುವ ಪ್ರಕ್ರಿಯೆ ಅದು.  ಇದನ್ನು `ಜನುಮವೆಂಬುದು ಜಂಗಮ' ಎಂಬ ಕವಿ ಸಾಲು ವಿವರಿಸುತ್ತದೆ.  ಗತಿಶೀಲತೆಯ ಕುರುಹಾಗಿ ಬರುವ ಜೋಗಿ ಎಲ್ಲಿಯೂ ನಿಲ್ಲದೆ ನಿರಂತತೆಯ ಸಂಕೇತವಾಗಿ, ಆವರಣಗಳನ್ನು ಸರಿಸುತ್ತ ನಿಜದ ನೆಲೆಯನ್ನು ಅರಸಿ ಹೋಗುವ ಶಕ್ತಿಯಾಗಿ ಕಾಣುತ್ತಾನೆ.  ಈ ನಿರಂತರತೆಯ ಸೃಜನಾತ್ಮಕ ಧಾತುವನ್ನು ದೇಸಿಯಲ್ಲಿ ಗುರುತಿಸಿಕೊಳ್ಳುವುದು ಮತ್ತು ಅದನ್ನು ಬಿಡುಗಡೆಯ ಉಪಾಯವಾಗಿ ಕಾಣುವುದು ಮಹತ್ವದ ನಿಲುವು.

ಸುತ್ತಲಿನ ಬದುಕು ಹೊದ್ದುಕೊಂಡ ಆವರಣಗಳನ್ನು ಸರಿಸಿ ನೋಡುವ ಒಳದೃಷ್ಟಿಯ ಪಡೆದ ಜೋಗಿಗಳು `ಕಾಯಮಾಯದ ಹಾಡು' ಸಂಕಲನದಲ್ಲಿ ಕಾಣುತ್ತಾರೆ.  ರಾಬಿಯಾ ಎಂಬ ಸೂಫಿ ಒಂದು ಕೈಯಲ್ಲಿ ಬೆಂಕಿ ಇನ್ನೊಂದು ಕೈಯಲ್ಲಿ ನೀರು ಹಿಡಿದು ಸ್ವರ್ಗನರಕಗಳನ್ನು ಎದುರಿಸ ಹೊರಡುತ್ತೇನೆ ಎನ್ನುತ್ತಾಳೆ.  ಸ್ವರ್ಗನರಕಗಳು ಎರಡು ಅತಿಗಳು, ಇವನ್ನು ನಿರಾಕರಿಸಿ ಒಂದು ಮಧ್ಯಮ ಮಾರ್ಗವನ್ನು ಹುಡುಕುವ ಅವಳ ರೀತಿ ಮರುಜೇವಣಿಯ ಭರವಸೆಯಲ್ಲಿ ಕಾಣುತ್ತದೆ.  ಅಮರಿಕಾ ಎಂಬ ಸ್ವರ್ಗ, ಇರಾಕೆಂಬ ನರಕಗಳನ್ನು ಕಾಣುವ ಸಮಕಾಲೀನ ಪ್ರಪಂಚಕ್ಕು ಮಧ್ಯಮ ಮಾರ್ಗದ ಅವಶ್ಯಕತೆಯಿದೆ ಎಂಬುದು ಕವಿ ಜೋಗಿತ್ವದ ನೆಲೆಯಲ್ಲಿ ಸೂಚಿಸುವ ಪರಿಹಾರ ಮಾರ್ಗ.

ಜೋಗಿತ್ವದ ಅರಿವು ವಿಕಾಸಗೊಂಡಂತೆಲ್ಲ `ಮರೆಮಾಚಿದ' ಬದುಕಿನ ಆವರಣಗಳು ಸರಿಸಿ ನೋಡುವ ದೃಷ್ಟಿ ಬಲವಾಗುತ್ತದೆ.  ಸಾರ್ವಜನಿಕ ಬದುಕಿಗೆ ಸಂಪರ್ಕಕೊಂಡಿಯಾದ ಮಾತು ನಿಜವಲ್ಲದೆ ಸೂತಕವೆನಿಸುವುದು, ಜೀವಪಾತಕವೆನಿಸುವುದು ಇಲ್ಲಿನ ಕವಿತೆಗಳು ಬಿಚ್ಚಿಡುವ ಅಂಶ.  `ಸೊಲ್ಲುಫಲವಾಗಿ' ಎಂಬ ಕನವರಿಕೆಯಲ್ಲಿರುವ ಅವು ನಡೆನುಡಿಯ ಪಾರದರ್ಶಕತೆಯನ್ನು ಎತ್ತಿಹಿಡಿಯುತ್ತವೆ.  `ನೆತ್ತರ ಪಾತಕದಲ್ಲಿ ಉರಿಯುವ ನೆಲ', `ಮನೆಯೆಂಬೋ ಮನೆ ಮಸಣವಾಟಿಯಾಗುವುದು ಮಾತಿನ ಸೂತಕದ ಫಲಗಳೆಂಬುದು `ನುಡಿ ಜ್ಯೋರ್ತಿಲಿಂಗ' ಎಂಬ ತಾತ್ವಿಕ ತಿಳಿವಳಿಕೆಯಿಂದ ಕಂಡುಕೊಂಡ ಸತ್ಯ.  ಇದು ಜೋಗಿತ್ವದ ತಿಳುವಳಿಕೆಯ ಮಾದರಿ.

ಜೋಗಿತ್ವದ ಇನ್ನೊಂದು ಮುಖ್ಯ ಕಾಣ್ಕೆ ಎಂದರೆ ನಾನು ಎಂಬ ಅಹಂಕಾರವನ್ನು ಕಳೆದುಕೊಳ್ಳುವುದು.  ಸಮಷ್ಟಿಯಲ್ಲಿ ಬಿಂದುವಾಗಿ ಸೇರುವುದು.  ಇದೊಂದು ಅನುಭಾವದ ದರ್ಶನವಷ್ಟೇ ಅಲ್ಲದೆ, ಸಮುದಾಯದ ಬದುಕಿನ ಮೂಲಾಧಾರ ತಿಳುವಳಿಕೆಯೂ ಆಗಿದೆ.  ಇದನ್ನು ಕವಿ `ನನ್ನದೆನ್ನುವ ಸೊಲ್ಲು ಕರಕರಗಿ ಕರ್ಪೂರ' ಎಂಬ ಮಾತುಗಳ ಮೂಲಕ ವ್ಯಕ್ತಪಡಿಸುತ್ತಾರೆ.  ಸಮುದಾಯದ ಬದುಕಿಗೆ ಕನಸುವುದಾದರೆ ಜೋಗಿತ್ವದ ಅರಿವು ತಂದುಕೊಡುವ ಅಹಂಕಾರ ನಿರಸನದ ತತ್ವವು ಅಗತ್ಯ ಎಂಬುದನ್ನು ಧ್ವನಿಸುವುದರಿಂದಲೇ ಇಲ್ಲಿನ ಕವಿತೆಗಳು ರೈತರನ್ನು ಜೋಗಿಗಳನ್ನು ಒಟ್ಟು ದೃಷ್ಟಿಯಲ್ಲಿ ನೋಡಲು ಬಯಸುವುದು.  ಇದನ್ನೇ ಕವಿ ಅರಿವಿನಕ್ಕರದಲಿ ಊರಿನೊಕ್ಕಲ ಗೆಲುವು' ಎನ್ನುವುದು;  ಇದನ್ನೇ ಅವರು `ಗುರುವು ಹಚ್ಚಿದ ಅರಿವು' ಎನ್ನುವುದು.  ಹಳೆಯ ಹೊನ್ನನ್ನು ಪುಟಕ್ಕಿಟ್ಟು ಮತ್ತೆ ಬಳಸುವಂತೆ ದೇಸಿಯ ಅರಿವಿನ ಮಾರ್ಗಗಳನ್ನು ಕವಿ ಯಾವ ಕಾರಣಕ್ಕೂ ಅಪ್ರಸ್ತುತ ಎಂದು ಭಾವಿಸುವುದಿಲ್ಲ.  ಅದನ್ನು ತಾತ್ವಿಕವಾಗಿ ಹೇಗೆ ಪ್ರಸ್ತುತಗೊಳಿಸಬಹುದೆಂದು ಚಿಂತಿಸುತ್ತಾರೆ.  ಹೀಗೆ ಸಿದ್ಧರಾಮಯ್ಯನವರ ಕಾವ್ಯ ಅರಿವಿನ ಮಾರ್ಗದಲ್ಲಿ ಬಂದು ನಿಲ್ಲುವುದು, ತಾತ್ವಕವಾಗಿ ನೆಲೆಮುಟ್ಟುವುದು ಅದಕ್ಕೆ ಸಂದ ಜಯ.  ಆದರೆ ಇದೇ ಸಂದರ್ಭದಲ್ಲಿ ಅವರ ತಾತ್ವಿಕ ನಿಲುವನ್ನು ಪ್ರಶ್ನಿಸುವ ಅವಕಾಶಗಳು ಇದ್ದೇ ಇವೆ.  ಈ ಲೇಖನದ ಮೊದಲ ಭಾಗದಲ್ಲಿ ಚರ್ಚಿಸಿದಂತೆ ದೇಸಿಯೆಂಬ ಇರ್ಬಾಯ ಖಡ್ಗದ ಅಲುಗು ಸಿದ್ಧರಾಮಯ್ಯನವರ ಕಾವ್ಯವನ್ನೂ ಮುಟ್ಟದೇ ಇರದು.  ದೇಸಿದಿಬ್ಬ ಸೃಷ್ಟಿಸುವ ಪರಿಹಾರಗಳೆಡೆಯಲ್ಲೇ ಇಣುಕುವ ರಮ್ಯತೆಯ ಛಾಯೆಯು ಕಾಡುತ್ತದೆ.  ಅವರ ಸಮುದಾಯ ಶಕ್ತಿಯ ಭರವಸೆಯ ಬಗ್ಗೆ ಹೇಳುವುದಾದರೆ, ಆ ಆಶಯಗಳು ಒಂದು ಟ್ರೈಬಲ್ ಸಮಾಜವನ್ನೂ, ಅದರ ಸ್ವಯಂಪೂರ್ಣಶಕ್ತಿಯನ್ನು ನಿರ್ದೇಶಿಸಿದಂತೆ ತೋರುತ್ತವೆ ಎಂಬ ಸಂದೇಹ ನನ್ನದು.  ಸಮುದಾಯಗಳ ಶಕ್ತಿ ಛಿದ್ರವಾಗುತ್ತಿರುವ ಆತಂಕ ವ್ಯಕ್ತಪಡಿಸುವ ಅವರ ಕಾವ್ಯವನ್ನು ಓದುತ್ತಿರುವಾಗ ಸಮುದಾಯಗಳ ಶಕ್ತಿಯ ಪ್ರದರ್ಶನವನ್ನು ಮಾಡಿ, ಅಹಂಕಾರದಿಂದ ಸ್ವಾರ್ಥಿಗಳಾಗುತ್ತಿರುವ ಸಮುದಾಯಗಳನ್ನು ಸಮಕಾಲೀನ ಜಗತ್ತಿನಲ್ಲಿ ಕಾಣುತ್ತಿದ್ದೇವೆ ಎಂಬ ವಿಪರ್ಯಾಸದ ಭಾವನೆಗಳು ಮೂಡುತ್ತವೆ.  ಕುಲಮೂಲವನ್ನು ಅರಸುವುದರಲ್ಲಿಯೇ ಒಂದು ರೀತಿಯ ಅನ್ಯತೆಯನ್ನು ಸಾಧಿಸುವ ಸಮುದಾಯಗಳು ತಮ್ಮ ಪರಿಧಿಯಿಂದ ಆಚೆಗೆ ವಿಶಾಲ ದೃಷ್ಟಿಕೋನದಿಂದ ನೋಡುವುದೇ ಇಲ್ಲ ಎಂಬ ಸ್ಥಿತಿ ಉಂಟಾಗಿದೆಯಲ್ಲವೆ?  ಎಂಬುದು ನನ್ನ ಇನ್ನೊಂದು ಸಂದೇಹ.  ಇಂದಿನ ವಸಾಹತೋತ್ತರ ಸಮಾಜಗಳಲ್ಲಿ ಕಾಣುವ ಸಮುದಾಯಗಳ ಶಕ್ತಿ ಪ್ರದರ್ಶನವು ಇನ್ನೊಂದು ಸಮುದಾಯವನ್ನು ಅಳಿಸಿ ಹಾಕುವ ಕ್ರಿಯೆಯಲ್ಲಿ ತೊಡಗಿರುವುದನ್ನು ನಮ್ಮ ಅರಿವಿಗೆ ಬರುತ್ತಿದೆ.  ಹೀಗಿರುವಾಗ ದೇಸಿದಿಬ್ಬವನ್ನು ನೆಚ್ಚಿ ಬದುಕುವ ಬದುಕಿಗೆ ತಮ್ಮದೇ ಆದ ಅಗ್ನಿ ಪರೀಕ್ಷೆಗಳಿವೆ.  ಒಂದು ರೀತಿಯಲ್ಲಿ `ಕಾಯಮಾಯದ ಹಾಡು' - ಸಂಕಲನವು ಸಮಕಾಲೀನ ರಾಜಕೀಯ, ಸಾಮಾಜಿಕ ಸ್ಥಿತ್ಯಂತರಗಳ ತಲ್ಲಣಗಳನ್ನು ಕಂಡು ತೀವ್ರವಾಗಿ ಪ್ರತಿಕ್ರಿಯಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿದೆ.  ಒಳಬಂಡಾಯದ ದನಿಗಳಿಂದ ಪರ್‍ಯಾಯ ಸಾಧ್ಯತೆಗಳನ್ನು ಸೂಚಿಸುತ್ತ, ಜೀವಪರ ನಿಲುವನ್ನು ಹೊಂದಿದೆ.  ಇದನ್ನು ನಿಷ್ಠೆಯ ದಾರಿ ಎಂದು ಕರೆಯೋಣ.  ಆದರೆ ಅದನ್ನು ಸಹ ಪ್ರಶ್ನಿಸುವ, ಪುನರ್ವಿಮರ್ಶಿಸುವ ಅವಕಾಶಗಳಿವೆ ಎಂಬುದನ್ನು ಮರೆಯದಿರೋಣ.
        *****
ಕೀಲಿಕರಣ: ಎಂ.ಎನ್.ಎಸ್. ರಾವ್

ರಕ್ಷಕ

-ರವಿ ಕೋಟಾರಗಸ್ತಿ

ಶಿಕ್ಷಕ... ನೀ... ರಕ್ಷಕ
ಭವ್ಯ ಭಾರತದ...
ಅರಳುವ ಕುಡಿಗಳ ಆರಾಧಕ

ನಿನ್ನ ರಕ್ಷೆಯಲಿ
ಮಕ್ಕಳು ಅರಿತು ಬೆರೆತು
ವಿದ್ಯೆಯ ಕಲಿತು ನುರಿತರೆ
ಬೆಳೆಯುವದು ಬಾನೆತ್ತರಕೆ...

ಪ್ರೀತಿ ವಾತ್ಸಲ್ಯ
ಮಕ್ಕಳೊಡನೆ ಹಂಚಿಕೊಳ್ಳುತ
ನೀರುಣಿಸಿ ಪೋಷಿಸುವ...
ಕುಶಲ ಕಲೆಯ ತೋಟಿಗ ನೀನು

ಶಾಂತಿ ಸಮತೆ ಮಂತ್ರ ಹೇಳುವ
ಸೌಹಾರ್ದತೆಯ ಸೌಮ್ಯಮೂರ್ತಿ
ಅನಕ್ಷರತೆಯನು ಆಳಕ್ಕೆ ಅಟ್ಟಿ
ಅಕ್ಷರಗಳ ಸಾಕ್ಷಾರಗೊಳಿಸುವ
ಸಾಕಾರಮೂರ್ತಿ ಚತುರಶಿಲ್ಪಿ ನೀನು

         ***

ಕೀಲಿಕರಣ: ಕಿಶೋರ್‍ ಚಂದ್ರ

ಸೆಪ್ಟೆಂಬರ್ ತಿಂಗಳಿನ ಹುಡುಗಿಯರು

- ಮಂಜುನಾಥ ವಿ ಎಂ

ಮಧ್ಯಾಹ್ನ ಬಿಯರ್ ಕುಡಿದದ್ದು ತಲೆ ಸುತ್ತುತ್ತಿದೆ;
ಈಗ ನನ್ನೊಂದಿಗಿಲ್ಲದ, ಮಠಕ್ಕೆ ಓದಲು ಬರುವ
ಅವರ ನೆನಪು ಜೀವ ಹಿಂಡುತ್ತಿದೆ.

ಹೆಣ ತಿನ್ನುವ ರಾತ್ರೆಯ ಹುಳುಗಳು ಸುಳಿದಾಡಲಾರಂಭಿಸಿವೆ.

ಅವರ ಮುಗ್ಧತೆ, ಸೆಡವು, ಕುಗ್ರಾಮದ ಲಾವಣಿಗಳು-
ಒಂದರಿಂದೊಂದು ಹಳಸಲಾರಂಭಿಸಿವೆ.

ಪ್ರೇಮದಿಂದೊದಗುವ ಚುಂಬನ, ಆಲಿಂಗನದೂರದ
ಬೆಟ್ಟದಂತೆ ಅವರ ಮನಸ್ಸಿನಾಳದಲ್ಲಿ ಹುದುಗಿಕೊಂಡಿದೆ.

ನಾನು ಎಚ್ಚರ ತಪ್ಪುವುದು ನನಗೆ ಗೊತ್ತಾಗುತ್ತಿದೆ, ಕ್ಷಮಿಸಿ.

        *****

ಗಣೇಶ ಸಂಘ (ಸಂ.ರಂ)

- ಪಟ್ಟಾಭಿ ಏ ಕೆ

ಮಧ್ಯಾಹ್ನ ಎರಡು ಘಂಟೆಗೆ ಐದು ನಿಮಿಷ ಬಾಕಿ ಇತ್ತು.  ನ್ಯೂಸ್ ಕೇಳೋಣವೆಂದು ಟಿ.ವಿ.  ತಿರುಗಿಸಿದೆ.  ಕಾಲಿಂಗ್ ಬೆಲ್ ಬಾರಿಸಿತು.  ಇದೊಂದು `ನ್ಯೂಸೆನ್ಸ್' ಆಯಿತಲ್ಲಾ ಎಂದುಕೊಂಡು ಬಾಗಿಲು ತೆರೆದೆ.  ಐದಾರು ಹುಡುಗರು ನಾಯಿ ನಮ್ಮ ಮನೆಯಲ್ಲಿ ಇಲ್ಲವೆಂಬುದನ್ನು ಖಾತ್ರಿ ಮಾಡಿಕೊಂಡು, "ಅಂಕಲ್, ನಾವು ಪ್ರತಿವರ್ಷದಂತೆ ಈ ಸಲವೂ ಗಣೇಶನನ್ನು ನಮ್ಮ ಬಡಾವಣೆಯ ಪಾರ್‍ಕಿನಲ್ಲಿ ಕೂರಿಸುತ್ತಿದ್ದೇವೆ.  ನೀವು ಏನಾದರೂ ಸಹಾಯ ಮಾಡಬೇಕು" ಒಬ್ಬ ವಿನಂತಿಸಿಕೊಂಡ.  ಮತ್ತೊಬ್ಬ ಪ್ಯಾಂಪ್ಲೆಟ್ ಕೈಗೆ ತುರುಕಿದ.  ನಾನು ಪಟ್ಟಿಯನ್ನು ಹಾಗೆಯೇ ಗಮನಿಸುತಾ "ಇದೇನ್ರಯ್ಯಾ, ಗಣೇಶ ಸಂಘ (ಸಂ.ರಂ.)' ಎಂದು ಪ್ರಿಂಟ್ ಮಾಡಿಸಿದ್ದೀರಿ.  ಇದು ಯಾವ ಸಂಘ?  ಮಾಮೂಲು ಇಡುತ್ತಿರುವವರು ನೀವೇ ತಾನೇ?  ಏಕೆಂದರೆ ಈ ಹಬ್ಬದ ಸೀಸನ್‌ನಲ್ಲಿ ಮೂರು ನಾಲ್ಕು ಗುಂಪುಗಳು ಬಂದು ನಮಗೆ ಚಂದಾ ಕೊಡಿ ನಮಗೆ ಚಂದಾ ಕೊಡಿ ಎಂದು ಪೀಡಿಸುತ್ತಾರೆ.  ಯಾರು ಸಾಚಾ, ಯಾರೂ ನೀಚಾ ಒಂದು ತಿಳಿಯುವುದಿಲ್ಲ.  ಅದೂ ಅಲ್ಲದೆ ಗಣೇಶ ಸಂಘ (ಸಂ.ರಂ) ಎಂಬುದನ್ನು ಈಗಲೇ ನಾನು ಕೇಳುತ್ತಿರುವುದು", ಎಂದೆ.  ಗುಂಪಿನ ನಾಯಕ ಮಾತಿಗೆ ಶುರುಮಾಡಿದ:  "ನಿಜ, ಅಂಕಲ್ ನೀವು ಹೇಳೋದು, ಬೀದಿ ಬೀದಿಗೂ ಒಂದೊಂದು ಗಣೇಶ ಸಂಘ ಪ್ರತಿ ಸಲವೂ ಇರುತ್ತಿದ್ದವು.  ಈ ಸಲ ಎಲ್ಲಾ ಸೇರಿ ಸಂಯುಕ್ತ ರಂಗವನ್ನು ರಚಿಸಿಕೊಂಡಿದ್ದೇವೆ".  "ಅಂದರೆ ಕೇಂದ್ರ ಸರ್‍ಕಾರದಲ್ಲಿರುವಂತೆ ಹತ್ತಾರು ರಾಜಕೀಯ ಪಕ್ಷಗಳು ಒಗ್ಗೂಡಿ ಸಂಯುಕ್ತರಂಗವನ್ನು ರಚಿಸಿರುವ ಮಾದರಿಯಲ್ಲಿ ಮಾಡಿಕೊಂಡಿದ್ದೀರಿ ಅಲ್ಲವೇ?"  ನಾನು ಕೇಳಿದೆ.  ಎಲ್ಲರೂ ಒಟ್ಟಾಗಿ "ನೀವು ಹೇಳಿದ್ದು, ಸೆಂಟ್ ಪರ್‌ಸೆಂಟ್ ಕರೆಕ್ಟ್ ಅಂಕಲ್.  ಈ ನಮ್ಮ ಬಡಾಣೆಯಲ್ಲಿ ಎರಡೇ ಸಂಘಗಳು ಗಣೇಶನನ್ನು ಕೂರಿಸಿವುದು.  ಬೇರೆಯ ಸಂಘ ವಿರೋಧ ಪಕ್ಷದವರದು.  ಅಂದರೆ ನಮ್ಮ ಸಂಘಕ್ಕೆ ಸೇರದೇ ಇರುವವರು.  ಅವರೇ ಪ್ರತ್ಯೇಕವಾಗಿ ಇಟ್ಟುಕೊಳ್ಳುತ್ತಾರೆ.  ಅವರೂ ಚಂದಾಕ್ಕೆ ನಿಮ್ಮಲ್ಲಿಗೆ ಬಂದರೂ ಬರಬಹುದು.  ಆದರೆ ನಮಗೇ ಕೊಡಿ ಪ್ಲೀಸ್" ಎಂದ ಅವರಲ್ಲಿ ಒಬ್ಬ.  ಕೇಂದ್ರ ಪರಿಸ್ಥಿತಿಯಂತೆಯೇ ಈ ಸಂಘಗಳು ಎಂದು ಅರಿವಾಯಿತು.

"ಅದೆಲ್ಲಾ ಸರಿ ಎರಡು ಸಂಘಗಳು ಇರುವ ಒಂದೇ ಪಾರ್‍ಕಿನಲ್ಲಿ ಹೇಗೆ ಗಣೇಶನನ್ನು ಇಡುತ್ತೀರಾ?"  "ಅದು ಬಹಳ ಸಿಂಪಲ್ ಅಂಕಲ್", ಒಬ್ಬ ನುಡಿದ.  "ಪಾರ್‍ಕಿನಲ್ಲಿ ಅವರು ಪೂರ್ವಕ್ಕೆ ಎದುರಾಗಿ ಗಣೇಶನನ್ನು ಕೂರಿಸಿದರೆ ನಾವು ಪಶ್ಚಿಮಕ್ಕೆ ಎದುರಾಗಿ ಕೂರಿಸುತ್ತೇವೆ" ಮುಂದುವರಿದು ಹೇಳಿದ.  "ಹೌದಪ್ಪಾ, ಇಬ್ಬಿಬ್ಬರು ಮೈಕ್ ಸೆಟ್‌ಗಳನ್ನು ಹಾಕಿದರೆ ನಮ್ಮ ಗತಿ?" ನಾನು ಕೇಳಿದೆ.  "ಹಾಗೇನಿಲ್ಲ;  ಅವರ ಮೈಕೇ ನಮಗೂ ಅಡ್ಜಸ್ಟ್ ಆಗಿ ಬಿಡುತ್ತೆ.  `ಟು ಇನ್ ಒನ್' ಅಷ್ಟೆ.  ಒಂದೇ ಪೆಂಡಾಲ್, ಲೈಟು ವ್ಯವಸ್ಥೆ ಎಲ್ಲಾ ಕಾಮನ್" ಎಂದೆಲ್ಲಾ ಹೇಳುತ್ತಿದ್ದ.

ಈ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ನನ್ನವಳು ದಿಢೀರ್‍ ಎಂದು ಬಂದವಳೇ ನನ್ನ ಕೈಲಿದ್ದ ಪಾಂಪ್ಲೆಟ್ ಕಿತ್ತುಕೊಂಡು ಓದಲು ಶುರು ಮಾಡಿದಳು.  "ಗಣೇಶ ಸಂಘ (ಸಂ.ರಂ) - ಏನ್ರೀ ಇದು ಸಂ.ರಂ.?  ನಿಮಗೆ ಮಾಡಲು ಇನ್ನೇನು ಬದುಕಿಲ್ಲವೆ?  ನಿಮಗೆ ಚಂದಾ ಕೊಡುವುದಿಲ್ಲ ಹೊರಟುಬಿಡಿ" ಎಂದು ಪಕ್ಷದ ಹೈಕಮಾಂಡ್‌ನಂತೆ ಗುಡುಗಿದಳು.  ಕೊನೆಗೆ `ಸಂ.ರಂ' ಅಂದರೆ ಏನು ಎಂದು ವಿವರಿಸಿ ನನ್ನವಳಿಗೆ ನಾನೇ ಹೇಳಬೇಕಾಯಿತು.
         *****

ಕೀಲಿಕರಣ: ಕಿಶೋರ್‍ ಚಂದ್ರ

ಜೀವಯಾನ

- ಗಿರಿಜಾಪತಿ ಎಂ. ಎನ್

ಸುಳಿವ ಗಾಳಿಗೆ
ತಳಿರು ತೂಗಲು
ಹಕ್ಕಿಗೊರಳಲಿ ಇನಿದನಿ......
ಉದಯ ಕಿರಣವು
ಮುದದಿ ಹೊಮ್ಮಲು
ಲತೆಗಳಲ್ಹರಳು ಸುಮದನಿ ಮಣ್ಣನಿ
ಯಾವ ಕೈಗಳು
ಬೆಸೆದ ಮಾಯೆಯೋ
ಲೋಕ ಜೀವಯಾನಕೆ ಮುನ್ನುಡಿ
ಇಂದು ನಿನ್ನೆಗು
ಮುನ್ನ ನಾಳೆಗೂ
ಸಾಗಿ ಬಂದಿದೆ ಜೇನ್ನುಡಿ
ಎಲ್ಲೆ ಮೀರದ ಹೆಜ್ಜೆಗಳಲಿ
ನಿತ್ಯ ಸಾಗುವ ಜೀವನ
ಎಷ್ಟು ಸ್ತುತಿಸಿದರಷ್ಟು ಸಾಲದ
ಸತ್ಯ ಸಗ್ಗವಿದುವೆ ಪಾವನ

        *****

ಕೀಲಿಕರಣ: ಕಿಶೋರ್‍ ಚಂದ್ರ

ಬಾಳು ಕೋಮಲ

- ಡಾ || ರಾಜಪ್ಪ ದಳವಾಯಿ

ಬಾಳು ಕೋಮಲ
ಎಳೆ ಬಾಳೆಯಲೆಯಲ
ಬಾಲೆ ಜೊತೆ ಮಧುರತೆಯಿರೆ
ಹಣ್ಣ ಸವಿ ಮೆದ್ದಂತೆ
ಸಂ - ಬಂಧ ಬಿರಿಯೆ
ದಿಂಡ ರಸಪಾನದಂತೆ
        *****

ನಗೆ ಡಂಗುರ - ೨

- ಪಟ್ಟಾಭಿ ಎ ಕೆ

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  "ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?"
ಶಿಷ್ಯ:  "ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!"

        *****

ಬೆಳ್ಳಿಯ ಬಟ್ಟಲು

- ಅಬ್ಬಾಸ್ ಮೇಲಿನಮನಿ

        - ೧ -
ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ.  ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ.  ಹಗಲು-ರಾತ್ರಿ ವಿಲಿ ವಿಲಿ ಮೊರೆತ.  ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ ಬಾಯಿ ಸೇರುತ್ತಿಲ್ಲ ಕುಟುಂಬದ ವೈದ್ಯರು ಕೊಟ್ಟ ಔಷಧಿ, ಗುಳಿಗೆಗಳನ್ನು ರಮಿಸುತ್ತ, ಸಿಟ್ಟು ಮಾಡಿ, ಒತ್ತಾಯದಿಂದ ಮಗನಿಗೆ ನುಂಗಿಸುವ ಸಬಿನಾ ಒಂದೇ ಸಮನೆ ತಹತಹಿಸುತ್ತಿದ್ದಾಳೆ.  ಹೈದರನ ಜ್ವರ ಔಷಧಿಗೆ ಬಗ್ಗುತ್ತಿಲ್ಲ.  ನಿನ್ನೆ ದವಾಖಾನಗೆ ಹೋದಾಗ ವೈದ್ಯರು ಹುಡುಗನ ರಕ್ತ ಪರೀಕ್ಷಿಸಿಕೊಂಡು ಬರಲು ಹೇಳಿದ್ದರು.  ಇಮಾನಬಿ ಮನೆಯಲ್ಲಿದ್ದ ಪುಡಿಗಾಸುಗಳನ್ನು ಹೊಂದಿಸಿಕೊಂಡು ಹೋಗಿ ಹೈದರನ ರಕ್ತ ಪರೀಕ್ಷಿಸಿಕೊಂಡು ಬಂದಿದ್ದಳು.  "ನನ್ನ ಆನುಮಾನ ನಿಜಾ ಆತು.  ನಿನ್ನ ಮೊಮ್ಮಗ್ಗ ಮಲೇರಿಯಾ.  ಆವನ್ನ ಪಾಟೀಲ ಡಾಕ್ಷರ್ ದವಾಖಾನಿಗೆ ಅಡ್ಮಿಟ್ ಮಾಡಿಸಿರಿ" ಎಂದು ರಿಪೋಟ್೯ ನೋಡಿ ಹೇಳಿದ್ದರು ವೈದ್ಯರು.  ಆದನ್ನು ಕೇಳಿ ಸಬಿನಾ ಥರಗುಟ್ಟಿದ್ದಳು.  ಇಮಾನಬಿಯ ನರನಾಡಿಯಲ್ಲಿನ ರಕ್ತ ನಿಶ್ಚಲಗೊಂಡಂತಾಗಿತ್ತು.

ಗರೀಬಿರಿಗೆ ಖಾಸಗಿ ದವಾಖಾನೆ ಯಂದರೆ ಸುಮ್ಮನೆ ಆದೀತೆ? ಆಲ್ಲಿ ಹಣವೇ ಮಾತಾಡುವುದು.  ಆದನ್ನು ನೆನಪಿಸಿಕೊಂಡೆ ಇಮಾನಬಿ "ಸರಕಾರಿ ದಾವಾಖಾನೆಗೆ ಕರ್ಕೊಂಡು ಹೋಗ್ತೀನಿ ಸಾಹೇಬರ" ಎಂದಿದ್ದಳು.

"ಆಲ್ಲಿಯಾರು ದರಕಾರ ಮಾಡ್ತಾರ ನಿನ್ನ ಮೊಮ್ಮಗನ್ನ?" ವೈದ್ಯರು ಪ್ರಶ್ನಿಸಿದ್ದರು.  ಆವರು ಹೇಳಿದ್ದರಲ್ಲಿ ಸುಳ್ಳು ಇರಲಿಲ್ಲ ಜೀವದ ಮೇಲೆ ಆಸೆ ಇಲ್ಲದವರು ಸರಕಾರಿ ದವಾಖಾನೆಗೆ ಹೋಗಬೇಕು.  ಕಣ್ಣಲ್ಲಿ ರಕ್ತ ಹರಿಸಿದರೂ ಆಲ್ಲಿನ ಶ್ವೇತ ಪಿಶಾಚಿಗಳಿಗೆ ತೊಟ್ಟು ಕರುಣೆ ಹುಟ್ಟುವುದಿಲ್ಲ.  ಒಮ್ಮೆ ಬೆಡ್ ಮೇಲೆ ಮಲಗಿದರೆ ಅವರ ಅದ್ವಾನ ಚಿತ್ರಹಿಂಸೆಗಳಿಂದ ಕಫನ್ (ಶವದ ಮೇಲೆ ಹೊದಿಸುವ ಬಟ್ಟೆ) ಹೊದ್ದುಕೊಳ್ಳಬೇಕು ಎಂಬಂಥ ಸಂಗತಿಗಳನ್ನು ಇಮಾನಬಿ ಕೇಳಿದ್ದಳು.  ಸರಕಾರಿ ದವಾಖಾನೆಯ ಗೊಡವೆ ಬೇಡವೆಂದು ನಿರ್ಧರಿಸಿದ ಆಕೆ ಸಾಹೇಬರ ದೊಡ್ಡ ದವಾಖಾನ್ಯಾಗ ಖರ್ಚು ಎಷ್ಟು ಬರಬಹುದ್ರಿ?" ಎಂದು ಕೇಳಿದ್ದಳು.

"ಹ್ಯಾಂಗ್ ಹೇಳುದು.  ಜಲ್ದಿ ಆರಾಮಾದ್ರ ರೊಕ್ಕ ಕಡ್ಮಿ ಖರ್ಚಾಗಬಹುದು.  ಆದ್ರ ನೀವು ರೊಕ್ಕದ ಚಿಂತಿ ಮಾಡ್ಕೊಂತ ಕುಂತ್ರ ಹುಡ್ಗನ್ನ ಕಳ್ಕೊಂತಿರಿ ಮತ್ತ' ಎಂದು ವೈದ್ಯರು ಎಚ್ಚರಿಸಿ ಕಳಿಸಿದ್ದರು.

ಹೈದರ್ ಒಮ್ಮೆ ಥಂಡಿ ಎನ್ನುವನು.  ಮತ್ತೊಮ್ಮೆ ಮೈಯಲ್ಲಾ ಕಾದ ಹೆಂಚಾಗಿ ನರಳುವನು.  ಹನಿ ನೀರು ಕುಡಿಸಿದರೂ ಹೊಟ್ಟಿಯಿಂದ ಹೊರಗೆ ಬರುವುದು.  ಶಾಂತವಾಗಿ ಮಲಗಿದ್ದಾನೆ ಎಂದುಕೂಳ್ಳುವಷ್ಟರಲ್ಲಿ ಗಬಕ್ಕನೆ ಹೆದರಿಕಯಿಂದ ಎದ್ದುಕುಳಿತುಕೊಳ್ಳುವನು.  ತಾಯಿ- ಮಗಳು ಅವನೆದುರು ದೃಷ್ಟಿ ನೆಟ್ಟು ಕುಳಿತೆ ಇದ್ದರು.  ಅವನ ಬಾಡಿದ ಮುಖ ನೋಡುತ್ತ ಕಳವಳಿಸುವರು.  ವೈದ್ಯರ ಮಾತು ಅವರ ಎದೆಯ ಒಳಗೆ ಪ್ರತಿಧ್ವನಿಸುತ್ತಲೇ ಇದ್ದವು.

ಮೊಮ್ಮಗನನ್ನು ದವಾಖಾನೆಗೆ ಸೇರಿಸಲೇಬೇಕು.  ಹಣಕ್ಕೇನು ಮಾಡುವುದು? ಇಮಾನಬಿ ಯೋಚಿಸುತ್ತಲೇ ಇದ್ದಳು ಮತ್ತೆ ಧಣಿಯರ ಎದುರು ನಿಂತು ದ್ಯೆನೇಸಿ ಕೈಯೊಡ್ಡಬೇಕು.  ನೇಯ್ಗೆಯೂ ಸಮಯಕ್ಕಿಲ್ಲ.  ಸರಿಯಾಗಿ ಬಾಕಿ ಮುರಿಯಲು ಸಾಧ್ಯವಾಗಿಲ್ಲ.  ಯಾವ ಮುಖವಿಟ್ಟುಕೊಂಡು ಹೋಗಿ ನಿಲ್ಲುವುದು ಧಣಿಯರ ಮುಂದೆ.

ಹೈದರ ಒಮ್ಮಲೆ ಅಳತೊಡಗಿದ.

ಸಬಿನಾ ಅವನ ಹಣೆಯ ಮೇಲೆ ಕೈಯಿಟ್ಟು "ಅಮ್ಮಾ ಮೈಯೊಳಗಿಂದ ಉಗಾ ಬಂದ್ಹಂಗ ಅನಸಾಕ ಹತ್ತೈತಿ.  ದವಾಖಾನೆಗ ಕರ್ಕೊಂಡು ಹೋಗುನ್ನಡಿ" ಎಂದು ಗಡಿಬಿಡಿಸಿದಳು.

"ಹ್ವಾದ ಕೂಡ್ಲೆ ಅಲ್ಲಿ ರೊಕ್ಕಾ ಕೊಡಬೇಕು ಬೇಟಿ.  ಹ್ಯಾಂಗ್ ಮಾಡುದಂತ ವಿಚಾರ ಮಾಕಾಡಲಿಕ ಹತ್ತೀನಿ."
"ನೀ ಹೀಂಗ ಕುಂತ್ರ ನನ್ನ ಬೇಟಾ ಕಬರಸ್ತಾನ (ಸ್ಮಶಾನ) ಸೇರ್ತಾನ" ಸಬಿನಾ, ಸಂಕಟ, ಸಿಟ್ಟು ವ್ಯಕ್ತಪಡಿಸಿದಳು.
"ಧನೇರ ಹತ್ರ ಹೋಗಿ ಕೇಳಾಕ ನನ್ಗ ನಾಚ್ಗಿ ಬರತೈತಿ ಬೇಟಿ" ಹತಾಶೆಯಿತ್ತು ಇಮಾನಬಿಯ ಧ್ವನಿಯಲ್ಲಿ.
"ಅವರ ಹತ್ರ ಯಾಕ್ ಹೋಗ್ತಿ ಆ ಬೆಳ್ಳಿ ಬಟ್ಲ ಐತಲ್ಲ"
"ಅಂದ್ರ...  ಆ ಬೆಳ್ಳಿ ಬಟ್ಲ ಮಾರಂತಿಯೇನು ನೀನು?" ದಿಗಿಲಾಗಿ ಕೇಳಿದಳು ಇಮಾನಬಿ.
"ಮಾರೇರ ಮಾರು ಇರ್ಲಿಕಂದ ಒತ್ತಿಯರ ಇಡು.  ಮೊದ್ಲ ರೊಕ್ಕಾ ತಗೊಂಡು ಬಾ." ನಿಷ್ಟುರವಾಗಿ ಹೇಳಿದಳು ಸಬಿನಾ.
"ಅದರ ಮ್ಯಾಲೆ ಬಿತ್ತೇನು ನಿನ್ನ ಕಣ್ಣು.  ನೀನೂ ಚಲೋ ಆದಿ ಮತ್ತ.." ಮಗಳ ಮಾತನ್ನು ಧಿಕ್ಕರಿಸುತ್ತ ಇಮಾನಬಿ ನಾಗವಂದಿಗೆಯ ಮೇಲೆ ತನ್ನ ನೋಟ ಹರಿಸಿದ್ದಳು.

         - ೨ -

ಆಲ್ಲಿ ಇದ್ದದ್ದು ಒಂದು ಹಳೆಯ ಟ್ರಂಕು.  ಅದನ್ನು ಅವಳ ಅಬ್ಬಾ ಗುಲಬರ್ಗಾ ಬಂದೇನವಾಜ್ ಉರುಸಿಗೆ (ಜಾತ್ರೆ) ಹೋದಾಗ ತಂದಿದ್ದ.  ಮತ್ತು ಅದನ್ನ ಅವಳ ನಿಕಾಹ್
(ಮದುವೆ)ಯಲ್ಲಿ ಜೀಜಿ (ವಧುವಿನೊಂದಿಗೆ ಕಳುಹಿಸುವ ಪಾತ್ರೆ ಸಾಮಾನುಗಳು)ನ ಸಾಮಾನುಗಳೊಂದಿಗೆ ಕೊಟ್ಟಿದ್ದ ದಪ್ಪ ತಗಡಿನ, ಹಸಿರು ಬಣ್ಣದ, ಹೂಬಳ್ಳಿಗಳಿಂದ ಚಂದವೆನಿಸಿದ ಆ ಟ್ರಂಕಿನಲ್ಲಿ ಅವಳ ಎರಡು ಇಲಕಲ್ಲ ಸೀರೆ, ಗುಳೇದಗುದ್ದದ ಬಣ್ಣದ ಕುಪ್ಪಸಗಳಿದ್ದವು.  ಈದ್ ಸಮಯದಲ್ಲಿ ಇಮಾನಬಿ ಹೀಗೆ ಉಟ್ಟು ಹೀಗೆ ಇಡುವ ಕಾರಣದಿಂದ ಸೀರೆಯ ಮಡಿಕೆ ಕೆಡದಂತಿದ್ದವು.  ಆ ಮಡಿಕೆಗಳಲ್ಲಿ ಜೋಪಾನವಾಗಿ ಇರುವುದೇ ಬೆಳ್ಳಿಯ ಬಟ್ಟಲು.  ಖಾದರಖಾನ್‍ಗೆ ಅದು ನಜರಾನಾ (ಕಾಣಿಕೆ) ರೂಪದಲ್ಲಿ ಸಿಕ್ಕಿದ್ದು ಅವನು ಒಳ್ಳೆಯ ಹಾಡುಗಾರ.  ಉರುಸುಗಳ ಬೈಠಕ್‍ನಲ್ಲಿ ಪಾಲ್ಗೊಳ್ಳುತ್ತಿದ್ದ ಒಂದು ಸಂದರ್ಭದಲ್ಲಿ ಅವನ ಗಾಯನಕ್ಕೆ ತಲೆದೂಗಿ, ಸಂಪ್ರೀತಿಯಿಂದ ಮುರಷಿದ್ (ಧರ್ಮಗುರು)ರೂಬ್ಬರು ಈ ಬಟ್ಟಲನ್ನು ನೀಡಿ ಗೌರವಿಸಿದ್ದರು.  ಈ ಸನ್ಮಾನದಿಂದ ಖಾದರಖಾನ್‍ಗೆ ಅತ್ಯಂತ ಖುಷಿಯೆನಿಸಿತ್ತು.

ಹೈದರಾಬಾದಿನ ನಿಜಾಮನಿಂದಲೋ, ದೆಹಲಿಯ ಬಾದಶಹನೊಬ್ಬನಿಂದಲೋ ಈ ಬೆಳ್ಳಿಯ ಬಟ್ಟಲು ಧರ್ಮ ಗುರುವಿಗೆ ಭಕ್ತಿರೂಪದಲ್ಲಿ‌ಆರ್ಪಿತವಾದುದು ಎಂಬ ಪ್ರತೀತಿಯಿತ್ತು.  ಇಂಥ ವಸ್ತುವಿನ ಮೇಲೆ ವ್ಯಾಮೋಹ ಇಟ್ಟುಕೊಳ್ಳದ ಮುರಷಿದ್‍ರು ಅದನ್ನು ಖಾದರಖಾನಗೆ ನೀಡಿದ್ದರು.  ಬಟ್ಟಲನ್ನು ದೇವರ ಅನುಗ್ರಹವೆಂದು ನಂಬಿದ್ದ ಖಾದರಖಾನ್ ಅದನ್ನು ಉತ್ಸಾಹದಿಂದ ಎಲ್ಲರಿಗೂ ತೋರಿಸಿದ್ದ.

ಅಜಮಾಸು ಇಪ್ಪತ್ತುತೊಲೆಗೂ ಮಿಕ್ಕಿದ ಬೆಳ್ಳಿಯ ಬಟ್ಟಲು ಅತ್ಯಾಕರ್ಷಕವಾಗಿತ್ತು.  ಕೆಲವರು ಆದನ್ನು ಕ್ಕೆಯಲ್ಲಿ ಹಿಡಿದು ಸೂಕ್ಷ್ಮ ನಕ್ಷೆಗಳ ಸೌಂದರ್ಯ ಸವಿದಿದ್ದರು.  ಇನ್ನೂ ಕೆಲವರು ಆ ಬಿಟ್ಟಲು ಬಾದಷಹನಿಗೆ ಸಂಬಂಧಿಸಿದ್ದೆಂದು, ಅದರ ವೈಭವವನ್ನು ತಮಗೆ ಇಷ್ಟವನಿಸಿದಂತೆ ಊಹಿಸಿಕೊಂಡು ಖುಶಿ ಅನುಭವಿಸಿದ್ದರು.  ಮತ್ತೊಂದಿಷ್ಟು ಮಂದಿ ಅದು ಮುರಷಿದ್‍ರ ಹಸ್ತದಿಂದ ಬಂದ ಪುಣ್ಯದ ಸಂಕೇತವೆಂದು ಪರಿಭಾವಿಸಿ ಆ ಬಟ್ಟಲಿಗೆ ದುಡ್ಡು ಹಾಕಿ ಶ್ರದ್ಧಾಭಕ್ತಿ ಪ್ರದರ್ಶಿಸಿದ್ದರು.  ಖಾದರ್ ಖಾನ್ ಆದನ್ನು ಆಚ್ಚರಿಯಿಂದ ಗಮನಿಸಿದ್ದ.  ಆ ದುಡ್ಡು ತಂದು ತಾಯಿಯ ಕೈಗೆ ಕೊಟ್ಟಿದ್ದ.  ಪರವರ್ದಿಗಾರ (ದೇವರು) ಬೆಳ್ಳಿಯ ಬಟ್ಟಲಲ್ಲಿ ಕರಾಮತ್ತು ಇರಿಸಿದ್ದಾನೆಂದು ಆಕೆ ದೃಢವಾಗಿ ನಂಬಿದ್ದರು.  ಆ ಹಣದಿಂದ ಮೊಹರಂ ಹಬ್ಬದಲ್ಲಿ ಹಸೇನ-ಹುಸೇನರಿಗೆ ಕಂದೂರಿ (ದೇವರ ಹೆಸರಲ್ಲಿ ಊಟ ಮಾಡಿಸುವುದು) ಮಾಡಿ ಐದು ಜನ ಫಕೀರರಿಗೆ ಉಣಿಸಿದ್ದಳು.

ಅವಳ ಮರಣಾನಂತರ ಈ ರಿವಾಜು ಖಾದರ್ ಖಾನನಿಂದ ಮುಂದುವರಿದಿತ್ತು.  ಪ್ರತಿವರ್ಷ ಮೊಹರಂ ಆರಂಭದ ಮೊದಲ ಐದು ದಿನಗಳಲ್ಲಿ ಖಾದರ್‌ಖಾನ್ ಬೆಳ್ಳಿ ಬಟ್ಟಲು ತೆಗೆದುಕೂಂಡು ಹಿಂದೂ-ಮುಸ್ಮಿಮರೆಂದು ಭೇದ ಮಾಡದೆ ಕೆಲವು ಮನೆಗಳಿಗೆ ಹೋಗುತ್ತಿದ್ದ.  ಸ್ಥಿತಿವಂತರಾಗಿದ್ದ ಆವರಿಗೆ ಬಟ್ಟಲು ತುಂಬ ಚುರಮರಿ, ಬೆಂಡು, ಬತ್ತಾಸು ಕೊಡುತ್ತಿದ್ದ.  ಅವರು ಖುಶಿ ರೂಪದಲ್ಲಿ ಬಟ್ಟಲಿನಲ್ಲಿ‌ಇರಿಸಿದ ಹಣ ತಂದು ಕತ್ತಲ್ ರಾತ್ರಿಯ (ಇಮಾಮ್ ಹುಸೇನರು ಹುತಾತ್ಮಾರಾದ ದಿನ) ದಿನ ಕಂದೂರಿ ಮಾಡಿ, ಮಣ್ಣಿನ ಪರಿಯಾಣದಲ್ಲಿ ಜೋಳದ ಕಿಚಡಿ ಮತ್ತು ಬಿಂದಿಗೆಯಲ್ಲಿ ಶರಬತ್ತನ್ನು ಮಸೀದಿಗೆ ಒಯ್ದು ಹಸೇನ-ಹುಸೇನರಿಗೆ ಫಾತಿಹಾ (ನೈವೇದ್ಯ) ಕೊಟ್ಟು ಬರುವಾಗ ಫಕೀರರನ್ನು ಕರೆದುಕೊಂಡು ಬಂದು ಊಟ ಮಾಡಿಸುತಿದ್ದ. 

ಅಮ್ಮಾ ......  ಅಮ್ಮಾ ....  ಹೈದರನ ಒಣಗಿದ ತುಟಿಗಳು ಸಂಕಟದ ಧ್ವನಿಯಲ್ಲಿ ತೆರೆದುಕೊಳ್ಳುತ್ತಲೇ ಇದ್ದವು.  ಮಗನ ಸುಡುವ ಹಣೆಯ ಮೇಲೆ ತಣ್ಣೀರಿನ ಬಟ್ಟೆಯನ್ನು ಬದಲಾಯಿಸುತ್ತಿದ್ದ ಸಬಿನಾ ತುಮುಲ ಅನುಭವಿಸತೊಡಗಿದಳು.  ಮಗಳ ಮುಖ ನೋಡಿದ ಇಮಾನಬಿಯ ವಿಹ್ವಲತೆ ವರ್ಧಿಸತೊಡಗಿತು.  ಮತ್ತೆ ಅವಳ ಕಣ್ಣು ಟ್ರಂಕಿನ ಮೇಲೆ ಹರಿದಾಡಿತು.  ತಂದೆಯ ನೆನಪು ಕಾಡಿತು ಆಕೆಗೆ.

         - ೩ -

ಖಾದರಖಾನ ಸ್ಥಿತಿವಂತನಾಗಿರಲಿಲ್ಲ.  ಹಿರಿಯರು ಗಳಿಸಿದ ಒಂದು ಮನೆ, ಎರಡು ಮಗ್ಗಗಳು ಅವನ ಪಾಲಿಗಿದ್ದವು.  ಅಮರಪ್ಪ ಧಣಿಯರ ಮನೆಯಿಂದ ರೇಷ್ಮೆ ಚಮಕಾ ತಂದು ಅವನು ಸೀರೆ ನೇಯುತ್ತಿದ್ದ.  ಅವನೆದುರು ಮಗ್ಗದಲ್ಲಿ ಜೈರಾಬಿ ನೇಯುತ್ತಿದ್ದಳು.  ಗಾಯನ, ಸಂಗೀತವೆಂದರೆ ಅವನಿಗೆ ಆದಮ್ಯ ಪ್ರೀತಿ.  ಮಗ್ಗದ ನಾದದೊಳಗೆ ತನ್ನ ಸ್ವರ ಮಾಧುರ್ಯ ಸಂಯೋಜಿಸಿ ಅವನು ತನ್ಮಯವಾಗಿ ಹಾಡುತ್ತಿದ್ದ.  ಸಂತ ಶಿಶುನಾಳ ಶರೀಫ್‌ರ ಆನುಭಾವದ ಗೀತೆ, ದಾಸರಪದ, ಶರಣರ ವಚನಗಳನ್ನು ಹಾಡುತ್ತಿದ್ದರೆ ಗಲ್ಲಿಯೆಂಬೊಗಲ್ಲಿ ಗಂಧರ್ವಲೋಕವಾಗುತ್ತಿತ್ತು.  ಜಾತ್ರೆ ಉತ್ಸವ, ಉರುಸು ಸಂದರ್ಭಗಳಲ್ಲಿ ಖಾದರಖಾನನ ಗಾಯನ ಇದೆಯೆಂದರೆ ಜನರಿಗೆ ವಿಶೇಷ ಆಸಕ್ತಿ ಅವರ ಉತ್ಸಾಹದಿಂದ ಅರಳಿಕೊಂಡ ಅವನು ಹಸನಾಗಿ ಹಾಡಿ, ಸಮಿತಿಯವರು ಕೊಟ್ಟಷ್ಟು ಹಣ ಮತ್ತು ಮಾನ ಸನ್ಮಾನದೊಂದಿಗೆ ಹಿಂತಿರುಗುತ್ತಿದ್ದ.

ಆಗೆಲ್ಲ ವಿದ್ಯುತ್ ದೀಪಗಳಿರಲಿಲ್ಲ.  ಹೀಗಾಗಿ ಊರ ಪಂಚಾಯಿತಿಯ ಛೇರಮನ್‌ರು ಹೇಳಿಕಳಿಸಿದರೆ ಹೋಗಿ ಸೂರ್ಯ ಮುಳುಗಿದ ತುಸು ಹೊತ್ತಿಗೆ ರಸ್ತೆಯ ದೀಪಗಳನ್ನು ಹಚ್ಚಿ ಬರುತ್ತಿದ್ದ.  ದೀಪ ಹಚ್ಚುವುದೆಂದರೆ ಹಾಡಿನಷ್ಟೇ ಪ್ರೀತಿ ಅವನಿಗೆ.  ಜೈರಾಬಿ ಗಂಡನಿಗೆ ಎಂದಿಗೂ ಬಂಧನಕಾರಿಯೆನಿಸಲಿಲ್ಲ.  ಅವಳ ತೀವ್ರ ಕಾಳಜಿಯಿಂದಾಗಿ ಇಮಾನಬಿ ನಿಕಾಹ್ ಆಗಿತ್ತು.  ಅಳಿಯ ಸಿರಾಜಲಿ ಜೈರಾಬಿಗೆ ದೂರದ ಸಂಬಂಧಿಯೇ ಆಗಿದ್ದ ಒಬ್ಬಳೆ ಮಗಳನ್ನು ಕಣ್ಣೆದುರಿಗೆ ಇಟ್ಟುಕೊಳ್ಳಲೆಂದು ಖಾದರಖಾನ್ ಸಿರಾಜಲಿಯನ್ನು ಮನೆಯ ಅಳಿಯನನ್ನಾಗಿ ಇಟ್ಟುಕೊಂಡಿದ್ದ.  ಮತ್ತು ಮಗನಂತೆ ಕಾಣುತ್ತಿದ್ದ ಸಿರಾಜಲಿಗೆ ನೇಯ್ಗೆ ಕಲಿಸುವ ಆಸೆಯಿತ್ತು ಜೈರಾಬಿಗೆ.  ಆದರೆ ಅವನು ಬಸ್ ಸ್ಟ್ಯಾಂಡಿನಲ್ಲಿ ಹಮಾಲಿ ಮಾಡಿಕೂಂಡಿದ್ದ.  ಇಮಾನಬಿ ಒಂದು ಹೆಣ್ಣು ಮಗುವಿನ ತಾಯಿಯಾದ ಮೇಲೆ ಜೈರಾಬಿ ಕ್ಷಯದ ಬಾಧೆಯಿಂದ ತೀರಿಕೊಂಡಿದ್ದಳು.  ಅವಳಿಲ್ಲದೆ ಪ್ರತಿಯೊಂದು ಕ್ಷಣಗಳು ಖಾದರಖಾನನನ್ನು ಅನಾಥ ಪ್ರಜ್ಞೆಗೀಡು ಮಾಡಿದ್ದವು.  ಇಮಾನಬಿ ಮಗ್ಗದಲ್ಲಿ ಕುಳಿತಿದ್ದಳು.  ತಂದೆಯ ಮೇಲೆ ಸ್ಫುರಿಸಿದ ಅವಳ ಕಾಳಜಿ ನಿಷ್ಪ್ರಯೋಜಕವಾಗಿತು.  ಜೈರಾಬಿಯನ್ನು ಮನಸು ತುಂಬಿಕೊಂಡು ಕುಳಿತಿದ್ದ ಖಾದರ್‌ಖಾನ್ ಹಾಡು ಹೇಳುತ್ತ ಕುಳಿತಿರುವಾಗಲೇ ತನ್ನುಸಿರು ನಿಲ್ಲಿಸಿದ.


         - ೪ -

ಆಘಾತ ಸಹಿಸಿಕೂಂಡಿದ್ದಳು ಇಮಾನಬಿ.

ತನ್ನ ಬಾಬಾನ ನೆನಪು ತೀವ್ರವಾದಾಗಲೆಲ್ಲ ಆಕೆ ಟ್ರಂಕಿನ ಕೀಲಿ ತೆರೆದು ಬೆಳ್ಳಿಯ ಬಟ್ಟಲಿನೊಳಗೆ ಮನಸು ನೆಟ್ಟು ಕುಳಿತುಕೊಳ್ಳುತ್ತಿದ್ದಳು.  ಸಾಯುವ ಮುಂಚಿನ ದಿನ ಖಾದರಖಾನ್ ಮಗಳನ್ನು ಹತ್ತಿರ ಕುಳ್ಳಿರಿಸಿಕೊಂಡು "ಹಿರ್ಯಾರು ಗಳಿಸಿದ ಈ ಮನಿ ಬಿಟ್ಟು, ನಿನ್ನ ಜೀವಕ್ಕ ಮತ್ತೊಂದಾಧಾರ ಮಾಡಾಕ ನನ್ನಿಂದೇನೂ ಸಾಧ್ಯ ಆಗಲಿಲ್ಲ ಬೇಟಿ.  ನನ್ನ ಗರೀಬಿ ನಿನ್ನ ಕೂಡ ಹಂಗ ಉಳಿತು.  ನನ್ನ ಮಾಫ್ (ಕ್ಷಮೆ) ಮಾಡು.  ಈ ಬೆಳ್ಳಿ ಬಟ್ಲಾ ನಿನ್ನ ಹಂತೇಕನ ಇರಲಿ.  ನಿನ್ನ ದಾದಿ ಹರಕಿ ಈಡೇರಿತು.  ಯಾವ ಪ್ರಸಂಗದಾಗೂ ಈ ಬಟ್ಲಾ ಹೊರಗ ಹೋಗಾಕ ಕೊಡಬ್ಯಾಡ" ಎಂದಿದ್ದ.

ಏಕಾ‌ಏಕಿ ಗೋಣನ್ನು ಅತ್ತಿತ್ತ ಹೊರಳಾಡಿಸಿದ ಹೈದರನ ತಲೆಯನ್ನು ತನ್ನ ತೊಡೆಯ ಮೇಲಿಟ್ಟುಕೊಂಡು ನೇವರಿಸತೊಡಗಿದಳು ಸಬಿನಾ.  ಅಮ್ಮಾ...ದಾದಿ....  ಅಮ್ಮಾ....  ದಾದಿ.....  ಎಂದು ತನಗರಿವಿಲ್ಲದಂತೆ ಬಡಬಡಿಸತೊಡಗಿದ ಮೊಮ್ಮಗನ ಕೈಹಿಡಿದುಕೊಂಡಳು ಇಮಾನಬಿ.  "ಸುಡುಗಾಡು ಜ್ವರ.  ಕೂಸಿನ ದೇಹಾನ್ನ ಪಿಶಾಚಿ ಹಂಗ ಹಿಡ್ಕೊಂಡು ಬಿಟ್ಟಿತಲ್ಲ" ಒಳಗೇ ಕಳವಳಿಸಿದಳು ಆಕೆ.

ನೋವಿಗೆ ಸಾವಿಗೆ ಆಯಾಸ ಪಡಬೇಡ
ದೇವ ಗಂಗಾಧರನು ಭಾವದೊಳಿರಲು
............................
ವಸುಧಿಯೊಳ್ ಶಿಶುನಾಳಧೀಶನ ಹಸುಳನೆ
ಕಸಿವಿಸಿ ಹೊಂದುವದು ಹಸನಲ್ಲ ನಿನಗೆ

ಖಾದರಖಾನ್ ನೇಯುತ್ತಿದ್ದ ಮಗ್ಗದ ಕಡೆಯಿಂದ ಅಲೆ ಅಲೆಯಾಗಿ ತೇಲಿ ಬಂದಿತ್ತು ಹಾಡು.  ಇಮಾನಬಿಯ ಮನಸ್ತು ಮತ್ತ ಹಿಂದಿನದನ್ನು ಜ್ಞಾಪಿಸಿಕೊಂಡಿತ್ತು.

         - ೫ -

ಅವತ್ತು ಆಕಾಶದಲ್ಲಿ ಚಂದ್ರ ಕಾಣಿಸಿಕೂಂಡಿದ್ದ.  ಮಸೀದೆಯ ಮುಂದೆ ಕುದಾಲಿ (ಮೊಹರಂ ಹಬ್ಬದ ಮೊದಲನೇ ದಿನ ದೇವರ ಎದುರು ತೋಡುವ ಗುಂಡಿ) ಹಾಕಲಾಗಿತ್ತು.

ಇಮಾನಬಿಯ ಕಣ್ಣು ಒದ್ದೆಯಾಗಿದ್ದವು.  ತನ್ನ ಅಬ್ಬಾ ಇಲ್ಲದ ಮೊದಲ ಮೊಹರಮ್‌ದ ಆ ಕ್ಷಣಗಳಲ್ಲಿ ಆಕೆಯ ಹೃದಯ ಹೆಪ್ಪುಗಟ್ಟಿತ್ತು.  ಅವಳ ಸಂವೇದನೆಗಳಿಗೂ ತನಗೂ ಸಂಬಂಧವಿಲ್ಲದವನಂತಿದ್ದ ಸಿರಾಜಲಿ, ತನ್ನನ್ನು ತಾನೇ ಸಂಬಾಳಿಸಿಕೊಂಡಿದ್ದಳು ಇಮಾನಬಿ.  ಸ್ನಾನಮಾಡಿ ಟ್ರಂಕಿನೊಳಗಿಂದ ಬೆಳ್ಳಿಯ ಬಟ್ಟಲು ತೆಗೆದು, ಅದನ್ನು ಮೀಸಲು ನೀರಿನಿಂದ ತೊಳೆದು, ಗಂಧ ಲೇಪಿಸಿ, ಊದು ಹಾಕಿ ಸಕ್ಕರೆ ಫಾತಿಹಾ ಕೊಟ್ಟದ್ದಳು.  ಖಾದರಖಾನ್ ಒಯ್ಯುತ್ತಿದ್ದ ಒಂದು ಚಿಕ್ಕ ಪಿಸ್ವಿ (ಚೀಲ)ಯಲ್ಲಿ ಚುರುಮರಿ, ಬೆಂಡು-ಬತ್ತಾಸು ತುಂಬಿಕೊಂಡು, ಅದರಲ್ಲಿ ಬಟ್ಟಲು ಹುದುಗಿಸಿಟ್ಟು ಆಕೆ ಹೊಸಿಲು ದಾಟಿದ್ದಳು.

ಅವಳ ಚಟುವಟಿಕೆಗಳನ್ನು ಗಮನಿಸಿದ್ದ ಸಿರಾಜಲಿ ತುಟಿ ಎರಡು ಮಾಡಿರಲಿಲ್ಲ. 

ಕೋಲಾಹಲವಿತ್ತು ಅವನೆದೆಯೊಳಗೆ.  ತನ್ನ ತಂದೆಯ ರೀತಿ-ರಿವಾಜುಗಳನ್ನು ಅನುಸರಿಸುತ್ತಿರುವ ಇಮಾನಬಿಯ ಧೋರಣೆಗಳ ಬಗ್ಗೆ ಅವನಿಗೆ ಸಿಟ್ಟು ಬರತೊಡಗಿತ್ತು.  ಹೆಣ್ಣುಹೆಂಗಸು ಹೀಗೆ ಹೊರಗೆ ಹೋಗಿ, ಮನೆ ಮನೆ ತಿರುಪೆಯೆತ್ತಿತಂದ ಹಣದಿಂದ ಕಂದೂರಿ ಮಾಡುವುದರಿಂದ ಬರುವ ಭಾಗ್ಯವೇನು ? ಎಂದು ಅವನು ತೀವ್ರವಾಗಿ ಚಿಂತಿಸಿದ್ದ.  ಹೋದಲ್ಲೆಲ್ಲ ಇಮಾನಬಿಗೆ ಗೌರವಾದರಗಳು ಪ್ರಾಪ್ತವಾಗಿದ್ದವು.  ಜನರು ಅವಳನ್ನು ಕುಳ್ಳಿರಿಸಿಕೊಂಡು ಪ್ರೀತಿಯಿಂದ ಮಾತಾಡಿಸಿದ್ದರು.  ಖಾದರಖಾನನ ಹೃದಯ ಮತ್ತು ಗಾಯನದ ಬಗ್ಗೆ ಮೆಚ್ಚುಗೆ ನುಡಿದಿದ್ದರು.  ಅವಳಿಂದ ಚುರುಮರಿ, ಬೆಂಡು ಬತ್ತಾಸು ಸ್ವೀಕರಿಸಿ ತಮ್ಮ ಶ್ರದ್ಧೆತೋರಿಸಿದ್ದರು.  ಖಾದರಖಾನ್‌ಗೆ ತಕ್ಕ ಮಗಳೆಂದು ಅವಳನ್ನು ಹೊಗಳಿದ ಕೆಲವರು ಸೀರೆ ಕುಪ್ಪಸದ ಉಡುಗೊರೆ ನೀಡಿದ್ದರು.

ಮನೆಗೆ ಬಂದು ಗಂಡನನ್ನು ಎದುರಿಗೆ ಕುಳ್ಳಿರಿಸಿಕೊಂಡು ಹಣದ ಲೆಕ್ಕ ಮಾಡಿದ್ದಳು ಇಮಾನಬಿ.  ಈ ಸಲ ಹೆಚ್ಚು ಹಣ ಸಿಕ್ಕಿತ್ತು.  ಹತ್ತು ಜನ ಫಕೀರರಿಗೆ ಊಟ ಮಾಡಿಸೋಣ ಎಂದಿದ್ದಳು ಆಕೆ.  ಸಿರಾಜಲಿ ಉದಾಸೀನ ವ್ಯಕ್ತಪಡಿಸಿದ್ದ.  ಇಷ್ಟೊಂದು ಹಣವನ್ನು ಸುಮ್ಮನೆ ಕೊಡುತ್ತಾರೆಯೇ ಜನ ? ಅನುಮಾನ ಕಾಡಿತ್ತು ಅವನಿಗೆ.  ಅದೇ ನೋಟದಲ್ಲಿ ಹೆಂಡತಿಯ ತುಂಬು ಮೈಯನ್ನು ಅವಲೋಕಿಸಿದ್ದ ಅವನು.

ಇಮಾನಬಿಯದು ಪಾಕ್ ಪಾಕಿಜಾ ಮನಸ್ಸು! ತನ್ನ ಬಾಬಾನ ಹರಕೆಯನ್ನು ಪರಿಪಾಲಿಸುವ ನಿಷ್ಟೆಯಿಂದ ಆಕೆ ಕತ್ತಲ್ ರಾತ್ರಿಯ ದಿವಸ ಉಪವಾಸ ಮಾಡಿದ್ದಳು.  ಸಂಜೆಯ ಹೊತ್ತಿಗೆ ಮಗಳು ಮತ್ತು ನೆರೆಮನೆಯವರೊಂದಿಗೆ ಹಸೇನ-ಹುಸೇನರಿಗೆ ಎಡೆ ಕೊಟ್ಟು ಬಂದಿದ್ದಳು.  ಪರಿಯಾಣದಲ್ಲಿನ ತಬರ್ರುಕ್‍ದ (ಪ್ರಸಾದ) ಒಂದು ತುತ್ತು ಬಾಯಲ್ಲಿ ಹಾಕಿಕೊಂಡು ನೀರು ಕುಡಿದಿದ್ದಳು.  ಬಂದ ಫಕೀರರಿಗೆ ಉಣ್ಣಿಸಿ ಬೀಳ್ಕೊಟ್ಟಿದ್ದಳು.  ಗಲ್ಲಿಯ ಜನರಿಗೆ ಶರಬತ್ ಕುಡಿಸಿದ್ದಳು. 

ದೇವರಿಗೆ ಅಲ್ವಿದಾ (ವಿದಾಯ) ಹೇಳಿದ ರಾತ್ರಿ ಚೊಂಗಾ (ಒಂದು ರೀತಿಯ ತಿಂಡಿ) ಮಾಡಿ ಅಕ್ಕ- ಪಕ್ಕದ ಹಿಂದೂಗಳಿಗೆ ಹಂಚಿದ್ದಳು.  ಇದೆಲ್ಲ ಜನ್ನತ್ನಲ್ಲಿರುವ ಖಾದರಖಾನನಿಗೆ ತೃಪ್ತಿ ತಂದಿರಬೇಕು.  ಆದರೆ ಸಿರಾಜಲಿಗೆ ಮಾತ್ರ ಎಳ್ಳಷ್ಟೂ ಹಿಡಿಸಿರಲಿಲ್ಲ.  ಅದರ ಒಳಗುದಿ ಇಮಾನಬಿಗೆ ತಾಕಿರಲಿಲ್ಲ.  ಬೆಳ್ಳಿಯ ಬಟ್ಟಲು ಟ್ರಂಕು ಸೇರಿತ್ತು.  ಸಿರಾಜಲಿಯ ಕುದಿವ ಮನಸ್ಸು ತಣ್ಣಗಾಗಿತ್ತು.

ದಿನಗಳು ಉರುಳಿದ್ದವು.  ಮತ್ತೆ ಬಂದಿತ್ತು ಮೊಹರಮ್.

        - ೬ -
ಮೋಡಗಳ ಮರೆಯಿಂದ ಚಂದ್ರ ನಸುವಾಗಿ ಗೋಚರಿಸಿದ್ದ. 

ಸಿರಾಜಲಿಯ ಎದೆಯೊಳಗೆ ರಾಹುಕೇತು ಸೇರಿಕೊಂಡು ಕತ್ತಲು ಹರಡಿ ಕುಳಿತಿದ್ದರು.

ಇಮಾನಬಿ ನಾಗವಂದಿಗೆಯ ಮೇಲಿನ ಟ್ರಂಕು ಕೆಳಗೆ ಇಳಿಸಿಕೊಂಡು ಬೆಳ್ಳಿಯ ಬಟ್ಟಲನ್ನು ಹೊರಗೆ ತೆಗೆದಿದ್ದಳು.  ಅದೇ ಹೊತ್ತಿಗೆ ಮನೆಯ ಮುಂದೆ ಹಾದು ಹೋದ ಮಾಜಾನ್ (ಮಸೀದಿಯ ಕೆಲಸ ನೋಡುವವ) ಕುದಾಲಿ (ಗುದ್ದಲಿ) ಬಿತ್ತು ಎಂದು ಸಾರುತ್ತ ನಡೆದಿದ್ದ ಇದನ್ನು ಕೇಳಿಸಿಕೊಂಡ ಸಿರಾಜಲಿಯ ಮುಖ ದುಮು ದುಮು ಎಂದಿತ್ತು.  ಕುದಾಲಿ ಬಿದ್ದದ್ದು ಆಶುರಖಾನಾದ ಮುಂದೆಯಲ್ಲ ತನ್ನ ಎದೆಯೊಳಗ ಎನ್ನುವ ಭಾವನೆ ಮೂಡಿ, "ಇಮ್ಮು ಆ ಕಟೋರಾ (ಬಟ್ಟಲು) ಹಿಡ್ಕೊಂಡು ಭಿಕಾರಿ ಹಾಂಗ ಮನಿ ಮನಿ ತಿರುಗಾಡಬ್ಯಾಡ ನೀನು" ಎಂದು ಅಸಹನೆಯನ್ನು ಹೊರಹಾಕಿದ್ದ. 

ಗಂಡನನ್ನು ಅಚ್ಚರಿಯಿಂದ ನೋಡಿದ್ದಳು ಇಮಾನಬಿ.  ಇದೂವರೆಗೂ ಅವನಿಂದ ಇಂಥ ಮಾತುಗಳನ್ನು ಆಕೆ ಕೇಳಿಸಿಕೂಂಡಿರಲಿಲ್ಲ.  "ಇಲ್ಲಿ ತನಕ ನಿನ್ನ ವರ್ತನಾ ಸೈರಿಸಿಕೊಂಡಿನಿ ನಾನು" ಸಿರಾಜಲಿಯ ಧ್ವನಿಯಲ್ಲಿ ಸಿಟ್ಟು, ಅಸಹನೆ ಎರಡೂ ಬೆರೆತಿದ್ದವು.
"ಯಾಕ್ರಿ ಅಂಥದ್ದೇನಾಗೇತಿ?" ಕೇಳಿದ್ದಳಾಕೆ.
"ಹೆಂಗಸ್ಸಾಗಿ ಮಂದಿಮನಿಗೆ ಕಟೋರಾ ಹಿಡ್ಕೊಂಡು ತಿರ್ಕೊಂಡು ಬರುದು ನನ್ಗೆ ಲಾಯಕ್ಕಿಲ್ಲ."
"ಹಿಂದೆ ಈ ಮಾತು ಹೇಳಿಲ್ಲ ನೀವು"
"ನಿಮ್ಮಪ್ಪನ ವಿರುದ್ಧ ಮಾತಾಡ್ತಿ ಅಂತ ತಿಳ್ಕೊಂತಿದ್ದಿ ನೀನು"
"ಈಗ ತಿಳ್ಕೊಳ್ಳಂಗಿಲ್ಲೇನು ನಾನು ?"
"ನಾನೂ ತಿಳೀಲಂತ ಹೇಳಾಕ ಹತ್ತೀನಿ"
"ನಮ್ಮ ಮನಿನ್ ರಿವಾಜು ಬಿಟ್ಟಬಿಡು ಅಂತಿರೇನು ನೀವು ?"
"ಇದು ಕೆಟ್ಟ ರಿವಾಜು"
"ಇದರಾಗ ಬಾಬಾನ ಸ್ವಾರ್ಥ ಇರಲಿಲ್ಲ"
"ಏನಿದ್ರೂ ಅದು ಅವನ ಕಾಲಕ್ಕ ಮುಗೀತು"
"ನಾನು ಬಾಬಾನ ಹರಕಿ ಈಡೇರಿಸುವಾಕಿ"
"ಹಠಾ ಸಾಧಿಸ್ತಿಯೇನ್ ನೀನು?"
"ಹಠಾ ಯಾಕಂತೀರಿ? ಬಾಬಾನ ಮನಸ್ಸಿಗೆ ಸಮಾಧಾನ ತರು ಮಾತು ಹೇಳಿದ್ಯಾ"
"ನನ್ನ ಮಾನಾ ಕಳೀತಿ ನೀನು ?"
"ನನ್ನ ಹತ್ರ ಅಂಥ ಕೆಟ್ಟ ಚಾಳಿ ಏನ್ ಕಂಡ್ರಿ ?"
"ಜನಾ ನನ್ನ ಬೆನ್ನ ಹಿಂದೆ ಆಡಿಕೊಂಡು ನಗ್ತಾರ"
"ಯಾಕಂತ ಅವರನ್ನ ಹಿಡ್ದು ಕೇಳ್ರಲ್ಲ"
"ಮೊದ್ಲ ನೀನು ಈ ಪದ್ಧತಿ ಬಿಡು"
"ಇದು ನನ್ನ ಜೀವದ ಕೂಡ ಹೋಗತೈತಿ"
"ಇವತ್ತಽಽ ಈ ಕಟೋರಾ ಒಯ್ದು ಮಾರಿ ಬರ್ತೀನಿ ನಾನು"
"ಅದನ್ನು ಮುಟ್ಟಾಕ ಕೊಡಂಗಿಲ್ಲ ನಾನು"
"ಕರೋಡ ರೂಪಾಯಿ ಕಿಮ್ಮತ್ತಿಂದು ಐತಲ್ಲ ಅದು ?"
"ಅದರ ಬೆಲೆ ಕಟ್ಟಾಕ ಆಗುದಿಲ್ಲ"
"ಅದಕ್ಕಽಽ ನಿಮ್ಮಪ್ಪ ತಿರ್ಕೊಂಡು ತಿನ್ನಿ‌ಅಂತ ಈ ಬಟ್ಲಾಕೊಟ್ಟಾನ" ಸಿರಾಜಲಿಯ ಮಾತು ಡಬಗಳ್ಳಿಯ ಮುಳ್ಳಿನಂತಿತ್ತು.
"ನಮ್ಮ ಬಾಬಾಗ ಏನೂ ಅನಬ್ಯಾಡ್ರಿ, ನನ್ಗ ಬೇಷ್ ಅನಿಸುದಿಲ್ಲ"
"ದುಗ್ಗಾಣಿ ಮನಿ, ಇದೊಂದು ಚಿಲ್ಲರ ಬಟ್ಲಾ ಕೊಟ್ಟು ಹ್ವಾದಂತ ಅವನ ಮ್ಯಾಲೆ ಪ್ರೀತಿಯೇನ್ ನಿನ್ಗ ?"
"ನಮ್ಮ ಬಾಬಾ ಅಷ್ಟರ ಬಿಟ್ಟು ಹ್ವಾದ ನನ್ನ ಪಾಲಿಗೆ.  ನಿಮ್ಮಿಂದ ಯಾ ಭಾಗ್ಯ ಕಂಡೆ ನಾನು" ಇಮಾನಬಿಯ ಮಾತು ಸಿರಾಜಲಿಯ ಎದೆ ಉರಿಸಿತ್ತು.
"ನಾನು ಪರದೇಶಿ ಸೂಳೇಮಗ, ತುತ್ತು ಕೂಳಿಗೆ ಬಂದು ಬಿದ್ದಾಂವ ಇಲ್ಲಿ" ತನ್ನ ನಸೀಬು ಹಳಿದುಕೂಂಡಿದ್ದ ಅವನು.
"ಬಾಬಾ, ನಿಮ್ಮನ್ನ ಸ್ವಂತ ಮಗನ್ಹಂಗ ನೋಡ್ತಿದ್ರು"
"ಅದಕಽಽ ನನ್ಗೊಂದು ಮಾತು ಹೇಳ್ದ ಈ ಮನೀನ್ನ ನಿನ್ನ ಹೆಸರಿಗೆ ಬರಿಸಿಬಿಟ್ಟ.  ಯಾಕಂದರ ನಾನು ನಿಮ್ಮ ಮನಿ ಚಾಕರಿಗೆ ಇದ್ದವನಲ್ಲ"
"ಅಂಥ ಭಾವನಾ ಬಾಬಾಗ ಇರ್ಲಿಲ್ಲಬಿಡ್ರಿ.  ಈಗರ ಏನಾತು ಈ ಮನೀನ ನಿಮ್ಮ ಹೆಸರಿಗೇ ಮಾಡ್ಕೋರಿ"
"ಅತ್ತೂಕರ್ದೂ ಔತಣ ಹೇಳಿಸಿಕೊಳ್ಳೋ ಜಾತಿ ಅಲ್ಲ ನಮ್ದು.  ನೀನು ಮನಿ ಮಾಲಕಿ; ಎಷ್ಟಿದ್ರೂ ನಾನು ಹೊರಗಿನಂವಾ"
"ನನ್ನ ಮ್ಯಾಲೆ ಇದ್ದಾಂಗ ನಿಮ್ಗ ಈ ಮನಿ ಮೇಲೇನೂ ಹಕ್ಕು ಐತಿ"
"ಇಲ್ಲೆ ನನ್ಮಾತು ನಡಿಯೂದಿಲ್ಲ"
"ಅಂಥದ್ದು ಇಲ್ಲೇನೂ ನಡಿದಿಲ್ಲ"
"ಹಾಂಗರ ನಾನು ಈ ಮನಿಯಾಗ ಇರಬೇಕಂದ್ರ ಆ ಬಟ್ಲಾ ಹಿಡ್ಕೊಂಡು ಹೊರಗ ಹೋಗಬ್ಯಾಡ ನೀನು" ನಿಷ್ಟುರನಾಗಿ ಹೇಳಿದ್ದ ಅವನು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ಅವನ ವರ್ತನೆ ಇಮಾನಬಿಗೆ ವಿಚಿತ್ರ ಅನಿಸತೊಡಗಿತ್ತು.  ಆವನು ಬಾಬಾನ ಮೇಲಿನ ಮತ್ಸರದಿಂದ ಇಂಥ ಮಾತು ಹೇಳುತ್ತಿರುವನೋ ? ಬೆಳ್ಳಿಯ ಬಟ್ಟಲಿನ ಮೇಲೆ ಅವನಿಗೇಕೆ ಈ ಪರಿ ಸಿಟ್ಟು ? ಪ್ರೀತಿ ಅಭಿವ್ಯಕ್ತಿಸುವ, ಒಂದಿನವೂ ಸರಿದು ಕುಳಿತುಕೋ ಎನ್ನದ ಸಿರಾಜಲಿಗೆ ಏಕಾ‌ಏಕಿ ತನ್ನ ಮೇಲೆ ಗುಮಾನಿ ಏಕೆ ಹುಟ್ಟುತು? ತಾನು ಬಟ್ಟಲು ಹಿಡಿದು ಹೋಗುವುದು ವರ್ಷದಲ್ಲಿ ಒಂದು ದಿನ ಮಾತ್ರ.  ಅದು ದೇವರ ಹರಕೆಯ ಸಲುವಾಗಿ.  ಫಕೀರರಿಗೆ ಉಣ್ಣಿಸುವುದು ಪುಣ್ಯದ ಕೆಲಸವಲ್ಲವೆ? ಇದರಲ್ಲಿ ಸಿರಾಜಿಗೆ ಯಾವ ದೋಷ ಕಂಡಿತು? ಅವನು ಮನೆಯಲ್ಲಿ ಇರಬೇಕೆಂದರೆ ತಾನು ಈ ರಿವಾಜು ಬಿಡಬೇಕು ಎನ್ನುತ್ತಾನೆ.  ಹೀಗಾದರೆ ಬಾಬಾನ ಆತ್ಮಕ್ಕೆ ತಳಮಳವಾಗದೇ ಇದ್ದೀತೆ? ಹಾಗಾಗಲು ತಾನು ಅವಕಾಶ ಕೊಡಬಾರದು.  ಅವನು ತನ್ನನ್ನು ಹೆದರಿಸಲು ನೋಡುತ್ತಿದ್ದಾನೆ.  ಹೆಣ್ಣನ್ನು ದಮನಿಸುವುದು ಗಂಡಸರ ಕೆಟ್ಟ ಚಾಳಿ.  ತನ್ನ ಮನಸ್ಸು ಪರಿಶುದ್ಧವಾಗಿಯೇ ಇದೆ ಭಯವೇನು? ಹೀಗೆ ಆಲೋಚಿಸಿದ ಇಮಾನಬಿ "ನಾಳೆ ನಾನು ಬಟ್ಟಲು ಹಿಡ್ಕೊಂಡು ಹೋಗ್ತೀನಿ" ಎಂದಿದ್ದಳು.  ರಪ್ಪನೆ ಮುಖದ ಮೇಲೆ ಹೊಡೆತ ಬಿದ್ದಂತೆ ತತ್ತರಿಸಿದ್ದ ಸಿರಾಜಲಿ.  ಅವನ ರಕ್ತ ಒಮ್ಮೆಲೆ ಕುದ್ದಿತ್ತು.  `ಈ ಬಟ್ಟಲ ಕೂಡ ನೀನು ಸಾಯಿ' ಎಂದು ಬಿರುಗಾಳಿಯಂತೆ ಹೊರಗೆ ಹೋಗಿದ್ದ.

ರಾತ್ರಿಯೆಲ್ಲ ಬಾಗಿಲು ತೆಗೆದು ಕುಳಿತೆ ಇದ್ದಳು ಇಮಾನಬಿ.

ಸಿರಾಜಲಿ ಬರಲಿಲ್ಲ.

ತಲ್ಲಣದ ನಡುವೆಯೂ ಆಕೆ ರಿವಾಜು (ಪದ್ಧತಿ) ಬಿಡಲಿಲ್ಲ.  ಕಂದೂರಿ ಮಾಡಿ ಫಕೀರರಿಗೆ ಉಣ್ಣಿಸಿದ್ದಳು. 

ದೇವರ ಸವಾರಿ ಹೊರಟಿದ್ದವು.

ಊರಿನ ಎಲ್ಲ ಆಶುರಖಾನಾ ( ಪಂಜಾ ಕುಳಿತುಕೊಳ್ಳುವ ಸ್ಥಳ )ಗಳ ಆಲಮ್ ( ದೇವರು ) ಗಳು ಭೇಟಿ ಮಾಡುವ ಬಜಾರಿನ ಚೌಕದಲ್ಲಿ ಜನಜಾತ್ರೆ.  ಇಮನಬಿ ಮಗಳೊಂದಿಗೆ ಬಂದು ಎತ್ತರದ ಕಟ್ಟೆಯ ಮೇಲೆ ನಿಂತಿದ್ದಳು.  ಅಲ್ಲಿ ಎರಡು ಹೆಜ್ಜೆ ಮೇಳಗಳು ( ಮೊಹರಂದಲ್ಲಿ ಹೆಜ್ಜೆಯಾಡುವ ಗುಂಪುಗಳು ) ಸ್ಪರ್ಧೆಗಿಳಿದಂತೆ ತೋರಿದ್ದವು.  ಜನರ ಕಣ್ಣಲ್ಲಿ ಕುತೂಹಲವಿತ್ತು.  ಮನಸ್ಸಿನಲ್ಲಿ ತುಂಬ ಉತ್ಸಾಹ.  ಹಲಗೆಯ ತಾಳಬದ್ಧ ನಾದಕ್ಕೆ ಸನಾದಿಯ ಸ್ವರ ಮಾಧುರ್ಯಕ್ಕೆ ಸಂಗತ್ಯಗೊಂಡು ಹೆಜ್ಜೆಯಾದುವವರನ್ನು ಹುರುಪುಗೊಳಿಸಿತ್ತು.  ಕುಣಿಯುವ ಜನರನ್ನು ನೋಡುತ್ತಿದ್ದಂತೆ ಇಮಾನಬಿಗೆ ಸಿರಾಜಲಿ ನೆನಪಾಗಿದ್ದ.

ಹೆಜ್ಜೆಯಾಡುವುದರಲ್ಲಿ ಅವನು ನಿಸ್ಸೀಮ.  ತಲೆಗೆ ಹಸಿರು ಪಟ್ಟಿ ಕಟ್ಟಿಸಿಕೊಂಡು, ಕಣ್ಣಿಗೆ ಸುರುಮಾ, ಹಣೆಗೆ ಪಕ್ಕದ ಮಲಕುಗಳಿಗೆ ಸುನೇರಿ ಬಣ್ಣದ ಮುದ್ರೆ ಹಾಕಿಕೊಂಡು, ಪೈಜಾಮ ಎತ್ತಿಕಟ್ಟಿ, ಕೈಯಲ್ಲಿ ದಸ್ತಿ ಹಿಡಿದುಕೊಂಡು ಹೋಯ್ಯಽಽ...  ಎಂದು ಹೆಜ್ಜೆ ಹಾಕುತ್ತಿದ್ದರೆ ಇಮಾನಬಿ ನವಿಲಾಗುತ್ತಿದ್ದಳು.  ಅವನು ಮನೆಗೆ ಬಂದಿದ್ದೆ ತಡ ಆಕೆ ಅವನ ಮೇಲೆ ಲಿಂಬೆಹಣ್ಣು ಇಳಿಸಿ ಒಗೆಯುತ್ತಿದ್ದಳು.  ಉಪ್ಪು ಇಳಿಸಿ ಉರಿಯುವ ಒಲೆಗೆ ಹಾಕುವಳು.  ಕೆಂಡದ ಮೇಲಿನ ಉಪ್ಪು ಚಿಟ್ ಚಿಟ್ ಎಂದರೆ ಕೆಟ್ಟ ನೆದರಾಗಿದೆ ಎನ್ನುವಳು. 
ಸಿರಾಜಲಿ ಆವಳ ಮಾತಿಗ ನಕ್ಕು "ನನ್ಗನಿಂದಽಽ ನೆದರು ಹತ್ತದು" ಎಂದು ರೇಗಿಸುವನು.  "ನಂದು ಒಳ್ಳೆ ನಜರು" ಎಂದು ಆಕಿ ಅವನ ಎದೆಯೊಳಗೆ ಹುದುಗಿಕೊಳ್ಳುತ್ತಿದ್ದಳು. 

ಸಿರಾಜಲಿ ಇಲ್ಲದ ಹೆಜ್ಜೆ ನೋಡಲು ಆಕಗೆ ಕಾತರ ಹುಟ್ಟಿರಲಿಲ್ಲ.

ಮೂರು ದಿನದ ಜಾರತಾ (ಮರಣದ ಮೂರನೆ ದಿನ ಮಾಡುವ ದಿನಕರ್ಮ) ಆದ ಮೇಲೆ ಸಿರಾಜಲಿ ಸೊಲ್ಲಾಪುರ ಸೇರಿಕೂಂಡಿದ್ದರ ವಿಚಾರ ತಿಳಿದಿತ್ತು.  ಇಮಾನಬಿ ಬಿಕ್ಕಿ ಬಿಕ್ಕಿ ಅತ್ತಿದ್ದಳು.  ಬೆಳದ ಮಗಳನ್ನು ನೋಡುತ್ತಿದ್ದಂತೆ ಅವಳ ಕಣ್ಣೀರು ನಿಂತಿತ್ತು.  ಸಿರಾಜಲಿ ಹೊಣೆಗಾರಿಕೆಯನ್ನು ತಪ್ಪಿಸಿಕೂಳ್ಳಲು ಈ ನಾಟಕ ಹೂಡಿದನೆ ? ಯೋಚಿಸುತ್ತ ಹೋದಂತೆ ಆಕೆಗೆ ಗಂಡ ಮೇಲೆ ಸಿಟ್ಟು ಬಂದಿತ್ತು.  ಆದರೆ ರಕ್ತಕುದ್ದರೆ ತನಗೇ ನಷ್ಟ ಎಂದು ಸದೃಢಗೊಂಡಿದ್ದಳು ಇಮಾನಬಿ.  ಪಲಾಯನವಾದ ಗಂಡಸಿಗೆ ಸುಲಭ ; ಹೆಂಗಸಿಗೆ ಅದು ಹೇಗೆ ಸಾಧ್ಯ ? ಎಂದು ಆಕೆ ಮಗ್ಗದಲ್ಲಿಕುಳಿತಿದ್ದಳು.  ನೂಲಿನೆಳೆಗಳನ್ನು ಚೂಕ್ಕವಾಗಿ ನೆಯ್ಯತೊಡಗಿದ್ದಳು.

ಬೆಳ್ಳಿಯ ಬಟ್ಟಲು ಅವಳ ಪುಟ್ಟ ಟ್ರಂಕಿನಲ್ಲಿ ಬೆಚ್ಚಗೆ ಉಳಿದಿತ್ತು.

         - ೭ -

ಮುಂದಿನ ದಿನಗಳಲ್ಲಿ ಕಿವಿ ಸೇರಿದ್ದ ಸುದ್ದೀ ಅವಳ ಮನಸ್ಪನ್ನು ಘಾಸಿಗೊಳಿಸಿತ್ತು.  ಸೊಲ್ಲಾಪೂರ ಸೇರಿಕೊಂಡಿದ್ದ ಸಿರಾಜಲಿ ಹಮಾಲಿ ಮಾಡಿಕೂಂಡು, ಯಾವಳೋ ಒಬ್ಬಳ ಕೂಡ ಅವನ ಕೂಡಾವಳಿ ಆಗಿದೆಯಂದು ಅವನನ್ನು ಮಾತಾಡಿಸಿಕೂಂಡು ಬಂದವರು ಹೇಳಿದ್ದರು.  ಬಟ್ಟಲಿನ ನೆಪದಲ್ಲಿ ಅವನು ತನ್ನನ್ನು ವಂಚಿಸಿದನೆಂದು ಆಕೆ ಮನದಟ್ಟು ಮಾಡಿಕೊಂಡಳು.  ಜಮಾತಿನವರು ಸಿರಾಜಲಿಯನ್ನು ಬೈದುಕೊಂಡು ಇಮಾನಬಿಗೆ ಧೈರ್ಯ ಹೇಳಿದ್ದರು.

ಮಗಳಿಗೆ ನಿಕಾಹ್ ಮಾಡಿಕೂಡುವ ಜವಾಬುದಾರಿಯಿಂದ ಆಕೆ ಮಗ್ಗದ ಕಾಲ್ವಿಡಿ ತುಳಿಯತೂಡಗಿದ್ದಳು.

ಆರಗೊಡವಿನ್ನೇನು ಮಗಳೆ
ಮುನ್ನೋಡಿ ಹಂಜಿ ನೂಲಮ್ಮ
ಜ್ಞಾನವೆಂಬುವಾ ಕದರನು ಇಟ್ಟು
ಮಾನವ ಧರ್ಮದ ಹಂಜಿಯ ಪಿಡಿದು
ಆನುಭವವೆಂಬುವ ಎಳೆಗಳ ತೆಗೆದು
ಅನುವಿಲೆ ಸುಮ್ಮನೆ ನೂಲಮ್ಮ

ಶರೀಫರ ಜೀವತಂತುವನ್ನು ಆಗಾಧವಾಗಿ ಮೀಟುವ ಖಾದರಖಾನನ ಹಾಡು ಇಮಾನಬಿಗೆ ಧೈರ್ಯ ನೀಡತೊಡಗಿತ್ತು.  ಬದುಕನ್ನು ನಾಜೂಕಾಗಿ ನೇಯುತ್ತಿದ್ದವಳ ಕಣ್ಣೀಗೀಗ ಚಸ್ಮಾ ಬಂದಿತ್ತು.  ನೇಯ್ಗೆಯ ಚಕ್ರದ ಹೊರಳಿನಲ್ಲಿ ಆಕೆ ಕಷ್ಟದಿಂದ ಮೊಹರಂನ ರಿವಾಜನ್ನು ನೆರವೇರಿಸಿಕೂಂಡು ಬರುತ್ತಲೇ ಇದ್ದಳು.

ಆದರೆ ಬಟ್ಟಲು ಹಿಡಿದು ಹೋದರೆ ಖುಶಿ ಕೊಡುವವರು ಅವಳಿಗೆ ಮೊದಲಿನಷ್ಟು ಆಸ್ಥೆ ತೋರಿಸುತ್ತಿರಲಿಲ್ಲ.  ಎರಡು ಮನೆಯ ಯಜಮಾನರು ಮೃತರಾಗಿದ್ದರು.  ಮತ್ತೆರಡು ಮನೆಯ ಸಾಹುಕಾರರು ವಯಸ್ಸಿನ ಕಾರಣದಿಂದ ತಮ್ಮ ವ್ಯವಹಾರಗಳನ್ನು ಮಕ್ಕಳಿಗೊಪ್ಪಿಸಿದ್ದರು.  ಕೆಲವು ಕಡೆಗೆ ಇಮಾನಬಿ ಮುಜುಗರ ಅನುಭವಿಸುತ್ತಿದ್ದಳು.  ಆಕಿ ಬಟ್ಟಲಲ್ಲಿ ಬೆಂಡು ಬತ್ತಾಸ ತುಂಬಿ ಕೊಟ್ಟು ಹಣದ ನಿರೀಕ್ಷೆಯಲ್ಲಿ ಕುಳಿತು ಕೊಳ್ಳುತ್ತಿದ್ದಳು.  ಒಬ್ಬರು, "ಇದೊಂದ್ಸಲ ಒಯ್ದು ಬಿಡವ್ವ" ಎಂದರೆ ಮತ್ತೊಬ್ಬರು "ಕಾಲಮಾನ ಸೂಕ್ಷ್ಮ ಆಗ್ಯಾವ ಇಮಾನವ್ವ, ಮಕ್ಕಳು ಕೊಟ್ಟಷ್ಟು ಒಯ್ದು ಬಿಡು" ಎನ್ನುವರು.

ಇಷ್ಟಾದರೂ ಜಹಾಂಗೀರ್ ಕೊಲ್ಲಾಪುರೆ, ಬಾಬಣ್ಣ ದೇಸಾಯಿ ಮೊದಲಿನಂತೆ ಬಟ್ಟಲಿಗೆ ಹಣ ಹಾಕುತ್ತಿದ್ದರು.  ಶೋಕಿ, ಪ್ರತಿಷ್ಟೆಯಲ್ಲಿ ಅವರಿಬ್ಬರೂ ಸಮಾನರು.  ಹಿಂದೊಮ್ಮೆ ಖಾದರಖಾನನಿಂದ ಬೆಳ್ಳಿಯ ಬಟ್ಟಲನ್ನು ಪಡೆದುಕೊಳ್ಳಲು ಅವರಿಬ್ಬರೂ ಪ್ರಯತ್ನಿಸಿದ್ದರು.  "ನನ್ನೆದಿ ಗುಂಡಿಗೀನ ಕೇಳಾಕ ಹತ್ತೀರಿ ನೀವು" ಎಂದು ನಗೆಯಾಡಿ ಬಟ್ಟಲ ಮೇಲಿನ ಅವರ ಆಸೆಯನ್ನು ಛಿದ್ರಗೊಳಿಸಿದ್ದ ಖಾದರಖಾನ್.

ಅವನು ಸತ್ತು ಇಮಾನಬಿ ಬೆಳ್ಳಿಯ ಬಟ್ಟಲು ಹಿಡಿದು ತಮ್ಮಮುಂದೆ ಯಾವಾಗ ನಿಂತಳೋ ಜಹಾಂಗೀರ ಮತ್ತು ಬಾಬಣ್ಣರ ಆಸೆಗಳು ಮತ್ತೆ ಕೊನರಿದ್ದವು.  "ಈ ಬಟ್ಲಾ ಕೊಟ್ರ ಎರಡು ಸಾವಿರ ರೂಪಾಯಿ ಕೊಡ್ತೀನಿ" ಅಂದಿದ್ದ ಜಹಾಂಗೀರ್.  ಅದನ್ನು ಕೇಳಿಸಿ ಕೊಂಡವನಂತೆ ಬಾಬಣ್ಣ ದೇಸಾಯಿ "ಇಂಥ ಬಟ್ಟಲು ನಮ್ಮಂಥವರ ಮನತನದ್ದಾಗಿರಬೇಕು.  ನೀ ಕೇಳಿದಷ್ಟು, ರೊಕ್ಕಾ ಕೂಡ್ತೀನಿ ಕೊಟ್ಟು ಬಿಡು ಇಮಾನವ್ವ" ಎಂದು ಉತ್ತೇಜಿಸಿದ್ದ.  "ಇದು ಗುರುಗಳ ಕಾಣ್ಕಿ, ಇದರಾಗ ನಮ್ಮ ಬಾಬಾನ ಜೀವಾನ ಐತ್ತಿ.  ಹ್ಯಾಂಗ್ ಮಾರಬೇಕ್ರಿ ಧಣೇರ ?" ಎಂದು ನಿಷ್ಟುರವಾಗಿ ತಿರಸ್ಕರಿದ್ದಳು ಇಮಾನಬಿ.

         - ೮ -

ಬಾಬಾಽಽ.....  ಬಾಬಾಽಽ....  ಹೈದರ್ ತನ್ನ ತಂದೆಯನ್ನು ನನಪಿಸಿಕೊಂಡು ನರಳಿದ.  ವಿಹ್ವಲತೆಯ ಕಿಚ್ಚಿನಲ್ಲಿದ್ದರೂ ಸಬಿನಾ "ಆ ಕುರುಸಾಲ್ಯಾನ್ನ ಯಾಕ್ ನೆನಸ್ಕೋತಿಯೋ ಬೇಟಾ ?" ಎಂದು ಅಸಹನೆ ವ್ಯಕ್ತ ಪಡಿಸಿದಳು.  ಅವನೂ ಒಬ್ಬ ತಂದೆ.  ತನ್ನದೇ ರಕ್ತ ಹಂಚಿಕೊಂಡು ಬಂದ ಕೂಸಿಗೆ ಚೂರು ಪ್ರೀತಿ, ವಾತ್ಸಲ್ಯ ದರ್ಶನ ಮಾಡಿಸಲಿಲ್ಲ.  ಕರುಳ ಬಳ್ಳಿಯ ಸಂಬಂಧದ ಗಂಧ ಇಲ್ಲದವನು.  ಜೀವಂತಿದ್ದಾನೋ, ಸತ್ತಿದ್ದಾನೊ....  ಎಂಥ ಹಣೆಬರಹ ಅವನದು! ರೊಟ್ಟಿ-ಚಟ್ನಿ ತಿಂದು ಆರಾಮಿರು ಅಂದರೆ ಶೆಗಣಿ ಹುಳುವಾದ.  ಬದುಕು ಕೊಟ್ಟ ಖುದಾ (ದೇವರು)ನಿಗೂ ವಂಚಿಸುವ ಸ್ಯೆತಾನ (ರಾಕ್ಷಸ) ಎಂದು ಇಮಾನಬಿ ಸ್ವಗತದಲ್ಲಿಯೇ ಬೈದುಕೊಂಡಳು.

ಸಬಿನಾಳ ಶಾದಿಗೆ ಅಮರಪ್ಪ ಧಣಿ ಸಾಲ ಕೊಟ್ಟಿದ್ದರು.

ಆಕೆಯ ಗಂಡ ನಿಜಾಮುದೀನ ಇಲಕಲ್ಲಿನಲ್ಲಿ ಟೇಲರಿಂಗ್ ದಂಧೆ ಮಾಡುತಿದ್ದ.  ಮದುವೆಯಾದ ೬ ತಿಂಗಳಿಗೆ ತನ್ನ ತಾಯಿಯೊಂದಿಗೆ ಜಗಳ ಮಾಡಿಕೂಂಡು ಬಂದು ಅತ್ತೆಯ ಮನೆಯಲ್ಲಿ ಠಿಕಾಣಿ ಹೂಡಿದ್ದ.  ತಾನೂ ಒಬ್ಬಂಟಿ.  ಮಗಳು ಜೊತೆಗಿದ್ದರೆ ಸಂತೋಷವೆಂದು ಅಳಿಯನ ಮೇಲೆ ಕಾಳಜಿ ಸ್ಪುರಿಸಿದ್ದಳು.  ಪರಿಚಯದ ಟೇಲರಿಂಗ್ ಅಂಗಡಿಯಲ್ಲಿ ಅವನ ಹೊಲಿಗೆ ಕೆಲಸಕ್ಕೂ ಅನುಕೂಲ ಮಾಡಿಕೂಟ್ಟಿದ್ದಳು. 

ಸಬಿನಾಳ ಬಸಿರು, ಬಯಕೆ, ಬಾಣಂತನ ಶುರುವಾಗಿ ಮೂರು ಹೊಟ್ಟೆ ಇಳಿದಿದ್ದವು.

ಚಿಂತೆ ಇಲ್ಲದವನು ಸಂತೆಯಲ್ಲಿ ಮೆಲಕಾಡಿಸುವವನಂತಿದ್ದ ನಿಜಾಮುದ್ದೀನ್ ಜಬರ್ದಸ್ತಾಗಿ ಮೂರು ಹೊತ್ತು ಕೂಳು ತಿಂದು, ನಿದ್ದೆಮಾಡಿ ಮೈ ಉಬ್ಬಿಸಿಕೂಂಡಿದ್ದ.  ಮಾಲೀಕನೂಂದಿಗೆ ಮನಸ್ತಾಪ ಮಾಡಿಕೊಂಡು ಹೆಂಡತಿ ಮತ್ತು ಅತ್ತೆಯನ್ನು ಕಾಡಿ ಡಬ್ಬಿ ಆಂಗಡಿಯಲ್ಲಿ ಹಳೆಯದೊಂದು ಹೊಲಿಗೆ ಮಿಷನ್ ಇಟ್ಟುಕೂಂಡಿದ್ದ.  ಹಣ ಬೇಕು ಅನಿಸಿದರೆ ಕುಳಿತು ಬಟ್ಟೆ ಹೊಲಿಯುತ್ತಿದ್ದ.  ಊರು, ಹೋಟೇಲ್, ಸಿನಿಮಾ ಎಂದು ದುಡಿದದ್ದನ್ನೆಲ್ಲ ಹಾಳು ಮಾಡುತಿದ್ದ.

ಸಬಿನಾಳಿಗೆ ನಾಲ್ಕನೆಯ ಗರ್ಭ ನಿಂತಾಗ ಅವನು ಟ್ರಂಕಿನೊಳಗಿನ ಬೆಳ್ಳಿಯ ಬಟ್ಟಲು ಕದ್ದು ಊರು ಬಿಟ್ಟಿದ್ದ.  ಬೀಗ ಮುರಿದ ಟ್ರಂಕು ನೋಡಿ ಇಮಾನಬಿ ದಿಗ್ಭ್ರಮೆಗೊಂಡಿದ್ದಳು.  ಬಸಿರಿಯಾದ ಸಬಿನಾ ತಾಯಿಯ ಅವಸ್ಥೆಯಿಂದ ಮೈಯೆಲ್ಲಾ ನೀರೊಡೆದಿದ್ದಳು.

"ಕಳ್ಳ, ಕೊರಮ ನಮ್ಮ ಮನಿ ನಾಶ ಮಾಡಕ್ಕಽಽ ಬಂದಾನ" ಇಮಾನಬಿ ಅಳಿಯನನ್ನು ವಾಚಾಮಗೋಚರವಾಗಿ ಶಪಿಸಿದ್ದಳು.  ಬೆಳ್ಳಿಯ ಬಟ್ಟಲನ್ನು ಹೊರಗೆ ಹೋಗಲು ಬಿಡಬಾರದು ಎಂದಿದ್ದ ಬಾಬಾ.  ಈಗೇನು ಕುತ್ತು ಬರುವುದೊ ಎಂದು ಕಳವಳಸಿದ್ದಳು.  ಬಟ್ಟಲು ಇಲ್ಲದೆ ತನಗೆ ಜಿಂದಗೀನೆ ಇಲ್ಲ ಎನ್ನುವಂತೆ ಆಕೆ ಅನ್ನ ನೀರು ಬಿಟ್ಟು ಕುಳಿತಿದ್ದಳು.

ಮೂರನೆಯ ದಿನ ಬೆಳಿಗ್ಗೆ ಪತ್ತಾರ ಗಂಗಪ್ಪ ಬಂದು ಬಟ್ಟಲು ತೋರಿಸಿದಾಗಲೇ ಇಮಾನಬಿ ನಿಶ್ಚಿಂತಳಾಗಿದ್ದಳು.  ಈ ಬಟ್ಟಲು ಇಮಾನಬಿಯದು ಎಂದು ಗಂಗಪ್ಪನಿಗೆ ಗೊತ್ತು.  ನಿಜಾಮುದ್ದೀನ ಅವನಿಲ್ಲದ ವೇಳೆಯಲ್ಲಿ ಬಟ್ಟಲು ಮಾರಿ ಅವನ ಮಗನ ಕಡೆಯಿಂದ ನೂರು ರೂಪಾಯಿ ಇಸಿದುಕೂಂಡು ಹೋಗಿದ್ದ.  ಅದರ ಸತ್ಯ ತಿಳಿಯಲು ಗಂಗಪ್ಪ ಬಂದಿದ್ದ.  ಇಮಾನಬಿ ಅರ್ಧದಷ್ಟು ಹಣ ಕೊಟ್ಟು ಇನ್ನರ್ಧ ಹಣವನ್ನು ನಂತರ ಕೊಡುವುದಾಗಿ ಹೇಳಿ ಗಂಗಪ್ಪನಿಂದ ಬಟ್ಟಲು ಪಡೆದುಕೂಂಡು "ನಿನ್ಗ ಆಲ್ಲಾಹ ಒಳ್ಳೇದು ಮಾಡಲಿ !" ಎಂದು ಹಾರೈಸಿದ್ದಳು.  ತಡ ಮಾಡದೆ ಜೋಗೇರ ಹತ್ತಿರ ಹೋಗಿ ಟ್ರಂಕಿನ ಬೀಗವನ್ನು ಸರಿಮಾಡಿಸಿ ಎಂದಿನಂತೆ ಸೀರೆಯ ಮಡಿಕೆಯಲ್ಲಿ ಬಟ್ಟಲು ಇಟ್ಟು ನಿರಾಳತೆ ಅನುಭವಿಸಿದ್ದಳು.

ಸಬಿನಾ ಗಂಡುಮಗುವಿಗೆ ಜನ್ಮಕೊಟ್ಟ ವೇಳೆಯಲ್ಲಿ ನಿಜಾಮುದ್ದೀನ್ ಬಂದಿದ್ದ.  ಇಮಾನಬಿ ಅವನಿಗೆ ಏನೂ ಅನ್ನಲಿಲ್ಲ.  ಅವನೆ ಅತ್ತೂ ಕರೆದು ಮಾಫ್ ಬೇಡಿದ್ದ.  ಇಮಾನಬಿ ಮೊಮ್ಮಗನಿಗೆ ಹೈದರ್ ಎಂದು ನಾಮಕರಣ ಮಾಡಿದ್ದಳು.  ತನ್ನ ಬಾಬಾ ಮತ್ತೆ ಹುಟ್ಟಿ ಬಂದಿದ್ದಾನೆಂದು ನೆಮ್ಮದಿಯನಿಸಿತ್ತು ಆಕೆಗೆ.

ಹುಡುಗ ಬೆಳಯುತ್ತಿದ್ದಂತೆ ನಿಜಾಮುದ್ದೀನ್‍ನ ಹವ್ಯಾಸಗಳು ಆತಿರೇಕವಾಗಿದ್ದವು.  ಈಗವನು ಸಾರಾಯಿ ಕುಡಿದು ಬರಲು ಶುರು ಮಾಡಿದ್ದ.  ಸಬಿನಾಳನ್ನು ಹಣಕ್ಕಾಗಿ ಪೀಡಿಸಿ ಬಡಿಯುತ್ತಿದ್ದ.  ಮನೆಯಲ್ಲಿನ ಸಾಮಾನು ಕದ್ದೊಯ್ದು ಮಾರುತ್ತಿದ್ದ.  ಇಮಾನಬಿ ಅವನ ದಬ್ಬಾಳಿಕೆಗೆ ಪ್ರತಿರೋಧವೊಡ್ಡುತ್ತಿದ್ದಳು.  ದಪ್ಪ ಚರ್ಮದ ಅವನಿಗೆ ನಾಚಿಕೆ, ಮರ್ಯಾದೆಯ ಹಂಗು ಇರಲಿಲ್ಲ.  ಒಮ್ಮೊಮ್ಮೆ ಕಾಲ ಮೇಲೆ ಬಿದ್ದು ಢೋಕಾರಿತನ ಮಾಡುತ್ತಿದ್ದ.  ಕೊನೆಗೊಮ್ಮೆ ಹೊಲಿಗೆ ಮಿಶನ್ ಮತ್ತು ಜನರ ಬಟ್ಟೆಗಳೊಂದಿಗೆ ಅವನು ಊರನ್ನು ಬಿಟ್ಟು ಹೋಗಿದ್ದ.  ತಾಯಿ-ಮಗಳು ಪೀಡೆ ತೊಲಗಿತೆಂದು ನಿರುಮ್ಮಳಾಗಿದ್ದರು. 

ಸಾಲ ಎದೆಯ ಮೇಲಿನ ಬಂಡೆಗಲ್ಲಿನಂತಿದ್ದರೂ ಇಮಾನಬಿ ಮಗ್ಗದಲ್ಲಿ ಕುಳಿತೇ ಇದ್ದಳು.  ಉಪನಾಸ ವನವಾಸದ ಕ್ಷಣಗಳು ಹಗಲು ರಾತ್ರಿಗಳನ್ನು ತ್ರಸ್ತಗೊಳಿಸುತ್ತಿದ್ದರೂ ತನ್ನ ಬದುಕಿನ ಹೋರಾಟದಲ್ಲಿ ಜಿಗುಟತನವನ್ನು ಕಳೆದುಕೊಳ್ಳದಂತಿದ್ದಳು ಆಕೆ.

         - ೯ -

ಹೈದರ್ ದಿಗ್ಗನೆ ಎದ್ದು ಕುಳಿತುಕೊಳ್ಳಲು ನೋಡಿದ.  ಸಬಿನಾ ಅವನ ಬೆನ್ನಿಗೆ ಕೈಯಾಸರೆ ನೀಡಿ "ಏನಾತು ಬೇಟಾ ?" ಎಂದು ಗಾಬರಿಗೊಂಡಳು.  ಮೊಮ್ಮಗನ ನಿಸ್ತೇಜ ಕಣ್ಣು, ಜೋತು ಬಿದ್ದಿರುವ ಮುಖ ಕಂಡು ಇಮಾನಬಿ ಕಂಗಾಲಾದಳು.  "ಸ್ವಲ್ಪ ನೀರರ ಕುಡಿಸು ಕೂಸಿಗೆ" ಎಂದಳು.

"ಗುಟುಕು ನೀರು ಕುಡದ್ರ ಕರುಳು ಹೊರಗ ಬಂದಂಗ ಹೊರಗ ಹಾಕ್ತಾನ.  ಏನ್ಮಾಡ್ಲಿ? ಅದರ ನಸೀಬದಾಗ ಇದ್ದಾಂಗಾಗ್ಲಿ, ಬೇಶರ್ಮ (ನಾಚಿಕೆ ಮರ್ಯಾದೆ ಇಲ್ಲದವನು)ನ ಕೂಡ ಗಂಟ್ಹಾಕಿ ನನ್ನ ಜಿಂದಗೀನ ಹಾಳ್ಮಾಡ್ದಿ.  ಈಗ ಎಂಥ ಹೊತ್ತುಬಂತು ನೋಡು.  ನನ್ನ ಕೂಸಿಗ ದವಾಖಾನಿಗೆ ಕರ್ಕೊಂಡು ಹೋಗಿ ತೋರ್ಸುವ ಗತಿ ಇಲ್ಲಂಗಾತು"
ತನ್ನ ನಸೀಬು ಜರಿದುಕೂಳ್ಳುತ್ತ ಮುಖಮುಖ ಬಡಿದುಕೂಂಡಳು ಸಬಿನಾ.

ಹೈದರ್ ಇದ್ದಕ್ಕಿದ್ದಂತೆ ನಡುಗತೊಡಗಿದ.  ಅವನ ಮೈಯೆಂಬೋ ಮೈ ಬರ್ಫಿನಂತೆ ಜುನುಗತೊಡಗಿತು.  ಇಮಾನಬಿ ದಪ್ಪನೆಯ ಕೌದಿಯನ್ನು ಅವನ ಮೈಮೇಲೆ ಹರಡಿದಳು.  ಹೈದರ್ ಎತ್ತರಕ್ಕೆ ಪುಟಿಯತೊಡಗಿದ.  ಹೆದರಿಕೆಯಿಂದ ತಾಯಿ ಮಗಳು ಅವನ ಕೈಕಾಲು ತಿಕ್ಕತೊಡಗಿದರು. 

ಸ್ವಲ್ಪ ಹೊತ್ತಿಗೆ ತಣ್ಣಗಿನ ಮೈ ಕಾದ ಹೆಂಚಾಯಿತು.  "ಜ್ವರ ಮತ್ತ ಬಂದು" ಸಬಿನಾ ಚಡಪಡಿಸಿದಳು.  ಮಗನ ಒಳಗಿನ ಕೆಂಡ ತನ್ನ ಒಡಲಲ್ಲಿ ಬಿದ್ದು ಸುಡುವಂತೆ "ಯಾ ಆಲ್ಲಾಹ್ ! ಪಾಕ್ ಪರವರ್ಧಿಗಾರ ನನ್ನ ಕೂಸಿನ ಮ್ಯಾಲೆ ಕರುಣಾ ತೋರ್ಸು.  ಜಲ್ದೀನ ಬೆಳಗು ಹರಿಸು ನಾಳೆ ಎಲ್ಲೇರ ನನ್ನ ಜೀವಾ ಒತ್ತಯಿಟ್ಟು ಮಗನ್ನ ದವಾಖಾನಿಗೆ ಸೇರಿಸ್ತೀನಿ.  ಸತ್ತಂದ್ರ ಮಣ್ಣಿಗರ ಇಡ್ತೀನಿ" ಎಂದು ಹಲುಬಿದಳು.

ಮಗಳ ಮಾತು ಇಮಾನಬಿಯ ಎದೆ ಬಗೆಯತೊಡಗಿತು.

ಇಮಾನಬಿ ತೀರ್ಮಾನಕ್ಕೆ ಬರುವ ಹೊತ್ತಿಗೆ ಕತ್ತಲು ಸರಿದಿತ್ತು.  ಜೀವಪ್ರೀತಿಯ ಬೆಳಕು ಅವಳ ಆಂತಃಕರಣವನ್ನು ತುಂಬಿ ನಿಂತಿತ್ತು.  "ಸಬಿನಾ ನೀನು ಹೈದರನನ್ನು ಕರ್ಕೊಂಡು ದವಾಖಾನಿಗೆ ನಡಿ.  ನಾ ಬಾಬಣ್ಣದೇಸಾಯರ ಮನಿಗೆ ಹೋಗಿ ಬರ್ತ್ತೀನಿ" ಎಂದು ನಾಗವಂದಿಗೆಯ ಮೇಲಿಂದ ಟ್ರಂಕು ಇಳಿಸಿ, ಕೀಲಿ ತೆಗೆದು, ಬೆಳ್ಳಿಯ ಬಿಟ್ಟಲನ್ನು ಸೀರೆಯ ಸೆರಗಿನೊಳಗೆ ಮರೆಮಾಡಿಕೂಂಡು ಹೊಸ್ತಿಲು ದಾಟಿದಳು ಇಮಾನಬಿ.  ತೆರೆದ ಬಾಗಿಲಿನಿಂದ ತೂರಿ ಬಂದ ತಂಗಾಳಿ ಸಬಿನಾಳಿಗೆ ಹಿತವೆನಿಸಿತು.
 *****

ಕೀಲಿಕರಣ: ಎಂ. ಎನ್. ಎಸ್. ರಾವ್ 

ಯಾತಕೆ ಬೇಕು ಸಂಸಾರ ಸುಖ

- ಶಿಶುನಾಳ ಶರೀಫ್

ಯಾತಕೆ ಯಾರಿಗೆ ಬೇಕು
ಈ ಸಂಸಾರಸುಖ ಇನ್ನು ಸಾಕು                                                               ||೧||

ನೀ ಸತ್ತು ನಾನಿರಬೇಕು
ನಾನು ನೀನು ಒಂದಾದಮೇಲೆ                                                                ||೨||

ಆನಂದಸ್ಥಲದ ಮಾಲಿಂಗನೋಳ್  ಬೆರಿಯಲಿಬೇಕ
ಇಂತಾದಮೇಲೆ  ಗುರುಗೋವಿಂದನ ಮರಿ  ಶರೀಫನ ಗುರುತು ನಿನಗ್ಯಾಕ    ||೩||

         *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ